Friday, June 13, 2008

ಇಂದಿನ ಇತಿಹಾಸ History Today ಜೂನ್ 13

ಇಂದಿನ ಇತಿಹಾಸ

ಜೂನ್ 13

ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಸಂದರ್ಭದಲ್ಲಿ ಪಂಜಾಬ್ ಗವರ್ನರ್ ಆಗಿದ್ದ ಮೈಕೆಲ್ ಒ'ಡಾಯರ್ ನನ್ನು ಕೊಂದುದಕ್ಕಾಗಿ ಭಾರತದ ಕ್ರಾಂತಿಕಾರಿ ಹೋರಾಟಗಾರ ಊಧಮ್ ಸಿಂಗ್ ಅವರನ್ನು ಲಂಡನ್ನಿನಲ್ಲಿ ಗಲ್ಲಿಗೇರಿಸಲಾಯಿತು.

2007: ಮಹಾತ್ಮ ಗಾಂಧಿ ಮೊಮ್ಮಗ ರಾಮಚಂದ್ರ ಗಾಂಧಿ (70) ಅವರು ನವದೆಹಲಿಯ ಭಾರತೀಯ ಅಂತಾರಾಷ್ಟ್ರೀಯ ಕೇಂದ್ರದ (ಐಸಿಸಿ) ಕೊಠಡಿಯಲ್ಲಿ ಮೃತರಾದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಗೋಪಾಲಕೃಷ್ಣ ಗಾಂಧಿ ಅವರ ಹಿರಿಯ ಸೋದರರಾದ ರಾಮಚಂದ್ರ ಗಾಂಧಿ ಜೂನ್ 10ರಂದಷ್ಟೇ ಇಲ್ಲಿಗೆ ಬಂದಿದ್ದರು. ಪ್ರಿನ್ಸ್ ಟನ್ ವಿವಿಯ ಮಾಜಿ ಪ್ರಾಧ್ಯಾಪಕ, ಮಹಾತ್ಮ ಗಾಂಧಿಯವರ ಕೊನೆಯ ಮಗ ದೇವದಾಸ್ ಗಾಂಧಿ ಅವರ ಪುತ್ರರಾದ ರಾಮಚಂದ್ರ ಗಾಂಧಿ ಹಲವಾರು ಪುಸ್ತಕ, ನಾಟಕಗಳನ್ನು ರಚಿಸಿದ್ದಲ್ಲದೆ ತಾತ ಮಹಾತ್ಮ ಗಾಂಧಿ ಬಗ್ಗೆ ಚಲನಚಿತ್ರವನ್ನೂ ನಿರಿರ್ಮಿಸಿದ್ದರು. ಇವರ ತಾಯಿ ಲಕ್ಷ್ಮಿ ಸ್ವಾತಂತ್ರ್ಯ ಹೋರಾಟಗಾರ ರಾಜಾಜಿಯವರ ಪುತ್ರಿ.

2007: ಆಫ್ರಿಕಾದ ಆಧುನಿಕ ಸಾಹಿತ್ಯದ ಪಿತಾಮಹ ಎಂದೇ ಗುರುತಿಸಲಾಗಿರುವ ನೈಜೀರಿಯಾ ಸಂಜಾತ ಚಿನುವಾ ಅಚಿಯೆ ಅವರು 2007ನೇ ಸಾಲಿನ ಮ್ಯಾನ್ ಬೂಕರ್ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದರು. 60ಸಾವಿರ ಪೌಂಡ್ ಮೊತ್ತದ ಈ ಪ್ರಶಸ್ತಿಯನ್ನು ಕಾದಂಬರಿ ಕ್ಷೇತ್ರಕ್ಕೆ ನೀಡಿದ ಅಸಾಧಾರಣ ಕೊಡುಗೆಗಾಗಿ ಪ್ರತಿ ಎರಡು ವರ್ಷಕ್ಕೊಮ್ಮೆನೀಡಲಾಗುತ್ತದೆ. 2005ರಲ್ಲಿ ಮೊತ್ತ ಮೊದಲ ಬಾರಿಗೆ ಈ ಪ್ರಶಸ್ತಿಯನ್ನು ಇಸ್ಮಾಯಿಲ್ ಕದರೆ ಅವರಿಗೆ ನೀಡಲಾಗಿತ್ತು. ಅಚಿಬೆ ಅವರು 1958ರಲ್ಲಿ ಬರೆದ `ಥಿಂಗ್ಸ್ ಫಾಲ್ ಅಪಾರ್ಟ್' ಕಾದಂಬರಿ ವಿಶ್ವದಾದ್ಯಂತ ಖ್ಯಾತಿ ಗಳಿಸಿದ್ದು ಪ್ರಪಂಚದಾದ್ಯಂತ ಇದರ ಹತ್ತು ದಶಲಕ್ಷ ಪುಸ್ತಕಗಳು ಮಾರಾಟವಾಗಿವೆ.

2007: ಖ್ಯಾತ ಮುತ್ಸದ್ದಿ, ನೊಬೆಲ್ ಪ್ರಶಸ್ತಿ ವಿಜೇತ ಶಿಮನ್ ಪೆರೆಸ್ ಅವರು ಇಸ್ರೇಲಿನ ಅಧ್ಯಕ್ಷರಾಗಿ ಆಯ್ಕೆಯಾದರು.

2007: ಭೂಮಿಯಿಂದ ಸುಮಾರು 780 ಲಕ್ಷ ಜ್ಯೋತಿರ್ ವರ್ಷ ದೂರದಲ್ಲಿದ್ದ ಆಕಾಶಗಂಗೆಯ ಪ್ರಮುಖ ನಕ್ಷತ್ರವೊಂದು ಎರಡು ಬಾರಿ ಸ್ಫೋಟಗೊಂಡ ಪರಿಣಾಮವಾಗಿ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದು ಖಗೋಳ ಶಾಸ್ತ್ರಜ್ಞರು ವಾಷಿಂಗ್ಟನ್ನಿನಲ್ಲಿ ಬಹಿರಂಗಪಡಿಸಿದರು. 2004 ಮತ್ತು 2006ರಲ್ಲಿ ಈ ನಕ್ಷತ್ರ ಎರಡು ಸಲ ಭಾರಿ ಪ್ರಮಾಣದಲ್ಲಿ ಸ್ಫೋಟಗೊಂಡಿತ್ತು, ಇದು ಸೂರ್ಯನಿಗಿಂತ 50ರಿಂದ 100 ಪಟ್ಟು ದೊಡ್ಡದಾಗಿತ್ತು ಆಂತರಿಕ ಸ್ಫೋಟದ ಕಾರಣ ಇದು ಸಂಪೂರ್ಣವಾಗಿ ನಾಶವಾಗಿದೆ ಎಂದು ಖಗೋಳ ತಜ್ಞರು ನಿಯತಕಾಲಿಕವೊಂದರಲ್ಲಿ ತಿಳಿಸಿದರು.

2007: ಸಾಹಿತಿ ಎಚ್. ವಿ. ನಾಗರಾಜರಾವ್ ಅವರ ಅನುವಾದಿತ ಕೃತಿ `ಸಾರ್ಥ'ವು 2006ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಆಯ್ಕೆಯಾಯಿತು. ಎಸ್.ಎಲ್. ಭೈರಪ್ಪ ಅವರ ಕಾದಂಬರಿ `ಸಾರ್ಥ'ವನ್ನು ನಾಗರಾಜರಾವ್ ಅವರು ಸಂಸ್ಕೃತಕ್ಕೆ ಅನುವಾದಿಸಿದ್ದಾರೆ.
2006: ಒರಿಸ್ಸಾದ ಭೈತರನಿಕಾ ವನ್ಯಪ್ರಾಣಿ ಮತ್ತು ಸಾಗರ ಜೀವಿಗಳ ಧಾಮದಲ್ಲಿನ ಮೊಸಳೆ ಸಂರಕ್ಷಣಾ ಕೇಂದ್ರದಲ್ಲಿ ವಿಶ್ವದಲ್ಲಿಯೇ ಅತಿ ದೊಡ್ಡದಾದ 23 ಅಡಿಗಳಷ್ಟು ಉದ್ದದ ಮೊಸಳೆ ಇರುವುದು ಬೆಳಕಿಗೆ ಬಂತು. ವಿಶ್ವ ವಿಖ್ಯಾತ ವನ್ಯ ಜೀವಿ ಧಾಮದಲ್ಲಿ ನಡೆಸಿದ ಪ್ರಾಣಿಗಳ ಗಣತಿ ಸಂದರ್ಭದಲ್ಲಿ ಇದು ಪತ್ತೆಯಾಗಿದ್ದು, 2006ರ ಸಾಲಿನ ಗಿನ್ನೆಸ್ ದಾಖಲೆಯಲ್ಲೂ ಸೇರ್ಪಡೆಯಾಗಿದೆ ಎಂದು ರಾಜ್ಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಸಿ. ಮೊಹಂತಿ ಈ ದಿನ ಪ್ರಕಟಿಸಿದರು.

2006: ಸುಪ್ರೀಂಕೋರ್ಟ್ ಆದೇಶದ ಮೇರೆಗೆ ದಂಡದ ರೂಪದಲ್ಲಿ ನೈಸ್ ಕಂಪೆನಿಗೆ ರಾಜ್ಯ ಸರ್ಕಾರ ನೀಡಿದ್ದ 5 ಲಕ್ಷ ರೂಪಾಯಿ ಮೊತ್ತದ ಚೆಕ್ ಬೌನ್ಸ್ ಆಯಿತು. ಚೆಕ್ಕನ್ನು ಕೆನರಾ ಬ್ಯಾಂಕಿಗೆ ಡೆಪಾಸಿಟ್ ಮಾಡಲಾಗಿತ್ತು.

2006: ಬಹುಮಹಡಿ ವಾಣಿಜ್ಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ಮಾಡಿಕೊಡುವ ಸಲುವಾಗಿ ಲಾಹೋರ್ ನಗರದಲ್ಲಿದ್ದ ಏಕಮಾತ್ರ ಹಿಂದೂ ದೇವಾಲಯ `ಕೃಷ್ಣ ಮಂದಿರ'ವನ್ನು ಕೆಡವಿ ಹಾಕಲಾಗಿದೆ ಎಂದು ಇಸ್ಲಾಮಾಬಾದಿನ `ಡಾನ್' ವರದಿ ಮಾಡಿತು.

1996: ಜನತಾದಳ ಮುಖಂಡ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರನ್ನು ಆರು ವರ್ಷಗಳ ಅವಧಿಗೆ ಪಕ್ಷದಿಂದ ಉಚ್ಚಾಟಿಸಲಾಯಿತು. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅಧ್ಯಕ್ಷ ಲಾಲು ಪ್ರಸಾದ್ ಅವರು ಈ ಕ್ರಮ ಕೈಗೊಂಡರು.

1966: ಶಂಕಿತ ಅಪರಾಧಿಗಳ ಸಾಂವಿಧಾನಿಕ ಹಕ್ಕುಗಳಿಗೆ ಸಂಬಂಧಿಸಿದಂತೆ ಅಮೆರಿಕದ ಸುಪ್ರೀಂಕೋರ್ಟ್ ಮಿರಾಂಡ ವರ್ಸಸ್ ಅರಿಝೋನಾ ಪ್ರಕರಣದಲ್ಲಿ ಚಾರಿತ್ರಿಕ ತೀರ್ಪು ನೀಡಿತು. ಪೊಲೀಸರು ಪ್ರಶ್ನಿಸುವ ಮುನ್ನ ಶಂಕಿತ ಅಪರಾಧಿಗಳಿಗೆ ಅವರ ಸಾಂವಿಧಾನಿಕ ಹಕ್ಕುಗಳ ಬಗ್ಗೆ ತಿಳಿಸಬೇಕು ಎಂದು ಕೋರ್ಟ್ ಆದೇಶ ನೀಡಿತು. ಈ ತೀರ್ಪಿನ ಪ್ರಕಾರ ಬಂಧಿತ ಅಪರಾಧಿಗಳನ್ನು ಪ್ರಶ್ನಿಸುವ ಮುನ್ನ ಅವರಿಗೆ ಮೌನ ವಹಿಸುವ, ಅವರು ನೀಡುವ ಯಾವುದೇ ಹೇಳಿಕೆಯನ್ನು ಅವರ ವಿರುದ್ಧ ಬಳಸುವ ಸಾಧ್ಯತೆ ಇರುವ ಬಗ್ಗೆ ಹಾಗೂ ಅವರಿಗೆ ಅಟಾರ್ನಿಯೊಬ್ಬರ ಜತೆ ಸಮಾಲೋಚಿಸುವ ಹಕ್ಕು ಇದೆ ಎಂದು ಪೊಲೀಸರು ತಿಳಿಸಬೇಕು. ಈ ತೀರ್ಪು `ಮಿರಾಂಡಾ ವಾರ್ನಿಂಗ್ಸ್' ಎಂದೇ ಖ್ಯಾತಿ ಪಡೆದಿದೆ.

1965: ನಟ, ನಿರ್ದೇಶಕ, ನಾಟಕಕಾರ, ಹಾಸ್ಯ ನಾಟಕಗಳ ಮೂಲಕ ರಾಜ್ಯದಾದ್ಯಂತ ಮನೆ ಮಾತಾಗಿರುವ ಯಶವಂತ ಸರದೇಶಪಾಂಡೆ ಅವರು ಶ್ರೀಧರರಾವ್ ಗೋಪಾಲರಾವ ಸರದೇಶಪಾಂಡೆ- ಕಲ್ಪನಾದೇವಿ ದಂಪತಿಯ ಮಗನಾಗಿ ವಿಜಾಪುರ ಜಿಲ್ಲೆಯ ಬಸವನ ಬಾಗೇವಾಡಿಯ ಉಕ್ಕಲಿಯಲ್ಲಿ ಜನಿಸಿದರು.

1963: ಕಲಾವಿದ ಎಂ. ಗುರುರಾಜ ಜನನ.

1962: ಸಾಹಿತಿ ಸುರೇಶ ಅಂಗಡಿ ಜನನ.

1960: ಕಲಾವಿದ ಶಿವಕುಮಾರ ಆರಾಧ್ಯ ಜನನ.

1959: ಕಲಾವಿದ ಆರ್. ಕೆ. ಪದ್ಮನಾಭ ಜನನ.

1958: ಸಾಹಿತಿ ಜಯರಾಮ ಕಾರಂತ ಜನನ.

1943: ಕಲಾವಿದೆ ಎಂ.ಜೆ. ಕಮಲಾಕ್ಷಿ ಜನನ.

1941: ಸಾಹಿತಿ ಜ.ಹೋ. ನಾರಾಯಣಸ್ವಾಮಿ ಜನನ.

1940: ಜಲಿಯನ್ ವಾಲಾ ಬಾಗ್ ಹತ್ಯಾಕಾಂಡದ ಸಂದರ್ಭದಲ್ಲಿ ಪಂಜಾಬ್ ಗವರ್ನರ್ ಆಗಿದ್ದ ಮೈಕೆಲ್ ಒ'ಡಾಯರ್ ನನ್ನು ಕೊಂದುದಕ್ಕಾಗಿ ಭಾರತದ ಕ್ರಾಂತಿಕಾರಿ ಹೋರಾಟಗಾರ ಊಧಮ್ ಸಿಂಗ್ ಅವರನ್ನು ಲಂಡನ್ನಿನಲ್ಲಿ ಗಲ್ಲಿಗೇರಿಸಲಾಯಿತು.

1908: ಮುಜಾಫರ್ ಪುರ ಬಾಂಬ್ ಸ್ಫೋಟಕ್ಕಾಗಿ ಭಾರತೀಯ ಕ್ರಾಂತಿಕಾರಿ ಹೋರಾಟಗಾರ ಖುದೀರಾಮ್ ಬೋಸ್ ಅವರಿಗೆ ಮರಣದಂಡನೆ ವಿಧಿಸಲಾಯಿತು. ಈ ಬಾಂಬ್ ಸ್ಫೋಟದಲ್ಲಿ ಇಬ್ಬರು ಬ್ರಿಟಿಷ್ ಮಹಿಳೆಯರು ಮೃತರಾಗಿದ್ದರು.

1879: ಖ್ಯಾತ ಕ್ರಾಂತಿಕಾರಿ ಗಣೇಶ ದಾಮೋದರ ಸಾವರ್ಕರ್ ಜನನ.

1858: ಹದಿನೆಂಟನೆಯ ಶತಮಾನದ ಉತ್ತರಾರ್ಧದಲ್ಲಿ ಕನ್ನಡಕ್ಕಾಗಿ ದುಡಿಯವುದರೊಂದಿಗೆ ಸಮಾಜ ಸೇವೆಯನ್ನೂ ಕೈಂಕರ್ಯವನ್ನಾಗಿ ಮಾಡಿಕೊಂಡಿದ್ದ ಬುದ್ಧಯ್ಯ ಪುರಾಣಿಕ (13-6-1858ರಿಂದ 4-5-1959) (ಪೂರ್ಣ ಹೆಸರು ಶಿವಮೂರ್ತಿ ಬುದ್ಧಯ್ಯ ಸ್ವಾಮಿ ಮಗಿಪ್ರಭುದೇವ ಪುರಾಣಿಕ) ಅವರು ಮಗಿ ಪ್ರಭುದೇವರು-ಲಿಂಗಮ್ಮ ದಂಪತಿಯ ಪುತ್ರನಾಗಿ ವಿಜಾಪುರ ಜಿಲ್ಲೆಯ ತೇರದಾಳದಲ್ಲಿ ಈದಿನ ಜನಿಸಿದರು. ಕನ್ನಡ, ಮರಾಠಿ, ಇಂಗ್ಲಿಷ್, ಸಂಸ್ಕೃತದಲ್ಲಿವಿಶೇಷ ಪಾಂಡಿತ್ಯ ಹೊಂದಿದ್ದ ಪುರಾಣಿಕ ಕನ್ನಡ ಹಾಗೂ ಮರಾಠಿಯಲ್ಲಿ ಹಲವಾರು ಕೃತಿಗಳನ್ನು ರಚಿಸಿದರು.

1842: ರಾಣಿ ವಿಕ್ಟೋರಿಯಾ ಮತ್ತು ರಾಜಕುಮಾರ ಆಲ್ಬರ್ಟ್ ಸ್ಲೌಗ್ ನಿಂದ ಪ್ಯಾಡ್ಡಿಂಗ್ಟನ್ ವರೆಗೆ ಗ್ರೇಟ್ ವೆಸ್ಟರ್ನ್ ರೈಲ್ವೇಯಲ್ಲಿ ಪ್ರಯಾಣ ಮಾಡಿದರು. ಈ ರೀತಿ ಪ್ರಯಾಣಕ್ಕೆ ರೈಲುಗಾಡಿಯನ್ನು ಬಳಸಿದ ಮೊದಲ ಬ್ರಿಟಿಷ್ ರಾಣಿ ಇವರು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

No comments:

Advertisement