My Blog List

Sunday, June 29, 2008

ಇಂದಿನ ಇತಿಹಾಸ History Today ಜೂನ್ 24

ಇಂದಿನ ಇತಿಹಾಸ

ಜೂನ್ 24

ಅಂದಾಜು 1.20 ಕೋಟಿ ಯೂರೋ ವೆಚ್ಚದಲ್ಲಿ ನವೀಕರಣಗೊಂಡ ಫ್ರಾನ್ಸಿನ ಪ್ಯಾರಿಸ್ ಸಮೀಪದ `ಹಾಲ್ ಆಫ ಮಿರರ್ಸ್' ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಂಡಿತು. ಫ್ರೆಂಚ್ ಕಲಾವಿದ ಚಾರ್ಲ್ಸ್ ಲೀ ಬ್ರುನ್ (1619-1690) ಕಲಾಕೃತಿಗಳು ಇಲ್ಲಿವೆ.

2007: ಕರ್ನಾಟಕ ಮತ್ತು ಮಹಾರಾಷ್ಟ್ರದ ಕೆಲವು ಭಾಗ ಸೇರಿದಂತೆ 4 ರಾಜ್ಯಗಳಲ್ಲಿ ಮುಂದುವರೆದ ಮಳೆಯ ಅಬ್ಬರಕ್ಕೆ ಒಟ್ಟು 130ಕ್ಕಿಂತಲೂ ಹೆಚ್ಚು ಮಂದಿ ಅಸು ನೀಗಿದರು. ಆಂಧ್ರಪ್ರದೇಶ, ಕೇರಳದಲ್ಲಿಪರಿಸ್ಥಿತಿ ಸ್ವಲ್ಪ ಸುಧಾರಿಸಿತು.

2007: ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟ ಅವರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ ಹೆಗ್ಡೆ ಅವರು ಬೆಂಗಳೂರಿನಲ್ಲಿ `ಮಾಸ್ತಿ' ಪ್ರಶಸ್ತಿ ಪ್ರದಾನ ಮಾಡಿದರು.

2007: 1980ರಲ್ಲಿ ತಮ್ಮ ವೈರಿಗಳನ್ನು ಕೊಲ್ಲುವ ಆಂದೋಲನದಲ್ಲಿ 1.80 ಲಕ್ಷ ಕುರ್ದ್ ಜನರನ್ನು ಕೊಂದ ಆರೋಪಕ್ಕೆ ಗುರಿಯಾಗಿದ್ದ `ಕೆಮಿಕಲ್ ಅಲಿ' ಎಂದೇ ಕುಖ್ಯಾತಿ ಪಡೆದ ಸದ್ದಾಂ ಹುಸೇನ್ ಸೋದರ ಸಂಬಂಧಿ ಅಲಿ ಹಸನ್ ಅಲ್ ಮಜಿದ್, ಸುಲ್ತಾನ್ ಹಷೀಮ್ ಅಹ್ಮದ್ ಮತ್ತು ಹುಸೇನ್ ರಷೀದ್ ಅಹ್ಮದ್ ಅವರಿಗೆ ನ್ಯಾಯಾಧೀಶ ಮಹಮ್ಮದ್ ಒರೈಬಿ ಅಲ್ - ಖಲೀಫ ಮರಣ ದಂಡನೆ ವಿಧಿಸಿದರು. 140 ಶಿಯಾ ಮುಸ್ಲಿಮರನ್ನು ಕೊಂದ ಮತ್ತು 1982ರ ಹತ್ಯೆಗಳ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿತರಾದ ಸದ್ದಾಂ ಹುಸೇನರನ್ನು 2006ರ ಡಿಸೆಂಬರ್ 30ರಂದು ಗಲ್ಲಿಗೇರಿಸಲಾಗಿತ್ತು.

2007: ಪಾಕಿಸ್ಥಾನದ ಬಂದರು ನಗರ ಕರಾಚಿ ಭಾರಿ ಮಳೆ ಹಾಗೂ ಬಿರುಗಾಳಿಯಿಂದ ತತ್ತರಿಸಿತು. ವಿವಿಧ ರೀತಿಯ ಅನಾಹುತಗಳಿಂದ ಒಟ್ಟು 220 ಮಂದಿ ಮೃತರಾಗಿ, ಹಲವರು ಗಾಯಗೊಂಡರು. ವಿದ್ಯುತ್ ವ್ಯವಸ್ಥೆ, ಜನಜೀವನ ಅಸ್ತವ್ಯಸ್ತಗೊಂಡಿತು.

2007: ಅಂದಾಜು 1.20 ಕೋಟಿ ಯೂರೋ ವೆಚ್ಚದಲ್ಲಿ ನವೀಕರಣಗೊಂಡ ಫ್ರಾನ್ಸಿನ ಪ್ಯಾರಿಸ್ ಸಮೀಪದ `ಹಾಲ್ ಆಫ ಮಿರರ್ಸ್' ಸಾರ್ವಜನಿಕರ ಪ್ರವೇಶಕ್ಕೆ ಮುಕ್ತಗೊಂಡಿತು. ಫ್ರೆಂಚ್ ಕಲಾವಿದ ಚಾರ್ಲ್ಸ್ ಲೀ ಬ್ರುನ್ (1619-1690) ಕಲಾಕೃತಿಗಳು ಇಲ್ಲಿವೆ. ಸ್ಥಾಪನೆಯಾಗಿ 300 ವರ್ಷಗಳ ಬಳಿಕ ಫ್ರಾನ್ಸಿನ ಮುಂಚೂಣಿಯ ರಿಯಲ್ ಎಸ್ಟೇಟ್ ಕಂಪೆನಿ ಮಿಂಚಿ `ಹಾಲ್ ಆಫ್ ಮಿರರ್ಸ್' ನವೀಕರಣದ ಹೊಣೆ ಹೊತ್ತಿತ್ತು.

2007: ಕೆನಡಾದಲ್ಲಿ ನೆಲೆಸಿದ ಬೆಂಗಳೂರು ಮೂಲದ ವೈದ್ಯೆ ಡಾ.ಶೀಲಾ ಬಸ್ರೂರು ಅವರನ್ನು, ಸಾರ್ವಜನಿಕ ಕ್ಷೇತ್ರಕ್ಕೆ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ಅಲ್ಲಿನ ಸರ್ಕಾರವು `ಕೆನಡಾ ಪ್ರಶಸ್ತಿ'ಗೆ ಆಯ್ಕೆ ಮಾಡಿತು.

2006: ಮಾನವ ಹಕ್ಕುಗಳ ಖ್ಯಾತ ಹೋರಾಟಗಾರ ಸ್ವಾಮಿ ಅಗ್ನಿವೇಶ್ ಅವರು `ವಿಜಿಲ್ ಇಂಡಿಯಾ ಮೂವ್ ಮೆಂಟ್' ಸಂಸ್ಥೆಯ `ಎಮ್. ಎ. ಥಾಮಸ್ ರಾಷ್ಟ್ರೀಯ ಮಾನವ ಹಕ್ಕು 2006' ಪ್ರಶಸ್ತಿಗೆ ಆಯ್ಕೆಯಾದರು. ನ್ಯಾಯಮೂರ್ತಿ ವಿ.ಆರ್. ಕೃಷ್ಣ ಅಯ್ಯರ್(1998), ಮೇಧಾ ಪಾಟ್ಕರ್(1999), ನ್ಯಾಯಮೂರ್ತಿ ವಿ. ಎಂ.ತಾರ್ಕುಂಡೆ (2000) ಇವರು ಈ ಹಿಂದೆ ಈ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದರು.

2006: ಬೆಂಗಳೂರಿನ ಬಹು ನಿರೀಕ್ಷಿತ, ಮಹತ್ವಾಕಾಂಕ್ಷೆಯ `ನಮ್ಮ ಮೆಟ್ರೋ' ಯೋಜನೆಗೆ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಈದಿನ ಬೆಂಗಳೂರಿನ ಪೆರೇಡ್ ಮೈದಾನದಲ್ಲಿ ಶಿಲಾನ್ಯಾಸ ನೆರವೇರಿಸಿದರು.

2002: ರಷ್ಯದ ವ್ಲಾಡಿಮೀರ್ ಕ್ರಾಮ್ನಿಕ್ ಅವರು ಲಿಯೋನಿನಲ್ಲಿ ನಡೆದ ಸ್ಪರ್ಧೆಯಲ್ಲಿ ಭಾರತದ ವಿಶ್ವನಾಥನ್ ಆನಂದ್ ಅವರನ್ನು ಸೋಲಿಸುವ ಮೂಲಕ `ಅಡ್ವಾನ್ಸ್ಡ್ ಚೆಸ್' ಪ್ರಶಸ್ತಿಯನ್ನು ತಮ್ಮ ಬಗಲಿಗೆ ಹಾಕಿಕೊಂಡರು. `ಅಡ್ವಾನ್ಸ್ಡ್ ಚೆಸ್' ಎಂಬುದು ಗ್ಯಾರಿ ಕ್ಯಾಸ್ಪರೋವ್ ಅವರ ಸಂಶೋಧನೆಯಾಗಿದ್ದು ಇದರಲ್ಲಿ ಕಂಪ್ಯೂಟರ್ ನೆರವಿನೊಂದಿಗೆ `ಮೋಸ ಮಾಡಲು' ಅಧಿಕೃತವಾಗಿ ಅನುಮತಿ ನೀಡಲಾಗಿದೆ.

1980: ಭಾರತದ ಮಾಜಿ ರಾಷ್ಟ್ರಪತಿ ವಿ.ವಿ. ಗಿರಿ ಅವರು ತಮ್ಮ 85ನೇ ವಯಸ್ಸಿನಲ್ಲಿ ತಮಿಳ್ನಾಡಿನ ಮದ್ರಾಸಿನಲ್ಲಿ (ಈಗಿನ ಚೆನ್ನೈ) ನಿಧನರಾದರು.

1974: ಇಂಗ್ಲೆಂಡಿನ ಲಾರ್ಡ್ಸ್ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಭಾರತವು ಎರಡನೇ ಇನ್ನಿಂಗ್ಸ್ ನಲ್ಲಿ 42 ರನ್ ಗಳಿಗೆ ಆಲೌಟ್ ಆಗಿ ಅತ್ಯಂತ ಹೀನಾಯ ಸೋಲು ಅನುಭವಿಸಿತು. ಇದು ಟೆಸ್ಟ್ ಕ್ರಿಕೆಟಿನಲ್ಲಿ ಭಾರತದ ಅತ್ಯಂತ ಕಡಿಮೆ ಮೊತ್ತದ ಇನ್ನಿಂಗ್ಸ್.

1966: ಕಲಾವಿದ ಪ್ರಕಾಶ ಕೆ. ನಾಯ್ಡು ಜನನ.1949: ಕಲಾವಿದ ಚಂದ್ರಕುಮಾರ ಸಿಂಗ್ ಜನನ.

1935: ಕಲಾವಿದ ಬಳ್ಳಾರಿ ಎಂ. ಶೇಷಗಿರಿ ಆಚಾರ್ಯ ಜನನ.

1924: ಕರ್ನಾಟಕದಲ್ಲಿ ನಶಿಸುತ್ತಿರುವ ರಥ ನಿರ್ಮಾಣ ಸಂತತಿಯ ನಾಲ್ಕೈದು ಕುಟುಂಬ ವರ್ಗದವರಲ್ಲಿ ಒಬ್ಬರಾದ ರಥ ಶಿಲ್ಪಿ ಪರಮೇಶ್ವರಾಚಾರ್ಯ ಅವರು ಮಾನಾಚಾರ್ಯರು- ವೀರಮ್ಮ ದಂಪತಿಯ ಮಗನಾಗಿ ಹೊಳಲ್ಕೆರೆ ತಾಲ್ಲೂಕಿನ ನೂಲೇನೂರಿನಲ್ಲಿ ಜನಿಸಿದರು.

1915: ಬ್ರಿಟಿಷ್ ಗಣಿತ ಹಾಗೂ ಖಗೋಳ ತಜ್ಞ ಸರ್ ಫ್ರೆಡ್ ಹೊಯ್ಲ್ ಜನ್ಮದಿನ. ಇವರು ತಮ್ಮ `ವಿಶ್ವ ವಿಕಸನ ಸಿದ್ಧಾಂತ'ಕ್ಕಾಗಿ ಖ್ಯಾತಿ ಪಡೆದಿದ್ದಾರೆ. ಇವರ ಸಿದ್ಧಾಂತದ ಪ್ರಕಾರ ವಿಶ್ವವು ವಿಕಸಿಸುತ್ತಿದೆ ಹಾಗೂ ಈ ವಿಕಸನದಿಂದ ಉಂಟಾಗುವ ಶೂನ್ಯವನ್ನು ತುಂಬಿ ಆಕಾಶದಲ್ಲಿನ ದ್ರವ್ಯದ ಸಾಂದ್ರತೆಯನ್ನು ನಿರಂತರವಾಗಿ ಇರಿಸಲು ಹೊಸ ದ್ರವ್ಯ ಸೃಷ್ಟಿಯಾಗುತ್ತಿರುತ್ತದೆ.

1885: ಅಕಾಲಿದಳದ ನಾಯಕ ಮಾಸ್ಟರ್ ತಾರಾಸಿಂಗ್ (1885-1967) ಜನ್ಮದಿನ. ಸಿಖ್ಖರ ರಾಜಕೀಯ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆಯಾಗದಂತಹ ಪಂಜಾಬಿ ಭಾಷಿಕರ ರಾಜ್ಯ ಸ್ಥಾಪನೆಯಾಗಬೇಕು ಎಂದು ಚಳವಳಿ ಹೂಡಿದ ಸಿಖ್ ಧುರೀಣರಿವರು. 1966ರಲ್ಲಿ ಈಗಿನ ಪಂಜಾಬ್ ರಾಜ್ಯ ರಚನೆಯೊಂದಿಗೆ ಅವರ ಕನಸು ನನಸಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

No comments:

Advertisement