My Blog List

Thursday, December 3, 2009

ಇಂದಿನ ಇತಿಹಾಸ History Today ನವೆಂಬರ್ 15

ಇಂದಿನ ಇತಿಹಾಸ

ನವೆಂಬರ್ 15

ರಾಜ್ಯದ 17 ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರೈತರನ್ನು ತರಕಾರಿ ಮತ್ತು ಹಣ್ಣುಗಳ ಸಂಸ್ಕರಣಾ ತಂತ್ರಜ್ಞಾನದತ್ತ ಆಕರ್ಷಿಸಲು  ಜಿಕೆವಿಕೆ ಆವರಣದಲ್ಲಿ ನಡೆದ  ಕೃಷಿ  ಮೇಳದಲ್ಲಿ  ರಾಜ್ಯ ಸರ್ಕಾರದ ನೆರವಿನಿಂದ ತರಕಾರಿ ಮತ್ತು ಹಣ್ಣು ಸಂಸ್ಕರಣಾ ತರಬೇತಿ ಕೇಂದ್ರವನ್ನು ಸ್ಥಾಪಿಸಿತು. ಈ ಘಟಕದಲ್ಲಿ ಬೆಟ್ಟದ ನೆಲ್ಲಿಕಾಯಿ ಶರಬತ್ತು, ಪುನರ್ಪುಳಿ ಮತ್ತು ಪರಂಗಿಹಣ್ಣಿನ ಜ್ಯೂಸ್ ತಯಾರಿಸಿ, ರೈತರಿಗೆ ರುಚಿ ತೋರಿಸಿತು.

2008: 2007ರ  ಫೆಬ್ರುವರಿ 17 ರಂದು 68 ಜನರ ಸಾವಿಗೆ ಕಾರಣವಾದ  ಸಂಜೋತಾ ಎಕ್ಸ್ಪ್ರೆಸ್ ರೈಲು ಸ್ಫೋಟ ಮತ್ತು  ಸೆಪ್ಟಂಬರ್ 29ರಂದು 6 ಜನರ ಸಾವಿಗೆ ಕಾರಣವಾದ ಮಾಲೆಗಾಂವ್ ಸ್ಫೋಟಗಳಲ್ಲಿ ಬಳಸಲಾದ ಆರ್ಡಿಎಕ್ಸನ್ನು ಸೇನಾ ಅಧಿಕಾರಿ ಲೆಪ್ಟಿನೆಂಟ್  ಕರ್ನಲ್ ಪಿ. ಎಸ್ ಪುರೋಹಿತ್ ಒದಗಿಸಿದ್ದರು ಎಂಬುದಾಗಿ ಪೊಲೀಸರು ನಾಸಿಕ್  ನ್ಯಾಯಾಲಯಕ್ಕೆ ತಿಳಿಸಿದರು.

2008: ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಈದಿನ ಹಾರಿಬಿಡಲಾದ ಎಂಡೀವರ್' ನೌಕೆಯ ವಿಜ್ಞಾನಿಗಳು ಕುಡಿಯುವ ಸಲುವಾಗಿ ಮೂತ್ರವನ್ನು  ಸಂಸ್ಕರಿಸುವ  ಹೊಸ ಸಲಕರಣೆಯನ್ನು ಮನುಕುಲಕ್ಕೆ ನೀಡಿದರು. ಮೂತ್ರವನ್ನು ಸಂಸ್ಕರಿಸಿ ಕುಡಿಯಲು ಯೋಗ್ಯವಾಗುವ, ಮರುಬಳಕೆಯ ನೀರನ್ನು ಈ ಉಪಕರಣ ತಯಾರಿಸುವುದು. ಬಾಹ್ಯಾಕಾಶದಲ್ಲಿ ಗಗನ ಯಾತ್ರಿಗಳ ಮೂತ್ರವನ್ನೇ ಕುಡಿಯುವ ನೀರಾಗಿ ಶುದ್ಧೀಕರಿಸುವ  ಘಟಕ ಎಂಡೀವರ್ ನೌಕೆಯಲ್ಲಿ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ ಎಂದು ನಾಸಾ ವಿಜ್ಞಾನಿಗಳು ಪ್ರಕಟಿಸಿದರು.  ಮೂತ್ರವನ್ನು ಸಂಸ್ಕರಿಸಿ ಕುಡಿಯಲು ಯೋಗ್ಯವಾಗುವ, ಮರುಬಳಕೆಯ ನೀರನ್ನು ತಯಾರಿಸುವ ಮಹತ್ವದ ಪ್ರಯತ್ನ ಬಾಹ್ಯಾಕಾಶ ಸಂಚಾರದಲ್ಲಿ ಇದೇ ಪ್ರಥಮ. ಆದರೆ ಇದು ದುಬಾರಿ  ವಿಧಾನ. ಈ ಸಲಕರಣೆ ಪ್ರತಿದಿನ 23 ಲೀಟರುಗಳಷ್ಟು  (6 ಗ್ಯಾಲನ್) ಮೂತ್ರವನ್ನು  ಶುದ್ಧೀಕರಿಸುವ ಸಾಮರ್ಥ್ಯ ಹೊಂದಿದೆ. ನೌಕೆಯಲ್ಲಿ ಈ ಕಾರ್ಯ ಯಶಸ್ವಿಯಾಗಿದೆ. ಇದರೊಂದಿಗೆ ಬಾಹ್ಯಾಕಾಶ ಕೇಂದ್ರದಲ್ಲಿ ಅವಶ್ಯವಿರುವ ನೀರಿನ ಶೇಕಡ 92 ಭಾಗವನ್ನು ಪೂರೈಸಲು ಸಾಧ್ಯ .

2008: ರಾಜ್ಯದ 17 ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ರೈತರನ್ನು ತರಕಾರಿ ಮತ್ತು ಹಣ್ಣುಗಳ ಸಂಸ್ಕರಣಾ ತಂತ್ರಜ್ಞಾನದತ್ತ ಆಕರ್ಷಿಸಲು  ಜಿಕೆವಿಕೆ ಆವರಣದಲ್ಲಿ ನಡೆದ  ಕೃಷಿ  ಮೇಳದಲ್ಲಿ  ರಾಜ್ಯ ಸರ್ಕಾರದ ನೆರವಿನಿಂದ ತರಕಾರಿ ಮತ್ತು ಹಣ್ಣು ಸಂಸ್ಕರಣಾ ತರಬೇತಿ ಕೇಂದ್ರವನ್ನು ಸ್ಥಾಪಿಸಿತು. ಈ ಘಟಕದಲ್ಲಿ ಬೆಟ್ಟದ ನೆಲ್ಲಿಕಾಯಿ ಶರಬತ್ತು, ಪುನರ್ಪುಳಿ ಮತ್ತು ಪರಂಗಿಹಣ್ಣಿನ ಜ್ಯೂಸ್ ತಯಾರಿಸಿ, ರೈತರಿಗೆ ರುಚಿ ತೋರಿಸಿತು. ಈ ಕೇಂದ್ರದ ಮೂಲಕ ತರಕಾರಿ ಮತ್ತು ಹಣ್ಣುಗಳ ಸಂಸ್ಕರಣಾ ಡಿಪ್ಲೊಮಾ ಪದವಿ ತರಗತಿ ಆರಂಭಿಸಲು ಉದ್ದೇಶಿಸಿರುವುದಾಗಿ ಕೃಷಿ ವಿವಿ ಪ್ರಕಟಿಸಿತು. ಹೆಚ್ಚು ಶಿಕ್ಷಣ ಪಡೆಯದ ರೈತರು ಮತ್ತು ಸ್ತ್ರೀಶಕ್ತಿ ಸ್ವಸಹಾಯ ಗುಂಪುಗಳ ಸದಸ್ಯರಿಗೂ ಇದೇ ಕೇಂದ್ರದಲ್ಲಿ ಒಂದು ವಾರ ಅವಧಿಯ ತರಬೇತಿ ನೀಡಿ, ರೈತರನ್ನು ತಾವೇ ಬೆಳೆದ ಹಣ್ಣು ಮತ್ತು ತರಕಾರಿಯ ಸಂಸ್ಕರಣೆಗೆ ಸಜ್ಜುಗೊಳಿಸಲು ಉದ್ದೇಶಿಸಲಾಗಿದೆ ಎಂದು ವಿವಿ ಹೇಳಿತು. ಹಣ್ಣುಗಳ ಉತ್ಪಾದನೆಯಲ್ಲಿ ಭಾರತ ಜಗತ್ತಿನಲ್ಲೇ ಮೊದಲ ಸ್ಥಾನದಲ್ಲಿದೆ. ತರಕಾರಿಯಲ್ಲಿ ಎರಡನೇ ಸ್ಥಾನ. ಆದರೆ ಸಂಸ್ಕರಣೆಯಲ್ಲಿ ತೀರಾ ಕೆಳ ಹಂತದಲ್ಲಿದೆ. ಕೇವಲ ಶೇ 1.5ರಷ್ಟು ಉತ್ಪನ್ನಗಳು ಮಾತ್ರ ಸಂಸ್ಕರಣೆಗೆ ಒಳಪಡುತ್ತಿವೆ. ಇದು ದೇಶದ ರೈತರು ತೀವ್ರ ನಷ್ಟ ಅನುಭವಿಸಲು ಕಾರಣ ಎಂಬುದು ವಿವಿ  ವಿಶ್ಲೇಷಣೆ..

2008: ಸೋಮಾಲಿಯಾ ಹಡಗುಗಳ್ಳರು ಎರಡು ತಿಂಗಳ ಹಿಂದೆ ಅಪಹರಿಸಿದ್ದ ಸ್ಟಾಲ್ಟ್ ವೇಲರ್ ಹಡಗಿನಿಂದ 18 ಭಾರತೀಯರು ಸೇರಿದಂತೆ 22 ಜನರನ್ನು ಈದಿನ ಬೆಳಿಗ್ಗೆ ಬಿಡುಗಡೆ ಮಾಡಿದರು.

2007: ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಡಿಸೆಂಬರಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಮತದಾನಕ್ಕಿಂತ 48 ಗಂಟೆಗಳ ಮುಂಚೆ ಅಭ್ಯರ್ಥಿಗಳು ಮೊಬೈಲಿನ ಎಸ್ ಎಂ ಎಸ್ (ಸಂಕ್ಷಿಪ್ತ ಸಂದೇಶ) ಕಳುಹಿಸಿ ಪ್ರಚಾರ ಮಾಡುವುದನ್ನು ಚುನಾವಣಾ ಆಯೋಗ ನಿಷೇಧಿಸಿತು. ಮತದಾನಕ್ಕಿಂತ 48 ಗಂಟೆಗಳ ಮುಂಚೆ ಅಭ್ಯರ್ಥಿಗಳು ತಮ್ಮ ಮೊಬೈಲಿನಿಂದ ಸಂದೇಶ ಕಳುಹಿಸಿ ಪ್ರಚಾರ ಮಾಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಯಿತು. ಮತದಾನ ಸಮಯದಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಚುನಾವಣಾ ಆಯೋಗ ಈ ನೂತನ ಕ್ರಮವನ್ನು ಮೊತ್ತ ಮೊದಲ ಬಾರಿಗೆ ಕಂಡುಕೊಂಡಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಎನ್. ಗೋಪಾಲಸ್ವಾಮಿ ತಿಳಿಸಿದರು.

2007: ಗುಲ್ಬರ್ಗ ನಗರದ ಪ್ರತಿಷ್ಠಿತ ಎಂ.ಆರ್. ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ, ಖ್ಯಾತ ವೈದ್ಯ ಸಾಹಿತಿಯೂ ಆಗಿರುವ ಡಾ.ಪಿ.ಎಸ್. ಶಂಕರ್ ಅವರಿಗೆ `ನ್ಯಾಶನಲ್ ಕಾಲೇಜ್ ಆಫ್ ಚೆಸ್ಟ್ ಫಿಜಿಶಿಯನ್ಸ್' ಜೀವಮಾನ ಸಾಧನೆಯ ಪ್ರಶಸ್ತಿಯನ್ನು ಘೋಷಿಸಿತು. 50 ವರ್ಷಗಳ ಇತಿಹಾಸ ಹೊಂದಿರುವ ಈ ಸಂಸ್ಥೆಯು ಎದೆ ರೋಗಗಳ ನಿದಾನ, ಶುಶ್ರೂಷೆಯಲ್ಲಿ ಸಾಧನೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಘೋಷಿಸಿದ್ದು, 1999ರ ನಂತರ ಈ ಪ್ರಶಸ್ತಿಗೆ ಪಾತ್ರರಾದವರ ಪೈಕಿ ದೇಶದಲ್ಲೇ ಎರಡನೆಯವರು ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು. ಡಾ. ಪಿ.ಎಸ್. ಶಂಕರ್ ಅವರು ಚೆಸ್ಟ್ ಸೊಸೈಟಿ ಮತ್ತು ನ್ಯಾಷನಲ್ ಕಾಲೇಜ್ ಆಫ್ ಚೆಸ್ಟ್ ಫಿಜಿಶಿಯನ್ಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದವರು. ದೆಹಲಿಯ ಪಟೇಲ್ ಚೆಸ್ಟ್ ಇನ್ಸ್ಟಿಟ್ಯೂಟಿನಲ್ಲಿ ಅಧ್ಯಯನ ನಡೆಸಿ, ನಂತರ ಕಾಮನ್ ವೆಲ್ತ್ ಮೆಡಿಕಲ್ ಫೆಲೋ ಆಗಿ ಲಂಡನ್ನಿನ ಬ್ರಾಮ್ ಟನ್ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.

2007: ಸೇವೆ ಕಾಯಂಗೆ ಒತ್ತಾಯಿಸಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಇಬ್ಬರ ಸಾವಿಗೆ ಕಾರಣರಾದ ನಗರದ ಬಿಪಿಎಲ್ ಎಂಜಿನಿಯರಿಂಗ್ ಲಿಮಿಟೆಡ್ ಕಾರ್ಮಿಕ ಸಂಘದ 12 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿತು. 1998ರಲ್ಲಿ ನಡೆದ ಈ ಘಟನೆಯಲ್ಲಿ ಶಿಕ್ಷೆಗೆ ಒಳಗಾದವರು ಕಂಪೆನಿಗೆ ಸೇರಿದ ಬಸ್ಸಿಗೆ ಬೆಂಕಿ ಹಚ್ಚಿ, ಅದರ ಒಳಗಿದ್ದ ಸಿಬ್ಬಂದಿ ತಪ್ಪಿಸಿಕೊಂಡು ಹೋಗದಂತೆ ಮಾಡಿದ್ದರಿಂದಾಗಿ ಇಬ್ಬರು ಸಾವನ್ನಪ್ಪಿ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. 49 ಆರೋಪಿಗಳ ಪೈಕಿ ಸೆಷನ್ಸ್ ಕೋರ್ಟಿನಿಂದ ಅಕ್ಟೋಬರ್ 13ರಂದು ಆರೋಪ ಮುಕ್ತಗೊಂಡಿದ್ದ ಸಿ.ಮಗೇಶ್, ಪಿ.ಎ.ಭರತ್ ಕುಮಾರ್, ಎಡ್ವಿನ್ ನೋಯಲ್, ಎಸ್.ಬಾಬು, ನಾಗರಾಜ್ (ಎಲ್ಲರೂ 20 ರಿಂದ 25 ವರ್ಷ ವಯಸ್ಸಿನವರು) ಅವರಿಗೆ ನ್ಯಾಯಮೂರ್ತಿಗಳಾದ ಕೆ.ಶ್ರೀಧರರಾವ್ ಹಾಗೂ ರವಿ ಬಿ.ನಾಯಕ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಜೀವಾವಧಿ ಶಿಕ್ಷೆ ವಿಧಿಸಿತು. ಈ ಆರೋಪಿಗಳನ್ನು ಖುಲಾಸೆ ಮಾಡಿದ್ದ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪೀಠ ಮಾನ್ಯ ಮಾಡಿತು. ಕೊಲೆಗೆ ಕಾರಣರಾದ ಕಾರ್ಮಿಕರ ಒಕ್ಕೂಟದ ಅಧ್ಯಕ್ಷ ಆರ್. ಶ್ರೀನಿವಾಸ, ಕಾರ್ಯದರ್ಶಿ ಟಿ.ಕೆ.ಎಸ್.ಕುಟ್ಟಿ ಹಾಗೂ ಇತರ ಪದಾಧಿಕಾರಿಗಳಾದ ಎನ್.ವಿ.ರವಿ, ಆರ್.ರಮೇಶ್, ಧರಣೇಶ್ ಕುಮಾರ್, ಎಸ್.ಜಗದೀಶ ಹಾಗೂ ಶರತ್ಕುಮಾರ್ ಅವರಿಗೆ ಸೆಷನ್ಸ್ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಪೀಠ ಊರ್ಜಿತಗೊಳಿಸಿತು.

2007: ಗ್ವಾಲಿಯರಿನಲ್ಲಿ ಪಾಕಿಸ್ಥಾನ ತಂಡದ ವಿರುದ್ಧದ ಇಂಡಿಯನ್ ಆಯಿಲ್ ಕಪ್ ಏಕದಿನ ಕ್ರಿಕೆಟ್ ಸರಣಿಯ ನಾಲ್ಕನೇ ಪಂದ್ಯವನ್ನು ಆರು ವಿಕೆಟ್ಟುಗಳ ಅಂತರದಿಂದ ಜಯಿಸಿದ ಭಾರತ ಇನ್ನೂ ಒಂದು ಪಂದ್ಯ ಉಳಿದಿರುವಂತೆ ಸರಣಿಯನ್ನು 3-1ರಿಂದ ತನ್ನದಾಗಿಸಿಕೊಂಡಿತು.

2006: ಸಾರ್ವತ್ರಿಕ ಲಸಿಕಾ ಕಾರ್ಯಕ್ರಮವನ್ನು ಜನಪ್ರಿಯಗೊಳಿಸಲು ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರಿಗೆ ಲಂಡನ್ನಿನ ಅಂತಾರಾಷ್ಟ್ರೀಯ ಲಸಿಕಾ ಕಾರ್ಯಕ್ರಮದ ಅನುದಾನ ಸಂಸ್ಥೆಯು ವಿಶೇಷ ಪ್ರಮಾಣಪತ್ರ ನೀಡಿ ಗೌರವಿಸಿತು. ಈ ವಿಶೇಷ ಪ್ರಮಾಣಪತ್ರ ಪಡೆಯುತ್ತಿರುವ ಮೊದಲ ಭಾರತೀಯ ಹಾಗೂ ವಿಶ್ವದ 6ನೇ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಬಚ್ಚನ್ ಪಾತ್ರರಾದರು. ಬಚ್ಚನ್ ಅವರು ಭಾರತದಲ್ಲಿ ಯುನಿಸೆಫ್ ಮತ್ತು ಪಲ್ಸ್ ಪೋಲಿಯೊ ಲಸಿಕೆ ನೀಡಿಕೆ ಕಾರ್ಯಕ್ರಮಗಳ ಪ್ರಚಾರದ ರಾಯಭಾರಿಯಾಗಿದ್ದಾರೆ.

2006: ಸಚಿನ್ ತೆಂಡೂಲ್ಕರ್ ಮತ್ತು ವಿನೋದ್ ಕಾಂಬ್ಳಿ ಅವರ ಎರಡು ದಶಕಗಳ ಹಿಂದಿನ ಬ್ಯಾಟಿಂಗ್ ಜೊತೆಯಾಟದ ವಿಶ್ವದಾಖಲೆಯನ್ನು ಹೈದರಾಬಾದ್ ಸೇಂಟ್ ಪೀಟರ್ಸ್ ಶಾಲೆಯ ಬಿ. ಮನೋಜ್ ಕುಮಾರ್ ಮತ್ತು ಮೊಹಮ್ಮದ್ ಶಾಯ್ ಬಾಜ್ ತಂಬಿ ಮುರಿದರು. ಸೇಂಟ್ ಪೀಟರ್ಸ್ ಶಾಲೆಯ ವಿರುದ್ಧ ಸಿಕಂದರಾಬಾದ್ ಪೆರೇಡ್ ಮೈದಾನದಲ್ಲಿ ನಡೆದ ಅಂತರಶಾಲಾ ಪಂದ್ಯದಲ್ಲಿ ಈ ಜೋಡಿ ಮುರಿಯದ ಮೊದಲ ವಿಕೆಟ್ ಜೊತೆಯಾಟಕ್ಕೆ 721 ರನ್ ಕಲೆ ಹಾಕಿತು. ಇದರಿಂದಾಗಿ 1987-88ರ ಸಾಲಿನಲ್ಲಿ ಸಚಿನ್ ಮತ್ತು ಕಾಂಬ್ಳಿ ಶಾರದಾಶ್ರಮ ಶಾಲೆಯ ಪರ ಮುರಿಯದ 3ನೇ ವಿಕೆಟ್ಟಿಗೆ ಸೇರಿಸಿದ್ದ 664 ರನ್ನುಗಳ ದಾಖಲೆಯನ್ನು ಈ ಜೋಡಿ ಮುರಿದಂತಾಯಿತು.

2005: ಬೆಂಗಳೂರಿನ ಪ್ರಾರ್ಥನಾ ಎಜುಕೇಷನ್ ಸೊಸೈಟಿ'ಯು 2004ರ ಸಾಲಿನ ಕಂಪ್ಯೂಟರ್ ಲಿಟರೆಸಿ ಎಕ್ಸಲೆನ್ಸ್ ಅವಾರ್ಡ್ ಫಾರ್ ಸ್ಕೂಲ್ಸ್' ಪ್ರಶಸ್ತಿಗೆ ಆಯ್ಕೆಯಾಯಿತು. ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಪ್ರತಿವರ್ಷ ನೀಡುವ ಈ ಪ್ರಶಸ್ತಿಯ ಮೊತ್ತ 1.5 ಲಕ್ಷ ರೂಪಾಯಿಗಳು.

2002: ನೇಪಾಳದಲ್ಲಿ ಮಾವೋವಾದಿಗಳ ದಾಳಿಯಲ್ಲಿ ಭದ್ರತಾಪಡೆಯ ಸಿಬ್ಬಂದಿ ಸೇರಿ 200 ಜನ ಮೃತರಾದರು.

1989: ಕರಾಚಿಯಲ್ಲಿ ಪಾಕಿಸ್ಥಾನದ ವಿರುದ್ಧ ನಡೆದ ಟೆಸ್ಟ್ ಪಂದ್ಯದಲ್ಲಿ ತಮ್ಮ ಚೊಚ್ಚಲ ಹೆಜ್ಜೆ ಇರಿಸಿದ ಸಚಿನ್ ತೆಂಡೂಲ್ಕರ್ ಭಾರತದ ಪರವಾಗಿ ಆಡಿದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಆಗ ಅವರ ವಯಸ್ಸು: 16 ವರ್ಷ 205 ದಿನಗಳು. ಪಾಕಿಸ್ಥಾನದ ಬೌಲರ್ ವಖಾರ್ ಯೂನಸ್ ಅವರೂ ಇದೇ ಪಂದ್ಯದಲ್ಲಿ ಚೊಚ್ಚಲ ಹೆಜ್ಜೆ ಇರಿಸಿದರು.

1982: ಖ್ಯಾತ ಗಾಂಧಿವಾದಿ, ಸಮಾಜ ಸುಧಾರಕ ಆಚಾರ್ಯ ವಿನೋಬಾ ಭಾವೆ ಅವರು ವಾರ್ಧಾದಲ್ಲಿ ತಮ್ಮ 87ನೇ ವಯಸ್ಸಿನಲ್ಲಿ ನಿಧನರಾದರು.

1982: ಖ್ಯಾತ ಕವಿ, ಯುಗವಾಣಿ ಮಾಜಿ ಸಂಪಾದಕ ಎಸ್.ಎನ್. ಕಾಟ್ಕರ್ ನಿಧನ.

1965: ಕಝಖಸ್ಥಾನದ ಬೈಕನೂರಿನಿಂದ ಸೋವಿಯತ್ ಗಗನನೌಕೆ ವೆನೆರಾ 3 ಬಾಹ್ಯಾಕಾಶಕ್ಕೆ ಏರಿತು. 1966ರ ಮಾರ್ಚ್ 1 ರಂದು ಇದು ಶುಕ್ರಗ್ರಹಕ್ಕೆ ತಲುಪಿ ಅಲ್ಲಿಂದ ಇನ್ನೊಂದು ಗ್ರಹವನ್ನು ತಲುಪಿದ ಮೊದಲ ಮಾನವ ರಹಿತ ಬಾಹ್ಯಾಕಾಶ ನೌಕೆ ಎನಿಸಿಕೊಂಡಿತು.

1956: ಮಣಿಪುರ ಸಂಸ್ಥಾನಕ್ಕೆ ಭಾರತದ ಆರು ಶಾಸನಗಳನ್ನು ಅನ್ವಯಿಸಲು ಅವಕಾಶ ನೀಡುವ `ಸಿ' ವಿಭಾಗದ ಸಂಸ್ಥಾನಗಳ (ಶಾಸನಗಳ ತಿದ್ದುಪಡಿ) ಮಸೂದೆಯನ್ನು ಲೋಕಸಭೆಯು ಅಂಗೀಕರಿಸಿತು.

1949: ಮಹಾತ್ಮಾ ಗಾಂಧಿ ಅವರನ್ನು ಕೊಲೆಗೈದುದಕ್ಕಾಗಿ ನಾಥೂರಾಂ ಗೋಡ್ಸೆ ಮತ್ತು ನಾರಾಯಣ ಆಪ್ಟೆ ಅವರನ್ನು ಗಲ್ಲಿಗೇರಿಸಲಾಯಿತು.

1947: ಸಾಹಿತಿ ಹಿ.ಶಿ. ರಾಮಚಂದ್ರಗೌಡ ಜನನ.

1945: ಸಾಹಿತಿ ಟಿ. ಜಯಶೀಲ ಜನನ.

1907: `ಹಚ್ಚೇವು ಕನ್ನಡದ ದೀಪ' ರಚನಕಾರ ದುಂಡಪ್ಪ ಸಿದ್ದಪ್ಪ ಕರ್ಕಿ (15-11-1907ರಿಂದ 16-1-1984) ಅವರು ಸಿದ್ದಪ್ಪ್ಪ-ದುಂಡವ್ವ ದಂಪತಿಯ ಮಗನಾಗಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಹಿರೇಕೊಪ್ಪದಲ್ಲಿ ಜನಿಸಿದರು.

1904: `ಸೇಫ್ಟಿ ರೇಜರ್' ಗಾಗಿ ಕಿಂಗ್ ಕ್ಯಾಂಪ್ ಗಿಲ್ಲೆಟ್ ಅವರಿಗೆ ಪೇಟೆಂಟ್ ನೀಡಲಾಯಿತು.

1738: ಸರ್ ವಿಲಿಯಮ್ ಫ್ರೆಡರಿಕ್ ಹರ್ಶೆಲ್ (1738-1822) ಹುಟ್ಟಿದ ದಿನ. ಜರ್ಮನ್ ಸಂಜಾತ ಈ ಬ್ರಿಟಿಷ್ ಖಗೋಳತಜ್ಞ ಯುರೇನಸ್ ಗ್ರಹವನ್ನು ಕಂಡು ಹಿಡಿದ.

(ಸಂಗ್ರಹ: ನೆತ್ರಕೆರೆ ಉದಯಶಂಕರ)

No comments:

Advertisement