Sunday, May 16, 2010

ಇಂದಿನ ಇತಿಹಾಸ History Today ಮೇ 16



ಇಂದಿನ ಇತಿಹಾಸ

ಮೇ 16

ಈ ವರ್ಷದ ಮೈಂಡ್ ಬುಕ್ ಪ್ರಶಸ್ತಿ ಲಭಿಸಿತು. 1980ರ ದಶಕದಲ್ಲಿ ಬ್ರಿಟನ್‌ನಲ್ಲಿ ಕಳೆದ ತಮ್ಮ ಜೀವನವನ್ನೇ ಆಧರಿಸಿ ಈ ಪುಸ್ತಕವನ್ನು ಅವರು ಬರೆದಿದ್ದರು.

2009: ಅತಂತ್ರ ಲೋಕಸಭೆಯ ನಿರೀಕ್ಷೆಯಲ್ಲಿ ತಂತ್ರಗಾರಿಕೆಯ ರಾಜಕೀಯಕ್ಕೆ ಹೊಂಚು ಹಾಕುತ್ತಿದ್ದವರನ್ನೆಲ್ಲ ಕೆಡವಿಹಾಕಿದ ದೇಶದ ಪ್ರಜ್ಞಾವಂತ ಮತದಾರರು ಮತ್ತೆ ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ಕೈ ಹಿಡಿದರು. ಚುನಾವಣಾ ಓಟದಲ್ಲಿ 'ಎಡ' 'ಬಲ' ಪಕ್ಷಗಳೆಲ್ಲ ನಡುದಾರಿಯಲ್ಲಿಯೇ ಕುಸಿದು ಬಿದ್ದವು. ಮಧ್ಯದ ದಾರಿ ಹಿಡಿದು ಸಾಗಿದ ಕಾಂಗ್ರೆಸ್ ಪಕ್ಷ ಉಳಿದೆಲ್ಲರನ್ನೂ ಹಿಮ್ಮೆಟ್ಟಿಸಿ ಮುಂದೋಡಿತು. ಪ್ರಧಾನಿ ಮನಮೋಹನ್‌ಸಿಂಗ್ ಪಾಲಿಗೆ 'ಮನಮೋಹಕ' ಫಲಿತಾಂಶ ಲಭಿಸಿದರೆ, ಬಿಜೆಪಿ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರ ಪ್ರಧಾನಿಯಾಗುವ ಕನಸು ಭಗ್ನಗೊಂಡಿತು. ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ವೈಯಕ್ತಿಕ ಮಟ್ಟಕ್ಕೆ ಒಯ್ದು ನಿಂದನೆಯಲ್ಲಿ ತೊಡಗಿದ್ದ ಎಡಪಕ್ಷಗಳು ತಮ್ಮದೇ ಕೆಂಪುಕೋಟೆಯಲ್ಲಿ ಉರುಳಿಬಿದ್ದವು.

2009: ಪಾಕಿಸ್ತಾನದ ಹಿಂದಿನ ಸರ್ಕಾರಗಳು ತಾಲಿಬಾನ್ ಉಗ್ರರ ಜತೆ ಒಳ ಒಪ್ಪಂದ ಮಾಡಿಕೊಂಡು ತಪ್ಪೆಸಗಿವೆ ಎಂದು ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ಅವರು ಸಿಎನ್ ಎನ್ ಗೆ ನೀಡಿದ ಸಂದರ್ಶನದಲ್ಲಿ ಹೇಳಿದರು. ಅನೇಕ ವರ್ಷಗಳ ಹಿಂದೆ ತಾಲಿ ಬಾನ್ ಉಗ್ರರ ಜತೆ ಒಳ ಒಪ್ಪಂದ ಮಾಡಿಕೊಂಡದ್ದರಿಂದ ಈ ಉಗ್ರಗಾಮಿಗಳು ದೇಶದ ಕೆಲವು ಭಾಗಗಳಲ್ಲಿ ಬಲವಾಗಿ ಬೇರೂರಲು ಸಾಧ್ಯವಾಯಿತು ಎಂದು ಮುಷರಫ್ ನುಡಿದರು.

2009: ಎಲ್‌ಟಿಟಿಇ ವಿರುದ್ಧ ಲಂಕಾ ಸರ್ಕಾರ ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆಯಿತು. ತಮಿಳು ಬಂಡುಕೋರರ ನೌಕಾ ನೆಲೆಯನ್ನು ವಶಪಡಿಸಿಕೊಳ್ಳುವಲ್ಲಿ ಸೇನೆ ಯಶಸ್ವಿಯಾಯಿತು. ಇದರಿಂದಾಗಿ ಎಲ್‌ಟಿಟಿಇಗೆ ಸಮುದ್ರ ಮಾರ್ಗದ ಸಂಪರ್ಕ ಪೂರ್ಣ ಕಡಿದುಹೋಯಿತು.. ಭದ್ರತಾ ಪಡೆಗಳು ಸುತ್ತುವರಿದ ಕಾರಣ ಅವರ ಕಾರ್ಯವ್ಯಾಪ್ತಿ ಯುದ್ಧ ಮುಕ್ತ ವಲಯದಿಂದ ಕೇವಲ 1.5 ಚದರ ಕಿ.ಮೀ.ಗೆ ಮೀಸಲಾಗಿ ಉಳಿಯಿತು.

2009: ಪಂಜಾಬ್ ಮೂಲದ ಅಮೆರಿಕದ ನಾಗರಿಕ ಪ್ರೀತ್ ಭರಾರಾ ಅವರನ್ನು ಅಧ್ಯಕ್ಷ ಬರಾಕ್ ಒಬಾಮ ಅವರು ನ್ಯೂಯಾರ್ಕ್‌ನ ದಕ್ಷಿಣ ಜಿಲ್ಲೆಯ ಅಟಾರ್ನಿಯಾಗಿ ನೇಮಿಸಿದರು. 40 ವರ್ಷದ ವಕೀಲ ಭರಾರಾ ಅವರು ನ್ಯಾಯಾರ್ಕ್‌ನ ಡೆಮಾಕ್ರೆಟಿಕ್ ಪಕ್ಷದ ಸೆನೆಟರ್ ಚಾರ್ಲಸ್ ಸ್ಕಮೆರ್ ಅವರಿಗೆ ಕಾನೂನು ಸಲಹೆಗಾರರಾಗಿದ್ದರು ಹಾಗೂ ಬುಷ್ ಆಡಳಿತ 8 ಮಂದಿ ಅಟಾರ್ನಿಗಳನ್ನು ವಜಾ ಮಾಡಿದ ಸಂದರ್ಭದಲ್ಲಿ ನಡೆದ ಕಾಂಗ್ರೆಸ್ ತನಿಖೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶ್ವೇತಭವನದ ಪ್ರಕಟಣೆ ತಿಳಿಸಿತು.

2009: ದಿ ಟೈಮ್ಸ್‌ನ ಭಾರತೀಯ ಮೂಲದ ಅಂಕಣಕಾರ ಸತ್ನಾಮ್ ಸಂಘೇರಾ ಅವರು ಬರೆದ 'ದಿ ಬಾಯ್ ವಿದ್ ದಿ ಟಾಪ್‌ನಾಟ್' ಕೃತಿಗೆ ಈ ವರ್ಷದ ಮೈಂಡ್ ಬುಕ್ ಪ್ರಶಸ್ತಿ ಲಭಿಸಿತು. 1980ರ ದಶಕದಲ್ಲಿ ಬ್ರಿಟನ್‌ನಲ್ಲಿ ಕಳೆದ ತಮ್ಮ ಜೀವನವನ್ನೇ ಆಧರಿಸಿ ಈ ಪುಸ್ತಕವನ್ನು ಅವರು ಬರೆದಿದ್ದರು.

2008: ಆಂಧ್ರ ಪ್ರದೇಶದ ಮಾಜಿ ರಣಜಿ ಕ್ರಿಕೆಟ್ ಆಟಗಾರ ರಾಜೇಂದ್ರ ಸಾಹು ಅವರನ್ನು ಮಾವೋವಾದಿ ಉಗ್ರರು ರಾಯಗಢ ಜಿಲ್ಲೆ ಗೋಥಲ್ ಪದರಿನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದರು. ಸಾಹು ಮೂಲತಃ ಒರಿಸ್ಸಾದವರಾಗಿದ್ದು, ಆಂಧ್ರದ ಪರವಾಗಿ 2006-07 ರಲ್ಲಿ ರಣಜಿ ಕ್ರಿಕೆಟ್ ಪಂದ್ಯದಲ್ಲಿ ಆಡಿದ್ದರು.

2008: ಕೇಂದ್ರದ ಹಣಕಾಸು ನೆರವಿನ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಶೆ 27ರಷ್ಟು ಮೀಸಲಾತಿ ಕಲ್ಪಿಸುವುದಕ್ಕೆ ಕೋಲ್ಕತ ಹೈಕೋರ್ಟ್ ವಿಧಿಸಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿತು.

2008: ಬೆಂಗಳೂರಿನ ಯಲಹಂಕದಲ್ಲಿ ಇರುವ ರೈಲ್ವೆ ಗಾಲಿ ಕಾರ್ಖಾನೆಗೆ ಪ್ರತಿಷ್ಠಿತ `ಗೋಲ್ಡನ್ ಪಿಕಾಕ್ ಅವಾರ್ಡ್ಫಾರ್ ಆಕ್ಯುಪೇಷನಲ್ ಹೆಲ್ತ್ ಅಂಡ್ ಸೇಫ್ಟಿ-2008' ಪ್ರಶಸ್ತಿ ಲಭಿಸಿತು. ಸುಪ್ರೀಂ ಕೋರ್ಟಿನ ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ಮಾನವ ಹಕ್ಕುಗಳ ಆಯೋಗದ ಸದಸ್ಯ ಪಿ.ಎನ್.ಭಗವತಿ ಅಧ್ಯಕ್ಷತೆಯ ಆಯ್ಕೆ ಸಮಿತಿ ಕಾರ್ಖಾನೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.

2008: ಕರ್ನಾಟಕ ರಾಜ್ಯ ವಿಧಾನಸಭೆಗೆ ಎರಡನೇ ಹಂತದಲ್ಲಿ ನಡೆದ 66 ವಿಧಾನಸಭಾ ಕ್ಷೇತ್ರಗಳ ಚುನಾವಣೆಯಲ್ಲಿ ಶೇ 60.30ರಷ್ಟು ಮತದಾನವಾಗಿದೆ ಎಂದು ಮುಖ್ಯ ಚುನಾವಣಾಧಿಕಾರಿ ಎಂ.ಎನ್.ವಿದ್ಯಾಶಂಕರ್ ಬೆಂಗಳೂರಿನಲ್ಲಿ ಪ್ರಕಟಿಸಿದರು. ನಕ್ಸಲ್ ಪೀಡಿತ ಚಿಕ್ಕಮಗಳೂರು, ಉಡುಪಿ, ಘಟಾನುಘಟಿಗಳೇ ಸ್ಪರ್ಧಿಸಿದ್ದ ಶಿವಮೊಗ್ಗ ಹಾಗೂ ಬಳ್ಳಾರಿ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲೂ ಮತದಾನ ಬಹುತೇಕ ಶಾಂತಿಯುತವಾಗಿತ್ತು.

2008: ಕರ್ನಾಟಕ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಇಬ್ಬರು `ನೋಟಾ' (ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ) ಮತ ಚಲಾಯಿಸಿದರು. ಮೂಡುಬಿದಿರೆ ಕ್ಷೇತ್ರದ ಕಲ್ಲಬೆಟ್ಟು ಮತಗಟ್ಟೆಯಲ್ಲಿ ವಿಮರ್ಶಕ ಅರವಿಂದ ಚೊಕ್ಕಾಡಿ ಹಾಗೂ ಕಾರ್ಕಳದ ಅಜೆಕಾರು ಮತಗಟ್ಟೆಯಲ್ಲಿ ಶ್ರೀಶ ಉಡುಪ ಅವರು ನೋಟಾ ಮತ ಚಲಾಯಿಸಿದರು. 1961ರ ಚುನಾವಣಾ ನಡಾವಳಿ ಸಂಹಿತೆ ಸೆಕ್ಷನ್ 49-'ಒ'ದ ಪ್ರಕಾರ ಎಲ್ಲ ಅಭ್ಯರ್ಥಿಗಳನ್ನು ತಿರಸ್ಕರಿಸುವ `ನಿರಾಕರಣೆ ಹಕ್ಕನ್ನು' ಅವರು ಬಳಸಿಕೊಂಡರು. ಎಸ್ ಇ ಝೆಡ್, ಕೂಲಿ ಕಾರ್ಮಿಕರ ಸಮಸ್ಯೆ, ಶಿಕ್ಷಣದ ಅಮೆರಿಕೀಕರಣ, ಕ್ಷೇತ್ರದ ಅಭಿವೃದ್ಧಿ ಕುಂಠಿತ, ರೈತರ ಆತ್ಮಹತ್ಯೆ ಮತ್ತಿತರ ಸಮಸ್ಯೆಗಳ ಬಗ್ಗೆ ಅಭ್ಯರ್ಥಿಗಳ ಹಾಗೂ ಪಕ್ಷಗಳ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ನೋಟಾ ಮತ ಚಲಾಯಿಸಿರುವುದಾಗಿ ಅರವಿಂದ ಚೊಕ್ಕಾಡಿ ಹೇಳಿದರು. ಕ್ಷೇತ್ರದೊಳಗೆ ಶೇ. 50ಕ್ಕಿಂತ ಹೆಚ್ಚು ಮಂದಿ ನೋಟಾ ಮತ ಚಲಾಯಿಸಿದಲ್ಲಿ ಮರು ಮತದಾನ ನಡೆಯಬೇಕು. ಅಲ್ಲದೆ ಆಭ್ಯರ್ಥಿಗಳು ಮತ್ತೆ ಸ್ಪರ್ಧಿಸುವ ಅವಕಾಶ ಕಳೆದುಕೊಳ್ಳುತ್ತಾರೆ. ಈ ಬಗ್ಗೆ ಜಾಗೃತಿ ಮೂಡಿಸಲು ನೋಟಾ ಚಲಾಯಿಸಿದ್ದೇನೆ ಎಂದು ಅವರು ನುಡಿದರು.

2008: ಕಾರ್ಕಳ ತಾಲ್ಲೂಕಿನ ಸೀತಾನದಿಯಲ್ಲಿ ನಡೆದ ನಕ್ಸಲ್ ದಾಳಿಗೆ ಸಂಬಂಧಿಸಿದಂತೆ ಸೋಮೇಶ್ವರದ ತಣ್ಣೀರು ಉದಯ ಆಚಾರ್ಯ ಸಹಿತ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.

2008: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಸೊದೆಪುರದಲ್ಲಿನ ಜನನಿಬಿಡ ವ್ಯಾಪಾರ ಮಳಿಗೆಯೊಂದರಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ 12 ಮಂದಿ ಮೃತರಾಗಿ, ಇತರ 23 ಮಂದಿ ಗಾಯಗೊಂಡರು.

2008: ರಾಮಾಯಣದ ದೃಷ್ಟಾಂತಗಳನ್ನು ಬಿಂಬಿಸುವ ಮೊತ್ತಮೊದಲ ಚಿತ್ರಕಲಾ ಪ್ರದರ್ಶನ ಲಂಡನ್ನಿನಲ್ಲಿ ಶುರುವಾಯಿತು. 17ನೇ ಶತಮಾನದ ಮೇವಾರದ ರಾಣಾ ಜಗತ್ ಸಿಂಗನ ಸಂಪುಟಗಳನ್ನು ಆಧರಿಸಿ ರಚಿಸಿದ 120 ಚಿತ್ತಾಕರ್ಷಕ ಚಿತ್ರಗಳನ್ನು ಈ ಪ್ರದರ್ಶನ ಒಳಗೊಂಡಿದೆ. `ಬ್ರಿಟಿಷ್ ಲೈಬ್ರರಿ ಫೀಚರ್ಸ್' ಆಯೋಜಿಸಿದ ಈ ಪ್ರದರ್ಶನದಲ್ಲಿ ಚಿತ್ರಕಲೆಯ ಜತೆಗೆ ಶಿಲ್ಪಕೃತಿಗಳು, ಕಲಾತ್ಮಕ ಉಡುಪುಗಳು, ತೊಗಲು ಬೊಂಬೆಗಳು ಹಾಗೂ ನೃತ್ಯ ಪರಿಕರಗಳನ್ನೂ ಇಡಲಾಗಿತ್ತು. ಇಲ್ಲಿನ ಬಹುತೇಕ ಕಲಾಕೃತಿಗಳನ್ನು ಈತನಕ ಸಾರ್ವಜನಿಕವಾಗಿ ಪ್ರದರ್ಶಿಸಿರಲಿಲ್ಲ.

2007: ನೇಪಾಳದ ಖ್ಯಾತ ಪರ್ವತಾರೋಹಿ ಅಪ್ಪಾ ಶೆರ್ಪಾ ಅವರು 17ನೇ ಬಾರಿಗೆ ಹಿಮಾಲಯ ಶಿಖರವನ್ನು ಹತ್ತುವ ಮೂಲಕ ತಮ್ಮದೇ ವಿಶ್ವದಾಖಲೆಯನ್ನು ಮುರಿದು ಮತ್ತೊಂದು ಇತಿಹಾಸ ನಿರ್ಮಿಸಿದರು. ಆಗ್ನೇಯ ದಿಕ್ಕಿನಿಂದ ಶಿಖರವನ್ನು ಹತ್ತಿದ ಇವರು ಈ ದಿನ ಬೆಳಗ್ಗೆ 8.30ಕ್ಕೆ (ಸ್ಥಳೀಯ ಕಾಲಮಾನ) 29,035 ಅಡಿ ಎತ್ತರ ಕ್ರಮಿಸಿ ನೂತನ ದಾಖಲೆ ನಿರ್ಮಿಸಿದರು. ಇವರ ತಂಡದ ಇತರ ಏಳು ಮಂದಿ ಪರ್ವತಾರೋಹಿಗಳೂ ಯಶಸ್ವಿಯಾಗಿ ಶಿಖರ ಏರಿದರು.

2007: ಮದ್ಯದ ದೊರೆ ವಿಜಯ್ ಮಲ್ಯ ಒಡೆತನದ ಯುನೈಟೆಡ್ ಸ್ಪಿರಿಟ್ , ಸ್ಕಾಟ್ಲೆಂಡಿನ ವಿಸ್ಕಿ ತಯಾರಕ ವೈಟ್ ಅಂಡ್ ವೈಟ್ ಅಂಡ್ ಮೆಕೆಯನ್ನು 5950 ಲಕ್ಷ ಪೌಂಡುಗಳಿಗೆ (ಸುಮಾರು 4819 ಕೋಟಿ ರೂಪಾಯಿಗಳಿಗೆ) ಖರೀದಿಸಿತು.

2007: ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳನ್ನು ರಾಗಿಂಗ್ ಮೂಲಕ ಗೋಳು ಹುಯ್ದುಕೊಳ್ಳುವ ಹಿರಿಯ ವಿದ್ಯಾರ್ಥಿಗಳ ವಿರುದ್ಧ ತಪ್ಪದೇ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಸುಪ್ರೀಂಕೋರ್ಟ್ ಶಿಕ್ಷಣ ಸಂಸ್ಥೆಗಳಿಗೆ ಸೂಚಿಸಿತು.

2006: ಪಾಂಡವರು ಮತ್ತು ಕೌರವರ ನಡುವೆ ಯುದ್ಧ ನಡೆದ ಕುರುಕ್ಷೇತ್ರದ ಸಮೀಪದಲ್ಲಿ 4500 ವರ್ಷಗಳಿಗೂ ಹಳೆಯದು ಎಂದು ಅಂದಾಜು ಮಾಡಲಾದ ಇಟ್ಟಿಗೆಗಳು ಪತ್ತೆಯಾಗಿರುವುದಾಗಿ ಹರಿಯಾಣದ ಪ್ರಾಚ್ಯವಸ್ತು ಇಲಾಖೆ ಪ್ರಕಟಿಸಿತು. ಕುಶಾನ ವಂಶದ ಆಡಳಿತ ಅವಧಿಯಲ್ಲಿ ಬ್ರಹ್ಮಸಾರ ತೀರ್ಥದ ಪ್ರದೇಶದಲ್ಲಿ ಬಳಸಲಾಗಿದ್ದವೆಂದು ನಂಬಲಾಗಿರುವ ಈ ಇಟ್ಟಿಗೆಗಳು ಬ್ರಹ್ಮಸಾರ ತೀರ್ಥದಲ್ಲಿ ಹೂಳೆತ್ತುವಾಗ ಪತ್ತೆಯಾದವು.

2006: ಬಿಜೆಪಿ ನೇತೃತ್ವದ ಎನ್ ಡಿಎ ನೇತೃತ್ವದ ಪ್ರತಿಪಕ್ಷಗಳ ವಿರೋಧದ ನಡುವೆ `ಲಾಭದಾಯಕ ಹುದ್ದೆ' ಪರಿಧಿಯಿಂದ ವಿವಾದಾತ್ಮಕ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಸ್ಥಾನ ಸೇರಿದಂತೆ 56 ಹುದ್ದೆಗಳಿಗೆ ವಿನಾಯ್ತಿ ನೀಡುವ ಮಸೂದೆಯನ್ನು (ಸಂಸದರ ಅನರ್ಹತೆ ತಡೆ ತಿದ್ದುಪಡಿ ಮಸೂದೆ-2006) ಲೋಕಸಭೆಯಲ್ಲಿ ತೀವ್ರ ಚರ್ಚೆಯ ನಂತರ ಧ್ವನಿಮತದಿಂದ ಅಂಗೀಕರಿಸಲಾಯಿತು. ಲೋಕಸಭಾ ಸ್ಪೀಕರ್ ಸೋಮನಾಥ ಚಟರ್ಜಿ ಅವರು ಅಧ್ಯಕ್ಷರಾಗಿರುವ ಶಾಂತಿನಿಕೇತನ ಅಭಿವೃದ್ಧಿ ಪ್ರಾಧಿಕಾರ, ಸಮಾಜವಾದಿ ಪಕ್ಷದ ನಾಯಕ ಅಮರಸಿಂಗ್ ಅಧ್ಯಕ್ಷರಾಗಿರುವ ಉತ್ತರಪ್ರದೇಶ ಅಭಿವೃದ್ಧಿ ಮಂಡಲಿ, ಕೇಂದ್ರ ಗಣಿ ಖಾತೆ ರಾಜ್ಯ ಸಚಿವ ಟಿ. ಸುಬ್ರಮಣಿ ರೆಡ್ಡಿ ಅಧ್ಯಕ್ಷರಾಗಿರುವ ತಿರುಮಲ ತಿರುಪತಿ ದೇವಸ್ಥಾನಂ ಮಂಡಲಿ, ಬಿಜೆಪಿ ಸಂಸದ ವಿ.ಕೆ. ಮಲ್ಹೋತ್ರ ಅಧ್ಯಕ್ಷರಾಗಿರುವ ಅಖಿಲ ಭಾರತ ಕ್ರೀಡಾ ಮಂಡಲಿ, ಸೋನಿಯಾ ಗಾಂಧಿ ಅವರು ಅಧ್ಯಕ್ಷರಾಗಿರುವ ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್, ನೆಹರು ಸ್ಮಾರಕ ಮ್ಯೂಜಿಯಂ ಮತ್ತು ಗ್ರಂಥಾಲಯ, ಜಲಿಯನ್ ವಾಲಾಬಾಗ್ ಸ್ಮಾರಕ ಟ್ರಸ್ಟುಗಳೂ ಈ ಹುದ್ದೆಗಳಲ್ಲಿ ಸೇರಿವೆ. ಆದರೆ `ಲಾಭದ ಹುದ್ದೆಯ ವಿವಾದಕ್ಕೆ ಮೂಲವಾದ ಹಾಗೂ ಜಯಾ ಬಚ್ಚನ್ ಅವರು ರಾಜ್ಯಸಭಾ ಸ್ಥಾನ ಕಳೆದುಕೊಳ್ಳಲು ಕಾರಣವಾದ ಉತ್ತರಪ್ರದೇಶ ಚಲನಚಿತ್ರ ಅಭಿವೃದ್ಧಿ ನಿಗಮವನ್ನು ಲಾಭದ ಹುದ್ದೆ ಮಸೂದೆ ವ್ಯಾಪ್ತಿಯಿಂದ ಹೊರಗಿಡಲಾಯಿತು.

2006: ಸಹಕಾರ ಕೃಷಿ ಪತ್ತಿನ ಸಂಸ್ಥೆಗಳು ರೈತರಿಗೆ ಏಪ್ರಿಲ್ ಒಂದರಿಂದ ಪೂರ್ವಾನ್ವಯ ಆಗುವಂತೆ ಶೇಕಡಾ 4ರ ಬಡ್ಡಿ ದರದಲ್ಲಿ ಅಲ್ಪಾವಧಿ, ಮಧ್ಯಮಾವಧಿ ಹಾಗೂ ದೀರ್ಘಾವಧಿ ಸಾಲ ವಿತರಣೆ ಮಾಡಲು ರಾಜ್ಯ ಸರ್ಕಾರ ಹಿಂದಿನ ರಾತ್ರಿ ಆದೇಶ ಹೊರಡಿಸಿದ್ದು, ಉಪಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆದೇಶದ ಪ್ರತಿಗಳನ್ನು ಈದಿನ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಬಿಡುಗಡೆ ಮಾಡಿದರು.

1975: ಜಪಾನಿನ ಪರ್ವತಾರೋಹಿ ಜಂಕೋ ತಾಬೀ ಎವರೆಸ್ಟ್ ಶಿಖರವನ್ನು ತಲುಪುವ ಮೂಲಕ ಜಗತ್ತಿನ ಅತಿ ಎತ್ತರದ ಈ ಶಿಖರ ತಲುಪಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

1975: ಸಿಕ್ಕಿಂ ಭಾರತದ 22ನೇ ರಾಜ್ಯವಾಯಿತು.

1957: ಕಲಾವಿದೆ ಆಶಾ ಜನನ.

1957: ಕಲಾವಿದೆ ರಂಗಶ್ರೀ ಜನನ.

1956: ಕಲಾವಿದ ರೆಡ್ಡಪ್ಪ ಎ.ಎನ್. ಜನನ.

1929: ಹಾಲಿವುಡ್ನ ರೂಸ್ ವೆಲ್ಟ್ ಹೋಟೆಲಿನಲ್ಲಿ ಮೊತ್ತ ಮೊದಲ (ಚಲನಚಿತ್ರ) ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಅತ್ಯುತ್ತಮ ನಿರ್ಮಾಣ ಪ್ರಶಸ್ತಿ `ವಿಂಗ್ಸ್' ಚಲನಚಿತ್ರಕ್ಕೆ ಲಭಿಸಿತು. ಎಮಿಲ್ ಜೆನ್ನಿಂಗ್ಸ್ ಮತ್ತು ಜಾನೆಟ್ ಗೇನೊರ್ ಕ್ರಮವಾಗಿ ಅತ್ಯುತ್ತಮ ನಟ ಹಾಗೂ ಅತ್ಯುತ್ತಮ ನಟಿ ಪ್ರಶಸ್ತಿ ಗಳಿಸಿದರು. ಅಕಾಡೆಮಿ ಅಧ್ಯಕ್ಷ ಡಗ್ಲಾಸ್ ಫೇರ್ ಬ್ಯಾಂಕ್ಸ್ ಪ್ರಶಸ್ತಿ ಪ್ರದಾನ ಮಾಡಿದರು.

1926: ಪ್ರಜಾವಾಣಿಯ ನಿವೃತ್ತ ಸಂಪಾದಕ, ಹಿರಿಯ ಪತ್ರಕರ್ತ ವೈಎನ್ ಕೆ (1926-1999)ಅವರು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಅಗರ ಗ್ರಾಮದಲ್ಲಿ ಈದಿನ ಜನಿಸಿದರು. ವಿದ್ಯಾರ್ಥಿಯಾಗಿದ್ದಾಗಲೇ ಪತ್ರಿಕೋದ್ಯಮದಲ್ಲಿ ಅಪಾರ ಆಸಕ್ತಿ ತಾಳಿದ್ದ ಅವರು `ಬಾಲಚಂದ್ರ' ಎಂಬ ಕೈಬರಹದ ಪತ್ರಿಕೆ ನಡೆಸಿದ್ದರು. ಕೆಲವು ಕಾಲ `ಕುಸುಮ' `ಕಿರಣ' ಕೈಬರಹದ ಪತ್ರಿಕೆಗಳನ್ನು ಹೊರತಂದಿದ್ದರು. ಪತ್ರಿಕೋದ್ಯಮವೂ ಸಾಹಿತ್ಯದ ಒಂದು ಭಾಗ ಎಂಬುದನ್ನು ನಿರೂಪಿಸಲು ಹೊಸ ಹೊಸ ಅಂಕಣಗಳನ್ನು ತಾವು ದುಡಿದ ಪ್ರಜಾವಾಣಿ, ಕನ್ನಡ ಪ್ರಭ ಪತ್ರಿಕೆಗಳಲ್ಲಿ ಆರಂಭಿಸಿ ಅವುಗಳ ಮೌಲ್ಯ ಹೆಚ್ಚಿಸಿದರು. ಶಬ್ದಗಳನ್ನು ಪನ್ (PUN)
ಮಾಡಿ ಆಡುವ ಕಲೆ ಅವರಿಗೆ ಕರಗತವಾಗಿತ್ತು. 16-10-1999 ರಂದು ಅವರು ಹೃದಯಾಘಾತದಿಂದ ನಿಧನರಾದರು.

1916: ನಟ, ನಿರ್ದೇಶಕ, ನಾಟಕಕಾರ, ರಂಗತಜ್ಞ, ರಂಗಶಿಕ್ಷಕರಾಗಿದ್ದ ಚಂದ್ರಶೇಖರ್ (16-5-1916ರಿಂದ 13-12-2000) ಅವರು ವಕೀಲ ಬೆಳವಾಡಿ ರಾಮಸ್ವಾಮಯ್ಯ- ಗುಂಡಮ್ಮ ದಂಪತಿಯ ಮಗನಾಗಿ ಹಾಸನದಲ್ಲಿ ಜನಿಸಿದರು.

1888: ಫ್ರಾಂಕ್ಲಿನ್ ಇನ್ ಸ್ಟಿಟ್ಯೂಟ್ ಆಫ್ ಫಿಲಿಡೆಲ್ಫಿಯದ ಸದಸ್ಯರ ಮುಂದೆ ಫ್ಲಾಟ್ ರೆಕಾರ್ಡಿಂಗ್ ಡಿಸ್ಕನ್ನು (ಹಾಡುವ ತಟ್ಟೆ) ಎಮಿಲ್ ಬರ್ಲೈನರ್ ಮೊತ್ತ ಮೊದಲ ಬಾರಿಗೆ ಪ್ರದರ್ಶಿಸಿದ. ಈ `ರೆಕಾರ್ಡನ್ನು' ಧ್ವನಿ ಮರು ಉತ್ಪಾದಿಸುವ ಯಂತ್ರದಲ್ಲಿ ಹಾಕಿ ಮತ್ತೆ ಧ್ವನಿಯನ್ನು ಕೇಳಬಹುದಾಗಿತ್ತು. ಈ ಧ್ವನಿ ಮರು ಉತ್ಪಾದನಾ ಯಂತ್ರವನ್ನು ಎಮಿಲ್ ಬರ್ಲೈನರ್ `ಗ್ರಾಮೋಫೋನ್' ಎಂಬುದಾಗಿ ಕರೆದ.

1831: ಆಂಗ್ಲೋ ಅಮೆರಿಕನ್ ಸಂಶೋಧಕ ಡೇವಿಡ್ ಎಡ್ವರ್ಡ್ ಹ್ಯೂಗ್ಸ್ (1831-1900) ಜನ್ಮದಿನ. ಈತ ಕಾರ್ಬನ್ ಮೈಕ್ರೋಫೋನನ್ನು ಕಂಡು ಹಿಡಿದ. ಈತನ ಈ ಸಂಶೋಧನೆ ಮುಂದೆ ದೂರವಾಣಿ ತಂತ್ರದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸಿತು.

No comments:

Advertisement