Sunday, August 2, 2020

ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳ್ನಾಡು ರಾಜ್ಯಪಾಲ ಪುರೋಹಿತ್ ಗೆ ಕೊರೋನಾ

ಕೇಂದ್ರ ಗೃಹ ಸಚಿವ ಅಮಿತ್ ಶಾ, ತಮಿಳ್ನಾಡು ರಾಜ್ಯಪಾಲ ಪುರೋಹಿತ್ ಗೆ ಕೊರೋನಾ

ನವದೆಹಲಿ/ ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ತಮಿಳುನಾಡು ರಾಜ್ಯಪಾಲ ಬನ್ವಾರಿ ಲಾಲ್ ಪುರೋಹಿತ್ ಅವರಿಗೆ ಕೊರೋನಾ ಸೋಂಕು ತಗುಲಿರವುದು 2020 ಆಗಸ್ಟ್ 02ರ ಭಾನುವಾರ ದೃಢಪಟ್ಟತು.

ತಮಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಟ್ವೀಟ್ ಮಾಡಿದ ಅಮಿತ್ ಶಾ  ಕೊರೊನಾದ ಲಕ್ಷಣಗಳು ಕಾಣಿಸಿಕೊಂಡ ಬಳಿಕ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ವರದಿಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದೆ. ಆದರೆ, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದ ನೀವೆಲ್ಲರೂ ದಯವಿಟ್ಟು ಪರೀಕ್ಷೆ ಮಾಡಿಸಿಕೊಳ್ಳಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಿಎಂದು ಬರೆದಿದ್ದಾರೆ.

ಕೆಲ ದಿನಗಳ ಹಿಂದೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅಮಿತ್ ಶಾ ಭಾಗವಹಿಸಿದ್ದರು. ಅವರ ಸಂಪರ್ಕಕ್ಕೆ ಬಂದಿರುವ ಸಚಿವರನ್ನು ಪತ್ತೆ ಹಚ್ಚಿ, ಕ್ವಾರಂಟ್ವೈನಿನಲ್ಲಿ ಇಡಲಾಗುತ್ತದೆ ಎಂದು ಸುದ್ದಿ ಮೂಲಗಳು ಹೇಳಿದವು.

ಆಗಸ್ಟ್ ರಂದು ಸ್ವಾತಂತ್ರ್ಯ ಹೋರಾಟಗಾರ ಬಾಲ ಗಂಗಾಧರ ತಿಲಕ್ ಜನ್ಮದಿನದ ಪ್ರಯುಕ್ತ ಭಾರತೀಯ ಕೌನ್ಸಿಲ್ ಆಫ್ ಕಲ್ಚರಲ್ ರಿಲೇಶನ್ಸ್ (ಐಸಿಸಿಆರ್) ಏರ್ಪಡಿಸಿದ್ದ ಆನ್ ಲೈನ್  ಸಮಾವೇಶದಲ್ಲಿ ಶಾ ಅವರು ಭಾಗವಹಿಸಿ ಮಾತನಾಡಿದ್ದರು.

ಮೂರು ದಿನಗಳ ಹಿಂದೆ ದೇಶಕ್ಕೆ ಆಗಮಿಸಿದ ರಫೇಲ್ ಯುದ್ಧ ವಿಮಾನಗಳನ್ನು ಅಮಿತ್ ಶಾ ಸ್ವಾಗತಿಸಿದ್ದರು.

ಅಮಿತ್ ಶಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ವಿಚಾರ ತಿಳಿದ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಕೇಂದ್ರ ಗೃಹ ಸಚಿವರ ಶೀಘ್ರ ಚೇತರಿಕೆಗಾಗಿ ಪ್ರಾರ್ಥಿಸುತ್ತಿರುವುದಾಗಿ ಹೇಳಿದರು.

ಅಮಿತ್ ಷಾ ಅವರ ತಪಾಸನೆ ನಡೆಸಲು ದೆಹಲಿಯ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ನೇತೃತ್ವದ ವೈದ್ಯರ ತಂಡವು ಗುರುಗ್ರಾಮದಲ್ಲಿರುವ ಮೆಡಂತ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆಯಿದೆ ಇದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿತು.

 ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕಳೆದ ವಾರ ಕೋವಿಡ್ ದೃಢಪಟ್ಟಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ (೮೦) ಅವರಿಗೆ ಕೊರೊನಾ ಸೋಂಕು ತಗುಲಿರುವುದು  ಭಾನುವಾರ ದೃಢಪಟ್ಟಿದೆ ಎಂದು ಸುದ್ದಿ ಮೂಲಗಳು ಚೆನ್ನೈಯಲ್ಲಿ ತಿಳಿಸಿದವು.

ಪುರೋಹಿತ್ ಅವರಿಗೆ ಹೋಮ್ ಕ್ವಾರಂಟೈನ್ ಆಗಲು ಸೂಚಿಸಲಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯ ವೈದ್ಯರ ತಂಡದಿಂದ ಚಿಕಿತ್ಸೆ ನಡೆಯುತ್ತಿದೆ.

ರಾಜಭವನದ ೮೪ ನೌಕರರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಪರೀಕ್ಷೆ ಒಳಪಡಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ರಾಜ್ಯಪಾಲರಿಗೆ ಕೊರೊನಾ ಸೋಂಕಿನ ಲಕ್ಷಣಗಳು ಕಂಡುಬಂದಿರಲಿಲ್ಲ. ಪರೀಕ್ಷೆಯ ಬಳಿಕ ಅವರಿಗೆ ಸೋಂಕು ಇರುವುದು ದೃಢವಾಗಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಮತ್ತು ಸ್ಥಿರವಾಗಿದ್ದಾರೆಎಂದು ಕಾವೇರಿ ಆಸ್ಪತ್ರೆ ವೈದ್ಯಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.  

No comments:

Advertisement