Showing posts with label ಇಂದಿನ ಇತಿಹಾಸ History Today (January 21-31). Show all posts
Showing posts with label ಇಂದಿನ ಇತಿಹಾಸ History Today (January 21-31). Show all posts

Saturday, March 6, 2010

ಇಂದಿನ ಇತಿಹಾಸ History Today ಜನವರಿ 31

ಇಂದಿನ ಇತಿಹಾಸ

ಜನವರಿ 31

ಚುನಾವಣಾ ಆಯುಕ್ತ ಹಾಗೂ ತಮ್ಮ ಸಹೋದ್ಯೋಗಿ ನವೀನ್ ಚಾವ್ಲಾ ಅವರನ್ನು ವಜಾಗೊಳಿಸಲು ಶಿಫಾರಸು ಮಾಡಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಎನ್.ಗೋಪಾಲಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆಯುವುದರೊಂದಿಗೆ ಆಯೋಗದ ಸದಸ್ಯರಲ್ಲಿನ ಭಿನ್ನಮತ ತಾರಕಕ್ಕೆ ಏರಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವ ಮತ್ತು ಘನತೆ ಹೊಂದಿದ ಚುನಾವಣಾ ಆಯೋಗದ ಈ ಬಿಕ್ಕಟ್ಟು ಹಾಗೂ ಮುಖ್ಯ ಆಯುಕ್ತರ ಪತ್ರ ಸಂವೈಧಾನಿಕ ಹಾಗೂ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತು.

2009: ಚುನಾವಣಾ ಆಯುಕ್ತ ಹಾಗೂ ತಮ್ಮ ಸಹೋದ್ಯೋಗಿ ನವೀನ್ ಚಾವ್ಲಾ ಅವರನ್ನು ವಜಾಗೊಳಿಸಲು ಶಿಫಾರಸು ಮಾಡಿ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಎನ್.ಗೋಪಾಲಸ್ವಾಮಿ ಅವರು ಕೇಂದ್ರಕ್ಕೆ ಪತ್ರ ಬರೆಯುವುದರೊಂದಿಗೆ ಆಯೋಗದ ಸದಸ್ಯರಲ್ಲಿನ ಭಿನ್ನಮತ ತಾರಕಕ್ಕೆ ಏರಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವ ಮತ್ತು ಘನತೆ ಹೊಂದಿದ ಚುನಾವಣಾ ಆಯೋಗದ ಈ ಬಿಕ್ಕಟ್ಟು ಹಾಗೂ ಮುಖ್ಯ ಆಯುಕ್ತರ ಪತ್ರ ಸಂವೈಧಾನಿಕ ಹಾಗೂ ರಾಜಕೀಯ ವಲಯದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿತು. ಗೋಪಾಲಸ್ವಾಮಿ ಅವರ ಅಧಿಕಾರಾವಧಿ ಏ.20ಕ್ಕೆ ಮುಗಿಯುವುದು. ಅದಕ್ಕೆ ಕೇವಲ 70 ದಿನಗಳ ಮುನ್ನ ಹಾಗೂ ಸಾರ್ವತ್ರಿಕ ಲೋಕ ಸಭಾ ಚುನಾವಣೆ ಸಮೀಪಿಸುತ್ತಿ ರುವಾಗ ಅವರು ಈ ಪತ್ರ ಬರೆದರು. ಚಾವ್ಲಾ ಅವರು ಕಾಂಗ್ರೆಸ್ ಪರ ಪಕ್ಷಪಾತ ಧೋರಣೆ ಹೊಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ನೀಡಿದ್ದ ಲಿಖಿತ ದೂರಿನ ಮೇರೆಗೆ ಈ ಕ್ರಮ ಕೈಗೊಂಡರು ಎನ್ನಲಾಯಿತು. ಮೂವರು ಸದಸ್ಯರನ್ನೊಳಗೊಂಡ ಆಯೋಗದಲ್ಲಿ ಈ ಹಿಂದೆಯೇ ಭಿನ್ನ ಮತ ಕಾಣಿಸಿಕೊಂಡಿತ್ತು. ಅಲ್ಲದೆ, ಮಹತ್ವದ ನಿರ್ಧಾರಗಳ ಬಗ್ಗೆ ಸದಸ್ಯರಲ್ಲಿ ಒಮ್ಮತವಿಲ್ಲವೆಂಬುದೂ ಆಗಾಗ ಬಹಿರಂಗವಾಗುತ್ತಿತ್ತು. ಕಳೆದ ಮೇ ತಿಂಗಳಲ್ಲಿ ಕರ್ನಾಟಕದಲ್ಲಿ ವಿಧಾನ ಸಭಾ ಚುನಾವಣೆ ನಡೆಸುವ ಬಗ್ಗೆ ಕೂಡ ನವೀನ್ ಚಾವ್ಲಾ ಕೂಡಾ ಗಂಭೀರ ಆಕ್ಷೇಪಗಳನ್ನು ಎತ್ತಿದ್ದರು.

2009: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಹಾಗೂ ಸಾವಿರಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ ದಾಖಲೆ ಸ್ಥಾಪಿಸಿರುವ ತಾಯ್ ನಾಗೇಶ್ (76) ದೀರ್ಘಕಾಲದ ಅನಾರೋಗ್ಯದಿಂದ ಚೆನ್ನೈಯಲ್ಲಿ ನಿಧನರಾದರು. ನಾಗೇಶ್ ಅವರು ನಟ ಆನಂದ ಬಾಬು ಸೇರಿದಂತೆ ಮೂವರು ಪುತ್ರರನ್ನು ಅಗಲಿದರು. ಹಾಸ್ಯ ಪಾತ್ರಕ್ಕೆ ನಾಗೇಶ್ ಅದೆಷ್ಟರ ಮಟ್ಟಿಗೆ ಜೀವ ತುಂಬುತ್ತೊದ್ದರೆಂದರೆ ಚಿತ್ರರಂಗಕ್ಕೆ ಕಾಲಿಟ್ಟ ಆರಂಭಿಕ ವರ್ಷಗಳಲ್ಲಿ ಇವರನ್ನು ಹಾಲಿವುಡ್ ನಟ ಡ್ಯಾನಿ ಕಯೆ ಅವರೊಂದಿಗೆ ಹೋಲಿಸಲಾಗುತ್ತಿತ್ತು. 1933 ರಲ್ಲಿ ತಿಪಟೂರಿನಲ್ಲಿ ಕನ್ನಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ನಾಗೇಶ್ ಅಲಿಯಾಸ್ ಗುಂಡೂರಾವ್, 60 ಮತ್ತು 70 ರ ದಶಕದ ಮಧ್ಯಾವಧಿಯಲ್ಲಿ ತಮಿಳು ಚಿತ್ರರಂಗದ ಬಹುಬೇಡಿಕೆಯ ಹಾಸ್ಯ ನಟರಾಗಿದ್ದರು. ಕನ್ನಡದಲ್ಲೂ 'ಪೆದ್ದಗೆದ್ದ' ಸೇರಿದಂತೆ ಹಲವಾರು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಬಣ್ಣದ ಬದುಕಿನತ್ತ ಆಕರ್ಷಿತರಾಗುವ ಮುನ್ನ ಅವರು ರೈಲ್ವೆ ಇಲಾಖೆಯಲ್ಲಿ ಕ್ಲರ್ಕ್ ಆಗಿದ್ದರು. ರಂಗಭೂಮಿ ಕಲಾವಿದರಾಗಿ ಗುರುತಿಸಿಕೊಂಡಿದ್ದ ನಾಗೇಶ್ ತಾಯ್ ನಾಟಕದಿಂದ ಪ್ರಸಿದ್ಧರಾದ ಕಾರಣ ಅವರಿಗೆ ತಾಯ್‌ ನಾಗೇಶ್ ಎಂಬ ಹೆಸರು ಬಂದಿತು. ಸುಮಾರು 5 ದಶಕಗಳ ಕಾಲ ತಮಿಳು ಚಿತ್ರರಂಗದಲ್ಲಿ ತಮ್ಮ ಛಾಪು ಮೂಡಿಸಿದ್ದರು. ಈ ಅವಧಿಯಲ್ಲಿ ಅವರು ಅಭಿನಯಿಸಿದ ಚಿತ್ರಗಳು ಸಾವಿರಕ್ಕೂ ಹೆಚ್ಚು. ಎಂಜಿಆರ್, ಶಿವಾಜಿ ಗಣೇಶನ್, ರಜನೀಕಾಂತ್ ಹಾಗೂ ಕಮಲಹಾಸನ್ ಅವರಂಥ ಮೇರು ನಟರೊಂದಿಗೆ ಸಹ ನಟನಾಗಿ ಅಭಿನಯಿಸಿದ ಹೆಗ್ಗಳಿಕೆ ಇವರದು. ಕಮಲಹಾಸನ್ ಅವರ 'ದಶಾವತಾರಂ' ನಾಗೇಶ್ ನಟಿಸಿದ ಕೊನೆಯ ಚಿತ್ರ. ನಾಗೇಶ್ ಪ್ರತಿಭೆಯನ್ನು ಗುರುತಿಸಿದ ನಿರ್ದೇಶಕ ಕೆ.ಬಾಲಚಂದರ್, ಅನೇಕ ಚಿತ್ರಗಳಲ್ಲಿ ಇವರು ನಾಯಕ ನಟರಾಗಿ ಮಿಂಚಲು ಕಾರಣರಾದರು. 'ಎದಿರ್ ನೀಚಲ್'. 'ನೀರ್ ಕುಮಿಳಿ', 'ಸರ್ವರ್ ಸುಂದರಂ' ಮೊದಲಾದ ಚಿತ್ರಗಳಲ್ಲಿ ನಾಗೇಶ್ ಅವರ ಅಭಿನಯ ವಿಶ್ವ ವಿಖ್ಯಾತ ಹಾಸ್ಯನಟ ಚಾರ್ಲಿ ಚಾಪ್ಲಿನ್ ಅವರನ್ನು ನೆನಪಿಸುತ್ತಿದ್ದವು. (ಈ ಎಲ್ಲ ಚಿತ್ರಗಳೂ ಕನ್ನಡಕ್ಕೆ ರೀಮೇಕ್ ಆಗಿದ್ದವು). ಶಿವಾಜಿ ಗಣೇಶನ್ ಅವರೊಂದಿಗೆ ನಾಗೇಶ್ ನಟಿಸಿದ 'ತಿಲ್ಲಾನ ಮೋಹನಾಂಬಾಳ್' ಹಾಗೂ 'ತಿರುವಿಳೈಯಾಡಲ್' ಚಿತ್ರಗಳನ್ನಂತೂ ಚಿತ್ರಪ್ರೇಮಿಗಳು ಎಂದೂ ಮರೆಯಲಾಗದು. 'ಆಯಿತ್ತಿಲ್ ಒರುವನ್' ಸೇರಿದಂತೆ ಎಂಜಿಆರ್ ಜತೆಗೂ ನಾಗೇಶ್ ಅನೇಕ ಚಿತ್ರಗಳಲ್ಲಿ ಅಭಿನಯಿಸಿದ್ದರು. ಎಂಜಿಆರ್ ಹಾಗೂ ಶಿವಾಜಿ ಗಣೇಶನ್ ಅಭಿನಯದ ಬಹುತೇಕ ಚಿತ್ರಗಳಲ್ಲಿ ಅಭಿನಯಿಸಿದ ಕೆಲವೇ ಕೆಲವು ಹಾಸ್ಯ ನಟರಲ್ಲಿ ಇವರೂ ಒಬ್ಬರು. ತಮ್ಮ ನಟನೆಯಿಂದ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತಿದ್ದ ನಾಗೇಶ್ ಅವರು ಅನೇಕ ವರ್ಷಗಳ ಕಾಲ ಕುಡಿತದ ದಾಸರಾಗಿ ಚಿತ್ರೋದ್ಯಮದ ಅನಾದರಕ್ಕೆ ಒಳಗಾದರು. ಆದರೆ ಈ ವ್ಯಸನದಿಂದ ಹೊರಬಂದ ಬಳಿಕ ಮತ್ತೆ ಚಿತ್ರರಂಗಕ್ಕೆ ಮರುಪ್ರವೇಶ ಮಾಡಿದರು. ಇವರು ಕೇವಲ ಹಾಸ್ಯ ನಟರಾಗಿ ಮಾತ್ರವಲ್ಲ ಖಳನಾಯಕ, ಪೋಷಕ ಪಾತ್ರಗಳಲ್ಲೂ ಮಿಂಚಿದ್ದರು.

2009: ಭಾರತದ ಯೂಕಿ ಭಾಂಬ್ರಿ ಅವರು ಆಸ್ಟ್ರೇಲಿಯಾ ಓಪನ್ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಚಾಂಪಿಯನ್‌ಶಿಪ್‌ನ ಜೂನಿಯರ್ ಬಾಲಕರ ಸಿಂಗಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಹೊಸ ಇತಿಹಾಸ ನಿರ್ಮಿಸಿದರು. ಮೆಲ್ಬರ್ನ್ ಪಾರ್ಕ್‌ನ ರಾಡ್ ಲೇವರ್ ಅರೆನಾದಲ್ಲಿ ನಡೆದ ಫೈನಲ್‌ನಲ್ಲಿ ಯೂಕಿ 6-3, 6-1 ರಲ್ಲಿ ಜರ್ಮನಿಯ ಅಲೆಕ್ಸಾಂಡ್ರೊಸ್ ಫರ್ಡಿನಾಂಡೊಸ್ ಅವರನ್ನು ಮಣಿಸಿದರು. 57 ನಿಮಿಷಗಳ ಹೋರಾಟದ ಕೊನೆಗೆ ಗೆಲುವು ಲಭಿಸುತ್ತಿದ್ದಂತೆಯೇ ಯೂಕಿ ತಮ್ಮ ಮುಷ್ಠಿಯನ್ನು ಗಾಳಿಯಲ್ಲಿ ಗುದ್ದಿ ಸಂಭ್ರಮಿಸಿದರು. ಆ ಕ್ಷಣ ಭಾರತದ ಟೆನಿಸ್ ಅಭಿಮಾನಿಗಳ ರೋಮಾಂಚನಕ್ಕೆ ಕಾರಣವಾಯಿತು. ಆಸ್ಟ್ರೇಲಿಯಾ ಓಪನ್ ಗ್ರ್ಯಾಂಡ್ ಸ್ಲಾಮ್‌ನ ಜೂನಿಯರ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ದೆಹಲಿಯ 16ರ ಹರೆಯದ ಯೂಕಿ ತಮ್ಮದಾಗಿಸಿದರು. ಅದೇ ರೀತಿ ಜೂನಿಯರ್ ಗ್ರ್ಯಾಂಡ್ ಸ್ಲಾಮ್ನಲ್ಲಿ ಪ್ರಶಸ್ತಿ ಜಯಿಸಿದ ಭಾರತದ ನಾಲ್ಕನೇ ಆಟಗಾರನಾಗಿ ಯೂಕಿ ಇತಿಹಾಸದ ಪುಟಗಳಲ್ಲಿ ಸ್ಥಾನ ಪಡೆದರು. ರಾಮನಾಥನ್ ಕೃಷ್ಣನ್ (1954ರ ವಿಂಬಲ್ಡನ್ ಜೂನಿಯರ್ ಪ್ರಶಸ್ತಿ), ಅವರ ಪುತ್ರ ರಮೇಶ್ ಕೃಷ್ಣನ್ (1979ರ ವಿಂಬಲ್ಡನ್ ಮತ್ತು ಫ್ರೆಂಚ್ ಓಪನ್) ಹಾಗೂ ಲಿಯಾಂಡರ್ ಪೇಸ್ (1990ರ ವಿಂಬಲ್ಡನ್ ಮತ್ತು ಯುಎಸ್ ಓಪನ್) ಅವರು ಈ ಹಿಂದೆ ಭಾರತಕ್ಕೆ ಜೂನಿಯರ್ ಗ್ರ್ಯಾಂಡ್‌ಸ್ಲಾಮ್ ಪ್ರಶಸ್ತಿ ತಂದಿತ್ತಿದ್ದರು. ಕಳೆದ ಬಾರಿ ಇಲ್ಲಿ ಸೆಮಿಫೈನಲಿನಲ್ಲಿ ಸೋಲು ಅನುಭವಿಸಿದ್ದ ಯೂಕಿ ಫೈನಲಿನಲ್ಲಿ ಎಲ್ಲ ವಿಭಾಗಗಲ್ಲೂ ಮೇಲುಗೈ ಸಾಧಿಸಿದರು. ಮೊದಲ ಸೆಟ್‌ನ ನಾಲ್ಕನೇ ಗೇಮಿನಲ್ಲಿ ಎದುರಾಳಿಯ ಸರ್ವ್ ಮುರಿದ ಅವರು 3-1 ರಲ್ಲಿ ಮುನ್ನಡೆ ಸಾಧಿಸಿದರು. ಅದೇ ಲಯವನ್ನು ಕಾಪಾಡಿಕೊಂಡರಲ್ಲದೆ, 31 ನಿಮಿಷಗಳಲ್ಲಿ ಸೆಟ್ ಗೆದ್ದರು. ಎರಡನೇ ಸೆಟ್ ಗೆಲ್ಲಲು ಕೇವಲ 26 ನಿಮಿಷಗಳನ್ನು ವ್ಯಯಿಸಿದ ಯೂಕಿ ಚೊಚ್ಚಲ ಗ್ರ್ಯಾಂಡ್ ಸ್ಲಾಮ್ ಟ್ರೋಫಿಗೆ ಮುತ್ತಿಕ್ಕಿದರು. ಅಮೆರಿಕದ ಸೆರೆನಾ ವಿಲಿಯಮ್ಸ್ ಇದೇ ಚಾಂಪಿಯನ್‌ಶಿಪ್ನ ಮಹಿಳೆಯರ ಸಿಂಗಲ್ಸ್ ವಿಭಾಗದ ಪ್ರಶಸ್ತಿ ತಮ್ಮದಾಗಿಸಿಕೊಂಡರು. ರಾಡ್ ಲೇವರ್ ಅರೆನಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸೆರೆನಾ 6-0, 6-3 ರಲ್ಲಿ ರಷ್ಯಾದ ದಿನಾರ ಸಫಿನಾ ವಿರುದ್ಧ ಜಯ ಪಡೆದರು. ಇದು ಸೆರೆನಾ ಅವರ ವೃತ್ತಿಜೀವನದ 10ನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯಾಗಿದೆ. ಈ ಗೆಲುವಿನ ಮೂಲಕ ಅವರು ರಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರು.

2009: ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮತ್ತು ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ ಬೆಂಗಳೂರಿನಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿ.ವಿ.ಸದಾನಂದಗೌಡರ ಸಮ್ಮುಖದಲ್ಲಿ ಈದಿನ ಅಧಿಕೃತವಾಗಿ ಬಿಜೆಪಿ ಸೇರಿದರು.

2009: ತೆಲುಗು ನಟಿ ವಿಜಯಶಾಂತಿ ತನ್ನ ತಲ್ಲಿ ತೆಲಂಗಾಣ ಪಕ್ಷವನ್ನು ಹೈದರಾಬಾದಿನಲ್ಲಿ ತೆಲಂಗಾಣ ರಾಷ್ಟ್ರೀಯ ಸಮಿತಿ (ಟಿಆರ್‌ಎಸ್) ಪಕ್ಷದೊಂದಿಗೆ ವಿಲೀನಗೊಳಿಸಿದರು. ಅವರು ಟಿಆರ್‌ಎಸ್ ಮುಖ್ಯಸ್ಥ ಕೆ.ಚಂದ್ರಶೇಖರ ರಾವ್ ಅವರ ಮನೆಗೆ ತೆರಳಿ ಪಕ್ಷದ ಸದಸ್ಯರಾದರು. ನಂತರ ಅವರು ಟಿಆರ್‌ಎಸ್‌ನೊಂದಿಗೆ ತಮ್ಮ ಪಕ್ಷದ ವಿಲೀನವನ್ನು ಘೋಷಿಸಿದರು.

2009: ಕೋಸಿ ನದಿ ಪ್ರವಾಹ ಸಂತ್ರಸ್ತರ ಪುನರ್‌ವಸತಿಗೆಂದು ಮುಖ್ಯಮಂತ್ರಿ ಪರಿಹಾರ ನಿಧಿಯ ಮೂಲಕ ನೆರವು ನೀಡಿದ ಕರ್ನಾಟಕದ ಜನತೆಗೆ ಅದರಲ್ಲೂ ವಿಶೇಷವಾಗಿ 'ಡೆಕ್ಕನ್ ಹೆರಾಲ್ಡ್' ಮತ್ತು 'ಪ್ರಜಾವಾಣಿ' ಪತ್ರಿಕೆಗಳಿಗೆ ಬಿಹಾರ ಮುಖ್ಯಮಂತ್ರಿ ನಿತೀಶ ಕುಮಾರ್ ಅವರು ಅಭಿನಂದನೆ ಸಲ್ಲಿಸಿದರು. ಪಟ್ನಾದಲ್ಲಿ 'ಡೆಕ್ಕನ್ ಹೆರಾಲ್ಡ್' ಹಾಗೂ 'ಪ್ರಜಾವಾಣಿ' ಸಂಪಾದಕರಾದ ಕೆ.ಎನ್. ತಿಲಕ್ ಕುಮಾರ್ ಅವರು ಕಳುಹಿಸಿಕೊಟ್ಟ 2ನೇ ಕಂತಿನ 12, 09,497 ರೂಪಾಯಿಗಳ ಡಿ.ಡಿ ಯನ್ನು ಪಟ್ನಾದ 'ಡೆಕ್ಕನ್ ಹೆರಾಲ್ಡ್' ವರದಿಗಾರ ಅಭಯ್ ಕುಮಾರ್ ಅವರು ತಮಗೆ ಸಲ್ಲಿಸಿದ ಸಂದರ್ಭದಲ್ಲಿ ಅವರು ಈ ಧನ್ಯವಾದ ಸಮರ್ಪಿಸಿದರು. ಅಕ್ಟೋಬರ 30 ರಂದು ಸಂಪಾದಕ ಕೆ. ಎನ್. ತಿಲಕ್ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿ ಪರಿಹಾರ ನಿಧಿಗೆ ಓದುಗರಿಂದ ಸಂಗ್ರಹವಾದ ಮೊದಲ ಕಂತಿನ 51,32,00 ರೂಪಾಯಿಗಳ ಡಿ.ಡಿ.ಯನ್ನು ಖುದ್ದಾಗಿ ನೀಡಿದ್ದರು.

2009: ಆಹಾರ ಪದಾರ್ಥಗಳ ಪ್ಯಾಕ್ ಮಾಡಲು ಬಳಸುವ, ರಸಗೊಬ್ಬರ, ಜವಳಿ, ಪೀಠೋಪಕರಣಗಳ ಮೆತ್ತೆ ಹಾಗೂ ಸ್ತ್ರೀಯರ ಖಾಸಗಿ ಉಪಯೋಗದ ಬಹುತೇಕ ವಸ್ತುಗಳಲ್ಲಿ ಅತಿಯಾಗಿ ಬಳಕೆಯಾಗುವ ರಾಸಾಯನಿಕ ಅಂಶಗಳು ಮಹಿಳೆಯರ ಬಂಜೆತನಕ್ಕೆ ಕಾರಣವಾಗಬಲ್ಲವು ಎಂದು ಅಧ್ಯಯನವೊಂದು ತಿಳಿಸಿತು. ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ ಹಾಗೂ ಲಾಸ್ ಏಂಜಲೀಸಿನ ಸಾರ್ವಜನಿಕ ಆರೋಗ್ಯ ಶಾಲೆಗಳು ನಡೆಸಿದ ಸಂಶೋಧನೆಯಲ್ಲಿ ಈ ಅಂಶ ವ್ಯಕ್ತವಾಯಿತು. ಈ ವಸ್ತುಗಳ ಬಳಕೆಯಿಂದಾಗಿ ಮಹಿಳೆಯರ ದೇಹದಲ್ಲಿನ ರಕ್ತದಲ್ಲಿ ಪರ್‌ಫ್ಯ್ಲೂರೊಆಕ್ಟೇನ್ ಹಾಗೂ ಪರ್‌ಫ್ಯ್ಲೂರೊಆಕ್ಟೇನ್ ಸಲ್ಫೋನೇಟ್ ಮಟ್ಟ ಹೆಚ್ಚಾಗುತ್ತದೆ. ಇಂತಹ ಅಂಶಗಳುಳ್ಳ ಮಹಿಳೆಯರು ಗರ್ಭಧರಿಸಲು ಸಾಮಾನ್ಯ ಮಹಿಳೆಯರು ತೆಗೆದುಕೊಳ್ಳುವ ಅವಧಿಗಿಂತಲೂ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಾರೆ ಎಂದು ಸಂಶೋಧಕರು ಅಭಿಪ್ರಾಯಪಟ್ಟರು.

2009: ಭಾರತೀಯ ಮೂಲದ ಹಾಸ್ಯ ಬರಹಗಾರ ಶರತ್ ಸರ್ದಾನಾ (40) ಲಂಡನ್ನಿನಲ್ಲಿ ನಿಧನರಾದರು. ಬ್ರಿಟನ್ನಿನಲ್ಲಿನ ಭಾರತೀಯರ ಮನೋಧರ್ಮಗಳನ್ನು ಬದಲಾಯಿಸುವಲ್ಲಿ ಇವರ ಕ್ರಾಂತಿಕಾರಿ ಹಾಸ್ಯ (ಕಾಮಿಕ್) ಬರಹಗಳು ಇವರಿಗೆ ಅತ್ಯಂತ ಖ್ಯಾತಿಯನ್ನು ತಂದುಕೊಟ್ಟಿದ್ದವು. ಸಾಮಾಜಿಕ ಹವ್ಯಾಸಗಳಿಂದ ಜನಾಂಗೀಯ ನೀತಿಗಳವೆರೆಗಿನ ಇವರ ಹಾಸ್ಯ ಬರಹಗಳು ಬ್ರಿಟನ್ ದೃಶ್ಯ ಮಾಧ್ಯಮದಲ್ಲೂ ಭಾರಿ ಬೇಡಿಕೆ ಹೊಂದಿದ್ದವು. ಅಂತೆಯೇ ಶರತ್ ಮತ್ತು ರಿಚರ್ಡ್ ಪಿಂಟೊ ಜೋಡಿ ಭಾರಿ ಖ್ಯಾತಿ ಗಳಿಸಿತ್ತು.

2008: ಕರ್ನಾಟಕ ರಾಜ್ಯದ ವಿವಿಧೆಡೆಗಳಲ್ಲಿ ಹತ್ತು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಪಾರ ಪ್ರಮಾಣದ ಅಕ್ರಮ ಆಸ್ತಿಯನ್ನು ಪತ್ತೆ ಹಚ್ಚಿದರು. ಆದರೆ ಈ ದಾಳಿಯ ಬಗ್ಗೆ ವಿವರ ನೀಡಲು ಲೋಕಾಯುಕ್ತ್ತ ಎನ್. ಸಂತೋಷ ಹೆಗ್ಡೆ ನಿರಾಕರಿಸಿದರು. ಐಎಎಸ್ ಅಧಿಕಾರಿ ಡಾ. ಬಾಬುರಾವ್ ಮುಡಬಿ, ಬಳ್ಳಾರಿಯ ಹೆಚ್ಚುವರಿ ಎಸ್ಪಿ ಡಾ.ಡಿ.ಸಿ. ರಾಜಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಶೇಖರ್, ಗುಲ್ಬರ್ಗದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಸ್ಪಿ ಪಿತಾಂಬರ ಹೆರಾಜೆ, ಬೆಳಗಾವಿಯ ಪೊಲೀಸ್ ಇಲಾಖೆಯ ಅಬಕಾರಿ ವಿಚಕ್ಷಣ ದಳದ ಡಿ ವೈ ಎಸ್ ಪಿ ಪಿ.ಜಿ. ವಾಂಡ್ ಕರ, ದಾವಣಗೆರೆ ಜಿಲ್ಲೆ ಜಗಳೂರಿನ ಪೊಲೀಸ್ ಇನ್ಸ್ ಪೆಕ್ಟರ್ ರೇವಣ್ಣ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ತಾಂತ್ರಿಕ ನಿರ್ದೇಶಕ ಎಸ್.ಪಿ. ಕೊಲ್ಹಾರ, ಕೋಲಾರದ ಕೈಗಾರಿಕಾ ಇಲಾಖೆ ಅಧಿಕಾರಿ ಸುಬ್ರಹ್ಮಣ್ಯ ಮತ್ತಿತರರು ದಾಳಿಗೆ ಒಳಗಾದ ಅಧಿಕಾರಿಗಳಲ್ಲಿ ಸೇರಿದ್ದರು. ಲೋಕಾಯುಕ್ತರು, ಉಪಲೋಕಾಯುಕ್ತ ಪತ್ರಿ ಬಸವನಗೌಡ ಮತ್ತು ಸಂಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರೂಪಕ್ ಕುಮಾರ್ ದತ್ತ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆಯಿತು.

2008: ಇಂಟರ್ನೆಟ್ ಸಂಪರ್ಕ ಕಲ್ಪಿಸುವ ಮೆಡಿಟರೇನಿಯನ್ ಸಾಗರದೊಳಗಿನ ಎರಡು ಕೇಬಲುಗಳು ಜಖಂಗೊಂಡಿರುವುದರಿಂದ ಪಶ್ಚಿಮ ಏಷ್ಯಾದ ಬಹುತೇಕ ಭಾಗ ಹಾಗೂ ಭಾರತದಲ್ಲಿ ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಕೇಬಲುಗಳು ತುಂಡಾದದ್ದರಿಂದ ಭಾರತದ ಅಂತರ್ಜಾಲ ಸೇವೆಯಲ್ಲಿ ಶೇ 60ರಷ್ಟು ಹಾಗೂ ಈಜಿಪ್ತಿನಲ್ಲಿ ಶೇ 70 ರಷ್ಟು ವ್ಯತ್ಯಯ ಉಂಟಾಯಿತು. ಸಂಯುಕ್ತ ಅರಬ್ ರಾಷ್ಟ್ರ, ಕುವೈತ್ ಹಾಗೂ ಸೌದಿ ಅರೇಬಿಯಾ ಕೂಡ ಈ ತೊಂದರೆ ಅನುಭವಿಸಿದವು.

2008: ಸಂಗೀತ ಸಾಮ್ರಾಜ್ಞಿ ಡಾ. ಗಂಗೂಬಾಯಿ ಹಾನಗಲ್, ಇತಿಹಾಸ ತಜ್ಞ ಪ್ರೊ. ಬಿ.ಷೇಕ್ ಅಲಿ, ವಿಜ್ಞಾನ ಲೇಖಕ ಪ್ರೊ.ಜಿ.ಟಿ. ನಾರಾಯಣರಾವ್ ಹಾಗೂ ಕಾನೂನು ತಜ್ಞ-ಸ್ವಾತಂತ್ರ್ಯ ಹೋರಾಟಗಾರ ಕೋ. ಚೆನ್ನಬಸಪ್ಪ ಅವರಿಗೆ 8ನೆಯ ಘಟಿಕೋತ್ಸವದಲ್ಲಿ ಗೌರವ ಡಿ.ಲಿಟ್ ಪದವಿ ನೀಡಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ನಿರ್ಧರಿಸಿತು. ವಿ.ವಿ ಕುಲಪತಿ ಪ್ರೊ.ಬಿ.ಎ. ವಿವೇಕ್ ರೈ ಈ ವಿಷಯ ಪ್ರಕಟಿಸಿದರು.

2008: ಬೆಂಗಳೂರಿನ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ದಿವಂಗತ ವ್ಯಾಸರಾಯ ಬಲ್ಲಾಳ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ಈದಿನ ಮಧ್ಯಾಹ್ನ 12.30ರ ಸುಮಾರಿಗೆ ನಡೆಯಿತು. ಸಾಹಿತಿಗಳು ಸೇರಿದಂತೆ ಅಪಾರ ಸಂಖ್ಯೆಯಲ್ಲಿ ಬಂಧು ಬಳಗದವರು ಪಾಲ್ಗೊಂಡಿದ್ದರು.

2008: ಹಾಲಿವುಡ್ಡಿನ ಆಂಜೋಲಿನಾ ಜೋಲಿ ಹಾಗೂ ಬಾಲಿವುಡ್ಡಿನ ಐಶ್ವರ್ಯ ರೈ ಪೂರ್ವಜರು ಒಂದೇ ಮೂಲಕ್ಕೆ ಸೇರಿದವರು ಎಂಬ ಅಂಶವನ್ನು ಲಂಡನ್ ವಿಜ್ಞಾನಿಗಳು ಬಹಿರಂಗಪಡಿಸಿದರು. ಸುಮಾರು 10 ಸಾವಿರ ವರ್ಷಗಳ ಹಿಂದೆ ಕಪ್ಪು ಸಮುದ್ರ ಪ್ರದೇಶದಲ್ಲಿ ಬದುಕಿದ್ದ ನೀಲಿ ಕಣ್ಣುಗಳ ಪೂರ್ವಜರ ಪೀಳಿಗೆಯೇ ಇವರದು ಎಂದು ಸಂಶೋಧಕರು ಹೇಳಿದರು. ಕಣ್ಣುಗಳ ಬಣ್ಣದ ಕುರಿತು ಸುಮಾರು 800 ಜನರ ಮೇಲೆ ಸಂಶೋಧನೆ ಕೈಗೊಂಡ ಕೊಪನ್ ಹೇಗನ್ ವಿಶ್ವವಿದ್ಯಾಲಯದ ವಿಜ್ಞಾನಿಗಳು ಇಂತಹ ಸಾಧ್ಯತೆಯನ್ನು ಬಯಲಿಗೆಳೆದರು. ಇವರ ಪ್ರಕಾರ ನೀಲಿ ಕಣ್ಣುಗಳನ್ನು ಹೊಂದಿದ ಶೇ 99.5ರಷ್ಟು ಜನರ ಡಿ ಎನ್ ಎ (ವಂಶವಾಹಿ ತಳಿ ನಕ್ಷೆ) ಒಂದೇ ರೀತಿಯದ್ದಾಗಿರುತ್ತದೆ. ಇವರ ಕಣ್ಣುಗಳ ಪೊರೆಯ ಬಣ್ಣ ನಿರ್ಧರಿಸುವ ಜೀನುಗಳ (ವಂಶವಾಹಿ) ಮಾರ್ಪಾಡು ಒಂದೇ ರೀತಿಯಾಗಿದೆ.

2008: ಪ್ರವಾದಿ ಮೊಹಮ್ಮದ್ ಅವರ ಕುರಿತ ಕ್ಯಾರಿಕೇಚರುಗಳನ್ನು (ಅಣಕು ಚಿತ್ರಣದ ಕಲಾಕೃತಿ) ಸಂರಕ್ಷಿಸಿ ಇಡಲು ಡೆನ್ಮಾರ್ಕ್ ರಾಷ್ಟ್ರೀಯ ಗ್ರಂಥಾಲಯ ನಿರ್ಧರಿಸಿತು. ಎರಡು ವರ್ಷಗಳ ಹಿಂದೆ ಈ ಕಲಾಕೃತಿಗಳು ಇಸ್ಲಾಮೀ ಜಗತ್ತಿನಲ್ಲಿ ಭಾರಿ ವಿವಾದವನ್ನು ಎಬ್ಬಿಸಿದ್ದವು. ಕೆಲವು ಮುಸ್ಲಿಮ್ ನಾಯಕರ ಆಕ್ಷೇಪಗಳ ನಡುವೆಯೂ ಮೊಹಮ್ಮದರನ್ನು ಕುರಿತ ಕ್ಯಾರಿಕೇಚರುಗಳನ್ನು ಅಧ್ಯಯನ ದೃಷ್ಟಿಯಿಂದ ಸಂರಕ್ಷಿಸಲಾಗುವುದು ಎಂದು ಗ್ರಂಥಾಲಯದ ವಕ್ತಾರ ಜೆಟ್ಟೆ ಜಾಯಿರ್ಗಾರ್ಡ್ ತಿಳಿಸಿದರು.

2008: ಗಣರಾಜ್ಯೋತ್ಸವ ಪೆರೇಡಿನಲ್ಲಿ ಪಾಲ್ಗೊಂಡಿದ್ದ ಕರ್ನಾಟಕದ `ಬೇಲೂರು ಚನ್ನಕೇಶವ ದೇವಾಲಯ' ಸ್ತಬ್ಧಚಿತ್ರ ಸಮಗ್ರ ರೂಪದ ಎರಡನೇ ಅತ್ಯುತ್ತಮ ಪ್ರಶಸ್ತಿ ಸೇರಿದಂತೆ ಮೂರು ಪ್ರಶಸ್ತಿಗಳನ್ನು ಗಳಿಸಿತು. ಸ್ತಬ್ಧಚಿತ್ರದ ಮೆರವಣಿಗೆಗೆ ಹಿಮ್ಮೇಳವಾಗಿ ನಾದಸ್ವರ ನುಡಿಸಿದ ಕೋಲಾರ ಜಿಲ್ಲೆಯ ಬೇತಮಂಗಲದ ಗಂಗಾಧರ ನಾದಸ್ವರ ಗುರುಕುಲದ ಕಲಾವಿದರು `ಉತ್ತಮ ಪ್ರಸ್ತುತಿ ಪ್ರಶಸ್ತಿ' ಗಳಿಸಿದರು. ಸ್ತಬ್ಧಚಿತ್ರವನ್ನು ತಯಾರಿಸಿದ ಬೆಂಗಳೂರಿನ `ಸಂಜಯ್ ಮಾರ್ಕೆಟಿಂಗ್ ಮತ್ತು ಸರ್ವೀಸಸ್' ಸಂಸ್ಥೆ `ಉತ್ತಮ ರಚನಾ ಪ್ರಶಸ್ತಿ' ಯನ್ನು ಪಡೆಯಿತು.

2008: ಅನಿಲ್ ಕುಂಬ್ಳೆ ಅವರನ್ನು ಈ ಬಾರಿಯ `ಎಸ್ಸೆಲ್ ಕರ್ನಾಟಕದ ಶ್ರೇಷ್ಠ ಕ್ರೀಡಾ ವ್ಯಕ್ತಿ -2008' ವಿಶೇಷ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು. `ಜೀವಮಾನದ ಶ್ರೇಷ್ಠ ಸಾಧಕ' ಪ್ರಶಸ್ತಿ ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಕೆ.ವಿ. ವರದರಾಜ್ ಅವರಿಗೆ ಲಭಿಸಿತು. ಇವರಿಬ್ಬರಲ್ಲದೆ ಅನೂಪ್ ಶ್ರೀಧರ್ (ಬ್ಯಾಡ್ಮಿಂಟನ್), ಚಿತ್ರಾ ಮಗಿಮೈರಾಜ್ (ಬಿಲಿಯರ್ಡ್ಸ್), ಗಿರೀಶ್ ಎ ಕೌಶಿಕ್ (ಚೆಸ್), ಹೆಲೆನ್ ಮೇರಿ ಇನೊಸೆಂಟ್ (ಹಾಕಿ) ಮತ್ತು ಶಿಖಾ ಟಂಡನ್ (ಈಜು) ಇವರನ್ನೂ ಶ್ರೇಷ್ಠ ಸಾಧಕ ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.

2007: ಇಂಗ್ಲೆಂಡ್ ಮೂಲದ `ಕೋರಸ್' ಉಕ್ಕು ಕಂಪೆನಿ ಖರೀದಿಗೆ ಭಾರತದ ಟಾಟಾ ಸ್ಟೀಲ್ಸ್ ಮತ್ತು ಬ್ರೆಜಿಲಿನ ಸಿ ಎಸ್ ಎನ್ ಕಂಪೆನಿಗಳ ನಡುವೆ ನಾಲ್ಕು ತಿಂಗಳುಗಳಿಂದ ನಡೆದಿದ್ದ ಜಿದ್ದಾಜಿದ್ದಿನ ಪೈಪೋಟಿ ಈ ದಿನ ಕೊನೆಗೊಂಡು, ಟಾಟಾ ಸ್ಟೀಲ್ಸ್ ಗೆಲುವಿನ ನಗೆ ಬೀರುವುದರೊಂದಿಗೆ ಭಾರತೀಯ ಔದ್ಯಮಿಕ ಇತಿಹಾಸದಲ್ಲಿ ದಾಖಲೆ ನಿರ್ಮಾಣಗೊಂಡಿತು. ಭಾರತೀಯ ಔದ್ಯಮಿಕ ಇತಿಹಾಸದಲ್ಲೇ ದಾಖಲೆ ಎನ್ನಬಹುದಾದ ಈ ಖರೀದಿ ಒಪ್ಪಂದದಿಂದಾಗಿ ಜಗತ್ತಿನ ಉಕ್ಕು ಉದ್ಯಮದಲ್ಲಿ ಭಾರತೀಯ ಕಂಪೆನಿಗಳ ಹಿಡಿತ ಇನ್ನಷ್ಟು ಬಿಗಿಗೊಂಡಿತು. ಪ್ರಸ್ತುತ ಟಾಟಾ ಸ್ಟೀಲ್ಸಿನ ವಾರ್ಷಿಕ ಉತ್ಪಾದನೆ ಐವತ್ತು ಲಕ್ಷ ಟನ್ ಇದ್ದು, `ಕೋರಸ್' ನ ಉತ್ಪಾದನೆ 1.82 ಕೋಟಿ ಟನ್ ಇದೆ. ಈ ಖರೀದಿಯಿಂದಾಗಿ ಟಾಟಾ ಸ್ಟೀಲ್ಸ್ ಈಗ 23.2 ಮೆಟ್ರಿಕ್ ಟನ್ ವಾರ್ಷಿಕ ಉತ್ಪಾದನೆಯ ಕಂಪೆನಿಯಾಗಲಿದ್ದು, ಜಗತ್ತಿನ ಐದನೇ ದೊಡ್ಡ ಉಕ್ಕು ಉತ್ಪಾದನೆ ಕಂಪೆನಿ ಎಂಬ ಹೆಗ್ಗಳಿಕೆಗೂ ಪಾತ್ರವಾಗುವುದು. ಟಾಟಾ ಮತ್ತು ಸಿ ಎಸ್ ಎನ್ ಕಂಪೆನಿಗಳೆರಡೂ `ಕೋರಸ್' ನ್ನು ತಮ್ಮ ತೆಕ್ಕೆಗೆ ಪಡೆಯಲು ಎಲ್ಲಿಲ್ಲದ ಕಸರತ್ತು ನಡೆಸಿದ್ದರಿಂದ ಅಂತಿಮವಾಗಿ ಬಹಿರಂಗ ಹರಾಜು ನಡೆಸಲು ನಿರ್ಧರಿಸಲಾಗಿತ್ತು. ಜನವರಿ 30ರ ರಾತ್ರಿಯಿಂದ 31ರ ಬೆಳಗಿನವರೆಗೆ ನಡೆದ ಒಂಬತ್ತು ಸುತ್ತಿನ ಬಹಿರಂಗ ಹರಾಜಿನಲ್ಲಿ `ಕೋರಸ್' ನ ಪ್ರತಿ ಷೇರಿಗೆ 608 ಪೆನ್ನಿಗಳನ್ನು ನೀಡಲು ಮುಂದಾದ ಟಾಟಾ ಸ್ಟೀಲ್ಸ್ ಗೆ ಜಯ ಸಿಕ್ಕಿತು. ಸಿ ಎಸ್ ಎನ್ ಪ್ರತಿ ಷೇರಿಗೆ 603 ಪೆನ್ನಿವರೆಗೆ ಕೊಡಲು ತಯಾರಾಗಿತ್ತು. ಆದರೆ, 608 ಪೆನ್ನಿ ನೀಡಲು ಟಾಟಾ ಸ್ಟೀಲ್ಸ್ ಮುಂದಾದಾಗ ಸಿ ಎಸ್ ಎನ್ ಕೈ ಚೆಲ್ಲಿತು. ಕೋರಸ್ ಕಂಪೆನಿಗಾಗಿ ಒಟ್ಟು 1,130 ಕೋಟಿ ಡಾಲರ್ನ್ನು ಸಂಪೂರ್ಣ ನಗದು ನೀಡಲು ಟಾಟಾ ಒಪ್ಪಿಕೊಂಡಿದ್ದು, ಇದು 50,850 ಕೋಟಿ ರೂಪಾಯಿಯಾಗುತ್ತದೆ. ಈ ಸಾಲಿನಲ್ಲಿ ಕೋರಸ್ ನ ಪ್ರತಿ ಷೇರು 550 ಪೆನ್ನಿಗಳ ಮೌಲ್ಯದಲ್ಲಿ ಮಾರಾಟವಾಗುತ್ತಿದ್ದು, ಟಾಟಾ ಸ್ಟೀಲ್ 608 ಪೆನ್ನಿ ನೀಡಲು ಮುಂದಾಗಿದ್ದರಿಂದ ಕೋರಸ್ ಷೇರುದಾರರಿಗೆ ಭಾರೀ ಲಾಭವಾಯಿತು.

2007: ಕಾವೇರಿ ನದಿ ದಂಡೆಯ ಮೇಲಿರುವ ಟಿ. ನರಸೀಪುರದ ಅಗಸ್ತ್ಯೇಶ್ವರ ದೇವಾಲಯದಲ್ಲಿ ಬೆಳಗ್ಗೆ ಕಲಶ ಸ್ಥಾಪನೆ, ಗಣಹೋಮ ಹಾಗೂ ಸಂಜೆ ಗಂಗಾಪೂಜೆ, ಯಾಗ ಶಾಲೆ ಪ್ರವೇಶ ಮಾಡುವುದರೊಂದಿಗೆ ಏಳನೇ ಮಹಾಕುಂಭಮೇಳ ವಿಧ್ಯುಕ್ತವಾಗಿ ಆರಂಭಗೊಂಡಿತು.

2007: ಕೇವಲ ಮಹಿಳೆಯರೇ ಇರುವ ಭಾರತೀಯ ಪೊಲೀಸ್ ತುಕಡಿ ಆಫ್ರಿಕದ ಪಶ್ಚಿಮ ಭಾಗದಲ್ಲಿರುವ ಲೈಬೀರಿಯಾ ಶಾಂತಿಪಾಲನಾ ಕಾರ್ಯ ನಿರ್ವಹಿಸುವ ಸಲುವಾಗಿ ಲೈಬೀರಿಯಾವನ್ನು ತಲುಪುವ ಮೂಲಕ ಇತಿಹಾಸ ಸೃಷ್ಟಿಸಿತು. ವಿಶ್ವಸಂಸ್ಥೆಯ ಶಾಂತಿಪಾಲನಾ ಪಡೆಯ ಭಾಗವಾಗಿ ಸೇರ್ಪಡೆಗೊಳ್ಳುವ ಈ ತುಕಡಿಯಲ್ಲಿ 103 ಮಂದಿ ಮಹಿಳಾ ಸಿಬ್ಬಂದಿ ಇದ್ದು, ವಿಶ್ವಸಂಸ್ಥೆ ಶಾಂತಿಪಾಲನಾ ಪಡೆಯ ಕಾರ್ಯಕ್ರಮದ ಇತಿಹಾಸದಲ್ಲಿ ಪೂರ್ಣ ಪ್ರಮಾಣದ ಮಹಿಳಾ ತುಕಡಿಯ ಸೇರ್ಪಡೆ ಇದೇ ಮೊದಲು.

2007: ಸ್ನಾತಕೋತ್ತರ ವೈದ್ಯಕೀಯ ಕೋರ್ಸಿನಲ್ಲಿ (ಪಿಜಿ) ಪರಿಶಿಷ್ಟ ಜಾತಿ, ಪಂಗಡದ ಅಭ್ಯರ್ಥಿಗಳಿಗೆ ಶೇಕಡಾ 22.5ರಷ್ಟು ಮೀಸಲಾತಿ ಜಾರಿಗೊಳಿಸಲು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿತು.

2007: ವರ್ಣಭೇದ ನೀತಿ ವಿರುದ್ಧ ಸಿಡಿದು ನಿಂತ ಹಾಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಗೆ ಅಹಿಂಸೆ, ಗಾಂಧಿ ತತ್ವಗಳ ಮೂಲಕ ಶ್ರಮಿಸಿದ ದಕ್ಷಿಣ ಆಫ್ರಿಕದ ಆರ್ಚ್ ಬಿಷಪ್ ಡೆಸ್ಮಂಡ್ ಟುಟು ಅವರಿಗೆ ನವದೆಹಲಿಯಲ್ಲಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ `ಗಾಂಧಿ ಪ್ರಶಸ್ತಿ' ಪ್ರದಾನ ಮಾಡಿದರು. ಈ ಪ್ರಶಸ್ತಿಯು 1 ಕೋಟಿ ರೂಪಾಯಿ ನಗದು ಹಣ ಮತ್ತು ಪುರಸ್ಕಾರ ಪತ್ರವನ್ನು ಹೊಂದಿದೆ.

2007: ಬ್ರಾಡ್ ವೇ ರಂಗಭೂಮಿ, ಚಲನಚಿತ್ರ ಮತ್ತು ಟೆಲಿವಿಷನ್ ಕ್ಷೇತ್ರಗಳಲ್ಲಿ ಮಾಡಿದ ಸಾಧನೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಕಾದಂಬರಿಕಾರ ಸಿಡ್ನಿ ಶೆಲ್ಡನ್ (89) ಅವರು ಲಾಸ್ ಏಂಜೆಲಿಸ್ನಲ್ಲಿ ನಿಧನರಾದರು.

2007: ಮಂಗಳೂರಿನ ಸಂಸ್ಕೃತಿ ಮತ್ತು ಶಿಕ್ಷಣ ಪ್ರತಿಷ್ಠಾನವು ಕನ್ನಡ ಸಾಹಿತ್ಯ ಪ್ರಶಸ್ತಿಗೆ ನೀಡುವ `ಸಂದೇಶ' ಪ್ರಶಸ್ತಿಗೆ `ನಾಡೋಜ' ಪ್ರಶಸ್ತಿ ಪುರಸ್ಕೃತ ಡಾ. ಚನ್ನವೀರ ಕಣವಿ ಆಯ್ಕೆಯಾದರು.

2005: ಖ್ಯಾತ ಶಿಕ್ಷಣ ತಜ್ಞ, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಭೌತಶಾಸ್ತ್ರಜ್ಞ ಡಾ. ಎಚ್. ನರಸಿಂಹಯ್ಯ (1920-2005) ಈದಿನ ನಿಧನರಾದರು.

1971: ಆಲನ್ ಶೆಫರ್ಡ್, ಸ್ಟುವರ್ಟ್ ರೂಸಾ ಮತ್ತು ಎಡ್ಗರ್ ಮಿಶೆಲ್ (mitchell) ಅವರನ್ನು ಹೊತ್ತ ಅಪೋಲೋ 14 ಬಾಹ್ಯಾಕಾಶ ನೌಕೆಯನ್ನು ಗಗನಕ್ಕೆ ಹಾರಿ ಬಿಡಲಾಯಿತು. ಶೆಫರ್ಡ್ ಮತ್ತು ಮಿಶೆಲ್ ಅವರು ಈ ಯಾನದ ಮೂಲಕ ಮೂರನೇ ಬಾರಿ ಚಂದನಲ್ಲಿ ಇಳಿದರು.

1963: ನವಿಲನ್ನು ಭಾರತದ `ರಾಷ್ಟ್ರೀಯ ಪಕ್ಷಿ' ಎಂಬುದಾಗಿ ಘೋಷಿಸಲಾಯಿತು.

1958: ಅಮೆರಿಕಾದ ಮೊದಲ ಉಪಗ್ರಹ `ಎಕ್ಸ್ ಪ್ಲೋರರ್ -1' ಕೇಪ್ ಕೆನವರಾಲ್ನಿಂದ ಉಡ್ಡಯನಗೊಂಡಿತು.

1950: ಅಮೆರಿಕಾ ಅಧ್ಯಕ್ಷ ಹ್ಯಾರಿ ಎಸ್. ಟ್ರೂಮನ್ ಅವರು ಜಲಜನಕ ಬಾಂಬ್ (ಹೈಡ್ರೋಜನ್ ಬಾಂಬ್) ಅಭಿವೃದ್ಧಿ ಪಡಿಸಲು ತಾವು ಆಜ್ಞಾಪಿಸಿರುವುದಾಗಿ ಪ್ರಕಟಿಸಿದರು.

1943: ಸ್ಟಾಲಿನ್ ಗಾರ್ಡಿನಲ್ಲಿ ಹಿಟ್ಲರನ ಆದೇಶಗಳನ್ನು ಉಲ್ಲಂಘಿಸಿ ಫೀಲ್ಡ್ ಮಾರ್ಷಲ್ ಪೌಲಸ್ ಜರ್ಮನ್ 6ನೇ ಸೇನಾ ತುಕಡಿಯೊಂದಿಗೆ ರಷ್ಯಕ್ಕೆ ಶರಣಾಗತರಾದರು.

1938: ರಾಗ ಸಂಯೋಜಕ, ಸಂಗೀತ ತಜ್ಞ ಬೆಂಗಳೂರು ಎಸ್. ಮುಕುಂದ್ ಅವರು ರೆವಿನ್ಯೂ ಕಮೀಷನರ್ ಶ್ರೀನಿವಾಸನ್ - ತಮಿಳು ಲೇಖಕಿ ಜಯಲಕ್ಷ್ಮಿ ದಂಪತಿಯ ಮಗನಾಗಿ ಬೆಂಗಳೂರಿನಲ್ಲಿ ಜನಿಸಿದರು.

1923: ಅಮೆರಿಕಾದ ಕಾದಂಬರಿಕಾರ ನಾರ್ಮನ್ ಮೈಲರ್ ಹುಟ್ಟಿದರು. ಕಾದಂಬರಿಯ ಕಲ್ಪನೆ ಹಾಗೂ ವಿಷಯ ಸಮೃದ್ಧಿಯೊಂದಿಗೆ ನೈಜ ಘಟನೆಗಳನ್ನು ನಿರೂಪಿಸುವ ಪತ್ರಿಕೋದ್ಯಮ ವಿಧಾನವನ್ನು ಇವರು ರೂಪಿಸಿದರು.

1918: ಸೋವಿಯತ್ ಒಕ್ಕೂಟದಲ್ಲಿ ಆಗ ಬಳಕೆಯಲ್ಲಿದ್ದ ಜ್ಯೂಲಿಯನ್ ಕ್ಯಾಲೆಂಡರಿನ ಕೊನೆಯ ದಿನ. ಮರುದಿನದಿಂದ ಅಲ್ಲಿ ಗ್ರೆಗೋರಿಯನ್ ಕ್ಯಾಲೆಂಡರ್ ಬಳಕೆಗೆ ಬಂತು. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ಮರುದಿನವನ್ನು `ಫೆಬ್ರುವರಿ 14' ಎಂಬುದಾಗಿ ಪರಿಗಣಿಸಲಾಯಿತು. ಈ ಎರಡು ದಿನಾಂಕಗಳ ನಡುವಣ ವ್ಯತ್ಯಾಸ ಸರಿಪಡಿಸುವ ಸಲುವಾಗಿ ಮಧ್ಯದ ದಿನಾಂಕಗಳನ್ನು ಕಿತ್ತು ಹಾಕಲಾಯಿತು.

1896: ಖ್ಯಾತ ಸಾಹಿತಿ, ಕಾವ್ಯವಾಚನದ ಗಾರುಡಿಗ ದತ್ತಾತ್ರೇಯ ರಾಮಚಂದ್ರ ಬೇಂದ್ರೆ (ದ.ರಾ.ಬೇಂದ್ರೆ- ಅಂಬಿಕಾತನಯದತ್ತ) (1896-1981) ಅವರು ರಾಮಚಂದ್ರ ಪಂತ- ಅಂಬೂತಾಯಿ ದಂಪತಿಯ ಮಗನಾಗಿ ಧಾರವಾಡದ ಪೋತನೀಸರ ಗಲ್ಲಿಯಲ್ಲಿ ಜನಿಸಿದರು. ಜ್ಞಾನಪೀಠ ಪ್ರಶಸ್ತಿ (ನಾಕುತಂತಿ ಕವನ ಸಂಗ್ರಹ) ಪಡೆದ ಕನ್ನಡದ ಮೇರು ಸಾಹಿತಿಗಳ ಪೈಕಿ ಇವರು ಒಬ್ಬರು.

1882: ಫ್ರಾಂಕ್ಲಿನ್ ಡೆಲಾನೊ ರೂಸ್ ವೆಲ್ಟ್ (1882-1945) ಹುಟ್ಟಿದ ದಿನ. ಅಮೆರಿಕದ 32ನೇ ಅಧ್ಯಕ್ಷರಾದ ಇವರು 1933-1945ರ ಅವಧಿಯಲ್ಲಿ ಅಧ್ಯಕ್ಷರಾಗಿದ್ದರು. ಇವರ ಆಳ್ವಿಕೆ ಕಾಲದಲ್ಲೇ ಎರಡನೇ ಜಾಗತಿಕ ಸಮರ ನಡೆಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Friday, March 5, 2010

ಇಂದಿನ ಇತಿಹಾಸ History Today ಜನವರಿ 30

ಇಂದಿನ ಇತಿಹಾಸ

ಜನವರಿ 30

ಪ್ರಸಿದ್ಧ ಕಾದಂಬರಿಕಾರ ವ್ಯಾಸರಾಯ ಬಲ್ಲಾಳ (85) ಅವರು ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಸ್ವಂತ ಮನೆ 'ಉತ್ತರಾಯಣ'ದಲ್ಲಿ ಈದಿನ ರಾತ್ರಿ ನಿಧನರಾದರು. ಉಡುಪಿಯ ನಿಡಂಬೂರು ವ್ಯಾಸರಾಯ ಬಲ್ಲಾಳರು (ಜನನ: ಡಿ.1, 1923) ಕನ್ನಡ ಸಾರಸ್ವತ ಲೋಕದಲ್ಲಿ `ಬಂಡಾಯದ ಬಲ್ಲಾಳ' ಎಂದೇ ಪ್ರಸಿದ್ಧರು. ಕನ್ನಡ ಕಾದಂಬರಿ ಲೋಕಕ್ಕೆ ಹೊಸ ಜಗತ್ತು ಹಾಗೂ ಸಂವೇದನೆಗಳನ್ನು ಪರಿಚಯಿಸಿದ `ಬಂಡಾಯ' ಬಲ್ಲಾಳರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ಕಾದಂಬರಿ.

ಇಂದು `ಹುತಾತ್ಮದಿನ'. 1948ರಲ್ಲಿ ಈದಿನ ಸಂಜೆ 5.10 ಗಂಟೆಗೆ ನವದೆಹಲಿಯ ಬಿರ್ಲಾ ಹೌಸಿನಲ್ಲಿ ಮಹಾತ್ಮಾ ಗಾಂಧೀಜಿ ಅವರು ನಾಥೂರಾಂ ಗೋಡ್ಸೆಯ ಗುಂಡೇಟಿಗೆ ಬಲಿಯಾಗಿ ಅಸು ನೀಗಿದರು. ಭಾರತದಲ್ಲಿ ಈ ದಿನವನ್ನು `ಹುತಾತ್ಮ ದಿನ'ವಾಗಿ ಆಚರಿಸಲಾಗುತ್ತದೆ.

2009: ವಿಶ್ವದ ಮೂರನೇ ಅತಿದೊಡ್ಡ ಸರಕು-ಸಾಗಣೆ ವಿಮಾನ ಎಫ್ ಕಾರ್ಗೊ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈದಿನ ಬಂದಿಳಿಯಿತು. ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ವೈಮಾನಿಕ ಪ್ರದರ್ಶನಕ್ಕೆ ಸಾಧನ-ಸರಕುಗಳನ್ನು ಈ ವಿಮಾನ ಹೊತ್ತು ತಂದಿತು. ಈಗಾಗಲೇ 30 ವಿಶ್ವದಾಖಲೆ ಮಾಡಿರುವ ಈ ವಿಮಾನ, 17,1219 ಕೆ.ಜಿ. ತೂಕದಷ್ಟು ಸರಕನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

2009: ಬಂಧನಕ್ಕೆ ಒಳಗಾದ ಬಿಜೆಪಿ ಶಾಸಕ ವೈ.ಸಂಪಂಗಿ ಅವರು 50 ಸಾವಿರ ರೂಪಾಯಿ ನಗದು ಮತ್ತು ರೂ 4.50 ಲಕ್ಷ ಮೊತ್ತದ ಚೆಕ್ ತೆಗೆದುಕೊಂಡಿರುವುದು ನಿಜ ಎಂಬುದಾಗಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಲೋಕಾಯುಕ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ರೂಪಕ್‌ಕುಮಾರ್ ದತ್ತ ತಿಳಿಸಿದರು. ಉದ್ಯಮಿ ಫರೂಕ್ ಮತ್ತು ನಯಾಜ್ ನಡುವಿನ ನಿವೇಶನ ವಿವಾದವನ್ನು ಬಗೆಹರಿಸುವ ದೃಷ್ಟಿಯಿಂದ, ನಯಾಜ್‌ಗೆ ನೀಡುವುದಕ್ಕಾಗಿ ಹಣ ಮತ್ತು ಚೆಕ್ ತೆಗೆದುಕೊಂಡಿದ್ದಾಗಿ ಹೇಳಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರು ಲೋಕಾಯುಕ್ತರ ವಿರುದ್ಧವೇ ಆರೋಪ ಮಾಡಿರುವ ವಿಚಾರ ತಮಗೆ ಗೊತ್ತಿಲ್ಲ ಎಂದು ಇಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ತಿಳಿಸಿದರು.

2009: ಮಂಗಳೂರು ನಗರ ಹೊರವಲಯದ ಗುರುಪುರ ಅಮೈ ಎಂಬಲ್ಲಿ ಈದಿನ ಬೆಳಗ್ಗೆ ಉಡುಪಿ ಜಿಲ್ಲೆಯ ನಂದಿಕೂರು ಅಡ್ವೆ ಕೋಟೆ ಬಾಳಿಕೆಯ ನಿವಾಸಿ ಧನಂಜಯ ಎಂಬಾತ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾದ. ರವಿ ಪೂಜಾರಿ ಸಹಚರ ಎನ್ನಲಾದ ಧನಂಜಯ ಮಂಗಳೂರಿನಲ್ಲಿ ಈಚೆಗೆ ಉದ್ಯಮಿಗಳಿಗೆ ಬೆದರಿಕೆ ಹಾಕಿ ಹಫ್ತಾ ವಸೂಲಿಗೆ ಪ್ರಯತ್ನಿಸಿದ್ದ ಎಂಬ ಆರೋಪವಿತ್ತು. ರಾತ್ರಿ ಎರಡು ಗಂಟೆ ಸುಮಾರಿಗೆ ಒಮ್ನಿ ಕಾರಿನಲ್ಲಿ ಸಾಗುತ್ತಿದ್ದ ಮೂವರನ್ನು ಪೊಲೀಸರು ತಡೆದರು. ಆಗ ಅವರು ವಾಹನವನ್ನು ವೇಗವಾಗಿ ಚಲಾಯಿಸಿ ಪರಾರಿಯಾಗಲು ಯತ್ನಿಸಿದರು. ಅಲ್ಲದೇ ಪೊಲೀಸರತ್ತ ಗುಂಡು ಹಾರಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿದಾಳಿ ನಡೆಸಿದ ಪರಿಣಾಮ ಧನಂಜಯ ಮೃತನಾದ. ಉಳಿದಿಬ್ಬರು ತಪ್ಪಿಸಿಕೊಂಡರು.

2009: ಬರಾಕ್ ಒಬಾಮ ಅವರು ಅಧ್ಯಕ್ಷರಾದುದರಿಂದ ತೆರವಾಗಿದ್ದ ಇಲಿನಾಯ್ ಸೆನೆಟ್ ಸ್ಥಾನವನ್ನು ಅಧಿಕಾರ ದುರ್ಬಳಕೆ ಮಾಡಿಕೊಂಡು ಮಾರಾಟ ಮಾಡಿದ ಆಪಾದನೆಗಾಗಿ ಗೌರ್ನರ್ ರಾಡ್ ಬಾಗ್ಲೊಜೆವಿಕ್ ಅವರನ್ನು ವಾಗ್ದಂಡನೆಯ ಮೂಲಕ ಉಚ್ಛಾಟಿಸಲಾಯಿತು. ಬಾಗ್ಲೊಜೆವಿಕ್ ಅವರ ಸ್ಥಾನಕ್ಕೆ ಲೆ. ಗೌರ್ನರ್ ಪ್ಯಾಟ್ ಕ್ವಿನ್ ಅವರನ್ನು ಆಯ್ಕೆ ಮಾಡಲಾಯಿತು. ಇಲಿನಾಯ್ ಸೆನೆಟ್ ಬಾಗ್ಲೊಜೆವಿಕ್ ಅವರನ್ನು ಉಚ್ಛಾಟಿಸುವ ನಿರ್ಣಯವನ್ನು ಅವಿರೋಧವಾಗಿ ಅಂಗೀಕರಿಸಿತು.

2009: ಆಸ್ಕರ್ ಪ್ರಶಸ್ತಿಗೆ ನಾಮಾಂಕಿತಗೊಂಡ ಆಂಗ್ಲಭಾಷಾ ಚಿತ್ರ 'ಸ್ಲಮ್‌ಡಾಗ್ ಮಿಲಿಯನೇರ್'ಗೆ ಪ್ರಶಸ್ತಿಗಳ ಸುರಿಮಳೆ ಮುಂದುವರಿಯಿತು. ಇಲ್ಲಿ ನಡೆದ ರಿಚರ್ಡ್ ಅಟೆನ್ ಬರೊ ಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಈ ಚಿತ್ರ ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಗಿಟ್ಟಿಸಿಕೊಂಡಿತು. ವರ್ಷದ ಅತ್ಯುತ್ತಮ ಚಿತ್ರ 'ಪ್ರಶಸ್ತಿ ಸ್ಲಮ್ ಡಾಗ್'' ಮುಡಿಗೇರಿತು. ಇದಲ್ಲದೇ, ಈ ಚಿತ್ರ ನಿರ್ದೇಶಿಸಿದ ಡ್ಯಾನಿ ಬೊಯ್ಲೆ ಅವರಿಗೆ 'ಅತ್ಯುತ್ತಮ ನಿರ್ದೇಶಕ' ಹಾಗೂ ಇದರಲ್ಲಿ ನಾಯಕ ನಟನಾಗಿ ನಟಿಸಿದ ದೇವ್ ಪಟೇಲ್‌ಗೆ 'ಉದಯೋನ್ಮುಖ ನಟ' ಪ್ರಶಸ್ತಿ ದೊರೆಯಿತು. 'ದಿ ರೀಡರ್' ಚಿತ್ರದ ಅಭಿನಯಕ್ಕಾಗಿ ನಾಯಕಿ ಕೇಟ್ ವಿನ್ಸಲೇಟ್ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದರು.

2008: ಪ್ರಸಿದ್ಧ ಕಾದಂಬರಿಕಾರ ವ್ಯಾಸರಾಯ ಬಲ್ಲಾಳ (85) ಅವರು ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಸ್ವಂತ ಮನೆ 'ಉತ್ತರಾಯಣ'ದಲ್ಲಿ ಈದಿನ ರಾತ್ರಿ ನಿಧನರಾದರು. ಉಡುಪಿಯ ನಿಡಂಬೂರು ವ್ಯಾಸರಾಯ ಬಲ್ಲಾಳರು (ಜನನ: ಡಿ.1, 1923) ಕನ್ನಡ ಸಾರಸ್ವತ ಲೋಕದಲ್ಲಿ `ಬಂಡಾಯದ ಬಲ್ಲಾಳ' ಎಂದೇ ಪ್ರಸಿದ್ಧರು. ಕನ್ನಡ ಕಾದಂಬರಿ ಲೋಕಕ್ಕೆ ಹೊಸ ಜಗತ್ತು ಹಾಗೂ ಸಂವೇದನೆಗಳನ್ನು ಪರಿಚಯಿಸಿದ `ಬಂಡಾಯ' ಬಲ್ಲಾಳರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ತಂದುಕೊಟ್ಟ ಕಾದಂಬರಿ. `ಆಕಾಶಕ್ಕೊಂದು ಕಂದೀಲು', `ಹೇಮಂತಗಾನ', `ವಾತ್ಸಲ್ಯ ಪಥ', `ಉತ್ತರಾಯಣ', `ಬಂಡಾಯ`, `ಅನುರಕ್ತೆ ', `ಹೆಜ್ಜೆ' (ಎರಡು ಭಾಗಗಳು) ಅವರ ಪ್ರಸಿದ್ಧ ಕಾದಂಬರಿಗಳು. ಬಲ್ಲಾಳರದ್ದು ಹೋರಾಟದ ಬದುಕು. ಅವರ ತಂದೆ ರಾಮದಾಸ ಸಂಸ್ಕೃತ ಹಾಗೂ ಕನ್ನಡದಲ್ಲಿ ವಿದ್ವಾಂಸರು. ಬಡತನ ಕಟ್ಟಿಕೊಟ್ಟ ನೋವಿನ ಬುತ್ತಿಯನ್ನು ಹೊತ್ತುಕೊಂಡೇ ಮುಂಬೈಗೆ ತೆರಳಿದ ಅವರು, ಆ ಮಹಾನಗರಿಯಲ್ಲಿ ಅನ್ನದ ಹಸಿವು ಹಾಗೂ ಸೃಜನಶೀಲತೆಯ ಹಸಿವನ್ನು ಇಂಗಿಸುವ ಮಾರ್ಗಗಳನ್ನು ಕಂಡುಕೊಂಡರು. ಮುಂಬೈಯ ತೈಲ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದುಕೊಂಡೇ ಮಹಾನಗರದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಮುಂಬೈ ನಗರದ ಜೀವಂತಿಕೆ ಹಾಗೂ ನಗರದ ಬದುಕಿನ ತಳಮಳಗಳನ್ನು ತಮ್ಮ ಕೃತಿಗಳಲ್ಲಿ ಕಲಾತ್ಮಕವಾಗಿ ಚಿತ್ರಿಸಿದರು. ನವೋದಯ, ಪ್ರಗತಿಶೀಲ, ನವ್ಯ- ಹೀಗೆ ಸಾಹಿತ್ಯ ಚಳವಳಿಗಳಿಗೆ ಮುಖಾಮುಖಿಯಾದರೂ ತಮ್ಮದೇ ಆದ `ವ್ಯಾಸ(ರಾಯ) ಮಾರ್ಗ' ರೂಪಿಸಿಕೊಂಡ ಹೆಗ್ಗಳಿಕೆ ಅವರದು. ಮುಂಬೈಯ `ಕರ್ನಾಟಕ ಸಂಘ', `ಸಾಹಿತ್ಯಕೂಟ', `ಕನ್ನಡ ಕಲಾ ಕೇಂದ್ರ'ಗಳ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದ ಅವರು, `ನುಡಿ' ಪತ್ರಿಕೆಯಲ್ಲಿ ಕೆಲಸ ಮಾಡುವ ಮೂಲಕ ಬರವಣಿಗೆಯ ಇನ್ನೊಂದು ಸಾಧ್ಯತೆಗೆ ತಮ್ಮನ್ನು ತೆರೆದುಕೊಂಡವರು. `ಸಂಪಿಗೆ', `ಮಂಜರಿ', `ಕಾಡು ಮಲ್ಲಿಗೆ' ಹಾಗೂ `ಸಮಗ್ರ ಕಥೆಗಳು' ಬಲ್ಲಾಳರಿಗೆ ಹೆಸರು ತಂದುಕೊಟ್ಟ ಕೃತಿಗಳು. ಇಬ್ಸನ್, ಬರ್ನಾಡ್ ಷಾ ನಾಟಕಗಳನ್ನು ಕನ್ನಡಕ್ಕೆ ರೂಪಾಂತರಿಸಿರುವ ಅವರ ಪ್ರವಾಸ ಕಥನ `ನಾನೊಬ್ಬ ಭಾರತೀಯ ಪ್ರವಾಸಿ'. ನಿವೃತ್ತಿಯ ನಂತರ ಬಲ್ಲಾಳರು ಬೆಂಗಳೂರಿನಲ್ಲಿ ನೆಲೆಸಿದ್ದರು.

2008: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ಹುತಾತ್ಮರಾದ 60 ವರ್ಷಗಳ ಬಳಿಕ ಅವರ ಚಿತಾಭಸ್ಮವನ್ನು ಒಳಗೊಂಡ ಮತ್ತೊಂದು ಕಲಶವನ್ನು ಮುಂಬೈಯಲ್ಲಿ ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸಲಾಯಿತು. ಗಾಂಧೀಜಿ ಅವರ ಚಿತಾಭಸ್ಮ ಒಳಗೊಂಡ ಕಲಶವನ್ನು 2006ರ ಆಗಸ್ಟಿನಲ್ಲಿ ದುಬೈ ಮೂಲದ ಉದ್ಯಮಿ ಭರತ್ ನಾರಾಯಣ್ ಅವರು ಮುಂಬೈಯ ಮಣಿ ಭವನಕ್ಕೆ ಹಸ್ತಾಂತರಿಸಿದ್ದರು. ಉದ್ಯಮಿಯ ಹೆತ್ತವರು 1948ರಿಂದೀಚೆಗೆ ಈ ಚಿತಾಭಸ್ಮವನ್ನು ತಮ್ಮ ಬಳಿ ಇಟ್ಟುಕೊಂಡಿದ್ದರು. ಚಿತಾಭಸ್ಮದ ಕಲಶವನ್ನು ವಿಸರ್ಜಿಸುವವರೆಗೂ ಗಾಂಧೀಜಿ ನಗರಕ್ಕೆ ಆಗಮಿಸುತ್ತಿದ್ದಾಗಲೆಲ್ಲಾ ತಂಗುತ್ತಿದ್ದ ಈ ಮಣಿ ಭವನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ಕೊನೆಯ ದಿನದ ತನಕವೂ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿದ್ದರು. ಮಹಾತ್ಮನ ಚಿತಾಭಸ್ಮವನ್ನು 1948ರ ಫೆಬ್ರುವರಿ 12ರಂದು ದೇಶದ ವಿವಿಧ ನದಿಗಳಲ್ಲಿ ಮತ್ತು ಸಮುದ್ರಗಳಲ್ಲಿ ವಿಸರ್ಜಿಸಲಾಗಿತ್ತು. ಆದರೆ ಇನ್ನೂ ಕೆಲವು ಅಸ್ತಿಕಲಶಗಳನ್ನು ವಿಸರ್ಜಿಸದ ಅಭಿಮಾನಿಗಳು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಕಳೆದ 60 ವರ್ಷಗಳಲ್ಲಿ ಹೀಗೆ ದೊರೆತ 2ನೇ ಚಿತಾಭಸ್ಮ ಇದು. 1997ರಲ್ಲಿ ಭುನವೇಶ್ವರದ ಬ್ಯಾಂಕ್ ಲಾಕರ್ ಒಂದರಲ್ಲಿ ಪತ್ತೆಯಾಗಿದ್ದ ಮಹಾತ್ಮ ಅವರ ಚಿತಾಭಸ್ಮವನ್ನು ಬಳಿಕ ಅಲಹಾಬಾದಿನಲ್ಲಿ ವಿಸರ್ಜಿಸಲಾಗಿತ್ತು.

2008: ಇಸ್ಲಾಮ್ ಅರ್ಥವನ್ನು ಅಪಾರ್ಥಗೊಳಿಸಿದ ಸಾಹಿತ್ಯ ಒಳಗೊಂಡಿದೆ ಎಂಬ ಆಪಾದನೆ ಮೇರೆಗೆ ಅಮೆರಿಕ ಪ್ರಕಟಣೆಯ 11 ಪುಸ್ತಕಗಳನ್ನು ಮಲೇಷ್ಯಾ ಸರ್ಕಾರ ನಿಷೇಧಿಸಿತು. ಮಲೇಷ್ಯಾದ ಆಂತರಿಕ ಭದ್ರತಾ ಸಚಿವಾಲಯ ಈ ಪುಸ್ತಕಗಳನ್ನು ನಿಷೇಧಿಸಿದ್ದು ಅವುಗಳಲ್ಲಿ 8 ಪುಸ್ತಕಗಳು ಇಂಗ್ಲಿಷಿನಲ್ಲಿ ಹಾಗೂ 3 ಸ್ಥಳೀಯ ಮಲಯ ಭಾಷೆಯಲ್ಲೂ ಇದ್ದವು. ಪುಸ್ತಕಗಳಲ್ಲಿ ಭಯೋತ್ಪಾದಕರ ಜೊತೆ ಮುಸ್ಲಿಮರನ್ನು ತಳಕು ಹಾಕಲಾಗಿದೆ ಹಾಗೂ ಇಸ್ಲಾಮ್ ಧರ್ಮ ಮಹಿಳೆಯರನ್ನು ಅನುಚಿತವಾಗಿ ನಡೆಸಿಕೊಳ್ಳುತ್ತದೆ ಎಂಬುದಾಗಿ ಮುದ್ರಿಸಲಾಗಿದೆ ಎಂದು ಮಲೇಷ್ಯಾ ಆಪಾದಿಸಿತು.

2008: ವೇಗದ ಬೌಲರುಗಳಾದ ಜಹೀರ್ ಖಾನ್, ಆರ್ ಪಿ ಸಿಂಗ್ ಮತ್ತು ಎಡಗೈ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಅವರು `ಕ್ರಿಕ್ ಇನ್ಫೋ' ಪ್ರಶಸ್ತಿಗೆ ಆಯ್ಕೆಯಾದರು. ಭಾರತದ ಈ ಮೂವರಲ್ಲದೆ ಶ್ರೀಲಂಕಾ ತಂಡದ ಕುಮಾರ ಸಂಗಕ್ಕಾರ ಮತ್ತು ಲಸಿತ್ ಮಾಲಿಂಗ ಹಾಗೂ ಆಸ್ಟ್ರೇಲಿಯಾ ತಂಡದ ಆಡಮ್ ಗಿಲ್ ಕ್ರಿಸ್ಟ್ ಅವರೂ ಇದೇ ಮೊದಲ ಬಾರಿ `ಕ್ರಿಕ್ ಇನ್ಫೋ' ಪ್ರಕಟಿಸಿದ ಪ್ರಶಸ್ತಿಗೆ ಭಾಜನರಾದರು.

2007: ಭೋಪಾಲ್ ರಂಗಮಂಡಲದ ಹಿರಿಯ ನಟಿ- ನಿದರ್ೆಶಕಿ ವಿಭಾ ಮಿಶ್ರ ನವದೆಹಲಿಯಲ್ಲಿ ನಿಧನರಾದರು. ರಾಷ್ಟ್ರೀಯ ನಾಟಕಶಾಲೆ ನಿರ್ದೇಶಕ ದೇವೇಂದ್ರ ಕುಮಾರ್ ಅಂಕುರ್ ಹಾಗೂ ದೇಶದ ಹೆಸರಾಂತ ಕನ್ನಡದ ರಂಗ ನಿರ್ದೇಶಕ ಬಿ.ವಿ. ಕಾರಂತರ ಶಿಷ್ಯೆಯಾಗಿದ್ದ ವಿಭಾ ಮಿಶ್ರ ಎರಡು ವರ್ಷಗಳ ಹಿಂದೆ ಮೈಸೂರಿನ ರಂಗಾಯಣದಲ್ಲಿ ತಮ್ಮ ತಂಡದ ವತಿಯಿಂದ ನಾಟಕ ಪ್ರದರ್ಶಿಸಿದ್ದರು.

2007: ವಿಶ್ವದಲ್ಲೇ ಅತಿದೊಡ್ಡ ರಕ್ತದಾನ ಶಿಬಿರ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಿತು. 50ಕ್ಕೂ ಹೆಚ್ಚು ಸಂಸ್ಥೆಗಳು ಸಹಯೋಗ ನೀಡಿದ್ದ ಈ ಶಿಬಿರದಲ್ಲಿ 400ಕ್ಕೂ ಹೆಚ್ಚು ಹಾಸಿಗೆ ವ್ಯವಸ್ಥೆ ಮಾಡಲಾಗಿತ್ತು. 100ಕ್ಕೂ ಹೆಚ್ಚು ತಜ್ಞ ವೈದ್ಯರು, 500ಕ್ಕೂ ಹೆಚ್ಚು ದಾದಿಯರು, 1000ಕ್ಕೂ ಹೆಚ್ಚು ಸ್ವಯಂ ಸೇವಕರು ಪಾಲ್ಗೊಂಡ ಈ ಶಿಬಿರದಲ್ಲಿ 7000ಕ್ಕೂ ಹೆಚ್ಚು ಜನ ರಕ್ತದಾನ ಮಾಡಿ ಇತಿಹಾಸ ನಿರ್ಮಿಸಿದರು. 2003ರಲ್ಲಿ ಮುಂಬೈಯಲ್ಲಿ ನಡೆದ ಈ ಮಾದರಿ ಶಿಬಿರದಲ್ಲಿ 5600 ಜನ ರಕ್ತದಾನ ಮಾಡಿದ್ದರು.

2007: ಏರ್ ಮಾರ್ಷಲ್ ಫಾಲಿ ಹೋಮಿ ಮೇಜರ್ (59) ಅವರನ್ನು ಕೇಂದ್ರ ಸರ್ಕಾರವು ವಾಯುಪಡೆ ಮುಖ್ಯಸ್ಥರನ್ನಾಗಿ ನೇಮಕ ಮಾಡಿತು.

2006: ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ (ಎಎಸ್ಐ) ನೀಡುವ ಪ್ರತಿಷ್ಠಿತ ಆರ್ಯಭಟ ಪ್ರಶಸ್ತಿಗೆ ವಿಮಾನಶಾಸ್ತ್ರ ವಿಜ್ಞಾನಿ ಮತ್ತು ಬಾಹ್ಯಾಕಾಶ ಆಯೋಗದ ಸದಸ್ಯ ಪ್ರೊ. ರೊದ್ದಂ. ನರಸಿಂಹ ಆಯ್ಕೆಯಾದರು. ಈ ಪ್ರಶಸ್ತಿಯು 1 ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

2006: ಲಾಹೋರಿಗೆ ತೆರಳುತ್ತಿದ್ದ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ ಪ್ರಪಾತಕ್ಕೆ ಉರುಳಿದ ಪರಿಣಾಮ 46 ಮಂದಿ ಮೃತರಾದರು. ಪಾಕಿಸ್ಥಾನದ ಈ ರೈಲು ರಾವಲ್ಪಿಂಡಿಯಿಂದ ಲಾಹೋರಿಗೆ ತೆರಳುತ್ತಿತ್ತು.

1991: ಟ್ರಾನ್ಸಿಸ್ಟರಿನ ಜಂಟಿ ಸಂಶೋಧಕ ಜಾನ್ ಬರ್ಡೀನ್ (1908-1991) ತನ್ನ 82ನೇ ವಯಸ್ಸಿನಲ್ಲಿ ಮೃತನಾದ. 1956ರಲ್ಲಿ ಭೌತವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪ್ರಶಸ್ತಿಯನ್ನು ಗೆದ್ದುಕೊಂಡ ಈತ ಸೂಪರ್ ಕಂಡಕ್ಟಿವಿಟಿ ಸಂಶೋಧನೆಯಲ್ಲೂ ಪಾತ್ರ ವಹಿಸಿದ ವ್ಯಕ್ತಿ.

1965: ಸರ್ ವಿನ್ ಸ್ಟನ್ ಚರ್ಚಿಲ್ ಅಂತ್ಯಕ್ರಿಯೆ ನೆರವೇರಿತು. 90 ವರ್ಷಗಳ ಹಿಂದೆ ಅವರು ಹುಟ್ಟಿದ ಬೆನ್ಹೀಮ್ ಅರಮನೆಯ ಸಮೀಪದ ಬ್ಲಾಡನ್ ಚರ್ಚ್ ಯಾರ್ಡಿನಲ್ಲಿ ಅವರನ್ನು ಸಮಾಧಿ ಮಾಡಲಾಯಿತು.

1958: ಕಲಾವಿದೆ ಎಚ್.ಎಸ್. ಇಂದಿರಾ ಜನನ.

1933: ಅಡಾಲ್ಫ್ ಹಿಟ್ಲರ್ ಜರ್ಮನಿಯ ಚಾನ್ಸಲರ್ ಆದ. ಇದು ಜರ್ಮನಿಯ ಪ್ರಜಾತಾಂತ್ರಿಕ ಸಂಸದೀಯ ವ್ಯವಸ್ಥೆಯ ಶವ ಪೆಟ್ಟಿಗೆಗೆ ಹೊಡೆದ ಕೊನೆಯ ಮೊಳೆಯಾಯಿತು. ಕೆಲ ದಿನಗಳ ಒಳಗಾಗಿಯೇ ಹಿಟ್ಲರ್ ಎಲ್ಲ ಸಾರ್ವಜನಿಕ ಸಭೆಗಳನ್ನು ನಿಯಂತ್ರಿಸುವ ಹಾಗೂ ಪತ್ರಿಕೆಗಳನ್ನು ನಿಯಂತ್ರಿಸಲು ಬೇಕಾದ ಅಪರಿಮಿತ ಅಧಿಕಾರಗಳನ್ನು ಸರ್ಕಾರಕ್ಕೆ ನೀಡಿದ.

1927: ಈದಿನ ಹುಟ್ಟಿದ ಒಲೋಫ್ ಪಾಮೆ (Olof Palme) (1927-1986) ಮುಂದೆ ಸ್ವೀಡನ್ನಿನ ಪ್ರಧಾನಿಯಾದರು. ಅವರು 1986 ರಲ್ಲಿ ಹತ್ಯೆಗೀಡಾದರು.

1913: ಹಂಗೆರಿ ಸಂಜಾತ ಭಾರತೀಯ ವರ್ಣಚಿತ್ರ್ರ ಕಲಾವಿದೆ ಅಮೃತಾ ಶೆರ್ಗಿಲ್ (1913-1956) ಹುಟ್ಟಿದ ದಿನ. ನಗ್ನ ಚಿತ್ರಗಳನ್ನು ರಚಿಸಿದ ಈಕೆ ಭಾರತೀಯ ಚಿತ್ರಕಲೆಗೆ ಆಧುನಿಕತೆಯ ಸ್ಪರ್ಶ ನೀಡಿದವರು.

1901: ತೈಲವರ್ಣ ಹಾಗೂ ಜಲವರ್ಣ ಚಿತ್ರ ರಚನಯಲ್ಲಿ ಸಿದ್ಧಹಸ್ತರಾಗಿದ್ದ ಮಡಿವಾಳಪ್ಪ ವೀರಪ್ಪ ಮಿಣಜಗಿ ಅವರು ವೀರಪ್ಪ- ಶರಣವ್ವ ದಂಪತಿಯ ಮಗನಾಗಿ ವಿಜಾಪುರದಲ್ಲಿ ಜನಿಸಿದರು.

1785: ಚಾರ್ಲ್ಸ್ ಥಿಯೋಫಿಲಸ್ ಮೆಟ್ಕಾಫ್ (1785-1846) ಹುಟ್ಟಿದ ದಿನ. ಬ್ರಿಟಿಷ್ ಆಡಳಿತಗಾರನಾದ ಈತ ಭಾರತದ ಹಂಗಾಮಿ ಗವರ್ನರ್ ಜನರಲ್ ಆಗಿ ಪತ್ರಿಕಾ ಸ್ವಾತಂತ್ರ್ಯ ಮತ್ತು ಇಂಗ್ಲಿಷನ್ನು ಅಧಿಕೃತ ಭಾಷೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪ್ರಮುಖ ಸುಧಾರಣೆಗಳನ್ನು ಜಾರಿಗೆ ತಂದ.

Thursday, March 4, 2010

ಇಂದಿನ ಇತಿಹಾಸ History Today ಜನವರಿ 29

ಇಂದಿನ ಇತಿಹಾಸ

ಜನವರಿ 29

ಖ್ಯಾತ ಚಿತ್ರನಟ ಶಂಕರ್‌ನಾಗ್ ಸಾವಿಗೆ ಸಂಬಂಧಿಸಿದಂತೆ, ಅವರ ಕುಟುಂಬ ವರ್ಗಕ್ಕೆ ಪರಿಹಾರದ ಮೊತ್ತವನ್ನು ಹೆಚ್ಚಿಸಿ ಹೈಕೋರ್ಟ್, ಆದೇಶ ಹೊರಡಿಸಿತು. ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಆದೇಶಿಸಿದ್ದ 25 ಲಕ್ಷ ರೂಪಾಯಿಗಳನ್ನು 26,80,155 ರೂಪಾಯಿಗೆ ಹೆಚ್ಚಿಸಲು ನ್ಯಾಯಮೂರ್ತಿಗಳಾದ ಕೆ.ಶ್ರೀಧರ ರಾವ್ ಹಾಗೂ ಎಸ್.ಎನ್.ಸತ್ಯನಾರಾಯಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಆದೇಶಿಸಿತು.

2009: ಲಂಚ ತೆಗೆದಕೊಂಡ ಪ್ರಕರಣವೊಂದರಲ್ಲಿ ಇದೇ ಮೊದಲ ಬಾರಿಗೆ ಶಾಸಕರೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದರು. ಕ್ರಿಮಿನಲ್ ಪ್ರಕರಣವೊಂದನ್ನು ಇತ್ಯರ್ಥಪಡಿಸುವ ಸಂಬಂಧ ಶಾಸಕರ ಭವನದ ಕೊಠಡಿಯಲ್ಲೇ ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ಕೆಜಿಎಫ್‌ನ ಬಿಜೆಪಿ ಶಾಸಕ ವೈ. ಸಂಪಂಗಿ ಅವರನ್ನು ಈದಿನ ಮಧ್ಯಾಹ್ನ ಬಂಧಿಸಲಾಯಿತು. ಲಂಚ ತೆಗೆದುಕೊಳ್ಳುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಸಿಕ್ಕಿಬಿದ್ದ ಕೆಜಿಎಫ್ ಶಾಸಕ ವೈ.ಸಂಪಂಗಿ ಅವರನ್ನು ಪಕ್ಷದಿಂದ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಡಿ.ವಿ.ಸದಾನಂದಗೌಡ ತಿಳಿಸಿದರು. ಅಂಡರ್‌ಸನ್ ಪೇಟೆಯ ಹುಸೇನ್ ಮೊಯಿನ್ ಫರೂಕ್ ಎಂಬವರು ನೀಡಿದ್ದ ದೂರನ್ನು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಯಿತು. ಅಲ್ಲಿನ ಇನ್ಸ್‌ಪೆಕ್ಟರ್ ಲಕ್ಷ್ಮಯ್ಯ ಮತ್ತು ಸಬ್ ಇನ್ಸ್‌ಪೆಕ್ಟರ್ ಪಾಷಾ ವಿರುದ್ಧವೂ ಈ ಸಂಬಂಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಯಿತು.

2009: ಎಲ್‌ಟಿಟಿಇ ನೆಲೆಗಳನ್ನು ಒಂದೊಂದಾಗಿ ತನ್ನ ವಶಕ್ಕೆ ತೆಗೆದುಕೊಳ್ಳುತ್ತಾ ಸಾಗಿದ ಶ್ರೀಲಂಕಾ ಸೇನೆ ಈದಿನ ವಿಸುವಮಡು ಪಟ್ಟಣವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿತು. ಇದು ಎಲ್‌ಟಿಟಿಗಳ ಪಾಲಿನ ಫಿರಂಗಿಗಳ ಉಗ್ರಾಣ ಸ್ಥಾನವಾಗಿದ್ದು ಈ ಪ್ರದೇಶದಲ್ಲಿ 35 ಅಡಿ ಉದ್ದದ ಸಬ್‌ಮೆರಿನ್ ತರಹದ ಜಲಾಂತರ್ಗಾಮಿ ನೌಕೆಯನ್ನು ವಶಪಡಿಸಿಕೊಳ್ಳಲಾಯಿತು.. ಇದಕ್ಕೂ ಮುನ್ನ ಈ ಪ್ರದೇಶದಲ್ಲಿ ಎಲ್‌ಟಿಟಿಇ ಪಡೆಗಳ ಜೊತೆ ಸೇನೆ ತೀವ್ರ ಕಾಳಗ ನಡೆಸಿತು. ವಿಸುವಮಡು ಎಲ್‌ಟಿಟಿಇ ಪಡೆಗಳ ಪಾಲಿಗೆ ಭದ್ರ ಆಶ್ರಯ ಸ್ಥಾನವಾಗಿತ್ತು. ಈಗ ಇದೂ ಕೂಡಾ ಸೇನೆಯ ವಶಕ್ಕೆ ಸರಿಯಿತು.

2009: ಖ್ಯಾತ ಚಿತ್ರನಟ ಶಂಕರ್‌ನಾಗ್ ಸಾವಿಗೆ ಸಂಬಂಧಿಸಿದಂತೆ, ಅವರ ಕುಟುಂಬ ವರ್ಗಕ್ಕೆ ಪರಿಹಾರದ ಮೊತ್ತವನ್ನು ಹೆಚ್ಚಿಸಿ ಹೈಕೋರ್ಟ್, ಆದೇಶ ಹೊರಡಿಸಿತು. ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿ ಆದೇಶಿಸಿದ್ದ 25 ಲಕ್ಷ ರೂಪಾಯಿಗಳನ್ನು 26,80,155 ರೂಪಾಯಿಗೆ ಹೆಚ್ಚಿಸಲು ನ್ಯಾಯಮೂರ್ತಿಗಳಾದ ಕೆ.ಶ್ರೀಧರ ರಾವ್ ಹಾಗೂ ಎಸ್.ಎನ್.ಸತ್ಯನಾರಾಯಣ ಅವರನ್ನು ಒಳಗೊಂಡ ವಿಭಾಗೀಯ ಪೀಠ ಆದೇಶಿಸಿತು. ಈ ಪರಿಹಾರದ ಮೊತ್ತವನ್ನು ಘಟನೆ ನಡೆದ ದಿನದಿಂದ ಶೇ 6ರ ಬಡ್ಡಿದರ ಸೇರಿಸಿ ನೀಡುವಂತೆ ನ್ಯಾಯಮೂರ್ತಿಗಳು ನಿರ್ದೇಶಿಸಿದರು. ಶಂಕರ್‌ನಾಗ್ ಅವರು, ದಾವಣಗೆರೆ ಜಿಲ್ಲೆಯ ಅರುಗೋಡು ಗ್ರಾಮದ ಬಳಿ 1990ರ ಸೆ.30ರಂದು ನಡೆದ ಅಪಘಾತದಲ್ಲಿ ಮೃತರಾಗಿದ್ದರು. 'ಜೋಕುಮಾರಸ್ವಾಮಿ' ಚಿತ್ರದ ನಿರ್ಮಾಪಕರಾಗಿದ್ದ ಶಂಕರ್‌ನಾಗ್ ಅವರು ಇದೇ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಲು ಆ ಮಾರ್ಗವಾಗಿ ತಮ್ಮ ಪತ್ನಿ ಅರುಂಧತಿ ಹಾಗೂ ಪುತ್ರಿ ಕಾವ್ಯಾ ಜೊತೆ ಕಾರಿನಲ್ಲಿ ಪಯಣಿಸುತಿದ್ದ ವೇಳೆ ಅಪಘಾತ ಸಂಭವಿಸಿತ್ತು. ಇದರಲ್ಲಿ ಅರುಂಧತಿ ಹಾಗೂ ಕಾವ್ಯಾ ಅವರು ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದರು. ಶಂಕರ್‌ನಾಗ್ ಅವರ ಮರಣಕ್ಕೆ ಪರಿಹಾರ ಕೋರಿ ಅರುಂಧತಿ ಹಾಗೂ ಕಾವ್ಯಾ ಅವರು ಮೋಟಾರು ಅಪಘಾತ ಪರಿಹಾರ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮಂಡಳಿಯು ಅವರಿಗೆ 25 ಲಕ್ಷ ರೂಪಾಯಿ ಪರಿಹಾರ ನೀಡಿತ್ತು. ಈ ಪರಿಹಾರವನ್ನು ಹೆಚ್ಚಿಸುವಂತೆ ಕೋರಿ ಅವರು ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ್ದರು. ಶಂಕರ್‌ನಾಗ್ ಅವರ ಆದಾಯ, ಖರ್ಚು-ವೆಚ್ಚ ಎಲ್ಲವನ್ನೂ ಗಣನೆಗೆ ತೆಗೆದುಕೊಂಡ ಪೀಠ, ಪರಿಹಾರದ ಹಣವನ್ನು 1.80 ಲಕ್ಷ ರೂಪಾಯಿ ಹೆಚ್ಚಿಸಿತು.

2009: ರಾಷ್ಟ್ರದ ನೂತನ ಅಧ್ಯಕ್ಷ ಬರಾಕ್ ಹುಸೇನ್ ಒಬಾಮ ಸರ್ಕಾರ ಸಿದ್ಧಪಡಿಸಿದ 819 ಶತಕೋಟಿ ಡಾಲರ್ (40 ಲಕ್ಷ ಕೋಟಿ ರೂ.) ಆರ್ಥಿಕ ನೆರವಿನ ಪ್ಯಾಕೇಜಿಗೆ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟೀವ್ಸ್ ಒಪ್ಪಿಗೆ ಸೂಚಿಸಿತು. ಡೆಮಾಕ್ರೆಟಿಕ್ ಪಕ್ಷದ ಬಹುಮತವಿರುವ ಜನಪ್ರತಿನಿಧಿ ಸಭೆ, ಒಬಾಮ ಅಧ್ಯಕ್ಷರಾದ ನಂತರದಲ್ಲಿ ಮಂಡಿಸಿದ ಪ್ರಥಮ-ಮಹತ್ವದ ಆರ್ಥಿಕ ಉತ್ತೇಜನ ಕ್ರಮ ಯೋಜನೆಗೆ ಹಸಿರು ನಿಶಾನೆ ತೋರಿತು. ಅಧ್ಯಕ್ಷ ಒಬಾಮ ಮಂಡಿಸಿದ ಪ್ಯಾಕೇಜಿನಲ್ಲಿ 'ತುರ್ತು ವೆಚ್ಚ ಕ್ರಮ ಹಾಗೂ ತೆರಿಗೆ ರಿಯಾಯಿತಿ' ಸೌಲಭ್ಯ ಅಡಕವಾಗಿದ್ದವು. ನಾಗರಿಕರು, ವಾಣಿಜ್ಯೋದ್ಯಮ ಸಂಸ್ಥೆಗಳಿಗೆ ಅನುಕೂಲ ಮಾಡಿಕೊಡಲು 275 ಶತಕೋಟಿ ಡಾಲರಿನ ತಾತ್ಕಾಲಿಕ ತೆರಿಗೆ ರಿಯಾಯಿತಿ ಕಲ್ಪಿಸಲಾಗಿತ್ತು. ಉದ್ಯೋಗ ಕಡಿತದ ಭೀತಿಯಲ್ಲಿರುವ ಅಮೆರಿಕನ್ನರ 'ಒತ್ತಡ' ಕಡಿಮೆ ಮಾಡಲು ಒಬಾಮ ಆಡಳಿತ 544 ಶತಕೋಟಿ ಡಾಲರ್ ಮೂಲಕ 'ನೌಕರಿ ಸೃಷ್ಟಿ'ಯ ಹೊಸ ಯೋಜನೆ ಸಿದ್ಧಪಡಿಸಿತ್ತು. ಆರೋಗ್ಯ ಅಭಿವೃದ್ಧಿ ಕ್ಷೇತ್ರ, ಬಡವರು ಮತ್ತು ನಿರುದ್ಯೋಗಿಗಳಿಗೆ ಉದ್ಯೋಗ ನೆರವು, ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ಈ ಹಣ ವಿನಿಯೋಜಿಸಲು ಯೋಜಿಸಲಾಗಿತ್ತು.

2008: ಭಾರತ ಕ್ರಿಕೆಟ್ ತಂಡದ ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ವಿರುದ್ಧ ಆಸ್ಟ್ರೇಲಿಯಾ ತಂಡದವರು ಮಾಡಿದ್ದ ಜನಾಂಗೀಯ ನಿಂದನೆ ಆರೋಪ ಸಾಬೀತಾಗಲಿಲ್ಲ. ಹೀಗಾಗಿ ಅವರ ಮೇಲೆ ಹೇರಲಾಗಿದ್ದ ಮೂರು ಪಂದ್ಯಗಳ ನಿಷೇಧ ಶಿಕ್ಷೆ ರದ್ದಾಯಿತು. ಆದರೆ ಸಿಡ್ನಿ ಟೆಸ್ಟ್ ಸಂದರ್ಭದಲ್ಲಿ ಆತಿಥೇಯ ತಂಡದ ಆಂಡ್ರ್ಯೂ ಸೈಮಂಡ್ಸ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದ `ಭಜ್ಜಿ' ಮೇಲೆ ಪಂದ್ಯ ಸಂಭಾವನೆಯ ಅರ್ಧದಷ್ಟು ಮೊತ್ತವನ್ನು ದಂಡವಾಗಿ ವಿಧಿಸಲಾಯಿತು. ಅಡಿಲೇಡಿನಲ್ಲಿ ನಡೆದ ಮೇಲ್ಮನವಿ ವಿಚಾರಣೆ ಕಾಲದಲ್ಲಿ ಟೀಮ್ ಇಂಡಿಯಾ ಮ್ಯಾನೇಜರ್ ಎಂ.ವಿ. ಶ್ರೀಧರ್ ಜೊತೆಗೆ ಹರಭಜನ್ ಸಿಂಗ್ ಹಾಗೂ ಸಚಿನ್ ತೆಂಡೂಲ್ಕರ್ ಹಾಜರಿದ್ದರು. (`ಭಜ್ಜಿ' ಜನಾಂಗೀಯ ನಿಂದನೆ `ಪ್ರಹಸನ'ದ ಘಟನಾವಳಿಗಳು: * ಜನವರಿ 4: ಆಕ್ಷೇಪಾರ್ಹ ವರ್ತನೆ ಹಾಗೂ ಜನಾಂಗೀಯ ನಿಂದನೆ ದೂರು. * ಜ.5: ವಿಚಾರಣೆ ಮುಂದೂಡಿದ ಐಸಿಸಿ ಮ್ಯಾಚ್ ರೆಫರಿ ಮೈಕ್ ಪ್ರಾಕ್ಟರ್. * ಜ.6: ಮ್ಯಾಚ್ ರೆಫರಿಯಿಂದ `ಭಜ್ಜಿ'ಗೆ ಮೂರು ಪಂದ್ಯಗಳ ನಿಷೇಧ ಶಿಕ್ಷೆ. * ಜ.7: ತೀರ್ಪು ಬದಲಿಸುವುದಿಲ್ಲ-ಪ್ರಾಕ್ಟರ್ ಸ್ಪಷ್ಟನೆ; ಬಿಸಿಸಿಐಯಿಂದ ಮೇಲ್ಮನವಿ. * ಜ.8: ಪ್ರವಾಸ ರದ್ದು ಬೆದರಿಕೆ ತಾತ್ಕಾಲಿಕವಾಗಿ ಕೈಬಿಟ್ಟ ಬಿಸಿಸಿಐ. * ಜ.9: ಐಸಿಸಿಯಿಂದ ಮೇಲ್ಮನವಿ ಆಯುಕ್ತರ ನೇಮಕ. * ಜ.10: ಸೈಮಂಡ್ಸ್ ಕೆಣಕಿದ್ದೇ ಹರಭಜನ್ ಪ್ರತ್ತ್ಯುತ್ತರ ನೀಡಲು ಕಾರಣ: ಭಾರತದ ವಾದ. * ಜ.11: ಪ್ರವಾಸ ರದ್ದು ತೀರ್ಮಾನದ ಅಧಿಕಾರ ಬಿಸಿಸಿಐ ಅಧ್ಯಕ್ಷ ಶರದ್ ಪವಾರ್ ಅವರಿಗೆ. * ಜ.12: ಸರಣಿಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಪವಾರ್ ಹೇಳಿಕೆ. * ಜ.13: ಕುಂಬ್ಳೆ ಹಾಗೂ ಪಾಂಟಿಂಗ್ ನಡುವೆ ಸಂಧಾನಕ್ಕೆ ರಂಜನ್ ಮದುಗಲೆ ಮಧ್ಯಸ್ಥಿಕೆ. * ಜ.14: ಟೆಸ್ಟ್ ಸರಣಿಯ ನಂತರ ಮೇಲ್ಮನವಿ ವಿಚಾರಣೆಗೆ ಪ್ರಸ್ತಾವ. * ಜ.25: ಆಸ್ಟ್ರೇಲಿಯಾದವರ ವಾದವನ್ನು ಪರಾಮರ್ಶಿಸದೆ ಒಪ್ಪಿಕೊಂಡ ಪ್ರಾಕ್ಟರ್ ವಿರುದ್ಧ ಕಿಡಿ. * ಜ.26: ಸಿಡ್ನಿ ಟೆಸ್ಟಿನಲ್ಲಿ ಮ್ಯಾಚ್ ರೆಫರಿಗೆ ಭಾರಿ ಸವಾಲು: ಪ್ರಾಕ್ಟರ್ ಅಭಿಪ್ರಾಯ. * ಜ.28: ಹೊಸ ಸಾಕ್ಷಿ ಪರಿಗಣಿಸುವ ನಿರ್ಧಾರಕ್ಕೆ ಬಿಸಿಸಿಐ ಆಕ್ಷೇಪ. * ಜ. 29: ಮೇಲ್ಮನವಿ ವಿಚಾರಣೆ ನಂತರ ಜನಾಂಗೀಯ ನಿಂದನೆ ಆರೋಪ ತಿರಸ್ಕೃತ.)

2008: ಕರ್ನಾಟಕದ ಆಳಂದ ತಾಲ್ಲೂಕಿನ ಭೂಸನೂರು ಸಕ್ಕರೆ ಕಾರ್ಖಾನೆ ಬಳಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಆರು ವರ್ಷದ ಬಾಲಕ ನವನಾಥ ಕಾಶಪ್ಪ ಕಾಂಬಳೆಯನ್ನು ಸತತ ಎಂಟು ಗಂಟೆಗಳ ಕಾಲ ಕಾರ್ಯಚರಣೆ ನಡೆಸಿ ಸುರಕ್ಷಿತವಾಗಿ ಹೊರತರಲಾಯಿತು. ಬೆಳಗ್ಗೆ ಸುಮಾರು 11ಗಂಟೆಗೆ ಆಟವಾಡುವ ವೇಳೆ, ತೆರೆದ ಕೊಳವೆ ಬಾವಿಗೆ ಬಿದ್ದ ಕಾಂಬಳೆಯನ್ನು ಸಂಜೆ 7.30ಕ್ಕೆ ಹಗ್ಗದ ಸಹಾಯದಿಂದ ಹೊರತರಲಾಯಿತು.

2008: ಜೀವ್ ಮಿಲ್ಕಾಸಿಂಗ್ ಅವರನ್ನು ಹಿಂದಿಕ್ಕಿದ ಜ್ಯೋತಿ ರಾಂಧವ ಭಾರತದ ನಂಬರ್ 1 ಗಾಲ್ಫ್ ಆಟಗಾರ ಎಂಬ ಹೆಗ್ಗಳಿಕೆಗೆ ಭಾಜನರಾದರು. ಈದಿನ ನವದೆಹಲಿಯಲ್ಲಿ ಬಿಡುಗಡೆಯಾದ ವಿಶ್ವ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಂಧವ 84ನೇ ಸ್ಥಾನ ಪಡೆದರೆ, ಜೀವ್ 86ನೇ ಸ್ಥಾನ ತಮ್ಮದಾಗಿಸಿಕೊಂಡರು. ಯುರೋಪಿಯನ್ ಪ್ರವಾಸದಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ರಾಂಧವ ಕತಾರ್ ಮಾಸ್ಟರ್ಸಿನಲ್ಲಿ ಜಂಟಿ ಏಳನೇ ಸ್ಥಾನ ಪಡೆದಿದ್ದರು.

2008: ಕಾಂಗ್ರೆಸ್ ಮುಖಂಡ ಎಚ್. ವಿಶ್ವನಾಥ್ ಅವರ ಆತ್ಮಕಥನ `ಹಳ್ಳಿ ಹಕ್ಕಿಯ ಹಾಡು' ಬಿಗಿ ಪೊಲೀಸ್ ಬಂದೋಬಸ್ತ್ ಮಧ್ಯೆ ಮೈಸೂರು ಪತ್ರಕರ್ತರ ಸಂಘದಲ್ಲಿ ಬಿಡುಗಡೆಯಾಯಿತು. ಹಿಂದಿನ ದಿನ ಸಮಾರಂಭದಲ್ಲಿ ಗದ್ದಲ ನಡೆದು ಪುಸ್ತಕ ಬಿಡುಗಡೆ ತಡೆ ಹಿಡಿಯಲ್ಪಟ್ಟಿತ್ತು.

2008: ಸೇತುಸಮುದ್ರಂ ವಿವಾದದ ಬಳಿಕ ರಾಮೇಶ್ವರಂನ ಪುರಾತನ ಸ್ಥಳಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಯಿತು. ಅವರನ್ನು ಸೇತುವೆ ಸಮೀಪ ಕೊಂಡೊಯ್ಯುವುದು ವ್ಯವಹಾರದ ರೂಪ ಪಡೆಯಿತು. ಸೂಕ್ತ ಅನುಮತಿಯಿಲ್ಲದೆ ಯಾತ್ರಾರ್ಥಿಗಳನ್ನು ಹೊತ್ತು ರಾಮೇಶ್ವರಂ ಸೇತುವೆಗೆ ಆಗಮಿಸಿದ ನಾಲ್ಕು ಮೀನುಗಾರಿಕೆ ದೋಣಿಗಳನ್ನು ಪೊಲೀಸರು ವಶಪಡಿಸಿಕೊಂಡರು.

2008: ವಿಶ್ವದ ಅತ್ಯಂತ ಶ್ರೀಮಂತ ಹತ್ತು ಉದ್ಯಮಿಗಳ ಪಟ್ಟಿಯಲ್ಲಿ ಕರ್ನಾಟಕದವರಾದ ವಿಪ್ರೋ ಮುಖ್ಯಸ್ಥ ಅಜೀಮ್ ಪ್ರೇಮ್ ಜಿ ಸೇರಿದಂತೆ ನಾಲ್ವರು ಭಾರತೀಯರು ಸ್ಥಾನ ಗಿಟ್ಟಿಸಿದರು. ಅಮೆರಿಕದ ಪ್ರಸಿದ್ಧ ವಾಣಿಜ್ಯ ನಿಯತಕಾಲಿಕ ಫೋಬ್ಸ್ ತಯಾರಿಸಿದ ಈ ಪಟ್ಟಿಯಲ್ಲಿ ಭಾರತೀಯ ಮುಂಚೂಣಿ ಉದ್ಯಮ ಸಂಸ್ಥೆಗಳ ಮುಖ್ಯಸ್ಥರಾದ ಉಕ್ಕು ಉದ್ಯಮಿ ಲಕ್ಷ್ಮಿ ಮಿತ್ತಲ್, ಅಂಬಾನಿ ಸೋದರರಾದ ಮುಖೇಶ್ ಅಂಬಾನಿ ಮತ್ತು ಅನಿಲ್ ಅಂಬಾನಿ ಹಾಗೂ ಐಟಿ ಉದ್ಯಮಿ ಅಜೀಮ್ ಪ್ರೇಮ್ ಜಿ ಸೇರಿದರು.

2007: ಭಾರತೀಯ ಅಣುಶಕ್ತಿ ಆಯೋಗದ ಸದಸ್ಯ ಸಿ.ಎನ್.ಆರ್. ರಾವ್ ಅವರಿಗೆ ಪಶ್ಚಿಮ ಬಂಗಾಳದ ವಿಶ್ವ ಭಾರತಿ ವಿಶ್ವ ವಿದ್ಯಾನಿಲಯದ ಕುಲಪತಿ ರಜತ್ ಕಾಂತ ರೇ ಅವರು ಅತ್ಯುನ್ನತ ಪದವಿಯಾದ ದೇಶಿಕೋತ್ತಮ (ಡಿ.ಲಿಟ್) ಪದವಿಯನ್ನು ಪ್ರದಾನ ಮಾಡಿದರು. ದೇಶ ವಿದೇಶಗಳಲ್ಲಿ ಅತ್ಯುನ್ನತ ಹುದ್ದೆಗಳನ್ನು ಹೊಂದಿರುವ ರಾವ್ ಅವರು 34 ವಿಶ್ವ ವಿದ್ಯಾಲಯಗಳ ಡಾಕ್ಟರೇಟ್ ಗೆ ಪಾತ್ರರಾಗಿದ್ದಾರೆ.

2007: ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯವು ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಹಾಗೂ ಖ್ಯಾತ ಸಾಹಿತಿ ನಾ.ಡಿಸೋಜಾ ಅವರಿಗೆ ಕುವೆಂಪು ವಿಶ್ವವಿದ್ಯಾಲಯವು 17ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಿತು.

2006: ಮಲೇಷ್ಯಾ ರಾಜಧಾನಿ ಕ್ವಾಲಾಲಂಪುರದ ಹೊರವಲಯದಲ್ಲಿ ಇರುವ ಬಟು ಗುಹಾ ದೇವಾಲಯದ ಬಳಿ 2.4 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ವಿಶ್ವದ ಅತಿ ಎತ್ತರದ ಸುಬ್ರಹ್ಮಣ್ಯ ಸ್ವಾಮಿಯ ಬೃಹತ್ ಪ್ರತಿಮೆಯನ್ನು ಸಾವಿರಾರು ಹಿಂದೂ ಮತ್ತು ಇತರ ಧರ್ಮೀಯರ ಸಂಭ್ರಮೋತ್ಸಾಹದ ಮಧ್ಯೆ ಅನಾವರಣಗೊಳಿಸಲಾಯಿತು. ಬಟು ಗುಹೆಯ ಸುಬ್ರಹ್ಮಣ್ಯ ದೇವಾಲಯದ ಹೊರಭಾಗದಲ್ಲಿ ಭಾರತೀಯ ವಾಸ್ತುಶಿಲ್ಪಿಗಳು ಕೆತ್ತನೆ ಮಾಡಿರುವ ಈ ವಿಗ್ರಹದ ಎತ್ತರ 42.7 ಮೀಟರುಗಳು. ಇದನ್ನು ನಿರ್ಮಿಸಲು 250 ಟನ್ ಉಕ್ಕು ಹಾಗೂ 300 ಲೀಟರ್ ಚಿನ್ನದ ದ್ರಾವಣ ಬಳಸಲಾಗಿದ್ದು, 15 ಮಂದಿ ಭಾರತೀಯ ಶಿಲ್ಪಿಗಳು ಸತತ 3 ವರ್ಷಕಾಲ ಶ್ರಮಿಸಿದರು. ಈ ಪ್ರತಿಮೆಗೆ ಹೆಲಿಕಾಪ್ಟರುಗಳಿಂದ ಪುಷ್ಪಾರ್ಪಣೆ ಮಾಡಲಾಯಿತು. ಈ ಪ್ರತಿಮೆ ಗಿನ್ನೆಸ್ ದಾಖಲೆಗೆ ಸೇರ್ಪಡೆಯಾಯಿತು.

2006: ಹಾಲೆಂಡಿನ ವಿಕ್ ಆನ್ ಜೀಯಲ್ಲಿ ಮುಕ್ತಾಯಗೊಂಡ ಕೋರಸ್ ಚೆಸ್ ಪಂದ್ಯದಲ್ಲಿ ಭಾರತದ ವಿಶ್ವನಾಥನ್ ಆನಂದ್ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ವಿಶ್ವದಾಖಲೆ ನಿರ್ಮಿಸಿದರು. ಐದನೇ ಬಾರಿಗೆ ಈ ಪ್ರಶಸ್ತಿ ಗೆದ್ದು ವಿಶ್ವದಾಖಲೆ ನಿರ್ಮಿಸಿದ ಅವರು ಈ ಬಾರಿ ಮಾತ್ರ ಪ್ರಶಸ್ತಿಯನ್ನು ಆನಂದ್ ವಸಿಲಿನ್ ಟೊಪಲೊವ್ ಅವರ ಜೊತೆಗೆ ಹಂಚಿಕೊಳ್ಳಬೇಕಾಯಿತು.

2006: ಪೋಲೆಂಡಿನ ಕಟೋವೈಸ್ ನಗರದಲ್ಲಿ ಪಾರಿವಾಳ ಹಾರಾಟ ಸ್ಪರ್ಧೆಯ ಸಂದರ್ಭದಲ್ಲಿ ಪ್ರದರ್ಶನ ಕಟ್ಟಡ ಒಂದರ ಛಾವಣಿ ಕುಸಿದು ಕನಿಷ್ಠ 65 ಮಂದಿ ಮೃತರಾಗಿ 160ಕ್ಕೂ ಹೆಚ್ಚು ಮಂದಿ ಗಾಯಗೊಂಡರು.

2006: ಭಾರತ ತಂಡದ ಎಡಗೈ ಮಧ್ಯಮ ವೇಗದ ಬೌಲರ್ ಇರ್ಫಾನ್ ಪಠಾಣ್ ಕರಾಚಿಯಲ್ಲಿ ನಡೆದ ಮೂರನೇ ಹಾಗೂ ಅಂತಿಮ ಕ್ರಿಕೆಟ್ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ಥಾನ ತಂಡದ ವಿರುದ್ಧ ಹ್ಯಾಟ್ರಿಕ್ ಸಾಧಿಸಿ ಐತಿಹಾಸಿಕ ದಾಖಲೆ ನಿರ್ಮಿಸಿದರು. ಟೆಸ್ಟ್ ಇತಿಹಾಸದಲ್ಲೇ ಪಂದ್ಯದ ಮೊದಲ ಓವರಿನಲ್ಲಿ ಹ್ಯಾಟ್ರಿಕ್ ಸಾಧನೆ ಮಾಡಿದ ಮೊದಲ ಬೌಲರ್ ಎಂಬ ಗೌರವಕ್ಕೂ ಪಠಾಣ್ ಪಾತ್ರರಾದರು. ಇದಕ್ಕೆ ಮುನ್ನ ಶ್ರೀಲಂಕಾದ ನುವಾನ್ ಜೋಯ್ಸಾ 2000-01ರಲ್ಲಿ ಜಿಂಬಾಬ್ವೆ ವಿರುದ್ಧ ನಡೆದ ಟೆಸ್ಟ್ ಪಂದ್ಯದ ಎರಡನೇ ಓವರಿನಲ್ಲಿ ಹ್ಯಾಟ್ರಿಕ್ ಸಂಪಾದಿಸಿದ್ದು ಈವರೆಗಿನ ದಾಖಲೆಯಾಗಿತ್ತು.

1970: ಕಲಾವಿದ ಮಧು ಪ್ಯಾಟಿ ಜನನ.

1955: ಅಂತಾರಾಷ್ಟ್ರೀಯ ಮಟ್ಟದ ಖ್ಯಾತ ನೃತ್ಯ ಕಲಾವಿದೆ ಪ್ರತಿಭಾ ಪ್ರಹ್ಲಾದ್ ಅವರು ಪ್ರಹ್ಲಾದ್- ಪ್ರೇಮಾ ದಂಪತಿಯ ಮಗಳಾಗಿ ಬೆಂಗಳೂರಿನಲ್ಲಿ ಜನಿಸಿದರು.

1954: ಕಲಾವಿದ ಮೋಹನ ಸೋನ ಜನನ.

1930: ಕಲಾವಿದ ಕೆ.ಜೆ. ರಾವ್ ಜನನ.

1886: ಮೊತ್ತ ಮೊದಲ `ಪೆಟ್ರೋಲಿನಿಂದ ಚಲಿಸುವ ವಾಹನ'ಕ್ಕೆ ಕಾರ್ಲ್ ಬೆಂಝ್ ಪೇಟೆಂಟ್ ಪಡೆದ. ಮೂರು ಚಕ್ರದ ವಾಹನ ಮೂಲ `ಬೆಂಝ್ ಕಾರು' 1885ರಲ್ಲೇ ಮೊದಲ ಬಾರಿಗೆ ಚಲಿಸಿದ್ದರೂ ಅದರ ವಿನ್ಯಾಸಕ್ಕೆ 1886ರ ವರೆಗೂ ಪೇಟೆಂಟ್ ಲಭಿಸಿರಲಿಲ್ಲ.

1866: ನೊಬೆಲ್ ಪ್ರಶಸ್ತಿ ವಿಜೇತ ಕಾದಂಬರಿಕಾರ, ನಾಟಕಕಾರ, ಪ್ರಬಂಧಕಾರ ರೊಮೈನ್ ರೋಲ್ಲಂಡ್(1866-1944) ಹುಟ್ಟಿದ. ಈತ ಮಹಾತ್ಮಾ ಗಾಂಧಿ ಹಾಗೂ ರಾಮಕೃಷ್ಣ ಪರಮಹಂಸ ಅವರ ಜೀವನಚರಿತ್ರೆಗಳನ್ನೂ ಬರೆದ ವ್ಯಕ್ತಿ.

1856: ಬ್ರಿಟನ್ನಿನ ಅತ್ಯುನ್ನತ ಸೇನಾ ಗೌರವ `ವಿಕ್ಟೋರಿಯಾ ಕ್ರಾಸ್' ರಾಣಿ ವಿಕ್ಟೋರಿಯಾ ಅವರಿಂದ ಆರಂಭಗೊಂಡಿತು.

1820: ಮೂರನೇ ಜಾರ್ಜ್ ವಿಂಡ್ಸರ್ ಕ್ಯಾಸಲಿನಲ್ಲಿ 81ನೇ ವಯಸ್ಸಿನಲ್ಲಿ ನಿಧನನಾದ. 59 ವರ್ಷಗಳ ಕಾಲ ಬ್ರಿಟನ್ನನ್ನು ಆಳಿದ ಈತ ದೀರ್ಘಕಾಲ ಆಡಳಿತ ನಡೆಸಿದ ಬ್ರಿಟಿಷ್ ದೊರೆ.

1803: ಇಂಗ್ಲಿಷ್ ಜನರಲ್ ಹಾಗೂ ಭಾರತೀಯ ರಾಜಕೀಯ ಅಧಿಕಾರಿ ಸರ್ ಜೇಮ್ಸ್ ಔಟ್ ರಾಮ್ (1803-1863) ಹುಟ್ಟಿದ. ಈತ 1856ರಲ್ಲಿ ಅವಧ್ ರಾಜ್ಯವನ್ನು ಬ್ರಿಟಿಷ್ ಆಳ್ವಿಕೆಯ ಭಾರತಕ್ಕೆ ಸೇರ್ಪಡೆ ಮಾಡಿದ.

1780: ಭಾರತದ ಮೊತ್ತ ಮೊದಲ ಪತ್ರಿಕೆ `ಹಿಕ್ಕೀಸ್ ಬೆಂಗಾಲ್ ಗಝೆಟ್' ಅಥವಾ `ಕಲ್ಕತ್ತಾ ಜನರಲ್ ಅಡ್ವರ್ ಟೈಸರ್' ಕಲ್ಕತ್ತಾದಲ್ಲಿ (ಈಗಿನ ಕೋಲ್ಕತ) ಇಂಗ್ಲಿಷಿನಲ್ಲಿ ಜೇಮ್ಸ್ ಆಗಸ್ಟಸ್ ಹಿಕ್ಕಿ ಅವರಿಂದ ಪ್ರಕಟಿತವಾಯಿತು. `ಹಿಕ್ಕೀಸ್ ಬೆಂಗಾಲ್ ಗಝೆಟ್' ನಲ್ಲಿ ಮೊತ್ತ ಮೊದಲ ಜಾಹೀರಾತು ಪ್ರಕಟಗೊಳ್ಳುವುದರೊಂದಿಗೆ ಭಾರತದಲ್ಲಿ ವಾಣಿಜ್ಯ ಜಾಹೀರಾತು ಆರಂಭಗೊಂಡಿತು.

Tuesday, March 2, 2010

ಇಂದಿನ ಇತಿಹಾಸ History Today ಜನವರಿ 28

ಇಂದಿನ ಇತಿಹಾಸ

ಜನವರಿ 28

ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಹಾ ನಿರ್ದೇಶಕ ಸ್ಥಾನಕ್ಕೆ ಪಾಕ್ ತಂಡದ ಮಾಜಿ ನಾಯಕ ಜಾವೇದ್ ಮಿಯಾಂದಾದ್ ಅವರು ರಾಜೀನಾಮೆ ನೀಡಿದರು. ಪಿಸಿಬಿ ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಅಧಿಕಾರವನ್ನು ಬಹಳ ಸೀಮಿತಗೊಳಿಸಿದ್ದನ್ನು ಪ್ರತಿಭಟಿಸಿ ಮಿಯಾಂದಾದ್ ಈ ತೀರ್ಮಾನ ಕೈಗೊಂಡರು.

2009: ಮಾಜಿ ರಾಷ್ಟ್ರಪತಿ ಆರ್.ವೆಂಕಟರಾಮನ್ ಅವರ ಅಂತ್ಯಸಂಸ್ಕಾರ ಸಕಲ ಸರ್ಕಾರಿ ಗೌರವದೊಂದಿಗೆ ನವದೆಹಲಿಯಲ್ಲಿ ನೆರವೇರಿತು. ಸಂಜೆ 5 ಗಂಟೆಗೆ ಯಮುನಾ ತಟದ ಏಕತಾ ಸ್ಥಳದಲ್ಲಿ ವೆಂಕಟರಾಮನ್ ಅವರ ಪಾರ್ಥಿವ ಶರೀರಕ್ಕೆ ಅಗ್ನಿ ಸ್ಪರ್ಶ ಮಾಡಲಾಯಿತು.

2009: ದೇಶದ ಪ್ರತಿಯೊಬ್ಬ ಪ್ರಜೆಗೂ ಶಾಶ್ವತ ಗುರುತಿನ ಪತ್ರ ನೀಡುವ ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪ್ರಾಧಿಕಾರ ರಚನೆಗೆ ಸರ್ಕಾರ ಅಧಿಸೂಚನೆ ಹೊರಡಿಸಿತು. ಈ ಗುರುತಿನ ಪತ್ರದಲ್ಲಿ ವಿಭಿನ್ನ ಸಂಖ್ಯೆ, ವ್ಯಕ್ತಿಯ ಭಾವಚಿತ್ರ ಹಾಗೂ ಜನ್ಮವೃತ್ತಾಂತದ ಮಾಹಿತಿ ಇರುತ್ತದೆ. ಅಲ್ಲದೇ ಮಕ್ಕಳಿಗೂ ಕೂಡ ಗುರುತಿನ ಪತ್ರ ನೀಡಲಾಗುತ್ತದೆ. ಗುರುತಿಗೆ ಸಂಬಂಧಿಸಿದಂತೆ ನಡೆಯುವ ಮೋಸ ಹಾಗೂ ದೇಶದ ಭದ್ರತೆ ಹಿತದೃಷ್ಟಿಯಿಂದ ಎಲ್ಲ ಪ್ರಜೆಗಳಿಗೂ ಗುರುತಿನ ಪತ್ರ ನೀಡುವುದು ಸರ್ಕಾರದ ಉದ್ದೇಶ. ಯೋಜನಾ ಆಯೋಗದ ಅಡಿಯಲ್ಲಿ ರಚನೆಯಾಗುತ್ತಿರುವ ರಾಷ್ಟ್ರೀಯ ಪ್ರಾಧಿಕಾರವು ಗುರುತಿನ ಸಂಖ್ಯೆಗಳನ್ನು ನೀಡುತ್ತದೆ. ಭಾರತೀಯ ಪೌರತ್ವ ಕಾಯ್ದೆ ಅನ್ವಯ ಜನಗಣತಿ ನಿರ್ದೇಶನಾಲಯದ ಮೂಲಕ ಹಾಗೂ ರಾಜ್ಯ ಮಟ್ಟದಲ್ಲಿ ರಚನೆಯಾಗುವ ಇಂಥದೇ ಮಾದರಿಯ ಘಟಕಗಳ ಸಹಕಾರದೊಂದಿಗೆ ಇದು ಕಾರ್ಯ ನಿರ್ವಹಿಸಲಿದೆ ಎಂದು ಅಧಿಕೃತ ಮೂಲಗಳು ತಿಳಿಸಿದವು. ಆರಂಭಿಕ ಹಂತದಲ್ಲಿ ಈ ಗುರುತಿನ ಪತ್ರವನ್ನು ಎಲ್ಲ ಮತದಾರರಿಗೂ ನೀಡಲಾಗುತ್ತದೆ. ಕ್ರಮೇಣ ಇದನ್ನು 18 ವರ್ಷದೊಳಗಿನವರಿಗೂ ಕೊಡಲಾಗುತ್ತದೆ.

2009: ಪತ್ರಕರ್ತ ಶಿವಪ್ರಸಾದ್ ಟಿ.ಆರ್. ಬರೆದ 'ಚಂದ್ರಯಾನ' ಪುಸ್ತಕವನ್ನು ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ನವದೆಹಲಿಯಲ್ಲಿ ಬಿಡುಗಡೆ ಮಾಡಿದರು. ಕನ್ನಡ ಭಾಷೆಯಲ್ಲಿರುವ ಪುಸ್ತಕದ ಒಂದು ಪುಟವನ್ನು ಲೇಖಕರಿಂದ ಓದಿಸಿ ತನ್ಮಯತೆಯಿಂದ ಕೇಳಿದ ಕಲಾಮ್, ತಾವೇ ಕೆಲವು ಪ್ಯಾರಾಗಳನ್ನು ಆಯ್ದು ಅದರ ಕನ್ನಡ ಭಾಷಾಂತರವನ್ನೂ ತಿಳಿದುಕೊಂಡರು. 'ಚಂದ್ರನ ಮೇಲೆ ಮನುಷ್ಯ ಹೋಗಲು ಸಾಧ್ಯ ಎಂದು 1860ರಷ್ಟು ಹಿಂದೆಯೇ ಕಾನ್ಸಾಂಟನ್ ಟಿಶೆಲ್ಸ್ ಎಂಬ ಕುರುಡ ವಿಜ್ಞಾನಿ ಹೇಳಿದ್ದನ್ನು ನೆನಪಿಸಿದ ಮಾಜಿ ರಾಷ್ಟ್ರಪತಿಗಳು, ಚಂದ್ರಯಾನದ ಕಲ್ಪನೆಯ ನಿಜವಾದ ರೂವಾರಿ ಕಾನ್ಸಾಂಟ್' ಎಂದರು. ವಿಜ್ಞಾನದ ವಿಷಯವನ್ನು ಕನ್ನಡದಲ್ಲಿ ಬರೆದ ಶಿವಪ್ರಸಾದ್ ಪ್ರಯತ್ನವನ್ನು ಕಲಾಮ್ ಶಾಘ್ಲಿಸಿದರು. ಬಿಡುಗಡೆಗೊಂಡ ಪುಸ್ತಕದ ಮೊದಲ ಪ್ರತಿಯನ್ನು 'ದಿ ವೀಕ್' ಪತ್ರಿಕೆಯ ಸ್ಥಾನೀಯ ಸಂಪಾದಕ ಸಚ್ಚಿದಾನಂದ ಮೂರ್ತಿ ಅವರಿಗೆ ಅಬ್ದುಲ್ ಕಲಾಂ ನೀಡಿದರು.

2009: ತಿಂಗಳು ಗಟ್ಟಲೇ ಆಕಾಶದಲ್ಲೇ ಕಾಲ ಕಳೆಯುವ ಗಗನಯಾನಿಗಳು ಮೂಳೆಗಳ ಶಕ್ತಿ ಕಳೆದುಕೊಂಡು ನಂತರದ ಜೀವನದಲ್ಲಿ ಭಾರಿ ಪ್ರಮಾಣದಲ್ಲಿ ಮೂಳೆಗಳ ಮುರಿತಕ್ಕೆ ಒಳಗಾಗುತ್ತಾರೆ ಎಂದು ಕ್ಯಾಲಿಫೋರ್ನಿಯಾದ ವಿವಿ ಹೇಳಿತು. ಆರು ದಿನಗಳಿಂದ ನಾಲ್ಕು ತಿಂಗಳು ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಾಲ ಕಳೆದ 13 ಯಾನಿ ಗಳನ್ನು ಪರಿಶೀಲಿಸಿದಾಗ ಅವರ ಸೊಂಟದ ಮೂಳೆಗಳ ಶಕ್ತಿ ಶೇ 14 ರಷ್ಟು ಕಡಿಮೆಯಾಗಿದ್ದುದು ಬೆಳಕಿಗೆ ಬಂತು. ಮೂವರು ಗಗನ ಯಾನಿಗಳಲ್ಲಿ ಅಸ್ಥಿ ಗಳ ತೊಂದರೆ ಹೊಂದಿರುವ ವೃದ್ಧ ಮಹಿಳೆಯರ ಮೂಳೆಗಳಿಗಿಂತ ಶೇ. 20 ರಿಂದ 30 ದುರ್ಬಲವಾಗಿದ್ದುದು ಗೊತ್ತಾಯಿತು.

2009: ನಂಬಿದ್ರೆ ನಂಬಿ ಬಿಟ್ಟರೆ ಬಿಡಿ, ಹೆಸರು ಇಟ್ಟಿರುವ ಹಸುಗಳು ಹೆಚ್ಚು ಹಾಲು ಕೊಡುತ್ತವೆ. ಇದಕ್ಕೆ ವಿರುದ್ಧವಾಗಿ ಹೆಸರಿಡದ ಹಸುಗಳು ಹಾಲು ಕೊಡುವ ಪ್ರಮಾಣ ಕಡಿಮೆ. ಈ ಸಂಗತಿ ನ್ಯೂಕ್ಯಾಸ್ಟಲ್ ವಿಶ್ವವಿದ್ಯಾಲಯದಲ್ಲಿ ಮಾಡಲಾದ ಸಂಶೋಧನೆಯಿಂದ ಹೊರಬಿದ್ದಿತು. ಹಸುಗಳಿಗೆ ಹೆಸರಿಟ್ಟು ಅವುಗಳನ್ನು ಪ್ರತ್ಯೇಕವಾಗಿ ಆರೈಕೆ ಮಾಡಿದರೆ ಅವು ಕೊಡುವ ಹಾಲಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗುತ್ತದೆ ಎಂದು ಅಧ್ಯಯನ ಹೇಳಿತು.

2009: ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಸುಮಾರು 22,600 ಕಿ.ಮೀ ರಸ್ತೆ ಅಭಿವೃದ್ಧಿಪಡಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಆಯೋಜಿಸಿದ್ದ ಹೂಡಿಕೆದಾರರು ಮತ್ತು ಹಣಕಾಸು ಸಂಸ್ಥೆಗಳ ಮುಖಂಡರ ಸಭೆಗೂ ಮುನ್ನ ನಡೆದ ಸಮಾರಂಭದಲ್ಲಿ ಅವರು ಹೊಸ ಯೋಜನೆಗೆ ಹಸಿರು ನಿಶಾನೆ ತೋರಿದರು. ಒಟ್ಟು 22,600 ಕಿ.ಮೀ ರಸ್ತೆಯಲ್ಲಿ, 10 ಸಾವಿರ ಕಿ.ಮೀ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯರಸ್ತೆಗಳು ಹಾಗೂ 12,600 ಕಿ.ಮೀ ಗ್ರಾಮಾಂತರ ರಸ್ತೆಗಳು ಸೇರಿವೆ.

2009: ಪಾಕಿಸ್ಥಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮಹಾ ನಿರ್ದೇಶಕ ಸ್ಥಾನಕ್ಕೆ ಪಾಕ್ ತಂಡದ ಮಾಜಿ ನಾಯಕ ಜಾವೇದ್ ಮಿಯಾಂದಾದ್ ಅವರು ರಾಜೀನಾಮೆ ನೀಡಿದರು. ಪಿಸಿಬಿ ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಅಧಿಕಾರವನ್ನು ಬಹಳ ಸೀಮಿತಗೊಳಿಸಿದ್ದನ್ನು ಪ್ರತಿಭಟಿಸಿ ಮಿಯಾಂದಾದ್ ಈ ತೀರ್ಮಾನ ಕೈಗೊಂಡರು.

2008: ಕ್ರಿಕೆಟ್ ಜಗತ್ತು ಕಂಡ ಶ್ರೇಷ್ಠ ವಿಕೆಟ್ ಕೀಪರ್ `ಗಿಲಿ' ಈದಿನ ಮುಕ್ತಾಯಗೊಂಡ ಅಡಿಲೇಡ್ ಪಂದ್ಯದೊಂದಿಗೆ ಟೆಸ್ಟ್ ಕ್ರಿಕೆಟಿಗೆ ಗುಡ್ ಬೈ ಹೇಳಿದರು. ಪಂದ್ಯ ಡ್ರಾದಲ್ಲಿ ಕೊನೆಗೊಳ್ಳುತ್ತಿದ್ದಂತೆಯೇ ಆಸೀಸ್ ತಂಡದ ಪ್ರತಿಯೊಬ್ಬ ಸದಸ್ಯರೂ ಗಿಲ್ ಕ್ರಿಸ್ಟ್ ಅವರನ್ನು ತಬ್ಬಿಕೊಂಡು ವಿದಾಯ ಹೇಳಿದರು. ಈ ವೇಳೆ ಕ್ರೀಸ್ನಲ್ಲಿದ್ದ ಭಾರತ ತಂಡದ ನಾಯಕ ಅನಿಲ್ ಕುಂಬ್ಳೆ ಅವರೂ ಗಿಲ್ಕ್ರಿಸ್ಟ್ ಅವರನ್ನು ಅಪ್ಪಿಕೊಂಡರು. ಭಾರತ ತಂಡದ ಡ್ರೆಸಿಂಗ್ ಕೋಣೆಗೆ ತೆರಳಿ ಪ್ರತಿಯೊಬ್ಬ ಆಟಗಾರನಿಗೆ ಹಸ್ತಲಾಘವ ನೀಡಿದ `ಗಿಲಿ' ಎಲ್ಲರ ಕೇಂದ್ರಬಿಂದುವಾಗಿ ಬದಲಾದರು. ಕೆಲವೊಂದು ಭಾವಪೂರ್ಣ ಕ್ಷಣಗಳಿಗೆ ಅಡಿಲೇಡಿನಲ್ಲಿ ನೆರೆದ ಪ್ರೇಕ್ಷಕರು ಸಾಕ್ಷಿಯಾದರು.

2008: ಹೈದರಾಬಾದಿನ 21ರ ಹರೆಯದ ಮೂಗುತಿ ಸುಂದರಿ ಸಾನಿಯಾ ಮಿರ್ಜಾ ಈದಿನ ಮತ್ತೊಂದು ಮೈಲಿಗಲ್ಲು ನೆಟ್ಟು ಏಷ್ಯಾದ ನಂಬರ್ ಒನ್ ಟೆನಿಸ್ ಆಟಗಾರ್ತಿ ಎನಿಸಿದರು. ಸಾನಿಯಾ ಅವರು ಈದಿನ ಬಿಡುಗಡೆಯಾದ ಡಬ್ಲ್ಯುಟಿಎ ರ್ಯಾಂಕಿಂಗ್ ಪಟ್ಟಿಯಲ್ಲಿ 29ನೇ ಸ್ಥಾನ ಪಡೆದು ಏಷ್ಯಾದ ಅಗ್ರ ರ್ಯಾಂಕಿಂಗಿನ ಅಟಗಾರ್ತಿ ಎಂಬ ಗೌರವ ಪಡೆದುಕೊಂಡರು. ಇದುವರೆಗೂ ಈ ಗೌರವ ಚೀನಾದ ನಾ ಲೀ ಅವರ ಹೆಸರಿನಲ್ಲಿ ಇತ್ತು. ಹೊಸ ಪಟ್ಟಿಯಲ್ಲಿ ಲೀ 32ನೇ ಸ್ಥಾನಕ್ಕೆ ಕುಸಿದರು.

2008: ಜಷ್ಪುರ ಜಿಲ್ಲೆಯ ಜೈಮಾರ್ಗ ಅರಣ್ಯದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ನಕ್ಸಲರನ್ನು ಬಂಧಿಸಿ, ಅವರಿಂದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡರು. ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ಮಾಹಿತಿ ಆಧರಿಸಿ ಸಿ ಐ ಎಸ್ ಎಫ್ ಮತ್ತು ಪೊಲೀಸ್ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಪೊಲೀಸರು ಅಶೋಕ್ ಒರಾನ್, ವಿಶ್ವೇಶ್ವರ್ ಮತ್ತು ಜಾರ್ಜ್ ಮಿಂಜ್ ಎಂಬ ಮೂವರು ನಕ್ಸಲರನ್ನು ಬಂಧಿಸಿದರು.

2008: ಥಾಯ್ಲೆಂಡ್ ಸಂಸತ್ ಪುಗ್ನೇಸಿಯಸ್ ರೈಟ್-ವಿಂಗರ್ ಸಮಕ್ ಸುಂದರವೆಜ್ ಅವರನ್ನು ಹೊಸ ಪ್ರಧಾನಿಯಾಗಿ ಆಯ್ಕೆ ಮಾಡಿತು. ಇದರಿಂದಾಗಿ 2006ರ ರಕ್ತರಹಿತ ಕ್ರಾಂತಿಯ ಬಳಿಕ ದೇಶದಲ್ಲಿ ಮತ್ತೆ ಪ್ರಾತಿನಿಧಿಕ, ನಾಗರಿಕ ಸರ್ಕಾರ ಮರಳಿದಂತಾಯಿತು. 72 ವರ್ಷದ ಈ ಮಾಜಿ ಗವರ್ನರ್, ಗಡಿಪಾರಾಗಿರುವ ಪದಚ್ಯುತ ಪ್ರಧಾನಿ ಥಕ್ಸಿನ್ ಶಿನವಾತ್ರ ಅವರನ್ನು ಮರಳಿ ಸ್ವದೇಶಕ್ಕೆ ಕರೆತರುವ ಪಣತೊಟ್ಟು, ಸೇನೆ ಮತ್ತು ರಾಜಪ್ರಭುತ್ವದ ಪ್ರಮುಖರನ್ನು ದಂಗೆಯ ರೂವಾರಿಗಳೆಂದು ದೂಷಿಸಿ, ಸಂಘರ್ಷಕ್ಕೆ ನಾಂದಿ ಹಾಡಿದ್ದರು.

2007: ಬ್ರಿಟನ್ನಿನ `ಚಾನೆಲ್ 4' ಟಿವಿ ವಾಹಿನಿ ಪ್ರಸಾರ ಮಾಡುತ್ತಿದ್ದ `ಸೆಲೆಬ್ರಿಟಿ ಬಿಗ್ ಬ್ರದರ್' ಕಾರ್ಯಕ್ರಮದಲ್ಲಿಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಒಟ್ಟು ಮತಗಳ ಪೈಕಿ ಶೇ 67ರಷ್ಟು ಮತಗಳನ್ನು ಗಳಿಸಿ ಗೆಲುವಿನ ನಗೆ ಬೀರಿದರು. ಇದರಿಂದಾಗಿ 85 ಲಕ್ಷ ರೂಪಾಯಿಗಳಷ್ಟು (1 ಲಕ್ಷ ಪೌಂಡ್) ನಗದು ಬಹುಮಾನ ಅವರ ಮಡಿಲಿಗೆ ಬಿದ್ದಿತು. ಕಾರ್ಯಕ್ರಮದಲ್ಲಿ ಜನಾಂಗೀಯ ನಿಂದನೆ ಆರೋಪ ಹೊತ್ತಿದ್ದ ಮಾಜಿ ಭುವನ ಸುಂದರಿ ಡೇನಿಯೆಲಾ ಲಾಯ್ಡ್ ಮತ್ತು ಜಾಕ್ ಟ್ವೀಡ್ ಅವರು ಅಂತಿಮ ಹಣಾಹಣಿಯ ಮೊದಲ ಸುತ್ತಿನಲ್ಲೇ ನಿರ್ಗಮಿಸಿದರು. ಡೇನಿಯ್ಲೆಲಾ ಈ ಮೊದಲು ಜನಾಂಗೀಯ ನಿಂದನೆ ಮಾಡಿದ್ದಕ್ಕಾಗಿ ಶಿಲ್ಪಾ ಅವರ ಕ್ಷಮೆ ಯಾಚಿಸಿದ್ದರು. ಇದಕ್ಕೂ ಮುನ್ನ ಜನಾಂಗೀಯ ನಿಂದನೆಗೈದ ಆರೋಪಕ್ಕೆ ಗುರಿಯಾದ ಜೇಡ್ ಗೂಡಿ ನಿರ್ಗಮಿಸಿದ್ದರು. ಜನವರಿ 2ರಂದು ಆರಂಭಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಲ್ಲಾ ಸ್ಪರ್ಧಾಳುಗಳನ್ನು ಒಂದು ಮನೆಯಲ್ಲಿ ಇರುವಂತೆ ಮಾಡಿ, ಅವರ ನಡವಳಿಕೆಗಳನ್ನು ಹಾಗೂ ದೈನಂದಿನ ಕೆಲಸಗಳಲ್ಲಿ ಉದ್ಭವವಾಗುವ ಸಮಸ್ಯೆಗಳನ್ನು ಇವರೆಲ್ಲ ಹೇಗೆ ನಿಭಾಯಿಸುವರು ಎಂಬುದನ್ನೆಲ್ಲ ಚಿತ್ರೀಕರಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸ್ಪರ್ಧಾಳುಗಳು ಶಿಲ್ಪಾ ವಿರುದ್ಧ ಮಾಡಲಾದ ಜನಾಂಗೀಯ ಟೀಕೆಗಳ ಬಗ್ಗೆ ಸುದ್ದಿ ಮಾಧ್ಯಮಗಳ ಕಣ್ಗಾವಲು ಸಂಸ್ಥೆಯಾದ `ಆಫ್ ಕಾಮ್'ಗೆ 40 ಸಾವಿರಕ್ಕೂ ಹೆಚ್ಚು ದೂರುಗಳು ಬಂದಿದ್ದವು. ವಿವಾದಕ್ಕೆ ಸಂಬಂಧಿಸಿದಂತೆ ಬ್ರಿಟಿಷ್ ಜನ ಪ್ರತಿನಿಧಿಗಳು ಸಹ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ ಬ್ರಿಟನ್ನಿನ ಸುದ್ದಿ ಮಾಧ್ಯಮಗಳೂ ಈ ಘಟನೆಯ ವಿರುದ್ಧ ದನಿ ಎತ್ತಿದ್ದವು.

2007: ಗಿನ್ನೆಸ್ ವಿಶ್ವದಾಖಲೆಗೆ ಸೇರ್ಪಡೆಯಾಗುವ ಸಲುವಾಗಿ `ಕರಾಟೆ ಭಾನುಮತಿ' ಎಂದೇ ಖ್ಯಾತರಾಗಿರುವ 47 ವರ್ಷದ ಮಹಿಳೆ ತಮಿಳುನಾಡಿನ ಚೆನ್ನೈಯಲ್ಲಿ ಗಾಜಿನ ಚೂರು ಹಾಗೂ 1525 ಮೊಳೆಗಳಿದ್ದ ಹಲಗೆಯಲ್ಲಿ ಪವಡಿಸಿ, ತನ್ನ ಮೈಮೇಲೆ 565 ಮೋಟಾರ್ ಸೈಕಲ್ಲುಗಳನ್ನು ಓಡಿಸಿಕೊಂಡರು. ಈ ದಾಖಲೆ ಸ್ಥಾಪನೆಯ ಒಂದು ಭಾಗವಾಗಿ ಹಲಗೆಯಲ್ಲಿ ಮಲಗಿದ್ದಾಗಲೇ ಆಕೆಯ ಮೇಲೆ 500 ಕಿ.ಗ್ರಾಂ. ತೂಕದ ಗ್ರಾನೈಟ್ ಕಲ್ಲನ್ನು ಇರಿಸಿ ಒಡೆದು ಹಾಕಲಾಯಿತು. ಈ ಸಾಹಸವನ್ನು ನಗರದ ಚಾಲೆಂಜರ್ಸ್ ಅಕಾಡೆಮಿ ಸಂಘಟಿಸಿತ್ತು. ಲಿಮ್ಕಾ ದಾಖಲೆ ಸ್ಥಾಪನೆ ಸಲುವಾಗಿ ಇನ್ನೊಂದು ಸಾಹಸದಲ್ಲಿ ಎಸ್. ರಾಜಾ ಅವರು 32 ಸೆಕೆಂಡುಗಳಲ್ಲಿ ತಮ್ಮ ಒಂದೇ ತೋಳನ್ನು 32 ಸಲ ಮೇಲಕ್ಕೆ ಬೀಸಿ ದಾಖಲೆ ನಿರ್ಮಿಸಿದರು. ಈ ಹಿಂದೆ ಮುಂಬೈಯ ನಾಯಕ್ ಅವರು 41.5 ಸೆಕೆಂಡಿನಲ್ಲಿ 27 ಸಲ ತಮ್ಮ ತೋಳನ್ನು ಮೇಲಕ್ಕೆ ಬೀಸಿ ದಾಖಲೆ ಸ್ಥಾಪಿಸಿದ್ದರು.

2007: `ಜರಾ ಹೊಲ್ಲೆ ಹೊಲ್ಲೆ ಚಲೊ ಮೇರೆ ಸಾಜನಾ', `ಯೇ ಲೊ ಮೇ ಹಾರಿ ಪಿಯಾ'ದಂತಹ ಸುಮಧುರ ಗೀತೆಗಳಿಗೆ ಸಂಗೀತ ನೀಡಿದ್ದ ಖ್ಯಾತ ಸಂಗೀತ ನಿರ್ದೇಶಕ ಓಂಕಾರ್ ಪ್ರಸಾದ್ ನಯ್ಯರ್ (ಒ.ಪಿ.ನಯ್ಯರ್) (82) ಈದಿನ ಮಧ್ಯಾಹ್ನ ಟಿ.ವಿ. ನೋಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು ಆಸ್ಪತ್ರೆಗೆ ಒಯ್ಯುವ ದಾರಿಯಲ್ಲಿಯೇ ನಿಧನರಾದರು. ಕಳೆದ ಕೆಲ ವರ್ಷಗಳಿಂದ ತೆರೆಮರೆಯಲ್ಲಿಯೇ ಇದ್ದ ನಯ್ಯರ್ ತಮ್ಮ ಕುಟುಂಬದವರಿಂದ ದೂರವಾಗಿ ಆಪ್ತರಾಗಿದ್ದ ನಖ್ವಾ ಕುಟುಂಬದ ಜೊತೆ ಥಾಣೆಯಲ್ಲಿ ವಾಸಿಸುತ್ತಿದ್ದರು. ತಮ್ಮ ಪಂಜಾಬಿ ಸೊಗಡಿನ ಮಾಂತ್ರಿಕ ಸಂಗೀತದಿಂದ ನಯ್ಯರ್ ಅವರು ಸಂಗೀತ ಪ್ರೇಮಿಗಳು ಎಂದೂ ಮರೆಯಲಾರದ ಮಾಧುರ್ಯಭರಿತ ಚಿತ್ರಗೀತೆಗಳನ್ನು ನೀಡಿದ್ದರು. ತಮ್ಮ ಸಮಕಾಲೀನರಾದ ಭಾರತದ ಕೋಗಿಲೆ ಖ್ಯಾತಿಯ ಲತಾ ಮಂಗೇಶ್ಕರ್ ಜೊತೆ ಅವರು ಒಮ್ಮೆಯೂ ಕೆಲಸ ಮಾಡಿದವರಲ್ಲ. ಆದರೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. 50-60 ದಶಕದಲ್ಲಿ ಗಾಯಕ ಮಹಮ್ಮದ್ ರಫಿ ಜೊತೆ ಮಧುರ ಗೀತೆಗಳನ್ನು ನೀಡಿದ ನಯ್ಯರ್, ಆಶಾ ಭೋಂಸ್ಲೆ ವೃತ್ತಿಜೀವನ ಉತ್ತಂಗಕ್ಕೆ ಏರಲು ಕಾರಣರಾಗಿದ್ದರು. `ಮೇರಾ ನಾಮ್ ಚಿನ್ ಚಿನ್ ಚೂ', `ಆಯಿಯೇ ಮೆಹರಬಾನ್ ಬೈಠಿಯೇ ಜಾನೆಜಾ' (ಹೌರಾ ಬ್ರಿಜ್), `ಮಾಂಗ್ ಕೆ ಸಾತ್ ತುಮ್ಹಾರಾ' (ನಯಾ ದೌರ್)ದಂತಹ ಗೀತೆಗಳು ನಯ್ಯರ್ ಪ್ರತಿಭೆಗೆ ಸಾಕ್ಷಿ. 1926ರಲ್ಲಿ ಅವಿಭಜಿತ ಲಾಹೋರಿನಲ್ಲಿ ಜನಿಸಿದ್ದ ನಯ್ಯರ್, ದೇಶ ವಿಭಜನೆಯ ಬಳಿಕ ಲಾಹೋರಿನಿಂದ ಅಮೃತಸರಕ್ಕೆ ಬಂದು ನೆಲೆಸಿದರು. ಸಂಗೀತದ ಹುಚ್ಚಿನಿಂದ 1949ರಲ್ಲಿ ಚಿತ್ರನಗರಿ ಮುಂಬೈಗೆ ಬಂದಿಳಿದರು. ಐದಾರು ವರ್ಷದ ಹೋರಾಟದ ನಂತರ ಗುರುದತ್ ಅವರ `ಆರ್ ಪಾರ್' ನಯ್ಯರ್ ಅವರಿಗೆ ಬ್ರೇಕ್ ನೀಡಿತು. ಅಲ್ಲಿಂದ ಹಿಂದಿರುಗಿ ನೋಡದ ನಯ್ಯರ್ 50-60 ದಶಕದಲ್ಲಿ ಹಿಂದಿ ಚಿತ್ರರಂಗವನ್ನು ಅಕ್ಷರಶಃ ಆಳಿದರು. `ಹೌರಾಬ್ರಿಜ್', `ಕಾಶ್ಮೀರ್ ಕಿ ಕಲಿ', ಮಿ. ಆ್ಯಂಡ್ ಮಿಸೆಸ್ 55', `ಬಾಜ್' ನಯ್ಯರ್ ಸಂಗೀತಕ್ಕೆ ಕನ್ನಡಿ. 1957ರಲ್ಲಿ `ನಯಾ ದೌರ್' ಚಿತ್ರಕ್ಕೆ ಫಿಲ್ಮ್ ಫೇರ್ ಪ್ರಶಸ್ತಿ ಪಡೆದ ನಯ್ಯರ್, ಹಲವು ಪುರಸ್ಕಾರಗಳಿಗೆ ಭಾಜನರಾಗಿದ್ದರು.

2007: ಬಾಲಾಪರಾಧಿ ಆಶ್ರಯಧಾಮದ ಸುಮಾರು 46 ಮಕ್ಕಳು ಸಿಬ್ಬಂದಿಗೆ ಚಳ್ಳೆಹಣ್ಣು ತಿನ್ನಿಸಿ, ಧಾಮದ ಕಟ್ಟಡದ ಗೋಡೆಯ ಒಂದು ಭಾಗವನ್ನು ಒಡೆದು ಪರಾರಿಯಾದ ಘಟನೆ ಬೆಂಗಳೂರು ನಗರದ ಮಡಿವಾಳದಲ್ಲಿ ನಡೆಯಿತು. ತಪ್ಪಿಸಿಕೊಂಡ ಬಾಲಕರಲ್ಲಿ ಕೆಲವರನ್ನು ಪೋಷಕರು ಆಶ್ರಯಧಾಮಕ್ಕೆ ಒಪ್ಪಿಸಿದರೆ, ಒಬ್ಬನನ್ನು ಕೋರಮಂಗಲದ ಫೋರಂ ವಾಣಿಜ್ಯ ಮಳಿಗೆ ಬಳಿ ಪೊಲೀಸರು ಬಂಧಿಸಿದರು.

2007: ಖ್ಯಾತ ಹಿಂದಿ ಸಾಹಿತಿ, ಪತ್ರಕರ್ತ ಪದ್ಮ ಭೂಷಣ ಕಮಲೇಶ್ವರ್ (74) ಹೃದಯಾಘಾತದಿಂದ ನವದೆಹಲಿಯ ತಮ್ಮ ಮನೆಯಲ್ಲಿ ನಿಧನರಾದರು. ಕಮಲೇಶ್ವರ್ ಅವರು ಸುಮಾರು 30ಕ್ಕೂ ಹೆಚ್ಚು ಪುಸ್ತಕ ಬರೆದಿದ್ದಾರೆ. 100ಕ್ಕೂ ಹೆಚ್ಚು ಚಲನಚಿತ್ರಗಳಿಗೆ ಅವರು ಸ್ಕ್ರಿಪ್ಟ್ ರಚಿಸಿದ್ದಾರೆ.

2007: ಚೀನಾದ ಶಾಂಘಾಯಿ ದಕ್ಷಿಣ ರೈಲ್ವೆ ನಿಲ್ದಾಣದಿಂದ ಅತಿವೇಗದ ಬುಲೆಟ್ ರೈಲುಗಾಡಿಯು ಶಾಂಘಾಯಿಯಿಂದ ಪ್ರಯಾಣ ಹೊರಟಿತು. ಗಂಟೆಗೆ 250 ಕಿ.ಮೀ. ಪ್ರಯಾಣ ಮಾಡಬಲ್ಲ ಈ ರೈಲುಗಾಡಿ ಶಾಂಘಾಯಿ- ಬೀಜಿಂಗ್ ಮಧ್ಯೆ ಸಂಚರಿಸುವುದು.

2007: ಧರ್ಮಸ್ಥಳದ ರತ್ನ ಮಂಟಪದಲ್ಲಿ ಭಗವಾನ್ ಬಾಹುಬಲಿಯ ಮೂರನೇ ಮಹಾಮಸ್ತಕಾಭಿಷೇಕವನ್ನು ಉಪ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.

2007: ಬೆಂಗಳೂರಿನ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ಸಂಸ್ಥೆಯ ವತಿಯಿಂದ ಯಡತೊರೆ ಶ್ರೀ ಶಂಕರ ಭಾರತಿ ಸ್ವಾಮೀಜಿ ನೇತೃತ್ವದಲ್ಲಿ ಸುಮಾರು ಒಂದು ಲಕ್ಷ ಮಹಿಳೆಯರು ಶಂಕರಾಚಾರ್ಯರ `ಸೌಂದರ್ಯ ಲಹರಿ'ಯನ್ನು ಸಾಮೂಹಿಕವಾಗಿ ಪಾರಾಯಣ ಮಾಡಿ ಇತಿಹಾಸ ನಿರ್ಮಿಸಿದರು.

2006: ಕರ್ನಾಟಕದ ಮುಖ್ಯಮಂತ್ರಿ ಧರ್ಮಸಿಂಗ್ ರಾಜೀನಾಮೆ. ರಾಜ್ಯಪಾಲ ಟಿ.ಎನ್. ಚತುರ್ವೇದಿ ಅವರಿಂದ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೂತನ ಸರ್ಕಾರ ರಚನೆಗೆ ಅಧಿಕೃತ ಆಹ್ವಾನಪತ್ರ. ಫೆ.3ರಂದು ಎಚ್. ಡಿ. ಕುಮಾರಸ್ವಾಮಿ ನೇತೃತ್ವದ ಜನತಾದಳ (ಎಸ್) - ಬಿಜೆಪಿ ಪರ್ಯಾಯ ಸರ್ಕಾರದ ರಚನೆಗೆ ನಿರ್ಧಾರ.

2006: ಭೂಮಿಯ ಮೇಲ್ಮೈಯಿಂದ ಮೇಲ್ಮೈಗೆ ಜಿಗಿಯುವ ಆಕಾಶ್ ಕ್ಷಿಪಣಿಯನ್ನು ಬಾಲಸೂರ್ ಮಧ್ಯಂತರ ಪರೀಕ್ಷಾ ಕೇಂದ್ರದಲ್ಲಿ ಎರಡು ಬಾರಿ ಪರೀಕ್ಷಾರ್ಥವಾಗಿ ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು.

2006: ಸಂಸದರ ಪ್ರದೇಶಾಭಿವೃದ್ಧಿ ದುರ್ಬಳಕೆಯ ತನಿಖೆ ಕುರಿತ ಸಂಸದೀಯ ಸಮಿತಿಯ ಮುಖ್ಯಸ್ಥರಾಗಿ ಕಿಶೋರ್ ಚಂದ್ರ ಅವರನ್ನು ನೇಮಿಸಲಾಯಿತು.

1986: ಸ್ಪೇಸ್ ಷಟಲ್ ನೌಕೆ `ಚಾಲೆಂಜರ್' ಫ್ಲಾರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಂಡ ಸ್ವಲ್ಪ ಹೊತ್ತಿನಲ್ಲೇ ಸ್ಫೋಟಗೊಂಡಿತು. ಶಾಲಾ ಶಿಕ್ಷಕಿ ಕ್ರಿಸ್ಟಾ ಮೆಕ್ಲಿಫ್ ಸೇರಿದಂತೆ ಅದರಲ್ಲಿದ್ದ ಎಲ್ಲ 7 ಮಂದಿ ಗಗನಯಾನಿಗಳೂ ದುರಂತದಲ್ಲಿ ಸಾವನ್ನಪ್ಪಿದರು.

1953: ಡಾ. ರಾಜೇಂದ್ರ ಪ್ರಸಾದ್ ಅವರು ಭಾರತದಲ್ಲಿ ಸಂಗೀತ, ನೃತ್ಯ, ನಾಟಕ ಅಭಿವೃದ್ಧಿಗಾಗಿ ನವದೆಹಲಿಯಲ್ಲಿ ಸಂಗೀತ ನಾಟಕ ಅಕಾಡೆಮಿಯನ್ನು ಉದ್ಘಾಟಿಸಿದರು.

1950: ಭಾರತದ ಸುಪ್ರೀಂಕೋರ್ಟ್ ನವದೆಹಲಿಯಲ್ಲಿ ಅಸ್ತಿತ್ವಕ್ಕೆ ಬಂದಿತು. ಸಂಸತ್ ಕಟ್ಟಡದ ಚೇಂಬರ್ ಆಫ್ ಪ್ರಿನ್ಸಸ್ಸಿನಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ದಿ ಫೆಡರಲ್ ಕೋರ್ಟ್ ಆಫ್ ಇಂಡಿಯಾ ಈ ಸ್ಥಳದಲ್ಲೇ 1937ರಿಂದ 1950ರವರೆಗೆ 12 ವರ್ಷಗಳ ಕಾಲ ಕಾರ್ಯ ನಿರ್ವಹಿಸಿತ್ತು. ಈಗಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವವರೆಗೆ ಸುಪ್ರೀಂಕೋರ್ಟ್ ಕೂಡಾ ಇದೇ ಸ್ಥಳದಿಂದ ಕಾರ್ಯ ನಿರ್ವಹಿಸಿತು.

1945: ರಂಗಭೂಮಿಯ ಪ್ರತಿಭಾನ್ವಿತ ನಟ, ಸಂಘಟಕ ರಾಜಶೇಖರ ಕದಂಬ ಅವರು ಕದಂಬರದಾಸಪ್ಪ- ವೆಂಕಟಮ್ಮ ದಂಪತಿಯ ಮಗನಾಗಿ ಬೆಂಗಳೂರು ಜಿಲ್ಲೆಯ ಗೊಟ್ಟಿಗೆರೆಯಲ್ಲಿ ಜನಿಸಿದರು.

1933: ಲಂಡನ್ನಿನ ವಾಲ್ ಡೋರ್ಫ್ ಹೋಟೆಲಿನಲ್ಲಿ ಕೇಂಬ್ರಿಜಿನ ಭಾರತೀಯ ಮುಸ್ಲಿಂ ಪದವೀಧರ ರಹಮತ್ ಅಲಿ ಚೌಧರಿ ಭಾರತದ ವಿಭಜನೆಯ ಪ್ರಸ್ತಾವವಿದ್ದ ಟಿಪ್ಪಣಿಯೊಂದನ್ನು ಓದಿದ. `ನೌ ಆರ್ ನೆವರ್' ಎಂಬ ಪುಟ್ಟ ಪುಸ್ತಕವೊಂದನ್ನು ಬರೆದಿದ್ದ ಆತ ಪಾಕಿಸ್ಥಾನಕ್ಕೆ ಈ ಹೆಸರು ಕೊಟ್ಟಿದ್ದ. (ಪಾಕಿಸ್ಥಾನ ಅಥವಾ `ಲ್ಯಾಂಡ್ ಆಫ್ ಪ್ಯೂರ್' ಪಂಜಾಬಿಗೆೆ ಪಿ, ಆಫ್ಘಾನಿಯಾಕ್ಕೆ ಎ, ವಾಯುವ್ಯ ಗಡಿ ಪ್ರಾಂತಕ್ಕೆ ರಹಮತ್ ಅಲಿ, ಕಾಶ್ಮೀರಕ್ಕೆ ಕೆ, ಸಿಂದ್ ಗೆ ಎಸ್, ಬಲೂಚಿಸ್ಥಾನಕ್ಕೆ ತಾನ್)

1931: ಖ್ಯಾತ ಸಾಹಿತಿ ಸಾ.ಶಿ. ಮರುಳಯ್ಯ ಅವರು ಶಿವರುದ್ರಯ್ಯ- ಸಿದ್ದಮ್ಮ ದಂಪತಿಯ ಪುತ್ರನಾಗಿ ತುಮಕೂರು ಜಿಲ್ಲೆ ಚಿಕ್ಕನಾಯಕನ ಹಳ್ಳಿ ತಾಲ್ಲೂಕಿನ ಸಾಸಲು ಗ್ರಾಮದಲ್ಲಿ ಈದಿನ ಜನಿಸಿದರು.

1930: ಭಾರತದ ಖ್ಯಾತ ಸಂಗೀತಗಾರ ಮೋತಿರಾಮ್ ಜಸ್ ರಾಜ್ (1930) ಅವರು ಹುಟ್ಟಿದರು.

1925: ಭಾರತೀಯ ವಿಜ್ಞಾನಿ ಭಾರತೀಯ ಪರಮಾಣು ಶಕ್ತಿ ಆಯೋಗದ ಮಾಜಿ ಅಧ್ಯಕ್ಷ ರಾಜಾ ರಾಮಣ್ಣ (1925) ಹುಟ್ಟಿದ ದಿನ.

1899: ಭಾರತದ ಮೊತ್ತ ಮೊದಲ ಸೇನಾದಂಡನಾಯಕ ಫೀಲ್ಡ್ ಮಾರ್ಷಲ್ ಕೊಡಂದೇರ ಮಾದಪ್ಪ ಕಾರಿಯಪ್ಪ (1899-1993) ಅವರು ಜನಿಸಿದರು.

1865: ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್ ರಾಯ್ (1865-1928) ಹುಟ್ಟಿದರು.

1809: ಜರ್ಮನಿಯ ಸಂಸ್ಕೃತ ವಿದ್ವಾಂಸ ಥಿಯೋಡೋರ್ ಬೆನ್ ಫೇ (1809-1881) ಹುಟ್ಟಿದರು. ಪ್ರಾಣಿಗಳ ಕಥೆಗಳನ್ನು ಒಳಗೊಂಡ ಭಾರತದ `ಪಂಚತಂತ್ರ' ಸಂಗ್ರಹ ಇವರಿಗೆ ಅಪಾರ ಖ್ಯಾತಿ ತಂದು ಕೊಟ್ಟಿದೆ.

Monday, March 1, 2010

ಇಂದಿನ ಇತಿಹಾಸ History Today ಜನವರಿ 27

ಇಂದಿನ ಇತಿಹಾಸ

ಜನವರಿ 27

ತೀವ್ರ ಅಸ್ವಸ್ಥರಾಗಿ ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ಸೇರಿದ್ದ ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ (98) ಅವರು ಈದಿನ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರನಾಳದ ಮತ್ತು ಉಸಿರಾಟದ ತೊಂದರೆ ಕಾರಣ ಅವರು ಜನವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು. 1910ರ ಡಿಸೆಂಬರ 4ರಂದು ಜನಿಸಿದ್ದ ಆರ್ ವೆಂಕಟರಾಮನ್ ಅವರು, 1987 ರಿಂದ 1992ರ ವರೆಗಿನ ಅವಧಿಯಲ್ಲಿ ದೇಶದ ಎಂಟನೇ ರಾಷ್ಟ್ರಪತಿಗಳಾಗಿ ಕಾರ್ಯ ನಿರ್ವಹಿಸಿದ್ದರು.

2009: ತೀವ್ರ ಅಸ್ವಸ್ಥರಾಗಿ ಹದಿನೈದು ದಿನಗಳ ಹಿಂದೆ ಆಸ್ಪತ್ರೆಗೆ ಸೇರಿದ್ದ ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ (98) ಅವರು ಈದಿನ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ ನಿಧನರಾದರು. ಮೂತ್ರನಾಳದ ಮತ್ತು ಉಸಿರಾಟದ ತೊಂದರೆ ಕಾರಣ ಅವರು ಜನವರಿ 12 ರಂದು ಆಸ್ಪತ್ರೆಗೆ ದಾಖಲಾಗಿದ್ದರು. 1910ರ ಡಿಸೆಂಬರ 4ರಂದು ಜನಿಸಿದ್ದ ಆರ್ ವೆಂಕಟರಾಮನ್ ಅವರು, 1987 ರಿಂದ 1992ರ ವರೆಗಿನ ಅವಧಿಯಲ್ಲಿ ದೇಶದ ಎಂಟನೇ ರಾಷ್ಟ್ರಪತಿಗಳಾಗಿ ಕಾರ್ಯ ನಿರ್ವಹಿಸಿದ್ದರು. ರಾಷ್ಟ್ರಪತಿಗಳಾಗಿ ಚುನಾಯಿತರಾಗುವ ಮುನ್ನ ನಾಲ್ಕು ವರ್ಷಗಳ ಕಾಲ ಅವರು ಉಪರಾಷ್ಟ್ರಪತಿಗಳಾಗಿದ್ದರು. ಸ್ನೇಹಿತರ ಬಳಗದಲ್ಲಿ ಅಕ್ಕರೆಯಿಂದ 'ಆರ್‌ವಿ' ಎಂದೇ ಗುರುತಿಸಿಕೊಂಡಿದ್ದ ರಾಮಸ್ವಾಮಿ ವೆಂಕಟರಾಮನ್ ಅವರು ಸಮ್ಮಿಶ್ರ ಸರ್ಕಾರ ಯುಗದ ಹರಿಕಾರ. ವಿ.ಪಿ.ಸಿಂಗ್, ಚಂದ್ರಶೇಖರ್ ಹಾಗೂ ಪಿ.ವಿ.ನರಸಿಂಹರಾವ್ ಸೇರಿದಂತೆ ಮೂವರು ಪ್ರಧಾನ ಮಂತ್ರಿಗಳಿಗೆ ಪ್ರಮಾಣ ವಚನ ಬೋಧಿಸಿದ ಹಿರಿಮೆಯನ್ನು ಕೂಡ ಹೊಂದಿದವರು. 1987 ರ ಜುಲೈ 25 ರಿಂದ 1992 ರ ಜುಲೈ 25 ರ ವರೆಗಿನ ತಮ್ಮ ಅಧಿಕಾರಾವಧಿಯಲ್ಲಿ ದೇಶದ ರಾಜಕೀಯದಲ್ಲಿ ಅತ್ಯಂತ ಸವಾಲಿನ ಘಟ್ಟವನ್ನು ಅವರು ಎದುರಿಸಿದ್ದರು. ಮಂಡಲ್ ಆಯೋಗದ ವರದಿ, ಬಿಜೆಪಿ ನಾಯಕ ಎಲ್.ಕೆ.ಅಡ್ವಾಣಿ ಅವರ ರಥಯಾತ್ರೆಯಲ್ಲಿ ನಡೆದ ಹಿಂಸಾಚಾರ, 1991 ರಲ್ಲಿ ರಾಜೀವ್ ಗಾಂಧಿ ಹತ್ಯೆ... ಹೀಗೆ ವೆಂಕಟರಾಮನ್ ಅವರು ಒಂದಿಲ್ಲೊಂದು ಅಗ್ನಿಪರೀಕ್ಷೆಗೆ ತಮ್ಮನ್ನು ಒಡ್ಡಿಕೊಳ್ಳಬೇಕಾಯಿತು. ಲೋಕಸಭೆಯಲ್ಲಿ ಅತ್ಯಧಿಕ ಸಂಖ್ಯಾಬಲ ಹೊಂದಿದ್ದರೂ ಕಾಂಗ್ರೆಸ್ ಪಕ್ಷವು 1989 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತಿತು. ಆಗ ವೆಂಕಟ್‌ರಾಮನ್ ಅವರು ಸಂಪ್ರದಾಯದಂತೆ ಲೋಕಸಭೆಯಲ್ಲಿ ಏಕೈಕ ಅತಿದೊಡ್ಡ ಪಕ್ಷಕ್ಕೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿದರು. ವಿ.ಪಿ.ಸಿಂಗ್ ಸರ್ಕಾರ ರಚಿಸುವ ಅವಕಾಶ ಪಡೆದುಕೊಂಡರು. 54 ಸದಸ್ಯ ಬಲದ ಜನತಾದಳಕ್ಕೆ ಕಾಂಗ್ರೆಸ್ ಪಕ್ಷದಿಂದ ಬೆಂಬಲ ದೊರಕಿಸಿಕೊಡುವ ಸಂಬಂಧ ರಾಜೀವ್ ಅವರಿಂದ ಆಶ್ವಾಸನೆ ಪಡೆದಿದ್ದರು. 1990 ರಲ್ಲಿ ವಿ.ಪಿ.ಸಿಂಗ್ ಸರ್ಕಾರ ಪತನಗೊಂಡ ಬಳಿಕ ಚಂದ್ರಶೇಖರ್ ಅವರಿಗೆ ಸರ್ಕಾರ ರಚಿಸುವಂತೆ ಆಹ್ವಾನಿಸಲಾಯಿತು. 1991 ರಲ್ಲಿ ಪಿ.ವಿ.ನರಸಿಂಹರಾವ್ ಪ್ರಧಾನಿಯಾದರು. ಹೀಗೆ ವೆಂಕಟರಾಮನ್ ಅವರು ತಮ್ಮ ಅಧಿಕಾರಾವಧಿಯಲ್ಲಿ ಮೂವರು ಪ್ರಧಾನಿಗಳಿಗೆ ಪ್ರಮಾಣ ವಚನ ಬೋಧಿಸಿದರು. 1910 ರಲ್ಲಿ ತಮಿಳುನಾಡು ತಂಜಾವೂರಿನ ರಾಜಮೇದಂನಲ್ಲಿ ಜನನ. ಚೆನ್ನೈನಲ್ಲಿ ಕಾನೂನು ಪದವಿ. 1938ರಲ್ಲಿ ಜಾನಕಿ ಅವರೊಂದಿಗೆ ವಿವಾಹ. 1942 ಕ್ಷಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿದ್ದರು. 1952 ರಲ್ಲಿ ಮೊದಲ ಬಾರಿ ಲೋಕಸಭಾಸದಸ್ಯರಾಗಿ ಆಯ್ಕೆ. 1953 ರಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ಕಾರ್ಯದರ್ಶಿ. 1957ರಲ್ಲಿ ಮತ್ತೆ ಚೆನ್ನೈಗೆ ಆಗಮನ. ಮುಂದಿನ 10 ವರ್ಷಗಳ ಕಾಲ ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಣೆ. 1967ರಲ್ಲಿ ಯೋಜನಾ ಆಯೋಗದ ಸದಸ್ಯರಾಗಿ ನೇಮಕ. 1984ರಲ್ಲಿ ಉಪರಾಷ್ಟ್ರಪತಿಯಾಗಿ ಆಯ್ಕೆ. 1987ರಲ್ಲಿ ರಾಷ್ಟ್ರಪತಿ ಹುದ್ದೆ ಅಲಂಕಾರ.

2009: ಆರೋಗ್ಯ ಕಾರಣಕ್ಕಾಗಿ ಮುಸಿಮ್ಲರು ಯೋಗಾಭ್ಯಾಸ ನಡೆಸುವುದರಲ್ಲಿ ಯಾವುದೇ ತಪ್ಪೂ ಇಲ್ಲ ಎಂದು ಇಸ್ಲಾಮಿನ ಪ್ರಮುಖ ಸಂಸ್ಥೆ ದಾರುಲ್ ಉಲೂಂ ಹೇಳಿತು. 'ಯೋಗಾಭ್ಯಾಸ ಅಥವಾ ಇತರ ಯಾವುದೇ ದೈಹಿಕ ಕಸರತ್ತು ಮಾಡದೆ ಇರಲು ಇಸ್ಲಾಮ್ ಯಾರೊಬ್ಬರನ್ನೂ ನಿಷೇಧಿಸಿಲ್ಲ. ನೀವು ಯಾವ ನಂಬಿಕೆಯಿಂದ ಯೋಗಾಭ್ಯಾಸ ಮಾಡುತ್ತೀರಿ ಎಂಬುದೇ ಇಲ್ಲಿ ಮುಖ್ಯ. ಆರೋಗ್ಯ ಕಾರಣಕ್ಕಾಗಿ ಯೋಗ ಮಾಡಿದರೆ ಅದರಲ್ಲಿ ಯಾವುದೇ ಸಮಸ್ಯೆಯೂ ಇಲ್ಲ' ಎಂದು ದಾರುಲ್ ಉಲೂಂನ ಪರಿಣತ ಖಾರಿ ಉಸ್ಮಾನ್ ಹೇಳಿದರು. ಇಸ್ಲಾಮೇತರ ಧಾರ್ಮಿಕ ಆಚರಣೆಗಳು ಇಲ್ಲದಿದ್ದರೆ ಯೋಗಾಭ್ಯಾಸವೂ ಉತ್ತಮವೇ ಎಂದು ಉತ್ತರ ಪ್ರದೇಶದ ದೇವ ಬಂದ್ ದಾರುಲ್ ಉಲೂಮಿನ ಈ ಧರ್ಮಗುರುಗಳು ಹೇಳಿದರು. ಯೋಗ ಗುರು ರಾಮದೇವ್ ಅವರು ಹಿಂದೂಗಳು 'ಓಂ' ಎಂದರೆ ಮುಸ್ಲಿಮರು 'ಅಲ್ಲಾ' ಎನ್ನಬಹುದು ಎಂದಿರುವ ಬಗ್ಗೆ ಖಾರಿ ಅವರನ್ನು ಕೇಳಿದಾಗ, 'ಯೋಗ ಅಭ್ಯಾಸ ಮಾಡುವುದು ದೈಹಿಕ ಸಾಮರ್ಥ್ಯಕ್ಕಾಗಿ, ಇಲ್ಲಿ ಧಾರ್ಮಿಕ ಮಂತ್ರಗಳನ್ನು ಸೇರಿಸುವುದು ಏಕೆ' ಎಂದು ಪ್ರಶ್ನಿಸಿದರು.

2009: ದಕ್ಷಿಣ ಕ್ಯಾಲಿಫೋರ್ನಿಯಾದ ಮಹಿಳೆಯೊಬ್ಬಳು ಒಂದೇ ಪ್ರಸವಕಾಲಕ್ಕೆ ಎಂಟು ಮಕ್ಕಳನ್ನು ಹೆತ್ತು ದಾಖಲೆ ಸ್ಥಾಪಿಸಿದಳು. ಶಸ್ತ್ರಚಿಕಿತ್ಸೆಯ ಮೂಲಕ ಐದು ನಿಮಿಷಗಳ ಅಂತರದಲ್ಲಿ ಈ ಮಕ್ಕಳನ್ನು ತಾಯಿಯ ಗರ್ಭದಿಂದ ಹೊರತೆಗೆಯಲಾಯಿತು. ಎಂಟು ಶಿಶುಗಳಲ್ಲಿ ಆರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳು. ಎಲ್ಲ ಮಕ್ಕಳು ಹಾಗೂ ತಾಯಿಯ ಆರೋಗ್ಯ ಉತ್ತಮ ಸ್ಥಿತಿಯಲ್ಲಿದೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದರು. ಈ ಶಿಶುಗಳು 880 ಗ್ರಾಮಿನಿಂದ 1.47 ಗ್ರಾಮ್‌ವರೆಗೆ ತೂಗುತ್ತಿವೆ. ಮೂರು ಮಕ್ಕಳಿಗೆ ಉಸಿರಾಟದ ತೊಂದರೆಯಿತ್ತು. ಎಲ್ಲ ಮಕ್ಕಳನ್ನು ಎರಡು ತಿಂಗಳುಗಳ ಕಾಲ ಇನ್‌ಕ್ಯುಬೇಟರ್‌ನಲ್ಲಿ ಇಡಲಾಗುತ್ತದೆ. ಒಂದೇ ಬಾರಿ ಎಂಟು ಜೀವಂತ ಶಿಶುಗಳನ್ನು ಹೆತ್ತವರಲ್ಲಿ ಈ ಮಹಿಳೆ ಎರಡನೆಯವಳು. 1998ರಲ್ಲಿ ನೈಜೀರಿಯಾ ಮೂಲದ ಟೆಕ್ಸಾಸ್ ಮಹಿಳೆಯೊಬ್ಬಳು 300 ಗ್ರಾಮಿನಿಂದ 800 ಗ್ರಾಮ್ ತೂಕದ ಎಂಟು ಮಕ್ಕಳನ್ನು ಹೆತ್ತಿದ್ದಳು. ಇವುಗಳಲ್ಲಿ ಅತಿ ಚಿಕ್ಕ ಶಿಶು ಕೆಲ ದಿನಗಳ ನಂತರ ಸಾವನ್ನಪ್ಪಿತ್ತು.

2009: ತುಮಕೂರಿನ ಸಿದ್ಧಗಂಗಾ ಮಠದ ವತಿಯಿಂದ ಪ್ರಥಮ ಬಾರಿಗೆ ನೀಡಲಾಗುವ 'ಸಿದ್ಧ ಗಂಗಾ ಶ್ರೀ' ಪ್ರಶಸ್ತಿಗೆ ರಾಷ್ಟ್ರಕವಿ ಡಾ.ಜಿ.ಎಸ್. ಶಿವರುದ್ರಪ್ಪ ಅವರನ್ನು ಆಯ್ಕೆ ಮಾಡಲಾಯಿತು. ಡಾ.ಶಿವಕುಮಾರ ಸ್ವಾಮೀಜಿ ಶತಮಾನೋತ್ಸವ ಸಮಿತಿ ಸಂಚಾಲಕರೂ ಆದ ಶಾಸಕ ವಿ.ಸೋಮಣ್ಣ ಈ ಬಗ್ಗೆ ಮಾಹಿತಿ ನೀಡಿ, 'ಇದೇ ಮೊದಲ ಬಾರಿಗೆ 'ಸಿದ್ಧ ಗಂಗಾಶ್ರೀ' ಪ್ರಶಸ್ತಿ ನೀಡಲಾಗುತ್ತಿದ್ದು, ಡಾ.ಜಿ.ಎಸ್.ಎಸ್. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

2008: ಪ್ರಸ್ತುತ ಸಾಲಿನ ಪದ್ಮಶ್ರೀ ವಿಜೇತರಲ್ಲಿ ಉತ್ತರ ಪ್ರದೇಶದ ಮಾವು ಬೆಳೆಗಾರರೊಬ್ಬರು ಸೇರಿದ್ದು ವಿಶೇಷವಾಗಿ ಗಮನ ಸೆಳೆಯಿತು. ಉತ್ತರ ಪ್ರದೇಶದ ಮಲಿಹಾಬಾದ್ ಪಟ್ಟಣದಲ್ಲಿ ವಾಸಿಸುವ ಮಾವು ಬೆಳೆಗಾರ ಕಲೀಮುಲ್ಲಾ ಖಾನ್ ಅವರಿಗೆ ಪದ್ಮಶ್ರೀ ಬಂದಿತು. ಇವರು ಒಂದೇ ಮಾವಿನ ಮರದಿಂದ 300 ಕ್ಕೂ ಹೆಚ್ಚು ಹೊಸ ತಳಿಗಳನ್ನು ಉತ್ಪಾದಿಸಿದ್ದಾರೆ. ಆರಂಭದಲ್ಲಿ ತಮ್ಮ ತಂದೆಯಿಂದ ಕಲಿತ ಈ ವಿದ್ಯೆಯನ್ನು ಹಾಗೇ ಬೆಳೆಸಿಕೊಂಡಿದ್ದಾರೆ. ಮೊದ ಮೊದಲು ನಾಟಿ ತಳಿಗಳನ್ನು ಬೆಳೆಸುತ್ತಿದ್ದರು. ನಂತರ ಹೈಬ್ರಿಡ್ ತಳಿಗಳನ್ನು ಪ್ರಯೋಗಗಳ ಮೂಲಕ ಬೆಳೆಯಲಾರಂಭಿಸಿದರು. ಕಲಿಮುಲ್ಲಾ ಪರಿಣತಿ ಅರಿತ ಇರಾನ್ ಸರ್ಕಾರ ತಮ್ಮಲ್ಲೇ ಬಂದು ನೆಲಸುವಂತೆ ಆಹ್ವಾನ ನೀಡಿತು. ಈ ಆಹ್ವಾನವನ್ನು ತಿರಸ್ಕರಿಸಿದ ಖಾನ್, ತಮ್ಮ ಕುಟುಂಬದವರು ಮಾವು ಬೆಳೆಸುತ್ತಿದ್ದ ಮಲಿಹಾಬಾದ್ ಪ್ರದೇಶದಲ್ಲಿಯೇ ಇರಲು ಬಯಸಿದರು.

2008: ಮೂರು ದಶಕಗಳ ಕಾಲ ಇಂಡೋನೇಷ್ಯಾವನ್ನು ತನ್ನ ಕಪಿಮುಷ್ಠಿಯಲ್ಲಿ ಹಿಡಿದಿಟ್ಟುಕೊಂಡು ಆಡಳಿತ ನಡೆಸಿದ್ದ, ದಶಲಕ್ಷಕ್ಕೂ ಅಧಿಕ ವಿರೋಧಿಗಳನ್ನು ಸಾಯಿಸಿದ್ದ ಆರೋಪ ಹೊತ್ತ ಸರ್ವಾಧಿಕಾರಿ ಎಚ್.ಎಂ.ಸುಹಾರ್ತೋ (86) ಈದಿನ ಜಕಾರ್ತದ ಆಸ್ಪತ್ರೆಯಲ್ಲಿ ನಿಧನರಾದರು. ಸುಹಾರ್ತೋ ಅವರ ನಿಧನವನ್ನು ಪೊಲೀಸ್ ಮುಖ್ಯಸ್ಥರು ಅಧಿಕೃತವಾಗಿ ಘೋಷಿಸಿದರು. ಹೃದಯ, ಮೂತ್ರಪಿಂಡ ಹಾಗೂ ಶ್ವಾಸಕೋಶ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. 1967ರಲ್ಲಿ ಇಂಡೋನೇಷ್ಯಾದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಸುಹಾರ್ತೋ, ನಿರ್ದಯಿ ಸರ್ವಾಧಿಕಾರಿಯಾಗಿದ್ದರು. ಕಮ್ಯೂನಿಸ್ಟ್ ಪಕ್ಷದ ಕಟ್ಟಾ ವಿರೋಧಿಯಾಗಿದ್ದ ಅವರ ಮೇಲೆ ಅಪಾರ ಪ್ರಮಾಣದ ಆಸ್ತಿ ಹೊಂದಿದ್ದಾರೆಂಬ ಆರೋಪವಿತ್ತು. ಕಮ್ಯುನಿಸ್ಟ್ ವಿರೋಧಿ ನೀತಿ ಹಾಗೂ ಆಡಳಿತದ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ಸಮರ ಸಾರಿದ್ದವು. ಜೊತೆಗೆ 1997ರಲ್ಲಿ ಏಷ್ಯಾದ ಆರ್ಥಿಕ ಬಿಕ್ಕಟ್ಟು ಅವರು ಅಧಿಕಾರದಿಂದ ಕೆಳಗಿಳಿಯುವಂತೆ ಮಾಡಿತು.

2008: ಸೇತು ಸಮುದ್ರಂ ಯೋಜನೆಯಿಂದ ನೌಕಾದಳಕ್ಕಾಗಲೀ ಅಥವಾ ಅಂತಾರಾಷ್ಟ್ರೀಯ ನೌಕಾಯಾನ ಸಂಸ್ಥೆಗಳಿಗಾಗಲೀ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ ಈ ಯೋಜನೆಯನ್ನು ತತ್ ಕ್ಷಣವೇ ಕೈಬಿಡಬೇಕು ಎಂದು ಜನತಾ ಪಕ್ಷದ ಅಧ್ಯಕ್ಷ ಸುಬ್ರಮಣಿಯನ್ ಸ್ವಾಮಿ ಚೆನ್ನೈಯಲ್ಲಿ ಆಗ್ರಹಿಸಿದರು.

2008: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಸೊಸೆ ಐಶ್ವರ್ಯ ರೈ ಬಚ್ಚನ್ ಹೆಸರಿನ ಮಹಿಳಾ ಕಾಲೇಜಿಗೆ ಬಚ್ಚನ್ ಕುಟುಂಬ ಅಡಿಗಲ್ಲು ಹಾಕಿತು. ಭೂ ವಿವಾದ ಕುರಿತು ಅಮಿತಾಬ್ ಬಚ್ಚನ್ ಮೇಲಿದ್ದ ಪ್ರಕರಣವನ್ನು ಎರಡು ತಿಂಗಳ ಹಿಂದೆಯೇ ಅಲ್ಲಿನ ಹೈಕೋರ್ಟ್ ಇತ್ಯರ್ಥ ಪಡಿಸಿತ್ತು.

2008: ದೇಶದಲ್ಲಿ ಭಾರಿ ಸಂಚಲನ ಮೂಡಿಸಿದ ಗುಡಗಾಂವ್ ಅಕ್ರಮ ಮೂತ್ರಪಿಂಡ (ಕಿಡ್ನಿ) ಕಸಿ ಹಗರಣ ತಡೆಗಟ್ಟುವಲ್ಲಿ ರಾಜ್ಯ ಪೊಲೀಸರು ವಿಫಲವಾದುದನ್ನು ಹರಿಯಾಣಾದ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಒಪ್ಪಿಕೊಂಡರು. ಇದು ರಾಜ್ಯ ಸರ್ಕಾರದ ದೊಡ್ಡ ವೈಫಲ್ಯ ಎಂದು ಹೂಡಾ ಹೇಳಿದರು. ಕಿಡ್ನಿ ಹಗರಣದ ಪ್ರಮುಖ ಆರೋಪಿಯ ಹೆಸರು ಡಾ. ಅಮಿತ್ ಕುಮಾರ್ ಹೌದೇ ಅಥವಾ ಡಾ. ಸಂತೋಷ್ ರಾವುತ್ ಎಂದೇ? ಎಂಬ ಗುಮಾನಿ ಪೊಲೀಸ್ ವಲಯದಲ್ಲಿ ಮನೆ ಮಾಡಿತು. ಮುಂಬೈ ವಿಮಾನ ನಿಲ್ದಾಣದಲ್ಲಿ 14 ವರ್ಷಗಳ ಹಿಂದೆ ಕೆಲವು ಶ್ರೀಮಂತ ಪ್ರಯಾಣಿಕರನ್ನು ಕರೆದೊಯ್ಯುವ ಸಲುವಾಗಿ ಟ್ಯಾಕ್ಸಿ ಚಾಲಕರು ಹಿಡಿದುಕೊಂಡಿದ್ದ ಫಲಕಗಳಲ್ಲಿ ಡಾ. ರಾವುತ್ ಹೆಸರು ಇತ್ತು. 1994ರಲ್ಲಿ ಡಾ. ರಾವುತ್ ನನ್ನು ಬಂಧಿಸಿ ಹಗರಣ ಬಯಲಿಗೆಳೆಯಲಾಗಿತ್ತು. ಬಳಿಕ ಜಾಮೀನಿನ ಮೇಲೆ ಹೊರ ಬಂದಿದ್ದ ಆತ ಮುಂಬೈಯಿಂದ ದೂರ ಹೋಗಿದ್ದರೂ, ಆತನ ಕುಟುಂಬ ಇನ್ನೂ ಮುಂಬೈಯಲ್ಲೇ ಇತ್ತು. ದೇಶದಲ್ಲೇ ಅತಿ ದೊಡ್ಡ ಕಿಡ್ನಿ ಹಗರಣ ನಡೆದದ್ದು ಡಾ. ರಾವುತ್ ನ ಕೌಶಲ್ಯ ನರ್ಸಿಂಗ್ ಹೋಮ್ ನಲ್ಲಿ. ಅದೊಂದು ಆಯುರ್ವೇದ ಆಸ್ಪತ್ರೆಯಾದರೂ ಭಾರಿ ಪ್ರಮಾಣದ ಅಕ್ರಮ ಕಿಡ್ನಿ ಕಸಿ ಅಲ್ಲಿ ನಡೆದಿತ್ತು. ಬಳಿಕ ಮಹಾರಾಷ್ಟ್ರ ರಾಜ್ಯ ಮಾನವ ಅಂಗಾಂಗ ದಾನಕ್ಕೆ ಕಠಿಣ ಶಾಸನ ರೂಪಿಸಿತು. ಆದರೂ ಡಾ. ರಾವುತನ ಜಾಲ ದೇಶದ ಇತರ 5 ಕಡೆಗಳಿಗೆ ವ್ಯಾಪಿಸಿತ್ತು.

2008: ಮಂಗಳೂರಿನ ಮಂಗಳಾ ಮ್ಯಾಜಿಕ್ ಸರ್ಕಲ್ ಆಶ್ರಯದಲ್ಲಿ ನಗರದ ಕದ್ರಿ ಶ್ರೀಗೋರಕ್ಷನಾಥ ಸಭಾಭವನದ ಸಂಸ್ಥಾಪಕ ದಿವಂಗತ ಪ್ರೊ. ಬಾಸ್ ವೇದಿಕೆಯಲ್ಲಿ ನಡೆದ `ಕಣ್ಕಟ್-2008' ಸಮ್ಮೇಳನವನ್ನು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಉದ್ಘಾಟಿಸಿದರು. ಕಾಸರಗೋಡಿನ ವಾಸುದೇವ ಕೋಟೂರು (ವಾಕೋ), ಉಡುಪಿ ಪ್ರಹ್ಲಾದ ಆಚಾರ್ಯ ಹಾಗೂ ಮಂಗಳೂರಿನ ಪ್ರದೀಪ್ ಸೂರಿ ಜಾದೂತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು. ರಾಜ್ಯಮಟ್ಟದ ಜಾದೂ ಸ್ಪರ್ಧೆಯಲ್ಲಿ ಬೆಂಗಳೂರಿನ ಕರುಣ್ ಕೃಷ್ಣ ಹಾಗೂ ಮಂಗಳೂರಿನ ಮಹೇಶ್ ಜಿ.ಎಸ್. ಪ್ರಶಸ್ತಿ ಗಳಿಸಿದರು.

2008: ಗುಲ್ಬರ್ಗ ಜಿಲ್ಲೆ ಶಹಬಾದಿನಿಂದ ಮಹಾರಾಷ್ಟ್ರದ ಕರಾಡ ಪಟ್ಟಣಕ್ಕೆ ಪರಸಿ ಕಲ್ಲು ತುಂಬಿಕೊಂಡು ಹೊರಟಿದ್ದ ಲಾರಿ ನಗರದ ಹೊರವಲಯದ ಡೋಣಿ ನದಿ ಸೇತುವೆ ಬಳಿ ಮಗುಚಿ ಬಿದ್ದು 10 ಜನ ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ, 13 ಜನರು ಗಾಯಗೊಂಡರು.

2008: ಜಾಮೀನಿನ ಮೇಲೆ ಚಿತ್ರದುರ್ಗ ಕಾರಾಗೃಹದಿಂದ ಬಿಡುಗಡೆಯಾಗಿದ್ದ ರೌಡಿ ಕೊರಂಗು ಕೃಷ್ಣ (46) ಕಾರಿನಲ್ಲಿ ಆಂಧ್ರಪ್ರದೇಶದ ಚಿತ್ತೂರು ಬಳಿ ಪ್ರಯಾಣಿಸುತ್ತಿದ್ದಾಗ ಬಾಂಬ್ ಸ್ಫೋಟಿಸಿ ಗಾಯಗೊಂಡ.

2007: ಖ್ಯಾತ ಮಲಯಾಳಿ ಬರಹಗಾರ, ಸಾಹಿತ್ಯ ವಿಮರ್ಶಕ ಡಾ. ಸುಕುಮಾರ ಅಯಿಕ್ಕೋಡ್ ಅವರು ಗಣರಾಜ್ಯೋತ್ಸವ ಮುನ್ನಾದಿನ ತಮಗೆ ಘೋಷಿಸಲಾದ `ಪದ್ಮಶ್ರೀ' ಪ್ರಶಸ್ತಿಯನ್ನು ತಿರಸ್ಕರಿಸಿದರು. ಇಂತಹ ಪ್ರಶಸ್ತಿಗಳು, ಸಂವಿಧಾನವು ನೀಡಿರುವ ಎಲ್ಲ ನಾಗರಿಕರ ಸಮಾನತೆಯ ತತ್ವಕ್ಕೆ ವಿರುದ್ಧವಾದವುಗಳು ಎಂದು ಅಯಿಕ್ಕೋಡ್ ಹೇಳಿದರು. ಸರ್ಕಾರಗಳು ಆಯ್ದ ವ್ಯಕ್ತಿಗಳಿಗೆ ಈ ರೀತಿ ಪ್ರಶಸ್ತಿ ಪ್ರದಾನ ಮಾಡುವುದು ಸಂವಿಧಾನವು ಖಾತರಿ ಪಡಿಸಿರುವ ಎಲ್ಲ ನಾಗರಿಕರ ಸಮಾನತೆಯ ತತ್ವಕ್ಕೆ ವಿರುದ್ಧವಾದುದು ಎಂದು ತಾವು ಸ್ಪಷ್ಟವಾಗಿ ಪರಿಗಣಿಸುವುದಾಗಿ ಅಯಿಕೋಡ್ ದೃಢಪಡಿಸಿದರು. ಕೇರಳದ ಸಾಂಸ್ಕೃತಿಕ ಪ್ರಪಂಚದಲ್ಲಿ ಪ್ರಮುಖ ಸ್ಥಾನ ಪಡೆದಿರುವ ಅಯಿಕ್ಕೋಡ್ ಖ್ಯಾತ ಸಾಹಿತ್ಯ ವಿಮರ್ಶಕ, ಭಾಷಣಕಾರ ಮತ್ತು ಸಾಮಾಜಿಕ ಕಾರ್ಯಕರ್ತರಾಗಿದ್ದು, ಸಾರ್ವಜನಿಕ ವಿಚಾರಗಳಿಗೆ ಸಂಬಂಧಿಸಿದಂತೆ ನೇರ ಅಭಿಪ್ರಾಯ ವ್ಯಕ್ತ ಪಡಿಸುವುದಕ್ಕೆ ಹೆಸರಾಗಿದ್ದಾರೆ.

2007: ಭವಿಷ್ಯನಿಧಿಯ ಬಡ್ಡಿ ದರವನ್ನು ಪ್ರಸ್ತುತ ಹಣಕಾಸು ವರ್ಷದಲ್ಲಿ ಇಳಿಸುವುದಕ್ಕೆ ಸಂಬಂಧಿಸಿದ ವಿವಾದಾತ್ಮಕ ವಿಷಯ ಕುರಿತ ನಿರ್ಧಾರ ಕೈಗೊಳ್ಳಲು ನೌಕರರ ಭವಿಷ್ಯನಿಧಿ ಮಂಡಳಿಯ ಸಭೆ ವಿಫಲಗೊಂಡಿದ್ದು, ಇ ಪಿ ಎಫ್ ನಿಧಿಯ ಶೇಕಡಾ 5ರಷ್ಟು ಹಣವನ್ನು ಈಕ್ವಿಟಿ ಮಾರುಕಟ್ಟೆಯಲ್ಲಿ ತೊಡಗಿಸುವ ಹಣಕಾಸು ಸಚಿವಾಲಯದ ಪ್ರಸ್ತಾವವನ್ನೂ ತಿರಸ್ಕರಿಸಿತು.

2007: ಸಹಸ್ರಮಾನದ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಿಗೆ ಫ್ರಾನ್ಸಿನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ `ಲೀಜನ್ ಡಿ' ಆನರ್'ನ್ನು ಫ್ರೆಂಚ್ ರಾಯಭಾರಿ ಕಚೇರಿಯಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಭಾರತೀಯ ಹಾಗೂ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಕ್ಷೇತ್ರದಲ್ಲಿ ಅಮಿತಾಭ್ ಅವರು ಸಲ್ಲಿಸಿದ ಸೇವೆಯನ್ನು ಗುರುತಿಸಿ ಫ್ರೆಂಚ್ ರಾಯಭಾರಿ ಡೊಮಿನಿಕ್ ಗಿರಾರ್ಡ್ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಸಮಾರಂಭದಲ್ಲಿ ಅಮಿತಾಭ್ ಅವರ ಭಾವಿ ಸೊಸೆ ಐಶ್ವರ್ಯ ರೈ ಸೇರಿದಂತೆ ಅವರು ಕುಟುಂಬದ ಸದಸ್ಯರು ಭಾಗವಹಿಸಿದ್ದರು.

2007: ಬಾಲಿವುಡ್ ನಟ ರಾಹುಲ್ ರಾಯ್ ಭಾರತದ ರಿಯಾಲಿಟಿ ಟಿವಿ ಶೋ `ಬಿಗ್ ಬಾಸ್' ಆಗಿ ಆಯ್ಕೆಯಾದರು.

2007: ಹಿರಿಯ ನೃತ್ಯ ಕಲಾವಿದೆ ಪದ್ಮಿನಿ ರಾವ್ (50) ಅವರು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಟುವಾಂಗ ನಡೆಸಿಕೊಡುತ್ತಿರುವಾಗಲೇ ತೀವ್ರ ಅಸ್ವಸ್ಥರಾಗಿ ನಿಧನರಾದರು. ತಮ್ಮ ಸಂಸ್ಥೆ ಪೊನ್ನಯ್ಯ ಲಲಿತಕಲಾ ಅಕಾಡೆಮಿ ವತಿಯಿಂದ ಇಡೀ ದಿನ `ಕರುನಾಡ ಪರಂಪರೆ' ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡುತ್ತಿದ್ದಾಗ ಈ ಘಟನೆ ನಡೆಯಿತು.

2007: ದಕ್ಷಿಣ ಆಫ್ರಿಕಾದ ಇತಿಹಾಸ ತಜ್ಞ ಹಾಗೂ ಆಂಗ್ಲೊ-ಜುಲು ಯುದ್ಧದ ವಿವರ ನೀಡುವ ಪರಿಣತ ಡೇವಿಡ್ ರಾತ್ರೆ ಅವರು ತಮ್ಮ ವಸತಿ ಗೃಹದಲ್ಲೇ ಅಪರಿಚಿತ ದುಷ್ಕರ್ಮಿಗಳ ಗುಂಡಿಗೆ ಬಲಿಯಾದರು.

2007; ಮೆಲ್ಬೋರ್ನಿನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ಪಂದ್ಯದಲ್ಲಿ ರಷ್ಯಾದ ಮಾರಿಯಾ ಶರಪೋವಾ ಅವರನ್ನು ಅಮೆರಿಕದ ಸೆರೆನಾ ಅವರು ಪರಾಭವಗೊಳಿಸಿದರು. ಈ ಮೂಲಕ 28 ವರ್ಷಗಳ ನಂತರ ಗೆದ್ದ ಶ್ರೇಯಾಂಕ ರಹಿತ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. 1978ರಲ್ಲಿ ವಿಶ್ವದ 111ನೇ ರ್ಯಾಂಕ್ ಹೊಂದಿದ್ದ ಕ್ರಿಸ್ ಓನೆಲ್ ಈ ಸಾಧನೆ ಮಾಡಿದ್ದರು.

2006: ಕನ್ನಡದ ಪ್ರಪ್ರಥಮ ಹಾಸ್ಯ ಬರಹಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದ ಟಿ. ಸುನಂದಮ್ಮ (89) ಬೆಂಗಳೂರಿನ ತಮ್ಮ ವೈಯಾಲಿಕಾವಲ್ ಮನೆಯಲ್ಲಿ ಹೃದಯಾಘಾತದಿಂದ ನಿಧನರಾದರು. ಹಾಸ್ಯ ಸಾಹಿತ್ಯದಲ್ಲಿ ಸಾಕಷ್ಟು ಕೃಷಿ ಮಾಡಿದ್ದ ಸುನಂದಮ್ಮ `ಕೊರವಂಜಿ' ಹಾಸ್ಯಪತ್ರಿಕೆಯ ಮೂಲಕ ಹೆಸರಾದರು. ಇವರ ಸಮಗ್ರ ಹಾಸ್ಯ ಕೃತಿ 1993ರಲ್ಲಿಪ್ರಕಟವಾಗಿತ್ತು. `ಭಂಜದ ಚೀಲ', `ಬಣ್ಣದ ಚಿಟ್ಟೆ' ಹಾಗೂ `ಪೆಪ್ಪರ್ ಮೆಂಟ್' ಇವರ ಇನ್ನಿತರ ಕೆಲವು ಕೃತಿಗಳು. `ರಾಜ್ಯೋತ್ಸವ ಪ್ರಶಸ್ತಿ', `ಕರ್ನಾಟಕ ಸಾಹಿತ್ಯ ಅಕಾಡೆಮಿ' ಪುರಸ್ಕಾರ, `ದಾನಚಿಂತಾಮಣಿ' ಪುರಸ್ಕಾರ ಹೀಗೆ ಹಲವಾರು ಪ್ರಶಸ್ತಿ-ಪುರಸ್ಕಾರಗಳಿಗೆ ಸುನಂದಮ್ಮ ಭಾಜನರಾಗಿದ್ದರು. ಕರ್ನಾಟಕದಲ್ಲಿ `ಲೇಖಕಿಯರ ಸಂಘ' ಕಟ್ಟುವುದಕ್ಕೆ ಕಾರಣಕರ್ತರಾಗಿದ್ದ ಸುನಂದಮ್ಮ, ಸಂಘದ ಸಂಘಟನೆಯಲ್ಲಿ ಕೊನೆಯವರೆಗೆ ಕ್ರಿಯಾಶೀಲವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು.

2006: ರಾಜ್ಯಪಾಲರ ಸೂಚನೆಯ ಪ್ರಕಾರ ಈದಿನ ಸದನದಲ್ಲಿ ಬಹುಮತ ಸಾಬೀತು ಪಡಿಸಬೇಕಾಗಿದ್ದ ಮುಖ್ಯಮಂತ್ರಿ ಧರ್ಮಸಿಂಗ್ ಅವರು ಸದನದಲ್ಲಿ ವಿಶ್ವಾಸಮತ ನಿರ್ಣಯ ಮಂಡಿಸಲು ಮುಂದಾಗದೇ ಇದ್ದುದರಿಂದ ಲೋಕಸಭಾಧ್ಯಕ್ಷ ಕೃಷ್ಣ ಅವರು ಅಧಿವೇಶನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿ ರಾಜ್ಯಪಾಲರಿಗೆ ದಿನದ ಬೆಳವಣಿಗಳ ಬಗ್ಗೆ ವರದಿ ಸಲ್ಲಿಸಿದರು.

2006: ಖ್ಯಾತ ಸಂಗೀತ ನಿರ್ದೇಶಕ ಸರ್ದಾರ್ ಮಲ್ಲಿಕ್ (81) ಹೃದಯಾಘಾತದಿಂದ ನಿಧನರಾದರು. ಖ್ಯಾತ ಸಂಗೀತ ನಿರ್ದೇಶಕ ಅನು ಮಲ್ಲಿಕ್ ಅವರ ತಂದೆಯಾದ ಸರ್ದಾರ್ ಮಲ್ಲಿಕ್ ಕಳೆದ ಹಲವಾರು ವರ್ಷಗಳಿಂದ ಪಾರ್ಕಿನ್ಸನ್ ರೋಗದಿಂದ ಅಸ್ವಸ್ಥರಾಗಿದ್ದರು. ಸಾರಂಗ, ಬಚ್ ಪನ್ ಮುಂತಾದ ಚಿತ್ರಗಳಿಗೆ ಸರ್ದಾರ್ ಅವರು ಮಾಡಿದ್ದ ಸಂಗೀತ ಸಂಯೋಜನೆ ಭಾರಿ ಪ್ರಸಿದ್ಧಿ ಗಳಿಸಿತ್ತು.

2000: ಟೆನಿಸ್ ಆಟಗಾರ ಡೊನಾಲ್ಡ್ ಬಜ್ ಅವರು ತಮ್ಮ 84ನೇ ವಯಸ್ಸಿನಲ್ಲಿ ಮೃತರಾದರು. ಅವರು ಗ್ರ್ಯಾಂಡ್ ಸ್ಲಾಮನ್ನು ಮೊತ್ತ ಮೊದಲ ಬಾರಿಗೆ ಗೆದ್ದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1974: ರಾಷ್ಟ್ರಪತಿ ವಿ.ವಿ. ಗಿರಿ ಅವರು ನವದೆಹಲಿಯ ತೀನ್ ಮೂರ್ತಿ ಭವನದಲ್ಲಿನ `ನೆಹರು ಸ್ಮಾರಕ ಮ್ಯೂಸಿಯಂ'ನ್ನು ರಾಷ್ಟ್ರಕ್ಕೆ ಅರ್ಪಿಸಿದರು.

1967: ಫ್ಲಾರಿಡಾದ ಕೇಪ್ ಕೆನಡಿಯಲ್ಲಿ ಅಪೋಲೋ 1 ಬಾಹ್ಯಾಕಾಶ ನೌಕೆಯಲ್ಲಿ ಹಠಾತ್ತನೆ ಅಗ್ನಿ ಅನಾಹುತ ಸಂಭವಿಸಿ ಅದರಲ್ಲಿದ್ದ ಅಮೆರಿಕನ್ ಗಗನಯಾನಿಗಳಾದ ವರ್ಗಿಲ್ ಐ, `ಗಸ್' ಗ್ರಿಸ್ಸೋಮ್, ಎಡ್ವರ್ಡ್ ಎಚ್. ವೈಟ್ ಮತ್ತು ರೋಗರ್ ಬಿ. ಚಾಫೀ ಅವರು ಅಸು ನೀಗಿದರು.

1959: ಕಲಾವಿದ ರಾಮಧ್ಯಾನಿ ಜನನ.

1950: ಚಾರ್ಲ್ಸ್ ಫಿಜರ್ ಮತ್ತು ಕಂಪೆನಿಯು (Charles Pfzer and Company) ಹೊಸ ಆಂಟಿ ಬಯೋಟಿಕ್ ಟೆರ್ರಾಮೈಸಿನನ್ನು ಉತ್ಪಾದಿಸಿರುವುದಾಗಿ ಸೈನ್ಸ್ ಮ್ಯಾಗಜಿನ್ ಪ್ರಕಟಿಸಿತು. ಮಣ್ಣಿನಿಂದ ಅದನ್ನು ಪ್ರತ್ಯೇಕಿಸಲಾಗಿತ್ತು. ನ್ಯೂಮೋನಿಯಾ (pneumonia) ಡೀಸೆಂಟ್ರಿ ಮತ್ತು ಇತರ ಸೋಂಕುಗಳಿಗೆ ಇದು ಪರಿಣಾಮಕಾರಿಯಾಗಿತ್ತು. ಫಿಜರ್ ವಿಜ್ಞಾನಿಗಳಿಂದ ಸಂಶೋಧನೆ ಹಾಗೂ ಅಭಿವೃದ್ಧಿಗೊಂಡ ಮೊತ್ತ ಮೊದಲ ಫಾರ್ಮಸ್ಯೂಟಿಕಲ್ ಇದು.

1945: ಗೀತರಚನೆಕಾರ, ಕವಿ, ಕಥೆಗಾರ, ಕಾದಂಬರಿಕಾರ ಎಂ.ಎನ್ ವ್ಯಾಸರಾವ್ ಅವರು ಈದಿನ ನರಸಿಂಗರಾವ್- ಸುಶೀಲಮ್ಮ ದಂಪತಿಯ ಪುತ್ರನಾಗಿ ಮೈಸೂರಿನಲ್ಲಿ ಜನಿಸಿದರು. ಬೆಂಗಳೂರು ಯುನೈಟೆಡ್ ಕಮರ್ಷಿಯಲ್ ಬ್ಯಾಂಕಿನಲ್ಲಿ 34 ವರ್ಷಗಳ ಸೇವೆ ಬಳಿಕ ಸ್ವಯಂ ನಿವೃತ್ತಿ ಪಡೆದು ನಿರಂತರ ಸಾಹಿತ್ಯ ರಚನೆ, ಸಿನಿಮಾ ಸಾಹಿತ್ಯದ ಬರಹದಲ್ಲಿ ತಲ್ಲೀನರಾಗಿದ್ದಾರೆ.

1927: ಖ್ಯಾತ ಹರಿಕಥೆದಾಸ ಬಿ.ಎನ್. ಭೀಮರಾವ್ ಅವರು ನರಸಪ್ಪ-ಲಕ್ಷ್ಮೀದೇವಿ ದಂಪತಿಯ ಮಗನಾಗಿ ಕೊರಟಗೆರೆ ತಾಲ್ಲೂಕಿನ ಸೋಂಪುರದಲ್ಲಿ ಜನಿಸಿದರು.

1926: ಜಾನ್ ಲಾಗೀ ಬೈರ್ಡ್ ಅವರು ತಮ್ಮ `ಹೊಸ ಟೆಲಿವಿಷನ್ ಯಂತ್ರ'ದ ಮೊತ್ತ ಮೊದಲ ಸಾರ್ವಜನಿಕ ಪ್ರದರ್ಶನ ನೀಡಿದರು. ಲಂಡನ್ನಿನ ರಾಯಲ್ ಇನ್ಸ್ಟಿಟ್ಯೂಷನ್ನಿನ ಸದಸ್ಯರಿಗೆ ಅವರು ಚಲಿಸುವ ವಸ್ತುಗಳನ್ನು ತಮ್ಮ ಯಂತ್ರದಲ್ಲಿ ತೋರಿಸಿದರು.

1880: ಥಾಮಸ್ ಆಲ್ವಾ ಎಡಿಸನ್ ಅವರಿಗೆ `ಇನ್ ಕಾಂಡಿಸೆನ್ಸ್' ನಿಂದ ಬೆಳಕು ನೀಡುವ ಎಲೆಕ್ಟ್ರಿಕ್ ಲೈಟಿಗೆ ಪೇಟೆಂಟ್ (ನಂಬರ್ 223,898) ನೀಡಲಾಯಿತು.

(ಸಂಗ್ರಹ: ನೆತ್ರಕೆರೆ ಉದಯಶಂಕರ)

Sunday, February 28, 2010

ಇಂದಿನ ಇತಿಹಾಸ History Today ಜನವರಿ 26

ಇಂದಿನ ಇತಿಹಾಸ

ಜನವರಿ 26

ಹಿರಿಯ ಕಲಾವಿದ ಮತ್ತು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬಿಜಿಎಂ ಕಲಾಶಾಲೆಯ ಸ್ಥಾಪಕ ಬೋಳಾರ್ ಗುಲಾಂ ಮೊಹಮ್ಮದ್ (ಬಿ.ಜಿ. ಮೊಹಮ್ಮದ್) (89) ಈದಿನ ಮಧ್ಯಾಹ್ನ ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿ, ಪ್ರಸಾದ್ ಆರ್ಟ್ ಗ್ಯಾಲರಿ ಪ್ರಶಸ್ತಿ ಹಾಗೂ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿತ್ತು. ಬರೇ ಮೂವರು ವಿದ್ಯಾರ್ಥಿಗಳಿಂದ ನಗರದಲ್ಲಿ 1953ರಲ್ಲಿ ಸ್ಥಾಪಿಸಿದ ಬಿಜಿಎಂ ಕಲಾಶಾಲೆ ಸಹಸ್ರಾರು ಕಲಾವಿದರು ರೂಪುಗೊಳ್ಳಲು ಕಾರಣವಾಗಿದೆ. ಮೃತರು ಚಿತ್ರಕಲಾವಿದೆ ಪತ್ನಿ ಅಖ್ತರ್ ಬೇಗಂ, ಮೂವರು ಚಿತ್ರ ಕಲಾವಿದ ಪುತ್ರರನ್ನು ಅಗಲಿದರು.


ಇಂದು ಗಣರಾಜ್ಯದಿನ. 1950ರಲ್ಲಿ ಈದಿನ ಸಂವಿಧಾನವು ಜಾರಿಗೆ ಬರುವುದರೊಂದಿಗೆ ಭಾರತವು ಸಾರ್ವಭೌಮ ಪ್ರಜಾತಾಂತ್ರಿಕ ಗಣರಾಜ್ಯವಾಯಿತು. ಸಾಮ್ರಾಟ ಅಶೋಕನ ಲಾಂಛನ `ಸಿಂಹ'ವನ್ನು ರಾಷ್ಟ್ರೀಯ ಲಾಂಛನವಾಗಿ ಅಂಗೀಕರಿಸಲಾಯಿತು. 1947ರ ಆಗಸ್ಟ್ 15ರಿಂದಲೇ ಜಾರಿಗೆ ಬರುವಂತೆ ಪರಮ ವೀರ ಚಕ್ರ, ಮಹಾ ವೀರ ಚಕ್ರ ಮತ್ತು ವೀರ ಚಕ್ರ ಪ್ರಶಸ್ತಿಗಳನ್ನು ಸ್ಥಾಪಿಸಲಾಯಿತು. 1965ರಲ್ಲಿ ಹಿಂದಿಯನ್ನು ರಾಷ್ಟ್ರಭಾಷೆಯಾಗಿ ಅಂಗೀಕರಿಸಲಾಯಿತು. 1930ರಲ್ಲಿ ಈದಿನವನ್ನು `ಪೂರ್ಣ ಸ್ವರಾಜ್' ದಿನವಾಗಿ ಆಚರಿಸಲಾಗಿತ್ತು. ಈ ದಿನವನ್ನು ಪೂರ್ಣ ಸ್ವರಾಜ್ ದಿನವಾಗಿ ಆಚರಿಸಲು 1930ರ ಜನವರಿ 17ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಧಾರ ಕೈಗೊಂಡಿತ್ತು.

2009: 'ಸಾವಯವ ಕೃಷಿಗೆ ಸರ್ಕಾರ ಹೆಚ್ಚಿನ ಉತ್ತೇಜನ ನೀಡಲಿದ್ದು ಮುಂದಿನ ಬಜೆಟಿನಲ್ಲಿ 200 ಕೋಟಿ ರೂಪಾಯಿ ಮೀಸಲಿಡಲಾಗುವುದು' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನಲ್ಲಿ ಘೋಷಿಸಿದರು. ಕೃಷಿ ಇಲಾಖೆ ಮತ್ತು ರಾಜ್ಯ ಸಾವಯವ ಕೃಷಿ ಮಿಷನ್ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಬೃಹತ್ 'ಕೃಷಿ ಚೈತನ್ಯ ಸಮಾವೇಶ' ಮತ್ತು 'ನೇಗಿಲ ಯೋಗಿಯ ಪ್ರತಿಜ್ಞಾ ಸ್ವೀಕಾರ' ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾವಯವ ಕೃಷಿಗೆ ಉತ್ತೇಜನ ನೀಡಲು ಕಳೆದ ಬಾರಿ ಬಜೆಟ್‌ನಲ್ಲಿ 200 ಕೋಟಿ ರೂಪಾಯಿ ಅನುದಾನ ನೀಡಲಾಗಿತ್ತು. ಆದರೆ ಈ ಬಾರಿ ಬಜೆಟಿನಲ್ಲಿ ಅನುದಾನವನ್ನು ಹೆಚ್ಚಿಸಿ ಇಡೀ ರಾಜ್ಯವನ್ನು ಸಾವಯವ ಕೃಷಿಯತ್ತ ಕೊಂಡೊಯ್ಯಲಾಗುವುದು ಎಂದರು. 'ಸಾವಯವ ಕೃಷಿ ಮಿಷನ್' ವೆಬ್‌ಸೈಟಿಗೆ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಚಾಲನೆ ನೀಡಿ 'ಇಂದಿನ ಆರ್ಥಿಕ ಹಿಂಜರಿತದ ಸ್ಥಿತಿಯಲ್ಲಿ ಕೃಷಿ ಹಾಗೂ ಕೃಷಿಯೇತರ ಉತ್ಪನ್ನಗಳಿಗೆ ಸರ್ಕಾರ ಹೆಚ್ಚು ಪ್ರೋತ್ಸಾಹ ನೀಡಬೇಕು' ಎಂದು ಹೇಳಿದರು. ದೇಶದ ವಿವಿಧ ರಾಜ್ಯಗಳಲ್ಲಿ ಸಾವಯವ ಕೃಷಿಯಿಂದ ಯಶಸ್ಸು ಗಳಿಸಿದ ಯಶೋಗಾಥೆಯನ್ನು ಕಲಾಂ ವಿವಿರಿಸಿದರು. ಆಂಧ್ರಪ್ರದೇಶ, ತಮಿಳುನಾಡು, ಕೇರಳ, ಮಹಾರಾಷ್ಟ್ರ, ಆಂಧ್ರಪ್ರದೇಶ, ಗುಜರಾತ್, ಸಿಕ್ಕಿಂ, ರಾಜಸ್ಥಾನ, ಈಗ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ರಾಸಾಯನಿಕ ಕೃಷಿಯನ್ನು ಬಿಟ್ಟು ಸಾವಯವ ಕೃಷಿಯತ್ತ ಹೊರಳಿದ್ದಾರೆ ಹಾಗೂ ಈ ಕೃಷಿಯಿಂದ ಅವರೆಲ್ಲ ಕಡಿಮೆ ಖರ್ಚಿನಲ್ಲಿ ಸಾಕಷ್ಟು ಲಾಭವನ್ನು ಪಡೆಯುತ್ತಿದ್ದಾರೆ ಎಂದು ವಿವರಿಸಿದರು.

2009: ಮುಂಬೈ ಮೇಲಿನ ನವೆಂಬರ 26 ಉಗ್ರಗಾಮಿ ದಾಳಿಯಲ್ಲಿ ಹುತಾತ್ಮರಾದ ಬೆಂಗಳೂರಿನ ಎನ್‌ಎಸ್‌ಜಿ ಕಮಾಂಡೋ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಸೇರಿದಂತೆ ವಿವಿಧ ಸಂದರ್ಭಗಳಲ್ಲಿ ರಾಷ್ಟ್ರಕ್ಕಾಗಿ ಬಲಿದಾನ ಮಾಡಿದ 11 ಮಂದಿ ಭದ್ರತಾ ಸಿಬ್ಬಂದಿಯನ್ನು ರಾಷ್ಟ್ರವು ಗಣರಾಜ್ಯೋತ್ಸವ ಸಂದರ್ಭದಲ್ಲಿ ಮರಣೋತ್ತರ ಅಶೋಕ ಚಕ್ರ ಪ್ರಶಸ್ತಿ ನೀಡಿ ಗೌರವಿಸಿತು. ಮುಂಬೈ ದಾಳಿ ಕಾಲದಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಪೊಲೀಸ್ ಎಟಿಎಸ್ ಮುಖ್ಯಸ್ಥ ಹೇಮಂತ ಕರ್ಕರೆ, ಅಡಿಷನಲ್ ಕಮೀಷನರ್ ಅಶೋಕ ಕಮ್ತೆ, ಮುಂಬೈ ಪೊಲೀಸ್ ಇನ್‌ಸ್ಪೆಕ್ಟರ್ ವಿಜಯ ಸಾಲಸ್ಕರ್, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ತುಕಾರಾಮ್ ಓಂಬಳೆ ಮತ್ತು ಹವಿಲ್ದಾರ್ ಗಜೇಂದರ್ ಸಿಂಗ್ ಶಾಂತಿಕಾಲದ ಉನ್ನತ ಶೌರ್ಯ ಪದಕಕ್ಕೆ ಭಾಜನರಾದ ಮುಂಬೈ ದಾಳಿ ಕಾಲದ ಇತರ ಹುತಾತ್ಮ ಯೋಧರು. ಕರ್ಕರೆ, ಸಾಲಸ್ಕರ್ ಮತ್ತು ಓಂಬಳೆ ಅವರಿಗೆ ನೀಡಲಾದ ಪ್ರಶಸ್ತಿಯನ್ನು ಅವರ ಪತ್ನಿಯರು ಸ್ವೀಕರಿಸಿದರೆ, ಮೇಜರ್ ಸಂದೀಪ್ ಉನ್ನಿಕೃಷ್ಣನ್‌ಗೆ ನೀಡಲಾದ ಪ್ರಶಸ್ತಿಯನ್ನು ಕಂಬನಿದುಂಬಿದ ಅವರ ತಾಯಿ ಸ್ವೀಕರಿಸಿದರು. ರಾಜಧಾನಿಯಲ್ಲಿ ಕಳೆದ ವರ್ಷ ಸೆಪ್ಟೆಂಬರಿನಲ್ಲಿ ಬಟಾಲಾ ಹೌಸಿನಲ್ಲಿ ಭಯೋತ್ಪಾದಕರ ಜೊತೆಗಿನ ಕಾಳಗದಲ್ಲಿ ಮೃತರಾದ ದೆಹಲಿ ಪೊಲೀಸ್ ಇನ್‌ಸ್ಪೆಕ್ಟರ್ ಮೋಹನ್ ಚಂದ್ ಅವರಿಗೂ ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಯಿತು.

2009: ಪಶ್ಚಿಮ ದೇಶಗಳಲ್ಲಿ 'ನೌಕರಿ ಕಡಿತ ಶಿಕ್ಷೆ' ಮುಂದುವರಿಯಿತು. ಡಚ್ ಬ್ಯಾಂಕಿಂಗ್-ವಿಮಾ ಕಂಪೆನಿ 'ಐಎನ್‌ಜಿ' 7 ಸಾವಿರ ಸಿಬ್ಬಂದಿ ಕೈಬಿಡುವುದಾಗಿ ಪ್ರಕಟಿಸಿತು. ಸಿಇಒ ಮೈಕೆಲ್ ಟಿಲ್ಮಂಟ್‌ಗೆ ಹುದ್ದೆ ತೊರೆಯಲು ಸೂಚಿಸಿತು. ಐಎನ್‌ಜಿ ಬ್ಯಾಂಕ್ ಅಲ್ಪ ಲಾಭ ಗಳಿಸಿದ್ದರೆ, ವಿಮಾ ವಿಭಾಗ 90 ಕೋಟಿ ಯೂರೋ ನಷ್ಟ ಕಂಡಿತು. ದ ಹೇಗ್ ನೆಲೆಯ ಎಲೆಕ್ಟ್ರಾನಿಕ್ಸ್ ಕಂಪೆನಿ 'ಪಿಲಿಪ್ಸ್' 24.20 ಕೋಟಿ ಡಾಲರ್ ನಷ್ಟ ಅನುಭವಿಸಿ, 6 ಸಾವಿರ ನೌಕರರಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿತು.

2009: ಉಸಿರಾಟ ಮತ್ತು ನಡೆದಾಡಲು ತೊಂದರೆ ಉಂಟು ಮಾಡುತ್ತಿದ್ದ ಹೃದಯದ ಎಡ ಭಾಗದ ಕವಾಟವನ್ನು ತೆಗೆದು ಬದಲಿ ಕವಾಟವನ್ನು ಅಳವಡಿಸಿ ಬೆಂಗಳೂರು ಸೇಂಟ್ ಜಾನ್ಸ್ ಆಸ್ಪತ್ರೆಯ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿರುವುದಾಗಿ ಪ್ರಕಟಿಸಿದರು. ಹೃದಯ ಬಡಿತವನ್ನು ಕ್ಷಣ ಮಾತ್ರವೂ ನಿಲ್ಲಿಸದೇ ನಡೆಸಲಾದ ವಿಶಿಷ್ಟ ರೀತಿಯ ಶಸ್ತ್ರಚಿಕಿತ್ಸೆಯಿಂದ ತಮಿಳುನಾಡು ಮೂಲದ ದೇವಿಕಾ (32) ಅವರು ಗುಣಮುಖರಾಗಿದ್ದು, ಸಹಜ ಜೀವನ ನಡೆಸಬಹುದು. ಎಲ್ಲವೂ ಮುಗಿಯಿತು ಎಂಬ ನಿರಾಶೆಯಲ್ಲಿದ್ದ ದೇವಿಕಾ ಈಗ ದೀರ್ಘ ಕಾಲ ಜೀವನ ನಡೆಸಬಹುದು. ಕಡಿಮೆ ಖರ್ಚಿನಲ್ಲಿ ಶಸ್ತ್ರಚಿಕಿತ್ಸೆ ನಡೆದದ್ದು, ದೇವಿಕಾ ಅವರ ಕುಟುಂಬ ಸದಸ್ಯರಲ್ಲಿ ಸಂತಸ ಮೂಡಿಸಿದೆ ಎಂದು ವೈದ್ಯರು ಹೇಳಿದರು.

2009: ಹಿರಿಯ ಕಲಾವಿದ ಮತ್ತು ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಬಿಜಿಎಂ ಕಲಾಶಾಲೆಯ ಸ್ಥಾಪಕ ಬೋಳಾರ್ ಗುಲಾಂ ಮೊಹಮ್ಮದ್ (ಬಿ.ಜಿ. ಮೊಹಮ್ಮದ್) (89) ಈದಿನ ಮಧ್ಯಾಹ್ನ ಮಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಕರ್ನಾಟಕ ಲಲಿತಕಲಾ ಅಕಾಡೆಮಿಯ ಪ್ರಶಸ್ತಿ, ಜಿಲ್ಲಾ ಪ್ರಶಸ್ತಿ, ಪ್ರಸಾದ್ ಆರ್ಟ್ ಗ್ಯಾಲರಿ ಪ್ರಶಸ್ತಿ ಹಾಗೂ ಅನೇಕ ಪ್ರಶಸ್ತಿಗಳು ಅವರಿಗೆ ಲಭಿಸಿತ್ತು. ಬರೇ ಮೂವರು ವಿದ್ಯಾರ್ಥಿಗಳಿಂದ ನಗರದಲ್ಲಿ 1953ರಲ್ಲಿ ಸ್ಥಾಪಿಸಿದ ಬಿಜಿಎಂ ಕಲಾಶಾಲೆ ಸಹಸ್ರಾರು ಕಲಾವಿದರು ರೂಪುಗೊಳ್ಳಲು ಕಾರಣವಾಗಿದೆ. ಮೃತರು ಚಿತ್ರಕಲಾವಿದೆ ಪತ್ನಿ ಅಖ್ತರ್ ಬೇಗಂ, ಮೂವರು ಚಿತ್ರ ಕಲಾವಿದ ಪುತ್ರರನ್ನು ಅಗಲಿದರು.

2009: ಹಿಂದು ಧಾರ್ಮಿಕ ಸಂಪ್ರದಾಯ ಆಚರಣೆ ಇರುವಂತಹ ಯೋಗ ಅಭ್ಯಾಸಕ್ಕೆ ಮುಸ್ಲಿಮರಿಗೆ ಇಂಡೋನೇಷ್ಯಾದ ಹಿರಿಯ ಇಸಾಮ್ಲಿಕ್ ಸಂಘಟನೆಯೊಂದು ಆಡಳಿತಾತ್ಮಕ ನಿಷೇಧ ಹೇರಿತು. ಪೂರ್ವ ಸುಮಾತ್ರದಲ್ಲಿ ನಡೆದ ಮೂರು ದಿನಗಳ ಸಭೆಯಲ್ಲಿ ಭಾಗವಹಿಸಿದ್ದ ಇಂಡೋನೇಷ್ಯಾ ಕೌನ್ಸಿಲ್ ಆಫ್ ಉಲೇಮಾಸ್ (ಎಂಯುಐ) ಸಂಘಟನೆ ಮುಖಂಡರು ಯೋಗ ಮಾಡುವುದರ ವಿರುದ್ಧ ಫತ್ವಾ ಹೊರಡಿಸಿದರು. ಮುಸ್ಲಿಮರ ನಂಬಿಕೆಯನ್ನು ದುರ್ಬಲಗೊಳಿಸುವುದರಿಂದ ಮಂತ್ರಗಳ ಉಚ್ಚಾರವನ್ನು ಇಸ್ಲಾಮಿನಲ್ಲಿ ನಿಷೇಧಿಸಲಾಗಿದೆ ಎಂದು ಮುಖಂಡರು ಹೇಳಿದರು. 'ಮುಸ್ಲಿಮರು ಸಹ ಯೋಗ ಮಾಡಬಹುದು. ಆದರೆ ಅದು ಕೇವಲ ದೈಹಿಕ ವ್ಯಾಯಾಮವಾಗಿರಬೇಕು. ಆದರೆ ಅದು ಮಂತ್ರಗಳ ಉಚ್ಚಾರ ಇಲ್ಲವೇ ಧ್ಯಾನವನ್ನು ಒಳಗೊಂಡಿರಬಾರದು' ಎಂದು ಎಂಯುಐ ಅಧ್ಯಕ್ಷ ಮಾರುಫ್ ಅಮಿನ್ ಹೇಳಿದರು.

2009: ಸುಮಾರು 5,500 ವರ್ಷಗಳಿಗೂ ಹಳೆಯದಾದ ನವಶಿಲಾಯುಗಕ್ಕೆ ಸೇರಿದ್ದ ಮಾನವ ನಿರ್ಮಿತ ಗುಹೆ ಮತ್ತು ಮಡಿಕೆ ಮಾಡುವ ಸ್ಥಳಗಳನ್ನು ಪತ್ತೆ ಹಚ್ಚಿರುವುದಾಗಿ ಚೀನೀ ಪ್ರಾಕ್ತನ ತಜ್ಞರು ಪ್ರಕಟಿಸಿದರು. ವಾಯವ್ಯ ಚೀನಾದ ಶಾಂನ್ಷಿ ಪ್ರಾಂತದ ನದಿಯೊಂದರ ಕಡಿದಾದ ಪ್ರದೇಶದಲ್ಲಿ 17 ಗುಹಾಂತರ ಮನೆಗಳು ಕಂಡು ಬಂದಿವೆ ಎಂದು ಪ್ರಾಚ್ಯಶಾಸ್ತ್ರಜ್ಞ ವಾಂಗ್ ವೇಲಿನ್ ಹೇಳಿದರು. ಕ್ರಿ.ಪೂ. 35,00 ಮತ್ತು 3000 ರ ಅವಧಿಯಲ್ಲಿ ಮನೆಗಳು ನಿರ್ಮಾಣವಾಗಿವೆ ಎಂದು ನಂಬಲಾಯಿತು.

2008: ಚೀನಾದಲ್ಲಿ ದಶಕದಲ್ಲೇ ಕಂಡರಿಯದಂತಹ ಭಾರಿ ಹಿಮಪಾತ ಸಂಭವಿಸಿ, ದೇಶದ ಹಲವು ಭಾಗಗಳಲ್ಲಿ ಜನಜೀವನ ತೀವ್ರ ಅಸ್ತವ್ಯಸ್ತಗೊಂಡಿತು. ಕೇಂದ್ರ ಭಾಗದ ಹುನಾನ್ ಪ್ರಾಂತದಲ್ಲಿ ಹಿಮಪಾತದಿಂದ ವಿದ್ಯುತ್ ಪೂರೈಕೆಗೆ ಧಕ್ಕೆ ಉಂಟಾಗಿ, 136 ವಿದ್ಯುತ್ ಚಾಲಿತ ಪ್ರಯಾಣಿಕ ರೈಲುಗಳು ಸ್ಥಗಿತಗೊಂಡವು ಇಲ್ಲವೇ ವಿಳಂಬವಾಗಿ ಚಲಿಸಿದವು. ಕೆಟ್ಟುಹೋದ ವಿದ್ಯುತ್ ಪೂರೈಕೆ ವ್ಯವಸ್ಥೆ ಸರಿಪಡಿಸಲು 10 ಸಾವಿರ ತಾಂತ್ರಿಕ ಸಿಬ್ಬಂದಿಯನ್ನು ನಿಯೋಜಿಸಲಾಯಿತು. ಬೀಜಿಂಗ್ ಮತ್ತು ಗ್ವಾಂಗ್ ಜುವಾ ನಗರಗಳನ್ನು ಸಂಪರ್ಕಿಸುವ ರೈಲು ಮಾರ್ಗದಲ್ಲೂ 40 ಸಾವಿರಕ್ಕೂ ಅಧಿಕ ಪ್ರಯಾಣಿಕರು ವಿವಿಧ ನಿಲ್ದಾಣಗಳಲ್ಲಿ ಸಿಕ್ಕಿ ಹಾಕಿಕೊಂಡರು.

2008: ಹಿರಿಯ ಕಾಂಗ್ರೆಸ್ಸಿಗ, ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬ್ಲೇಸಿಯಸ್ ಎಂ. ಡಿಸೋಜ (69) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. ಬ್ಲೇಸಿ ಪತ್ನಿ ಐರಿನ್ ಜಾಯ್ಸ್ ಡಿಸೋಜ 1979ರಲ್ಲೇ ನಿಧನರಾಗಿದ್ದರು. 1938ರ ಫೆಬ್ರವರಿ 22ರಂದು ಜನಿಸಿದ ಬ್ಲೇಸಿಯಸ್ ಡಿಸೋಜಾ ಅವರು ಬಿಕಾಂ, ಎಲ್ ಎಲ್ ಬಿ ಪದವೀಧರರು. 1980ರಿಂದ 1985ರ ತನಕ ವಿಧಾನ ಪರಿಷತ್ ಸದಸ್ಯ, 1985ರಿಂದ 1994ರ ತನಕ ವಿಧಾನಸಭೆ ಸದಸ್ಯ, ಎಂ.ವೀರಪ್ಪ ಮೊಯಿಲಿ ಅವರ ಮಂತ್ರಿ ಮಂಡಲದಲ್ಲಿ 1991-92ರಲ್ಲಿ ರಾಜ್ಯ ಕಾನೂನು ಸಚಿವ, 1992ರಿಂದ 1994ರ ತನಕ ರಾಜ್ಯ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ 1979ರಿಂದ 1992ರ ತನಕ ಹಾಗೂ 2001ರಿಂದ 2007ರ ತನಕ ಕರ್ತವ್ಯ ನಿರ್ವಹಿಸಿದ್ದರು. 1998ರಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷರಾಗಿದ್ದರು. 2004ರಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು.

2008: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ ಟಿ ಟಿ ಇ ನಾಯಕ ಮುರುಳಿಧರನ್ ಅಲಿಯಾಸ್ ಕರ್ನಲ್ ಕರುಣಾ ಅವರಿಗೆ ಬ್ರಿಟನ್ ನ್ಯಾಯಾಲಯ ಒಂಬತ್ತು ತಿಂಗಳ ಸಜೆ ವಿಧಿಸಿತು. ನಕಲಿ ರಾಜತಾಂತ್ರಿಕ ಪಾಸ್ ಪೋರ್ಟ್ ಹೊಂದಿದ ಆರೋಪದ ಮೇಲೆ ಇವರನ್ನು ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಬಂಧಿಸಲಾಗಿತ್ತು.

2008: ಫ್ರಾನ್ಸ್ ಅಧ್ಯಕ್ಷ ನಿಕೊಲಸ್ ಸರ್ಕೋಜಿ ಅವರು ಆಗ್ರಾದ ಅಮರ ಪ್ರೇಮದ ಸಂಕೇತ ವಿಶ್ವವಿಖ್ಯಾತ ತಾಜ್ ಮಹಲಿಗೆ ಭೇಟಿ ನೀಡಿದರು. ಆದರೆ ಅವರ ಗೆಳತಿ ಹಾಗೂ ಖ್ಯಾತ ರೂಪದರ್ಶಿ ಕಾರ್ಲಾ ಬ್ರೂನಿ ಮಾತ್ರ ಜೊತೆಗೆ ಇರಲಿಲ್ಲ.

2008: ಭಾರತ ದೇಶದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಶೀತಮಾರುತದ ತೀವ್ರತೆ ಹೆಚ್ಚಿತು. ಗುಜರಾತಿನ ಸಬರ್ ಕಾಂತ ಜಿಲ್ಲೆಯಲ್ಲಿ ಕೊರೆಯುವ ಚಳಿಯಿಂದಾಗಿ ಮೂವರು ಮೃತರಾದರು. ಕಳೆದ ಹತ್ತು ವರ್ಷಗಳಲ್ಲಿ ಗುಜರಾತಿನಲ್ಲಿ ಚಳಿ ಇಷ್ಟೊಂದು ತೀವ್ರತೆ ಪಡೆದದ್ದು ಇದೇ ಮೊದಲು.

2008: ರೈಲ್ವೆ ಅಪಘಾತ ತಪ್ಪಿಸಿದ ಚಿಕ್ಕಮಗಳೂರಿನ ಮಂಜುನಾಥ್, 200 ಮಂದಿ ಬಡ ಹೃದ್ರೋಗಿಗಳಿಗೆ ಧನ ಸಹಾಯ ಮಾಡಿದ ಬಿ.ಶಾಂತಿಲಾಲ್ ಕಂಕಾರಿಯಾ ಸೇರಿದಂತೆ 11 ಮಂದಿ ಸಾಧಕರಿಗೆ ಹಾಗೂ ಎರಡು ಸಂಸ್ಥೆಗಳಿಗೆ ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು.

2008: ಅಡಿಲೇಡಿನಲ್ಲಿ ಒಂದು ದಿನ ಹಿಂದೆ ಅತಿ ಹೆಚ್ಚು ವಿಕೆಟ್ ಪತನಕ್ಕೆ ಕಾರಣರಾದ ವಿಕೆಟ್ ಕೀಪರ್ ಎನ್ನುವ ವಿಶ್ವ ದಾಖಲೆ ಶ್ರೇಯ ಪಡೆದ ಆಸ್ಟ್ರೇಲಿಯಾದ ಆಡಮ್ ಗಿಲ್ ಕ್ರಿಸ್ಟ್ ಈದಿನ ದಿಢೀರನೆ ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದರು. ಹಿಂದಿನ ದಿನವಷ್ಟೇ ದಕ್ಷಿಣ ಆಫ್ರಿಕಾದ ಮಾರ್ಕ್ ಬೌಷರ್ ಅವರನ್ನು ಹಿಂದೆ ಹಾಕಿ 414 `ಬಲಿ'ಗಳ ಸಾಧನೆಯೊಂದಿಗೆ ಶ್ರೇಷ್ಠ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಿದ್ದರು. ಭಾರತ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸಿನಲ್ಲಿಯೇ ಈ ವಿಶ್ವ ದಾಖಲೆ ನಿರ್ಮಿಸಿದ್ದರು.

2008: ಇಷ್ಟಾರ್ಥ ಸಿದ್ಧಿಯಾದ ಮೇಲೆ ದೇವತೆಗೆ ಹರಕೆ ತೀರಿಸುವ ಸಲುವಾಗಿ 24 ಅಡಿ ಎತ್ತರದ ರಥದ ಮೇಲಿಂದ ಮಕ್ಕಳನ್ನು ಕೆಳಗೆ ಎಸೆಯುವ ವಿಶಿಷ್ಟ ಸಂಪ್ರದಾಯ ವಿಜಾಪುರ ಜಿಲ್ಲೆಯಲ್ಲಿ ಜೀವಂತವಾಗಿದ್ದು ಸಮೀಪದ ವಂದಾಲ ಗ್ರಾಮದಲ್ಲಿ ಈದಿನ ಜಾತ್ರೆಯಲ್ಲಿ 20ಕ್ಕೂ ಹೆಚ್ಚು ಮಕ್ಕಳನ್ನು ರಥದಿಂದ ಕೆಳಕ್ಕೆ ಎಸೆಯಲಾಯಿತು. ಜಿಲ್ಲಾ ಕೇಂದ್ರದಿಂದ 60 ಕಿಮೀ ದೂರದಲ್ಲಿನ ವಂದಾಲ ಗ್ರಾಮದಲ್ಲಿ ಕ್ರಿಸ್ತಶಕ 1825ರಿಂದ ಗ್ರಾಮ ದೇವತೆ ಬನಶಂಕರಿ ಜಾತ್ರಾ ಮಹೋತ್ಸವ ನಡೆಯುತ್ತ ಬಂದಿದ್ದು, ರಥೋತ್ಸವದ ದಿನದಂದು ಗ್ರಾಮಸ್ಥರು ತಮ್ಮ ಹರಕೆ ಈಡೇರಿದ್ದಕ್ಕಾಗಿ ಹಸುಗೂಸುಗಳನ್ನು ಎಸೆಯುವ ಸಂಪ್ರದಾಯ ಪೋಷಿಸಿಕೊಂಡು ಬಂದಿದ್ದರು.

2008: ಅದ್ಭುತ ಟೆನಿಸ್ ಆಟದ ಪ್ರದರ್ಶನ ನೀಡಿದ ರಷ್ಯಾದ ಮರಿಯಾ ಶರ್ಪೋವಾ ಮೆಲ್ಬೋರ್ನಿನಲ್ಲಿ ನಡೆದ ಆಸ್ಟ್ರೇಲಿಯನ್ ಓಪನ್ ಗ್ರ್ಯಾಂಡ್ ಸ್ಲಾಮ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದ ಚಾಂಪಿಯನ್ ಪಟ್ಟವನ್ನು ತಮ್ಮದಾಗಿಸಿದರು. ರಾಡ್ ಲೇವರ್ ಅರೆನಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ 5ನೇ ಶ್ರೇಯಾಂಕದ ಶರ್ಪೋವಾ 7-5, 6-3 ರಲ್ಲಿ ಸರ್ಬಿಯಾದ ಅನಾ ಇವನೋವಿಕ್ ಅವರನ್ನು ಮಣಿಸಿ ಇದೇ ಮೊದಲ ಬಾರಿಗೆ ಮೆಲ್ಬೋರ್ನ್ ಪಾರ್ಕಿನ `ರಾಣಿ' ಎನಿಸಿಕೊಂಡರು. 20ರ ಹರೆಯದ ರಷ್ಯನ್ ಚೆಲುವೆ ವೃತ್ತಿಜೀವನದಲ್ಲಿ ಪಡೆದ ಮೂರನೇ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಇದು. ಈ ಹಿಂದೆ 2004ರಲ್ಲಿ ವಿಂಬಲ್ಡನ್ ಹಾಗೂ 2006ರಲ್ಲಿ ಅಮೆರಿಕ ಓಪನ್ನಿನಲ್ಲಿ ಅವರು ಪ್ರಶಸ್ತಿ ಜಯಿಸಿದ್ದರು.

2008: ಬೆಳಗಾವಿ ಹೋಟೆಲ್ ಉದ್ಯಮಿ ಕೆ. ಅಣ್ಣೆ ಭಂಡಾರಿ ಅವರಿಗೆ ಬೆಂಗಳೂರಿನಲ್ಲಿ ಮಹಾಕವಿ ರತ್ನಾಕರವರ್ಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ದಕ್ಷಿಣ ಕನ್ನಡ ಜೈನ ಮೈತ್ರಿ ಕೂಟವು ಬಸವನಗುಡಿ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣಮಂಟಪದಲ್ಲಿ ಏರ್ಪಡಿಸಿದ್ದ ಕೂಟದ 23ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಕುಲಪತಿ ಡಾ.ಬಿ.ಎ. ವಿವೇಕ ರೈ ಪ್ರಶಸ್ತಿ ಪ್ರದಾನ ಮಾಡಿದರು.

2008: ಗಣರಾಜ್ಯೋತ್ಸವದ ದಿನ ಬೆಳಗ್ಗೆ ಕೊಂಕಣಿ ಸಾಂಸ್ಕೃತಿಕ ಸಂಸ್ಥೆ ಮಾಂಡ್ ಸೊಭಾಣ್, ಮಂಗಳೂರಿನಲ್ಲಿ ನಿರಂತರ ಸಮೂಹ ಗಾಯನದ ಮೂಲಕ ವಿಶ್ವದಾಖಲೆ ಸ್ಥಾಪಿಸುವ ಸಾಹಸಕ್ಕೆ ಚಾಲನೆ ನೀಡಿತು. ಬೆಳಗಿನ ಚಳಿ ಕರಗುತ್ತಿದ್ದಂತೆಯೇ ಶಕ್ತಿನಗರ ಕಲಾಂಗಣದ ಆಂಫಿ ಥಿಯೇಟರಿನಲ್ಲಿ ಸರಿಯಾಗಿ ಆರು ಗಂಟೆಗೆ `ಕೊಂಕಣಿ ನಿರಂತರಿ' ಆರಂಭವಾಯಿತು. ವಿಶ್ವದಾಖಲೆಗೆ ಸೇರುವ ಯತ್ನವಾಗಿ ಸತತ 40 ಗಂಟೆಗಳ ಈ ನಿರಂತರ ಸಮೂಹ ಗಾಯನ ಕಾರ್ಯಕ್ರಮ `ಕೊಂಕಣಿ ನಿರಂತರಿ'ಗೆ ಬಿಷಪ್ ರೆ.ಡಾ. ಅಲೋಶಿಯಸ್ ಪಾವ್ಲ್ ಡಿ'ಸೋಜ ಶುಭ ಹಾರೈಸಿದರು.

2008: ಇನ್ಫೋಸಿಸ್ಸಿನ ಎನ್. ಆರ್. ನಾರಾಯಣ ಮೂರ್ತಿ ಅವರಿಗೆ ಫ್ರಾನ್ಸ್ ಸರ್ಕಾರದ ಅತಿ ದೊಡ್ಡ ನಾಗರಿಕ ಗೌರವವಾದ `ಆಫೀಸರ್ ಆಫ್ ದಿ ಲೆಜನ್ ಆಫ್ ಆನರ್' ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

2008: ಪ್ರಜಾಕೋಟಿಗೆ ಸುಭದ್ರತೆಯ ಭರವಸೆ ನೀಡುವ ಸೇನಾ ಶಕ್ತಿಯ ಪ್ರದರ್ಶನ ಮತ್ತು ದೇಶದ ಬಹುಸಂಸ್ಕೃತಿಯ ಪರಂಪರೆಯನ್ನು ಬಿಂಬಿಸುವ ವರ್ಣರಂಜಿತ ಸ್ಥಬ್ಧಚಿತ್ರಗಳ ಮೆರವಣಿಗೆಯೊಂದಿಗೆ ನಡೆದ 59ನೇ ಗಣರಾಜ್ಯೋತ್ಸವ ಪೆರೇಡಿಗೆ ದೇಶ ಸಾಕ್ಷಿಯಾಯಿತು. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಸೇನೆಯಿಂದ ಗೌರವವಂದನೆ ಸ್ವೀಕರಿಸುವ ಮೂಲಕ ಈ ಗೌರವ ಪಡೆದ ಮೊದಲ ಮಹಿಳೆ ಎಂಬ ದಾಖಲೆಯೂ ಈ ಬಾರಿಯ ಗಣರಾಜ್ಯೋತ್ಸವ ಇತಿಹಾಸಕ್ಕೆ ಸೇರ್ಪಡೆಯಾಯಿತು.

2007: ಬೆಂಗಳೂರು ನಗರದ ಕರ್ನಾಟಕ ಸಾಬೂನು ಕಾರ್ಖಾನೆ ಮುಂಭಾಗದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸ್ವಾತಂತ್ರ್ಯ ಯೋಧೆ ರಾಣಿ ಅಬ್ಬಕ್ಕೆ ದೇವಿ ಅವರ ಪ್ರತಿಮೆಯನ್ನು ಆರೋಗ್ಯ ಸಚಿವ ಆರ್. ಅಶೋಕ ಅನಾವರಣಗೊಳಿಸಿದರು.

2007: ಹುದ್ದೆಯ ಸೃಷ್ಟಿ ಅಥವಾ ಮಂಜೂರಾತಿ ಕಾರ್ಯಾಂಗದ ವಿಶೇಷ ಅಧಿಕಾರ. ನ್ಯಾಯಾಲಯಗಳು ಇಂತಹ ವಿಚಾರಗಳಲ್ಲಿ ಮಧ್ಯಪ್ರವೇಶ ಮಾಡಲಾಗದು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿತು. ಮಹಿಳೆಯೊಬ್ಬಳು ಯೋಜನೆಯೊಂದರ ಒಂದೇ ಹುದ್ದೆಯಲ್ಲಿ 29 ವರ್ಷಗಳ ಕಾಲ ದುಡಿದಿದ್ದರೂ, ಕೆಲಸದ ಕಾಯಮಾತಿ ಪಡೆಯುವ ಯಾವುದೇ ಹಕ್ಕನ್ನು ಆಕೆ ಹೊಂದುವುದಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟ ಪಡಿಸಿತು. ಪ್ರತಿವಾದಿ ಕೆ. ರಾಜ್ಯಲಕ್ಷ್ಮಿ ಸಲ್ಲಿಸಿದ್ದ ಮನವಿಯನ್ನು ಅಂಗೀಕರಿಸಿ ಆಕೆಯ ನೇಮಕಾತಿಯನ್ನು ಕಾಯಂಗೊಳಿಸುವಂತೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ ಮತ್ತು ಚೆನ್ನೈ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕುತ್ತಾ ಸುಪ್ರೀಂಕೋರ್ಟ್ ಈ ತೀರ್ಪು ನೀಡಿತು. ಕೆ. ರಾಜ್ಯಲಕ್ಷ್ಮಿ ಅವರು 1975ರ ಏಪ್ರಿಲ್ 1ರಂದು ಒಂದು ವರ್ಷದ ಯೋಜನೆಗಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ (ಐಸಿಎಂಆರ್) ನೇಮಕಗೊಂಡಿದ್ದರು. ಕೇಂದ್ರ ಸರ್ಕಾರದಿಂದ ಲಭಿಸುವ ಅನುದಾನವನ್ನು ಅನುಸರಿಸಿ ವರ್ಷದಿಂದ ವರ್ಷಕ್ಕೆ ಈ ನೇಮಕಾತಿಯನ್ನು ವಿಸ್ತರಿಸಬಹುದು ಎಂಬುದು ನೇಮಕಾತಿಯ ಷರತ್ತಾಗಿತ್ತು. ಈ ಯೋಜನೆ ಹಲವಾರು ವರ್ಷಗಳವರೆಗೆ ಮುಂದುವರೆಯುತ್ತಾ ಸಾಗಿತು. ಹೀಗಾಗಿ ರಾಜ್ಯಲಕ್ಷ್ಮಿ ತನ್ನ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಮನವಿ ಸಲ್ಲಿಸಿದರು. ಆದರೆ ಐಸಿಎಂಆರ್ ಆಕೆಯ ಮನವಿಯನ್ನು ತಳ್ಳಿಹಾಕಿತು. ರಾಜ್ಯಲಕ್ಷ್ಮಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿದರು. 1998ರ ಫೆಬ್ರವರಿ 25ರಂದು ನ್ಯಾಯಮಂಡಳಿಯು ಆಕೆಯ ಸೇವೆಯನ್ನು ಕಾಯಂಗೊಳಿಸುವಂತೆ ಆದೇಶ ನೀಡಿತು. ಐಸಿಎಂಆರ್ ಈ ತೀರ್ಪನ್ನು ಚೆನ್ನೈ ಹೈಕೋರ್ಟಿನಲ್ಲಿ ಪ್ರಶ್ನಿಸಿತು. ರಾಜ್ಯಲಕ್ಷ್ಮಿ ಕೂಡಾ 1975ರ ಏಪ್ರಿಲ್ 1ರಿಂದ ಅನ್ವಯವಾಗುವಂತೆಯೇ ತನ್ನ ಸೇವೆಯನ್ನು ಕಾಯಂಗೊಳಿಸಬೇಕು ಎಂದು ಕೋರಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದರು. ನ್ಯಾಯದ ಆಧಾರದಲ್ಲಿ ರಾಜ್ಯಲಕ್ಷ್ಮಿ ಅವರ ಸೇವೆಯನ್ನು ನೇಮಕಾತಿ ದಿನದಿಂದಲೇ ಕಾಯಂಗೊಳಿಸಬೇಕು ಎಂದು ಆಕೆ ಪರ ವಕೀಲರು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಎರಡೂ ಕಡೆ ವಾದಿಸಿದ್ದರು. ಸೇವಾ ನ್ಯಾಯಶಾಸ್ತ್ರದ ಪ್ರಕಾರ ಯಾವುದೇ ಒಂದು ಹುದ್ದೆಯ ಸೃಷ್ಟಿ ಅಥವಾ ಮಂಜೂರಾತಿ ಕಾರ್ಯಾಂಗದ ವಿಶೇಷ ಅಧಿಕಾರ ವ್ಯಾಪ್ತಿಗೆ ಬರುತ್ತದೆ ಎಂದು ಹೇಳಿದ ಸುಪ್ರೀಂಕೋರ್ಟ್ ಮಂಡಳಿಯ ಮನವಿಯನ್ನು ಎತ್ತಿ ಹಿಡಿಯಿತು.

2007: ಒರಿಸ್ಸಾದ ದಕ್ಷಿಣ ಮಲ್ಕಾನ್ ಗಿರಿ ಜಿಲ್ಲೆಯ ಎಂವಿ-126 ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ಮಾವೋವಾದಿ ಉಗ್ರಗಾಮಿಗಳು ಹುದುಗಿಸಿ ಇಟ್ಟಿದ್ದ ಭೂಸ್ಫೋಟಕ ಸ್ಫೋಟಗೊಂಡ ಪರಿಣಾಮವಾಗಿ ಒಬ್ಬ ಸಿ ಆರ್ ಪಿ ಎಫ್ ಯೋಧ ಮೃತನಾಗಿ ಇತರ ಇಬ್ಬರು ಯೋಧರು ಗಾಯಗೊಂಡರು. ಸಿ ಆರ್ ಪಿ ಎಫ್ ಮತ್ತು ಪೊಲೀಸ್ ಪಡೆಗಳು ತೆಲರಾಯ್ ಮತ್ತು ಎಂವಿ-126 ಗ್ರಾಮದ ನಡುವೆ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ ಈ ಸ್ಫೋಟ ಸಂಭವಿಸಿತು. ಗಣರಾಜ್ಯ ದಿನೋತ್ಸವವನ್ನು ವಿರೋಧಿಸಿ ಮಾವೋವಾದಿಗಳು ಹೆದ್ದಾರಿಯಲ್ಲಿ ಕಡಿದುರುಳಿಸಿದ್ದ ಅಸಂಖ್ಯಾತ ಮರಗಳನ್ನು ತೆರವುಗೊಳಿಸುವ ಸಲುವಾಗಿ ಸಿ ಆರ್ ಪಿ ಎಫ್ ಮತ್ತು ಪೊಲೀಸರು ಹೊರಟಿದ್ದಾಗ ಈ ಘಟನೆ ನಡೆಯಿತು.

2007: ವಿದ್ಯಾರ್ಥಿಗಳಲ್ಲಿನ ಪರೀಕ್ಷೆ ಒತ್ತಡ ಭಯವನ್ನು ತಗ್ಗಿಸಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು `ಸಾಕ್ಷಾತ್' ಎಂಬ ಆನ್ ಲೈನ್ ಸಂವಾದ ಶಿಕ್ಷಣ ಯೋಜನೆಯನ್ನು ಆರಂಭಿಸಿತು. ಈ ಸೌಲಭ್ಯವನ್ನು 2006ರ ಅಕ್ಟೋಬರ್ 30ರಂದು ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರು ರಾಷ್ಟ್ರಕ್ಕೆ ಸಮರ್ಪಿಸಿದ್ದರು. ವಿದ್ಯಾರ್ಥಿಗಳು ಈ ಅಂತರ್ಜಾಲ ವಿಳಾಸಗಳಲ್ಲಿನ "ಟಿಣಜಡಿಚಿಛಿಣ' ಪದವನ್ನು ಒತ್ತಿ ನಂತರ "ಣಚಿಟಞ ಣಠ ಣಜಚಿಛಿಜಡಿ' ಆಯ್ಕೆಯನ್ನು ಒತ್ತುವ ಮೂಲಕ ಆನ್ ಲೈನ್ ಸಂವಾದದಲ್ಲಿ ಪಾಲ್ಗೊಳ್ಳಬಹುದು. ವಿದ್ಯಾರ್ಥಿಗಳು ಕೇಳುವ ವಿವಿಧ ವಿಷಯಗಳಿಗೆ ಅಂತರ್ಜಾಲದ ಮೂಲಕ ತಜ್ಞರು ಉತ್ತರ ನೀಡುವ ವ್ಯವಸ್ಥೆ ಇದು. ಅಂತರ್ಜಾಲದ ವಿಳಾಸ: "www.sakshat.ac.in ಅಥವಾ http.sakshat.ignou.ac.in/sakshat/index.aspx ಅಥವಾ http/www.sakshat.gov.in'.

2006: ಕರ್ನಾಟಕದ ಸಮ್ಮಿಶ್ರ ಸರ್ಕಾರಕ್ಕೆ ಬೆಂಬಲ ಮುಂದುವರೆಸುವ ಬಗ್ಗೆ ಜನತಾದಳ (ಎಸ್) ರಾಷ್ಟ್ರೀಯ ಅಧ್ಯಕ್ಷ ಎಚ್. ಡಿ. ದೇವೇಗೌಡ ಮತ್ತು ಅವರ ಪುತ್ರ ಎಚ್. ಡಿ. ಕುಮಾರಸ್ವಾಮಿ ನಡುವಣ ಮಾತುಕತೆ ಮುರಿದು ಬಿದ್ದು, ಇಬ್ಬರೂ ಕವಲುದಾರಿಯಲ್ಲಿ ಸಾಗಿದರು. ಇದರಿಂದ ಜೆಡಿ(ಎಸ್) - ಬಿಜೆಪಿ ಪರ್ಯಾಯ ಸರ್ಕಾರ ರಚನೆಗೆ ಇದ್ದ ತೊಡಕು ಬಗೆಹರಿದಂತಾಯಿತು.

2006: ಬಿಹಾರಿನ ಹಿಂದಿನ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿ ವಿವಾದಕ್ಕೆ ಸಿಲುಕಿಕೊಂಡು ಸುಪ್ರೀಂಕೋರ್ಟಿನಿಂದ ಛೀಮಾರಿಗೆ ಒಳಗಾಗಿದ್ದ ಬಿಹಾರ ರಾಜ್ಯಪಾಲ ಬೂಟಾಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಪಟ್ನಾದ ಚಾರಿತ್ರಿಕ ಗಾಂಧಿ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜವಂದನೆ ಸ್ವೀಕರಿಸಿದ ಕೆಲವು ಗಂಟೆಗಳ ಬಳಿಕ ಈ ದಿಢೀರ್ ಬೆಳವಣಿಗೆ ಸಂಭವಿಸಿತು.

2006: ಪ್ಯಾಲೆಸ್ಟೈನ್ ಸಂಸದೀಯ ಚುನಾವಣೆಯಲ್ಲಿ ಇಸ್ಲಾಮಿಕ್ ಉಗ್ರಗಾಮಿ ಸಂಘಟನೆ ಹಮಾಸ್ ಬಹುತೇಕ ಸ್ಥಾನಗಳನ್ನು ಗೆದ್ದು ಸರ್ಕಾರ ರಚನೆಯ ಹಾದಿಯಲ್ಲಿ ಮುನ್ನಡೆಯಿತು. ಒಂದು ದಶಕದಿಂದ ಆಡಳಿತದಲ್ಲಿರುವ ಫತಾಹ್ ಪಕ್ಷದ ಎಲ್ಲ ಸಚಿವರು ಸಂಪುಟಕ್ಕೆ ರಾಜೀನಾಮೆ ಸಲ್ಲಿಸಿದರು.

2006: ಗಡಿನಾಡ ಗಾಂಧಿ ಖಾನ್ ಅಬ್ದುಲ್ ಗಫಾರ್ ಖಾನ್ ಅವರ ಮಗ , ಭಾರತದ ಪರಮಾಪ್ತ ಮಿತ್ರ ಖಾನ್ ಅಬ್ದುಲ್ ವಲೀಖಾನ್ (89) ಪಾಕಿಸ್ಥಾನದ ಪೇಶಾವರದಲ್ಲಿ ನಿಧನರಾದರು.

2006: ಖ್ಯಾತ ವಿಜ್ಞಾನಿ ಡಾ. ವಿ.ಪಿ. ನಾರಾಯಣನ್ ನಂಬಿಯಾರ್ ತಮಿಳುನಾಡಿದ ಚೆನ್ನೈಯಲ್ಲಿ ನಿಧನರಾದರು. ಫೊಟೋಗ್ರಫಿಗೆ ಸಂಬಂಧಿಸಿದ ರಸೆಲ್ ಎಫೆಕ್ಟ್ ಮೇಲಿನ ಸಂಶೋಧನೆಗಾಗಿ ಅವರು ವಿಶ್ವದಾದ್ಯಂತ ವಿಜ್ಞಾನಿಗಳ ಪ್ರಶಂಸೆಗೆ ಪಾತ್ರರಾಗಿದ್ದರು. ರಸೆಲ್ ಎಫೆಕ್ಟ್ ಮೇಲೆ ಈ ಹಿಂದೆ ರಸೆಲ್ ಹಾಗೂ ಅಮೆರಿಕ ವಿಜ್ಞಾನಿ ಎಚ್.ಡಿ. ಟೈಮನ್ ಅವರು ಕೈಗೊಂಡಿದ್ದ ಸಂಶೋಧನೆ ಸರಿಯಿಲ್ಲ ಎಂದು ನಾರಾಯಣನ್ ತಮ್ಮ ಪ್ರಯೋಗಗಳ ಮೂಲಕ ಸಾಧಿಸಿ ತೋರಿಸಿದ್ದರು.

1944: ಕಲಾವಿದ ಶ್ರೀನಿವಾಸ ಕೆ.ಆರ್. ಜನನ.

1920: ಗುಡಿಕಾರ ಚಿತ್ರಕಲೆಯಲ್ಲಿ ಅಪೂರ್ವ ಸಾಧನೆ ಮಾಡಿದ ಜಡೆ ಮಂಜುನಾಥಪ್ಪ ಅವರು ಪಾಂಡಪ್ಪ- ವರದಮ್ಮ ದಂಪತಿಯ ಮಗನಾಗಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಜಡೆ ಗ್ರಾಮದಲ್ಲಿ ಜನಿಸಿದರು.

1918: ನಿಕೊಲಾಯಿ ಸಿಯಾಸೆಸ್ಕು (1918-1989) ಹುಟ್ಟಿದ ದಿನ. ಈತ 1965ರಿಂದ 1989ರಲ್ಲಿ ನಡೆದ ಕ್ರಾಂತಿಯಲ್ಲಿ ಪದಚ್ಯುತಿಗೊಂಡು ಕೊಲೆಗೀಡಾಗುವವರೆಗೆ ರೊಮೇನಿಯಾದ ಸರ್ವಾಧಿಕಾರಿಯಾಗಿದ್ದ.

1915: ಹೆಸರಾಂತ ಕವಿ ಕೆ.ಎಸ್. ನರಸಿಂಹಸ್ವಾಮಿ (1915-2003) ಹುಟ್ಟಿದ ದಿನ.

1912: ಕಲಾವಿದ ಎಲ್. ನಾಗೇಶ ರಾಯರ ಜನನ.

1905: ಜಗತ್ತಿನಲ್ಲೇ ಅತ್ಯಂತ ದೊಡ್ಡದೆಂದು ಹೇಳಲಾದ ಗುಲಿನನ್ ವಜ್ರವು ದಕ್ಷಿಣ ಆಫ್ರಿಕಾದ ಟ್ರಾನ್ಸ್ ವಾಲಿನ ಪ್ರೀಮಿಯರ್ ಗಣಿಯಲ್ಲಿ ಪತ್ತೆಯಾಯಿತು. ಕ್ಯಾಪ್ಟನ್ ವೆಲ್ಸ್ ಕಂಡು ಹಿಡಿದ ಈ ವಜ್ರದ ಕಚ್ಚಾ ರೂಪದ ತೂಕ 3,106 ಕ್ಯಾರೆಟ್ಟುಗಳು. ಮೂರು ವರ್ಷಗಳ ಹಿಂದೆ ಈ ಗಣಿಯನ್ನು ಪತ್ತೆ ಹಚ್ಚಿದ ಸರ್ ಥಾಮಸ್ ಗುಲಿನಿನ್ ಹೆಸರನ್ನೇ ಈ ವಜ್ರಕ್ಕೆ ಇಡಲಾಯಿತು.

1556: ಪಾವಟಿಗೆಗಳಿಂದ ಬಿದ್ದು ತಲೆಗೆ ಆದ ತೀವ್ರ ಗಾಯಗಳ ಪರಿಣಾಮವಾಗಿ ಮೊಘಲ್ ಚಕ್ರವರ್ತಿ ಹುಮಾಯೂನ್ ತನ್ನ 48ನೇ ವಯಸ್ಸಿನಲ್ಲ್ಲಿಲಿ ಮೃತನಾದ.

ಇಂದಿನ ಇತಿಹಾಸ History Today ಜನವರಿ 25


ಇಂದಿನ ಇತಿಹಾಸ

ಜನವರಿ 25

ಅಡಿಲೇಡಿನಲ್ಲಿ ಆಸ್ಟ್ರೇಲಿಯಾ - ಟೀಮ್ ಇಂಡಿಯಾ ನಡುವಣ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನ್ನಿಂಗ್ಸಿನಲ್ಲಿ ಮಿಚೆಲ್ ಜಾನ್ಸನ್ ಬೌಲಿಂಗಿನಲ್ಲಿ ಅನಿಲ್ ಕುಂಬ್ಳೆ ನೀಡಿದ ಕ್ಯಾಚ್ ಪಡೆದ ಆಡಮ್ ಗಿಲ್ ಕ್ರಿಸ್ಟ್ ವಿಕೆಟ್ ಹಿಂಬದಿ ಹೆಚ್ಚು ಬಲಿ ಪಡೆದ ವಿಕೆಟ್ ಕೀಪರ್ ಎಂಬ ಹೆಗ್ಗಳಿಗೆ ಪಾತ್ರರಾಗಿ ವಿಶ್ವದಾಖಲೆ ನಿರ್ಮಿಸಿದರು. ಅವರು ದಕ್ಷಿಣ ಆಫ್ರಿಕಾದ ಮಾರ್ಕ್ ಬೌಷರ್ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಅಳಿಸಿ ಹಾಕಿದರು.

2009: ಹಲವು ಔಷಧೀಯ ಗುಣಗಳನ್ನು ಹೊಂದಿರುವ ಗೋಮೂತ್ರದ ಅಧಿಕ ಉತ್ಪಾದನೆಗಾಗಿ ಉತ್ತರಾಖಂಡ ಸರ್ಕಾರವು ರಾಜ್ಯದ ಎಲ್ಲೆಡೆ 100 ಗೋಮೂತ್ರ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಯಿತು. ಇದರಿಂದ ಪಶುಸಂಗೋಪನೆಯಲ್ಲಿ ತೊಡಗಿದ ರೈತರು ಗೋಮೂತ್ರ ಮಾರಾಟ ಮಾಡಿ ಹಣ ಗಳಿಸಲು ಅವಕಾಶ ಲಭಿಸಿತು. 'ಗೋಮೂತ್ರದಿಂದ ಔಷಧ ತಯಾರಿ ಮಾಡುವ ಹಾಗೂ ಅವುಗಳನ್ನು ಇತರ ರಾಜ್ಯಗಳಿಗೆ ಕಳುಹಿಸಿಕೊಡುವ ಯೋಜನೆಗೆ ರಾಜ್ಯ ಸರ್ಕಾರ ಅಂತಿಮ ಸ್ಪರ್ಶ ನೀಡುತ್ತಿದೆ' ಎಂದು ಪಶುಸಂಗೋಪನೆ ಮತ್ತು ಕೃಷಿ ಸಚಿವ ತ್ರಿವೇಂದ್ರ ರಾವತ್ ಹೇಳಿದರು. ರಾಜ್ಯದ ಹಲವೆಡೆ ಈಗಾಗಲೇ ಇಂತಹ ಕೇಂದ್ರಗಳು ಆರಂಭವಾಗಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸರ್ಕಾರವು ಈ ನಿಟ್ಟಿನಲ್ಲಿ ಆಯುರ್ವೇದ ವೈದ್ಯರನ್ನೂ ಸಂಪರ್ಕಿಸಿ ಸೂಕ್ತ ಸಲಹೆ ಸೂಚನೆ ಪಡೆದು ಕೇಂದ್ರಗಳ ಸ್ಥಾಪನೆಗೆ ಗಂಭೀರ ಪ್ರಯತ್ನ ನಡೆಸಿದೆ ಎಂದು ಅವರು ತಿಳಿಸಿದರು.

2009: ನವದೆಹಲಿಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಸಂಚು ರೂಪಿಸಿದ್ದ ಇಬ್ಬರು ಶಂಕಿತ ಪಾಕಿಸ್ಥಾನಿ ಉಗ್ರರು ನೊಯಿಡಾದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಪೊಲೀಸರ ಗುಂಡಿಗೆ ಬಲಿಯಾದರು.

2009: ಲಾಹೋರಿನ ಮುರ್ದಿಕೆಯಲ್ಲಿ ಲಷ್ಕರ್ -ಎ-ತೊಯ್ಬಾದ ಧಾರ್ಮಿಕ ಘಟಕ ಜಮಾತ್ ಉದ್-ದಾವಾದ (ಜೆಯುಡಿ) ಪ್ರಧಾನ ಕಚೇರಿಯನ್ನು ಪಾಕಿಸ್ಥಾನ ಸರ್ಕಾರ ತನ್ನ ಅಧೀನಕ್ಕೆ ತೆಗೆದುಕೊಂಡಿತು. ಇತ್ತೀಚೆಗೆ ತಾನೆ ಪಾಕಿಸ್ಥಾನದ ಪಂಜಾಬಿನ ಪ್ರಾಂತೀಯ ಸರ್ಕಾರದಿಂದ ಮುಖ್ಯ ಆಡಳಿತಗಾರರಾಗಿ ನೇಮಕಗೊಂಡ ಖಕನ್ ಬಾಬರ್ ಅವರು ಜೆಯುಡಿ ಕೇಂದ್ರ ಕಚೇರಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಲಾಹೋರ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಧಾರ್ಮಿಕ ವ್ಯವಹಾರ ಖಾತೆ ಅಧಿಕಾರಿಯೊಬ್ಬರು ಹಾಗೂ ಪೊಲೀಸ್ ತಂಡದ ಸಮ್ಮುಖದಲ್ಲಿ ಜೆಯುಡಿ ಕಚೇರಿ ಸ್ವಾಧೀನ ಪ್ರಕ್ರಿಯೆ ನಡೆಯಿತು.

2009: ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರಧಾನಿ ಮನಮೋಹನ ಸಿಂಗ್ ನಿರೀಕ್ಷೆಗಿಂತ ತ್ವರಿತವಾಗಿ ಚೇತರಿಸಿಕೊಂಡರು. ಅವರಿಗೆ ಅಳವಡಿಸಿದ್ದ ಕೃತಕ ಉಸಿರಾಟದ ಸಾಧನವನ್ನು ಈದಿನ ತೆಗೆದು ಹಾಕಲಾಯಿತು.

2009: ಕರ್ನಾಟಕ ಮೂಲದ ಮಾಧವನ್ ನಾಯರ್ (ಪದ್ಮವಿಭೂಷಣ), ರಾಮಚಂದ್ರ ಗುಹಾ (ಪದ್ಮಭೂಷಣ) ಹಾಗೂ ಐಶ್ವರ್ಯಾ ರೈ ಬಚ್ಚನ್, ಬನ್ನಂಜೆ ಗೋವಿಂದಾಚಾರ್ಯ, ಮತ್ತೂರು ಕೃಷ್ಣಮೂರ್ತಿ, ಶಶಿ ದೇಶಪಾಂಡೆ, ಪಂಕಜ್ ಅಡ್ವಾಣಿ, ಬಿ. ಆರ್. ಶೆಟ್ಟಿ ಅವರಿಗೆ ಪದ್ಮಶ್ರೀ ಸಹಿತ 133 ಮಂದಿ ಈ ಬಾರಿಯ ಪದ್ಮ ಪ್ರಶಸ್ತಿಗಳಿಗೆ ಆಯ್ಕೆಯಾದರು. ದೇಶದ ಎರಡನೇ ಅತ್ಯುನ್ನತ ನಾಗರಿಕ ಸನ್ಮಾನ 'ಪದ್ಮವಿಭೂಷಣ'ಕ್ಕೆ ಖ್ಯಾತ ಪರಿಸರವಾದಿ ಸುಂದರಲಾಲ್ ಬಹುಗುಣ, ಯಶಸ್ವಿ 'ಚಂದ್ರಯಾನ'ದ ರೂವಾರಿ ಮಾಧವನ್ ನಾಯರ್, ಮಿಷನರಿ ಆಫ್ ಚಾರಿಟೀಸ್‌ನ ಮುಖ್ಯಸ್ಥೆ ಸಿಸ್ಟರ್ ನಿರ್ಮಲಾ, ಖ್ಯಾತ ಅಣು ವಿಜ್ಞಾನಿ ಅನಿಲ್ ಕಾಕೋಡ್ಕರ್ ಸಹಿತ 10 ಮಂದಿ ಪಾತ್ರರಾದರು. ದೇಶದ ಅತ್ಯುತ್ನತ ನಾಗರಿಕ ಪ್ರಶಸ್ತಿ 'ಭಾರತ ರತ್ನ'ಕ್ಕೆ ಪಂಡಿತ್ ಭೀಮಸೇನ್ ಜೋಶಿ ಅವರ ಹೆಸರನ್ನು ಕಳೆದ ನವೆಂಬರಿನಲ್ಲೇ ಪ್ರಕಟಿಸಲಾಗಿತ್ತು. ಪದ್ಮವಿಭೂಷಣಕ್ಕೆ ಪಾತ್ರರಾದ ಇತರರೆಂದರೆ ಸ್ವೀಡನ್ ಮೂಲದ ವಿಶ್ವ ಸಮುದ್ರಯಾನ ವಿಶ್ವವಿದ್ಯಾಲಯದ ಪ್ರಥಮ ಕುಲಪತಿ ಚಂದ್ರಿಕಾ ಪ್ರಸಾದ್ ಶ್ರೀವಾಸ್ತವ, ಖ್ಯಾತ ಇತಿಹಾಸಕಾರ ಡಿ. ಪಿ. ಚಟ್ಟೋಪಾಧ್ಯಾಯ, ವೈದ್ಯಕೀಯ ರಂಗದ ಜಸ್ಬೀರ್ ಸಿಂಗ್ ಬಜಾಜ್ ಮತ್ತು ಪುರುಷೋತ್ತಮ ಲಾಲ್, ಮಾಜಿ ರಾಜ್ಯಪಾಲ ಗೋವಿಂದ ನಾರಾಯಣ. ಮೂರನೇ ಅತ್ಯುನ್ನತ ಸನ್ಮಾನ 'ಪದ್ಮಭೂಷಣ'ಕ್ಕೆ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಬಂಗಾರದ ಪದಕ ವಿಜೇತ ಶೂಟರ್ ಅಭಿನವ್ ಬಿಂದ್ರಾ, ರಾಷ್ಟ್ರೀಯ ಜ್ಞಾನ ಆಯೋಗದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ, ಅರ್ಥಶಾಸ್ತ್ರಜ್ಞ ಇಷಾರ್ ಜಜ್ ಅಹುವ್ಲಾಲಿಯಾ. ಹಿರಿಯ ಪತ್ರಕರ್ತ ಶೇಖರ್ ಗುಪ್ತಾ ಸಹಿತ 30 ಮಂದಿ ಪಾತ್ರರಾದರು.

2009: ಸಶಸ್ತ್ರ ಪಡೆ ಸಿಬ್ಬಂದಿಗೆ 9 ಮರಣೋತ್ತರ ಅಶೋಕ ಚಕ್ರ, 13 ಕೀರ್ತಿ ಚಕ್ರ ಪ್ರಶಸ್ತಿ ಸೇರಿದಂತೆ ಒಟ್ಟು 428 ಶೌರ್ಯ ಪ್ರಶಸ್ತಿಗಳಿಗೆ ರಾಷ್ಟ್ರಪತಿ ಅನುಮೋದನೆ ನೀಡಿದರು. ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹುತಾತ್ಮರಾದ ರಾಷ್ಟ್ರೀಯ ಭದ್ರತಾ ಪಡೆಯ ಕಮಾಂಡೊ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಮಹಾರಾಷ್ಟ್ರ ಪೊಲೀಸ್ ಅಧಿಕಾರಿಗಳಾದ ಹೇಮಂತ್ ಕರ್ಕರೆ, ಅಶೋಕ್ ಕಾಮಟೆ ಹಾಗೂ ವಿಜಯ್ ಸಾಲಸ್ಕರ್ ಅವರಿಗೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮರಣೋತ್ತರ 'ಅಶೋಕ ಚಕ್ರ' ಪ್ರಶಸ್ತಿ ಘೋಷಿಸಲಾಯಿತು.

2009: ಭಾರತ ಮತ್ತು ಬ್ರಿಟನ್‌ನ ಜಂಟಿ ನಿರ್ಮಾಣದ 'ಸಮ್ಲ್‌ಡಾಗ್ ಮಿಲಿಯನೇರ್' ಚಲನಚಿತ್ರ, ಅಮೆರಿಕದ ನಿರ್ಮಾಪಕರ ವೇದಿಕೆ (ಪಿಜಿಎ)ಯ ಪುರಸ್ಕಾರಕ್ಕೂ ಪಾತ್ರವಾಯಿತು. ಚಿತ್ರದ ನಿರ್ಮಾಪಕ ಕ್ರಿಶ್ಚಿಯನ್ ಕೋಲ್ಸನ್ ಅವರಿಗೆ 'ಡ್ಯಾರಿಲ್ ಎಫ್ ಝಾನುಕ್ ವರ್ಷದ ನಿರ್ಮಾಪಕ' ಪ್ರಶಸ್ತಿ ದೊರೆಕಿತು, ಲಾಸ್ ಏಂಜೆಲಿಸಿನಲ್ಲಿ ನಡೆದ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದರು.

2009: ಗೃಹ ಸಚಿವ ಪಿ. ಚಿದಂಬರಮ್ ಅವರ ಆಂತರಿಕ ಭದ್ರತಾ ಸಲಹೆಗಾರ ಕೆ.ಸಿ.ವರ್ಮಾ ಅವರು ದೇಶದ ಅಗ್ರಮಾನ್ಯ ಗೂಢಚರ್ಯ ಸಂಸ್ಥೆ 'ರಾ' ಮುಖ್ಯಸ್ಥರಾಗಿ ನೇಮಕಗೊಂಡರು.

2009: ತಮಿಳು ಬಂಡುಕೋರರ (ಎಲ್‌ಟಿಟಿಇ) ಬಿಗಿ ಹಿಡಿತದಲ್ಲಿರುವ ಕಟ್ಟಕಡೆಯ ತಾಣವಾದ ಮುಲ್ಲೈತೀವು ಪಟ್ಟಣವನ್ನು ಸೇನಾ ಪಡೆಗಳು ಪ್ರವೇಶಿಸಿದವು.

2008: ಜಗತ್ತಿನಲ್ಲಿಯೇ ಅತಿ ಉದ್ದದ ರಂಗೋಲಿ ಬಿಡಿಸಿ, ದಾಖಲೆ ನಿರ್ಮಿಸಲು ಹೊರಟ ಬೆಂಗಳೂರಿನ `ಸುವರ್ಣ ಜ್ಯೋತಿ ಟ್ರಸ್ಟ್' ಜೊತೆಗೆ ಒಂದು ಸಾವಿರ ಜನರು ಕೈಜೋಡಿಸಿ ಅರಮನೆ ಮೈದಾನದಲ್ಲಿ 1.50 ಲಕ್ಷ ಚದರ ಅಡಿಯಲ್ಲಿ ದೇವತೆಗಳು, ಸೈನಿಕರು, ಸ್ವಾತಂತ್ರ್ಯ ಯೋಧರ ಚಿತ್ರಗಳನ್ನು ಒಳಗೊಂಡ 'ಅಖಂಡ ಭಾರತ'ದ ಬೃಹತ್ ರಂಗೋಲಿ ಬಿಡಿಸಲು ಆರಂಭಿಸಿದರು. ಈ ಹಿಂದೆ ದಾಖಲೆ ನಿರ್ಮಿಸಿದ್ದ 48 ಸಾವಿರ ಚದರ ಅಡಿಯ ರಂಗೋಲಿಯನ್ನು ಬದಿಗೆ ತಳ್ಳಿ ನೂತನ ಇತಿಹಾಸ ಸೃಷ್ಟಿಸುವ ಸಲುವಾಗಿ ಈ ರಂಗೋಲಿ ಬಿಡಿಸುವ ಕಾರ್ಯ ಶುರುವಾಯಿತು.

2008: ಆಸ್ಟ್ರೇಲಿಯಾದ 15ರ ಹರೆಯದ ಹುಡುಗಿ ಡೆಮಿ ಲಿ ಬ್ರೆನನ್ ಎಂಬಾಕೆ ಯಕೃತ್ ಕಸಿ ಮಾಡಿಸಿಕೊಂಡ ಬಳಿಕ ತನ್ನ ದೇಹದಲ್ಲಿನ ರೋಗ ನಿರೋಧಕ ಶಕ್ತಿಯನ್ನೇ ಸಂಪೂರ್ಣವಾಗಿ ಬದಲಿಸಿಕೊಂಡು ವೈದ್ಯ ಲೋಕದಲ್ಲಿ ಅಚ್ಚರಿ ಮೂಡಿಸಿದಳು. ಜೊತೆಗೇ ಇದು ಜಗತ್ತಿನಲ್ಲಿ ದಾಖಲಾದ ಇಂತಹ ಮೊದಲ ಪ್ರಕರಣ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಬ್ರೆನನ್ 9 ವರ್ಷದವಳಿದ್ದಾಗ ದಾನಿಯೊಬ್ಬರ ಯಕೃತ್ತನ್ನು ಕಸಿ ಮಾಡಿಸಿಕೊಂಡಿದ್ದಳು. ಬಳಿಕ ದಾನಿಯ ರೋಗ ನಿರೋಧಕ ಶಕ್ತಿಯೇ (ಬಿಳಿ ರಕ್ತ ಕಣ) ಅವಳ ದೇಹವನ್ನು ಸಂಪೂರ್ಣವಾಗಿ ಆವರಿಸಲು ಆರಂಭಿಸಿತು. ಇದರಿಂದಾಗಿ ಆಕೆಯ ದೇಹದಲ್ಲಿನ ರಕ್ತದ ಗುಂಪು `ಒ ನೆಗೆಟಿವ್'ನಿಂದ `ಒ ಪಾಸಿಟಿವ್'ಗೆ ಬದಲಾಯಿತು. ಸಿಡ್ನಿಯ ವೆಸ್ಟ್ ಮೆಡ್ ಮಕ್ಕಳ ಆಸ್ಪತ್ರೆಯ ವೈದ್ಯರಿಗೆ ಅಚ್ಚರಿ ಮೂಡಲು ಇನ್ನೂ ಹಲವು ಕಾರಣಗಳು ಇದ್ದವು. ಬದಲಿ ಅಂಗ ದೇಹಕ್ಕೆ ಹೊಂದಿಕೊಳ್ಳುವ ಸಲುವಾಗಿ ನೀಡಿದ್ದ ಔಷಧವನ್ನು ದೇಹ ಸ್ವೀಕರಿಸದೇ ಇದ್ದಾಗ ದೇಹದಲ್ಲಿ ಏನೋ ಎಡವಟ್ಟು ಆಗಿರುವುದು ಗೊತ್ತಾಯಿತು. ಇದು ಅವಳಿಗೆ ಪೂರಕವಾಯಿತೇ ಹೊರತು ಮಾರಕವಾಗಲಿಲ್ಲ. ಬಹುಶಃ ಹುಡುಗಿಯ ಮೂಲ ರಕ್ತದಲ್ಲಿನ ಬಿಳಿ ರಕ್ತ ಕಣಗಳ ಸಂಖ್ಯೆ ತೀರಾ ಕಡಿಮೆ ಇದ್ದುದರಿಂದ ಆಕೆಯ ದೇಹ ದಾನಿಯ ಯಕೃತ್ತಿನ ಪ್ರಭಾವಕ್ಕೆ ಒಳಗಾಗಿರಬೇಕು ಎಂಬ ತೀರ್ಮಾನಕ್ಕೆ ವೈದ್ಯರು ಬಂದರು. ಅಂತೂ ಇದರಿಂದಾಗಿ ಬ್ರೆನನ್ ಗೆ ಮರು ಜನ್ಮ ಲಭಿಸಿದಂತಾಯಿತು.

2008: ಇನ್ಫೊಸಿಸ್ ಸ್ಥಾಪಕ ಎನ್. ಆರ್. ನಾರಾಯಣಮೂರ್ತಿ, ಗಾಯಕಿ ಆಶಾ ಭೋಂಸ್ಲೆ, ಕ್ರಿಕೆಟಿಗ ಸಚಿನ್ ತೆಂಡೂಲ್ಕರ್, ಉದ್ಯಮಿ ರತನ್ ಟಾಟಾ ಸೇರಿದಂತೆ ಹದಿಮೂರು ಗಣ್ಯರಿಗೆ ಪದ್ಮ ವಿಭೂಷಣ, ಐಸಿಐಸಿಐ ಆಡಳಿತ ನಿರ್ದೇಶಕ ಕುಂದಾಪುರ ವಾಮನ ಕಾಮತ್, ಗಾಯಕಿ ಪಿ.ಸುಶೀಲಾ, ಬಾಹ್ಯಾಕಾಶಯಾನಿ ಸುನೀತಾ ವಿಲಿಯಮ್ಸ್ ಸೇರಿದಂತೆ 35 ಗಣ್ಯರಿಗೆ ಪದ್ಮಭೂಷಣ ಹಾಗೂ ಕವಿ ಕೆ.ಎಸ್. ನಿಸಾರ್ ಅಹಮದ್, ಶೃಂಗೇರಿಯ ಸಾಮಾಜಿಕ ಕಾರ್ಯಕರ್ತ ವಿ.ಆರ್. ಗೌರಿಶಂಕರ್ ಸೇರಿದಂತೆ 71 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಘೋಷಿಸಿದರು. ಕೊಂಕಣ್ ಮತ್ತು ಮೆಟ್ರೋ ರೈಲಿನ ಶಿಲ್ಪಿ ಈ. ಶ್ರೀಧರನ್, ವಿಶ್ವಚೆಸ್ ಚಾಂಪಿಯನ್ ವಿಶ್ವನಾಥನ್ ಆನಂದನ್, ರಕ್ಷಣಾ ಸಚಿವ ಪ್ರಣವ್ ಮುಖರ್ಜಿ, ಪರಿಸರವಾದಿ ಡಾ.ಆರ್. ಕೆ. ಪಚೂರಿ, ನಿವೃತ್ತ ಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶ ಎ.ಎಸ್.ಆನಂದ್, ಎವರೆಸ್ಟ್ ಪರ್ವತಾರೋಹಿ ದಿವಂಗತ ಎಡ್ಮಂಡ್ ಹಿಲೆರಿ, ರಾಜತಾಂತ್ರಿಕ ಪಿ.ಎನ್. ಧರ್ ಹಾಗೂ ಉದ್ಯಮಿಗಳಾದ ಎಲ್.ಎನ್. ಮಿತ್ತಲ್ ಮತ್ತು ಪಿ. ಆರ್. ಎಸ್. ಒಬೆರಾಯ್ ಪದ್ಮವಿಭೂಷಣ ಪ್ರಶಸ್ತಿ ಪಡೆದ ಇತರ ಗಣ್ಯರು. ಪದ್ಮಭೂಷಣ ಪಡೆದವರಲ್ಲಿ ಎಚ್ ಸಿ ಎಲ್ ಸ್ಥಾಪಕ ಶಿವನಾಡರ್, ಸಿಟಿಬ್ಯಾಂಕ್ ಅಧ್ಯಕ್ಷ ವಿಕ್ರಮ್ ಪಂಡಿತ್ ಸೇರಿದರೆ, ಹಿಂದಿ ಚಿತ್ರನಟಿ ಮಾಧುರಿ ದೀಕ್ಷಿತ್, ನಟ ಟಾಮ್ ಆಲ್ಟರ್, ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾದರು.

2008: ತಿರುಮಲದ ತಿಮ್ಮಪ್ಪನಿಗೆ ನಂದಮುರಿ ಲತಾ ಎಂಬ ಭಕ್ತರೊಬ್ಬರು 5 ಲಕ್ಷ ರೂಪಾಯಿ ಮೌಲ್ಯದ 5 ತಂಜಾವೂರು ಪೇಂಟಿಂಗುಗಳನ್ನು ದಾನವಾಗಿ ನೀಡಿದರು. ಈ ಚಿತ್ರಗಳು ಬ್ರಹ್ಮೋತ್ಸವಕ್ಕೆ ಸಂಬಂದಿಸಿದವುಗಳು. ಹಿಂದಿನ ಬ್ರಹ್ಮೋತ್ಸವದ ಸಂದರ್ಭದಲ್ಲೂ ಅವರು ತಮ್ಮ ಪೇಂಟಿಂಗುಗಳನ್ನು ತಿಮ್ಮಪ್ಪನಿಗೆ ದಾನ ಮಾಡಿದ್ದರು.

2008: ಸಿಗರೇಟ್ ಪೊಟ್ಟಣಗಳ ಮೇಲೆ `ಧೂಮಪಾನ ಆರೋಗ್ಯಕ್ಕೆ ಹಾನಿಕರ' ಎಂಬ ಸಚಿತ್ರ ಸಂದೇಶವನ್ನು 2007ರ ಫೆಬ್ರುವರಿ 1ರಿಂದ ಮುದ್ರಿಸುವುದು ಕಡ್ಡಾಯ ಎಂದು 2006ರ ಜುಲೈ ತಿಂಗಳಲ್ಲಿಯೇ ಆದೇಶ ಹೊರಡಿಸಿ ಅದನ್ನು ಜಾರಿ ಮಾಡದ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ ಮಾಡಿತು. ತಂಬಾಕು ಲಾಬಿಗೆ ಮಣಿದಿರುವ ಸರ್ಕಾರ ತನ್ನದೇ ನಿರ್ಧಾರವನ್ನು ಜಾರಿ ಮಾಡುತ್ತಿಲ್ಲ ಎಂದು ದೂರಿ ವಕೀಲರಾದ ನರಿಂದರ್ ಶಮಾ ಅವರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಕೆ. ಜಿ. ಬಾಲಕೃಷ್ಣನ್ ಮತ್ತು ಆರ್. ವಿ. ರವೀಂದ್ರನ್ ಅವರನ್ನು ಒಳಗೊಂಡ ನ್ಯಾಯಪೀಠವು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿತು. 2007ರ ಫೆಬ್ರುವರಿ 1ರಂದು ಜಾರಿಯಾಗಬೇಕಾಗಿದ್ದ ನಿರ್ಧಾರವನ್ನು ಸರ್ಕಾರ ಡಿಸೆಂಬರ್ ತಿಂಗಳಿಗೆ ಮುಂದೂಡಿ ನಂತರ ಅದನ್ನು ಜಾರಿ ಮಾಡಿಲ್ಲ ಎಂದು ಅರ್ಜಿದಾರರು ದೂರಿದರು.

2008: ಪಶ್ಚಿಮ ಬಂಗಾಳದ 19 ಜಿಲ್ಲೆಗಳ ಪೈಕಿ 11 ಜಿಲ್ಲೆಗಳಿಗೆ ಪಕ್ಷಿಜ್ವರ (ಕೋಳಿಜ್ವರ) ಸೋಂಕು ಹರಡಿದ ಹಿನ್ನೆಲೆಯಲ್ಲಿ ಅಲ್ಲಿನ ಪರಿಸ್ಥಿತಿ ಬಿಗಡಾಯಿಸದಂತೆ ತಡೆಯಲು ಪಶ್ಚಿಮ ಬಂಗಾಳ ಸರ್ಕಾರ ಸೋಂಕು ಪೀಡಿತ ಕೋಳಿಗಳ ಸಾಮೂಹಿಕ ನಾಶಕ್ಕೆ ಸಮರೋಪಾದಿ ಯತ್ನ ಕೈಗೊಂಡಿತು. ಪುರೂಲಿಯಾ ಮತ್ತು ಹೌರಾ ಜಿಲ್ಲೆಗಳನ್ನು ಸೋಂಕು ಪೀಡಿತ ಎಂದು ಘೋಷಿಸಲಾಯಿತು. ಕೂಚ್ ಬಿಹಾರ ಜಿಲ್ಲೆಯಲ್ಲಿ ಕೋಳಿಗಳ ಹತ್ಯೆ ಕಾರ್ಯ ಆರಂಭವಾಯಿತು.

2008: ತಮಿಳುನಾಡಿನ ತೆಂಕಾಸಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಮೇಲೆ ಅಪರಿಚಿತರು ರಾತ್ರಿ ಬಾಂಬ್ ಎಸೆದರು. ಪರಿಣಾಮವಾಗಿ ಪಟ್ಟಣದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣಗೊಂಡಿತು.

2008: ಅಕ್ರಮವಾಗಿ ಕಿಡ್ನಿ ಕಸಿ ಮಾಡಿ ಬಡವರನ್ನು ವಂಚಿಸುತ್ತಿದ್ದ ಹಾಗೂ ಕೋಟ್ಯಂತರ ರೂಪಾಯಿಗಳ ವ್ಯವಹಾರ ನಡೆಸುತ್ತಿದ್ದ ಐವರು ವಿದೇಶಿಯರು ಹಾಗೂ ನಾಲ್ವರು ಸ್ಥಳೀಯ ವೈದ್ಯರನ್ನು ಗುಡಗಾಂವಿನ ಪೊಲೀಸರು ಬಂಧಿಸಿ, ಅಕ್ರಮ ಕಿಡ್ನಿ ಮಾರಾಟದ ಬೃಹತ್ ಜಾಲವೊಂದನ್ನು ಭೇದಿಸಿದರು. ಹರಿಯಾಣ ಮತ್ತು ಉತ್ತರ ಪ್ರದೇಶ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಗುಡಗಾಂವಿನ ಎರಡು ಮನೆಗಳ ಮೇಲೆ ದಾಳಿ ನಡೆಸಿ ಈ ಜಾಲ ಪತ್ತೆ ಹಚ್ಚಲಾಯಿತು. ಬಂಧಿತರನ್ನು ಜಾಯ್ ಮೆಹತಬ್ (53), ಸೋನಮ್ ಜಾಯ್ (52), ಲಿಯೊನಿಡಾ ದಯಾಸಿ (56), ಲಿಯೊನಿದಾಸ್ ದಯಾಸಿಸ್ (63) ಮತ್ತು ಹೆಲೆನಿ ಕಿತ್ಕೊಸಿ (53) ಎಂದು ಗುರುತಿಸಲಾಯಿತು. ಇವರೆಲ್ಲರೂ ಗ್ರೀಸ್ ದೇಶದ ಪ್ರಜೆಗಳು. ವಲ್ಲಭಗಢ ಹಾಗೂ ಇತರೆಡೆಯ ಮೂವರು ವೈದ್ಯರನ್ನೂ ಬಂಧಿಸಲಾಯಿತು. ಜಾಲದ ಪ್ರಮುಖ ಸೂತ್ರಧಾರ ಎನ್ನಲಾದ ಡಾ.ಅಮಿತ್ ಸಿಂಗ್ ಹಾಗೂ ಆತನ ಸಹೋದರ ಜೀವನ್ ಮತ್ತು ಅರೆವಳಿಕೆ ತಜ್ಞ ಸರೋಜ್ ಕುಮಾರ್ ತಲೆಮರೆಸಿಕೊಂಡರು.

2008: ಬೆಂಗಳೂರಿನ ಭಾರತೀಯ ವಾಯುಪಡೆ (ಐಎಎಫ್) ತರಬೇತಿ ಕೇಂದ್ರದ ಮುಖ್ಯಸ್ಥ ಏರ್ ಮಾರ್ಷಲ್ ಗುರುನಾಮ್ ಸಿಂಗ್ ಚೌಧರಿ ಅವರಿಗೆ ಪರಮ ವಿಶಿಷ್ಟ ಸೇವಾ ಪದಕ (ಪಿವಿಎಸ್ಎಂ) ಲಭಿಸಿತು.

2008: ಅಡಿಲೇಡಿನಲ್ಲಿ ಆಸ್ಟ್ರೇಲಿಯಾ - ಟೀಮ್ ಇಂಡಿಯಾ ನಡುವಣ ನಾಲ್ಕನೇ ಹಾಗೂ ಅಂತಿಮ ಟೆಸ್ಟ್ ಕ್ರಿಕೆಟ್ ಪಂದ್ಯದ ಮೊದಲ ಇನ್ನಿಂಗ್ಸಿನಲ್ಲಿ ಮಿಚೆಲ್ ಜಾನ್ಸನ್ ಬೌಲಿಂಗಿನಲ್ಲಿ ಅನಿಲ್ ಕುಂಬ್ಳೆ ನೀಡಿದ ಕ್ಯಾಚ್ ಪಡೆದ ಆಡಮ್ ಗಿಲ್ ಕ್ರಿಸ್ಟ್ ವಿಕೆಟ್ ಹಿಂಬದಿ ಹೆಚ್ಚು ಬಲಿ ಪಡೆದ ವಿಕೆಟ್ ಕೀಪರ್ ಎಂಬ ಹೆಗ್ಗಳಿಗೆ ಪಾತ್ರರಾಗಿ ವಿಶ್ವದಾಖಲೆ ನಿರ್ಮಿಸಿದರು. ಅವರು ದಕ್ಷಿಣ ಆಫ್ರಿಕಾದ ಮಾರ್ಕ್ ಬೌಷರ್ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಅಳಿಸಿ ಹಾಕಿದರು. ಇದರಿಂದಾಗಿ `ಗಿಲಿ' ವಿಕೆಟ್ ಹಿಂಬದಿ ಒಟ್ಟು 414 ಬಲಿ ಪಡೆದಂತಾಯಿತು. ಅದರಲ್ಲಿ 377 ಕ್ಯಾಚ್ ಹಾಗೂ 37 ಸ್ಟಂಪಿಂಗ್ ಸೇರಿವೆ. ಬೌಷರ್ 413 (394 ಕ್ಯಾಚ್, 19 ಸ್ಟಂಪಿಂಗ್) ಬಲಿ ಪಡೆದರು.

2008: ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ಪ್ರತಿಷ್ಠಿತ ಐಷಾರಾಮಿ ಸುವರ್ಣ ರಥ ರೈಲು ಈದಿನ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಹೊರವಲಯದ ವೈಟ್ಫೀಲ್ಡ್ ರೈಲು ನಿಲ್ದಾಣಕ್ಕೆ ಆಗಮಿಸಿತು. ಮುಂದಿನ ಒಂದು ವಾರದಲ್ಲಿ ರೈಲಿನ ಒಳಾಂಗಣ ವಿನ್ಯಾಸ, ನೆಲಹಾಸು, ಸೂಕ್ಷ್ಮ ಮರಗೆಲಸ, ಹಾಸಿಗೆ ಮತ್ತು ಹೊದಿಕೆ ಹಾಕುವ ಕೆಲಸ ನಡೆಸಲಾಯಿತು. ಇದು ದಕ್ಷಿಣ ಭಾರತದ ಪ್ರಥಮ ಪ್ರವಾಸಿ ರೈಲು ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು.

2007: ಆರ್ಥಿಕ ಸಂಕಷ್ಟದಿಂದ ಬೇಸತ್ತು ಹಾಸನ ನಗರದ ವ್ಯಾಪಾರಿ ಕೀರ್ತಿ ಗುಪ್ತ ಅವರು ತಮ್ಮ ಮೂವರು ಮಕ್ಕಳು ಸೇರಿದಂತೆ ಕುಟುಂಬದ 6 ಜನ ಸದಸ್ಯರನ್ನು ಕ್ಲೋರೋಫಾರಂ ಬಳಸಿ ಕೊಲೆಗೈದು, ತಾವೂ ಆತ್ಮಹತ್ಯೆ ಮಾಡಿಕೊಂಡರು.

2007: ವಿಶ್ವದ ಹಿರಿಯಜ್ಜ ಎಂದು ಪರಿಗಣಿಸಲಾಗಿದ್ದ ಸಾನ್ ಜುವಾನಾದ (ಪೋರ್ಟೊರಿಕೊ) ಎಮಿಲಿಯಾನೊ ಮರ್ಕೆಡೊ ಡೆಲ್ ಟೊರೊ ಅವರು ತಮ್ಮ 115ನೇ ವರ್ಷದಲ್ಲಿ ನಿಧನರಾದರು. ಈ ಅಜ್ಜ ಹುಟ್ಟಿದಾಗ ಪೊರ್ಟೊರಿಕೊ ಸ್ಪೇನಿನ ವಸಾಹತಾಗಿತ್ತು. `ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ' ಎಂಬುದಾಗಿ ಗಿನ್ನೆಸ್ ಪುಸ್ತಕದಲ್ಲಿ ಈ ಅಜ್ಜನ ಹೆಸರು ದಾಖಲಾದಾಗ ಕರಾವಳಿ ನಗರ ಇಸಬೆಲ್ಲಾದಲ್ಲಿ ಜನ ಹಬ್ಬ ಆಚರಿಸಿ ಸಂಭ್ರಮಿಸಿದ್ದರು. 1891ರ ಆಗಸ್ಟ್ 21ರಂದು ಜನಿಸಿದ್ದ ಎಮಿಲಿಯಾನೊ ಮೆರ್ಕಡೊ ಡೆಲ್ ಟೊರೊ ಅವಿವಾಹಿತರಾಗಿದ್ದರು. 1892ರ ನವೆಂಬರ್ 22ರಂದು ಜನಿಸಿದ ಕನೆಕ್ಟಿಕಟ್ ಮಹಿಳೆ ಎಮ್ಮಾ ಫಾಸ್ಟ್ ಟಿಲ್ ಮ್ಯಾನ್ (114) ಈತನ ಬಳಿಕ ಬದುಕುಳಿದ ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ.

2007: ಕರ್ನಾಟಕದ ದಿವಂಗತ ಸಾಹಿತಿ `ಕಾಂತಾಪುರ' ಖ್ಯಾತಿಯ ಹಾಸನ ರಾಜಾರಾವ್ ಅವರಿಗೆ ಮರಣೋತ್ತರ ಪದ್ಮವಿಭೂಷಣ, ಕರ್ನಾಟಕದ ಸೊಸೆ ಮತ್ತು ಪೆಪ್ಸೆ ಕಂಪೆನಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಇಂದ್ರಾ ನೂಯಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಸೇರಿದಂತೆ ಒಟ್ಟು 10 ಗಣ್ಯರಿಗೆ ಪದ್ಮವಿಭೂಷಣ, 32 ಮಂದಿಗೆ ಪದ್ಮಭೂಷಣ ಮತ್ತು 79 ಮಂದಿ ಪದ್ಮಶ್ರೀ ಪ್ರಶಸ್ತಿಗಳನ್ನು ಕೇಂದ್ರ ಸರ್ಕಾರವು ಪ್ರಕಟಿಸಿತು.

2007: ಕಾಶ್ಮೀರದಲ್ಲಿ ಶರಣಾಗತರಾದ ಉಗ್ರರಿಗೆ ಆರ್ಥಿಕ ಸಹಾಯ ಮತ್ತು ಮಾಸಿಕ ವೇತನ ನೀಡುವುದನ್ನು ಪ್ರಶ್ನಿಸಿ ಮಾನವ ಹಕ್ಕು ಇಲಾಖೆಯು ಸುಪ್ರೀಂಕೋರ್ಟಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿತು. ನ್ಯಾಯಮೂರ್ತಿ ಜಿ.ಪಿ.ಮಾಥೂರ್ ಮತ್ತು ಆರ್. ವಿ. ರವೀಂದ್ರನ್ ಅವರನ್ನು ಒಳಗೊಂಡ ಪೀಠವು ಈ ಅರ್ಜಿಯನ್ನು ದಾಖಲು ಮಾಡಿಕೊಂಡು, `ಗಂಭೀರವಾದ ವಿಷಯಗಳನ್ನು ಈ ಅರ್ಜಿಯು ಎತ್ತಿದ್ದು, ವಿವರವಾಗಿ ಪರಿಶೀಲಿಸಬೇಕಾದ ಅಗತ್ಯ ಇದೆ' ಎಂದು ಹೇಳಿತು. ಶಸ್ತ್ರಾಸ್ತ್ರಗಳನ್ನು ಕೆಳಗಿಳಿಸಿ ಸರ್ಕಾರಕ್ಕೆ ಶರಣಾದ ಉಗ್ರರಿಗೆ ಮರುಪಾವತಿ ಮಾಡದಂಥ 3 ಲಕ್ಷ ರೂಪಾಯಿಗಳ ಸಾಲ ನೀಡುವುದಲ್ಲದೆ ಮಾಸಿಕ 3000 ರೂಪಾಯಿಗಳ ಸ್ಟೈಪೆಂಡ್ ನೀಡುವ ಕ್ರಮವೂ ಇದೆ. ಇದು ದೇಶದ ಯುವ ಜನಾಂಗಕ್ಕೆ ತಪ್ಪು ಸಂದೇಶ ರವಾನಿಸುವುದರ ಜೊತೆಗೆ ದೇಶದ ಇತರ ಕಡೆಗಳಲ್ಲಿ ಭಯೋತ್ಪಾದನೆಯ ಮಾರ್ಗ ಅನುಸರಿಸಲು ಪ್ರೋತ್ಸಾಹಿಸುವಂತಿದೆ ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ದೂರಿದ್ದರು.

2007: ತಮಿಳುನಾಡಿನ ಕುದಂಕುಲಮ್ ವಿದ್ಯುತ್ ಯೋಜನೆ ಹಾಗೂ ಇತರ ಹೊಸ ಪ್ರದೇಶಗಳಲ್ಲಿ ಇನ್ನಷ್ಟು ಅಣುಸ್ಥಾವರಗಳನ್ನು ನಿರ್ಮಿಸುವ ಸಲುವಾಗಿ ಭಾರತ ಮತ್ತು ರಷ್ಯ ಒಪ್ಪಂದಕ್ಕೆ ಸಹಿ ಹಾಕಿದವು.

2006: ಕರ್ನಾಟಕ ಸಂಗೀತದ ಖ್ಯಾತ ವಯೋಲಿನ್ ವಾದಕ ನೆಲ್ಲೈ ಕೃಷ್ಣಮೂರ್ತಿ (85) ಕೇರಳದ ತಿರುವನಂತಪುರದಲ್ಲಿ ನಿಧನರಾದರು.

2006: ಸ್ವಿಟ್ಜರ್ ಲ್ಯಾಂಡಿನ ದಾವೋಸಿನಲ್ಲಿ ಆರಂಭವಾದ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮ್ಮೇಳನದಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮುಖೇಶ ಅಂಬಾನಿ ಅವರನ್ನು ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯೂಇಎಫ್) ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು. ಈ ಹುದ್ದೆಗೆ ನೇಮಕಗೊಂಡಿರುವ ಭಾರತದ ಅತ್ಯಂತ ಕಿರಿಯ ಉದ್ಯಮಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾದರು.

2006: ಸಾಫ್ಟವೇರ್ ಸಂಸ್ಥೆ ಇನ್ಫೋಸಿಸ್ಸಿನ ಸಿಇಒ ನಂದನ್ ನೀಲೇಕಣಿ (ಪದ್ಮಭೂಷಣ), ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಯುವ ಟೆನಿಸ್ ತಾರೆ ಸಾನಿಯಾ ಮಿರ್ಜಾ (ಪದ್ಮಶ್ರೀ) ಸೇರಿದಂತೆ 106 ಮಂದಿ ಗಣ್ಯರು 2006ನೇ ಸಾಲಿನ ಪದ್ಮ ಪ್ರಶಸ್ತಿಗಳಿಗೆ ಭಾಜನರಾದರು. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಅಡೂರು ಗೋಪಾಲಕೃಷ್ಣ, ಸಮಾಜಸೇವಕಿ ಗಾಂಧಿವಾದಿ ನಿರ್ಮಲಾ ದೇಶಪಾಂಡೆ, ಲೇಖಕಿ ಮಹಾಶ್ವೇತಾದೇವಿ ಸೇರಿದಂತೆ 9 ಗಣ್ಯರು ಪದ್ಮಿವಿಭೂಷಣ ಪ್ರಶಸ್ತಿಗೆ ಭಾಜನರಾದರು.

2006: ಎವರೆಸ್ಟ್ ಆರೋಹಣದ ಸಂದರ್ಭದಲ್ಲಿ ಹಿಮಶೃಂಗದಲ್ಲೇ ಜೀವತೆತ್ತ ಕನ್ನಡಿಗ ಸ್ಕ್ವಾಡ್ರನ್ ಲೀಡರ್ ಎಸ್. ಎಸ್. ಚೈತನ್ಯ ಮತ್ತು ದೇಶದ ಪ್ರಥಮ ಮಹಿಳಾ ಏರ್ ಮಾರ್ಷಲ್ ಪದ್ಮಾ ಬಂಡೋಪಾಧ್ಯಾಯ ಸಹಿತ 311 ಯೋಧರು 2006ನೇ ಸಾಲಿನ ರಾಷ್ಟ್ರಪತಿ ಪುರಸ್ಕಾರಕ್ಕೆ ಪಾತ್ರರಾದರು.

2002: ರಷ್ಯಾದ ರಸ್ಲನ್ ಪೊನೊಮರಿವ್ ಅವರು ಮಾಸ್ಕೊದಲ್ಲಿ ವಸಿಲಿ ಇವಾಂಚುಕ್ ಅವರನ್ನು 4.5-2.5 ಅಂತರದಲ್ಲಿ ಪರಾಭವಗೊಳಿಸುವ ಮೂಲಕ ಫಿಡೆ ವಿಶ್ವ ಚೆಸ್ ಚಾಂಪಿಯನ್ ಎನಿಸಿಕೊಂಡ ಮೊತ್ತ ಮೊದಲ ಕಿರಿಯ ಆಟಗಾರರಾದರು. ಆಗ ಅವರ ವಯಸ್ಸು: 18 ವರ್ಷ, 104 ದಿನಗಳು.

1971: ಸೇನಾದಂಗೆಯೊಂದರಲ್ಲಿ ಮಿಲ್ಟನ್ ಒಬೊಟೆ ಅವರನ್ನು ಪದಚ್ಯುತಿಗೊಳಿಸಿ ಇದಿ ಅಮಿನ್ ಉಗಾಂಡಾದ ಅಧ್ಯಕ್ಷರಾದರು.

1971: ಹಿಮಾಚಲ ಪ್ರದೇಶ ಭಾರತದ ಒಂದು ರಾಜ್ಯವಾಯಿತು. 1948ರಿಂದ ಇಲ್ಲಿವರೆಗೆ ಇದು ಕೇಂದ್ರಾಡಳಿತ ಪ್ರದೇಶವಾಗಿತ್ತು.

1950: ಭಾರತದ ಚುನಾವಣಾ ಆಯೋಗ ಸ್ಥಾಪನೆಗೊಂಡಿತು. ಪ್ರಾರಂಭದಲ್ಲಿ ಮುಖ್ಯ ಚುನಾವಣಾ ಕಮೀಷನರ್ ಒಬ್ಬರೇ ಅದರ ಮುಖ್ಯಸ್ಥರಾಗಿದ್ದರು. ನಂತರ ಇಬ್ಬರು ಹೆಚ್ಚುವರಿ ಕಮೀಷನರುಗಳನ್ನು ನೇಮಿಸಲಾಯಿತು.

1939: ರಂಗಭೂಮಿಯ ಖ್ಯಾತ ನಟ, ಚಲನಚಿತ್ರ ರಂಗದ ಖಳನಾಯಕ ದಿನೇಶ್ (25-1-1939ರಿಂದ 20-12-1990) ಅವರು ಬೆಂಗಳೂರಿನಲ್ಲಿ ಈದಿನ ಜನಿಸಿದರು.

1933: ಫಿಲಿಪ್ಪೈನ್ಸಿನ ನಾಯಕಿ ಕೊರಜಾನ್ ಅಕ್ವಿನೊ ಹುಟ್ಟಿದರು. ದಿವಂಗತ ಬೆನಿಗ್ನೊ ಅಕ್ವಿನೊ ಅವರ ಕೈಹಿಡಿದ ಅವರು 1983ರಿಂದ ಪಿಲಿಪ್ಪೈನ್ಸಿನ ರಾಜಕೀಯ ನಾಯಕಿಯಾದರು. 1986-1992ರ ಅವಧಿಯಲ್ಲಿ ಅಲ್ಲಿನ ಅಧ್ಯಕ್ಷರಾದರು.

1924: ಫ್ರೆಂಚ್ ಆಲ್ಫ್ ನ ಚಾಮೊನಿಕ್ಸಿನಲ್ಲಿ ಮೊದಲ ಚಳಿಗಾಲದ ಒಲಿಂಪಿಕ್ಸ್ ಆರಂಭವಾಯಿತು.

1921: ಖ್ಯಾತ ಸಾಹಿತಿ, ಹಿರಿಯ ಪತ್ರಕರ್ತ ನಾಡಿಗ ಕೃಷ್ಣಮೂರ್ತಿ (1921-1983) ಅವರು ಶಿವಮೊಗ್ಗ ಜಿಲ್ಲೆಯ ಅನವಟ್ಟಿ ಗ್ರಾಮದಲ್ಲಿ ನರಸಿಂಗರಾವ್ ನಾಡಿಗ -ಕಮಲಾಬಾಯಿ ದಂಪತಿಯ ಪುತ್ರನಾಗಿ ಜನಿಸಿದರು. ಪತ್ರಿಕೋದ್ಯಮ ಇತಿಹಾಸ ಮಹಾಪ್ರಬಂಧ ಮಂಡಿಸಿ ಮೈಸೂರು ವಿಶ್ವವಿದ್ಯಾಲಯದಿಂದ ಪಿ ಎಚ್ ಡಿ ಪದವಿ ಗಳಿಸಿದ ನಾಡಿಗ ಕೃಷ್ಣಮೂರ್ತಿ ಅವರು ರಚಿಸಿದ ಕೃತಿಗಳು 40ಕ್ಕೂ ಹೆಚ್ಚು. ಅಮೆರಿಕ, ಇಂಗ್ಲೆಂಡ್, ಫ್ರಾನ್ಸ್ ಸೇರಿದಂತೆ ಅವರು ಸಂದರ್ಶಿಸಿದ ರಾಷ್ಟ್ರಗಳು ಹತ್ತಕ್ಕೂ ಹೆಚ್ಚು. ಅಖಿಲ ಭಾರತ ಪತ್ರಿಕೋದ್ಯಮ ಶಿಕ್ಷಣ ಸಂಘ ಸ್ಥಾಪಿಸಿದ ನಾಡಿಗ ಕೃಷ್ಣಮೂರ್ತಿ ಅಂದಿನ ರಾಜ್ಯ ಪತ್ರಿಕಾ ಅಕಾಡೆಮಿಯ ಪ್ರಥಮ ಅಧ್ಯಕ್ಷರಾಗಿದ್ದರು (16-3-1982ರಿಂದ 1-5-1983ರವರೆಗೆ). ಕೇಂದ್ರ, ರಾಜ್ಯಮಟ್ಟದ ಹಲವಾರು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.

1915: ಟೆಲಿಫೋನ್ ಸಂಶೋಧಕ ಅಲೆಗ್ಸಾಂಡರ್ ಗ್ರಹಾಂಬೆಲ್ ಅಮೆರಿಕದ ಖಂಡಾಂತರ (ಟ್ರಾನ್ಸ್ ಕಾಂಟಿನೆಂಟಲ್) ಟೆಲಿಫೋನ್ ಸೇವೆ ಉದ್ಘಾಟಿಸಿದರು. ಬೆಲ್ ಅವರು ತಮ್ಮ ಮಾಜಿ ಸಹಯೋಗಿ ವಾಟ್ಸನ್ ಅವರ ಜೊತೆ ನ್ಯೂಯಾರ್ಕ್ ಮತ್ತು ಸಾನ್ ಫ್ರಾನ್ಸಿಸ್ಕೊ ನಡುವಣ 3400 ಮೈಲು ಉದ್ದದ ತಂತಿ ಮೂಲಕ ಸಂಪರ್ಕಿಸಲಾದ ಟೆಲಿಫೋನಿನಲ್ಲಿ ಮಾತನಾಡಿದರು.

1824: ಮೈಕೆಲ್ ಮಧುಸೂದನ ದತ್ (1824-1873) ಹುಟ್ಟಿದ ದಿನ. ಇವರು ಕವಿ ಹಾಗೂ ನಾಟಕಕಾರರಾಗಿ ಆಧುನಿಕ ಬಂಗಾಳಿ ಸಾಹಿತ್ಯದ ಮಹಾನ್ ಕವಿ ಎಂದು ಖ್ಯಾತರಾಗಿದ್ದಾರೆ.

Advertisement